CHITRADURGA NEWS | 17 JANUARY 2026
ಚಿತ್ರದುರ್ಗ: ಪ್ರಸಕ್ತ ವರ್ಷದ ಮೊದಲ ರಾಷ್ಟ್ರೀಯ ಲೋಕ್ ಅದಾಲತ್ನ್ನು 2026ರ ಮಾರ್ಚ್ 14ರಂದು ಎರಡನೇ ಶನಿವಾರ ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ರೋಣ್ ವಾಸುದೇವ್ ಹೇಳಿದರು.
ಇದನ್ನೂ ಓದಿ: ಸಂಕ್ರಾಂತಿ ಸಂಭ್ರಮ, ಮಕ್ಕಳ ಸಂತೆ | ಸಂಸದ ಬಸವರಾಜ ಬೊಮ್ಮಾಯಿ ಭಾಗೀ
ನಗರದ ಜಿಲ್ಲಾ ನ್ಯಾಯಾಲಯದ ಮಧ್ಯಸ್ಥಿಕೆ ಕೇಂದ್ರದಲ್ಲಿ ಶನಿವಾರ ರಾಷ್ಟ್ರೀಯ ಲೋಕ್ ಅದಾಲತ್ ಹಾಗೂ “ವಿಶೇಷ ಅಭಿಯಾನ-ಮಧ್ಯಸ್ಥಿಕೆ ರಾಷ್ಟ್ರಕ್ಕಾಗಿ-2.0” ಕುರಿತು ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ರಾಷ್ಟ್ರೀಯ ಲೋಕ್ ಅದಾಲತ್ ಚಿತ್ರದುರ್ಗ ಜಿಲ್ಲಾ ಕೇಂದ್ರ ಹಾಗೂ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ನಡೆಯಲಿದೆ. ಈ ಮೆಗಾ ಲೋಕ್ ಅದಾಲತ್ನಲ್ಲಿ ಸಾರ್ವಜನಿಕರು, ಕಕ್ಷಿದಾರರು ಭಾಗವಹಿಸಿ ತಮ್ಮ ಅನೇಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬಹುದು ಎಂದು ಹೇಳಿದರು.
ಕಳೆದ ಲೋಕ್ ಅದಾಲತ್ನಲ್ಲಿ 79,477 ಪ್ರಕರಣಗಳು ಇತ್ಯರ್ಥ:
ಕಳೆದ 2025ರ ಡಿಸೆಂಬರ್ನಲ್ಲಿ ನಡೆದ ಮೆಗಾ ಲೋಕ್ ಅದಾಲತ್ನಲ್ಲಿ ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿ ಇದ್ದಂತಹ ಒಟ್ಟು 3,840 ಪ್ರಕರಣಗಳು ಹಾಗೂ ವ್ಯಾಜ್ಯಪೂರ್ವ 75,637 ಪ್ರಕರಣಗಳನ್ನು ಸೇರಿಸಿ ಒಟ್ಟು 79,477 ಪ್ರಕರಣಗಳನ್ನು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ವಿಲೇವಾರಿ ಮಾಡಲಾಗಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜನವರಿ 17 | ಹತ್ತಿ ರೇಟ್ ಎಷ್ಟಿದೆ?
ಸಣ್ಣಪುಟ್ಟ ವಿಷಯಗಳಲ್ಲಿ ವಿರಸ, ವ್ಯತ್ಯಾಸದಿಂದಾಗಿ ನ್ಯಾಯಾಲಯಕ್ಕೆ ಬರುವ ಸಾಧ್ಯತೆ ಸಾಕಷ್ಟಿರುತ್ತದೆ. ಅಂತಹ ಪ್ರಕರಣಗಳಲ್ಲಿ ಮಾನವೀಯತೆಯಿಂದ ತಿಳುವಳಿಕೆ ಹಾಗೂ ಕಾನೂನು ಬಗ್ಗೆ ಅರಿವು ಮೂಡಿಸಿದಾಗ ಅವರು ಒಂದಾಗುವ ಸಾಧ್ಯತೆಗಳಿರುತ್ತದೆ. ಅದರ ಪ್ರತಿಫಲವಾಗಿ ಚಿತ್ರದುರ್ಗ ನ್ಯಾಯಾಲಯಗಳ ವ್ಯಾಪ್ತಿಯಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದ ಒಟ್ಟು 07 ಜೋಡಿಗಳನ್ನು ಪುನಃ ಒಂದು ಮಾಡಲಾಗಿದೆ ಎಂದು ತಿಳಿಸಿದರು.
ವರ್ಷದ ಮೊದಲನೇ ಲೋಕ್ ಅದಾಲತ್ ಜತೆಗೆ “ಮಧ್ಯಸ್ಥಿಕೆ ರಾಷ್ಟ್ರಕ್ಕಾಗಿ-2.0” ವಿಶೇಷ ಅಭಿಯಾನವನ್ನೂ ಆರಂಭ ಮಾಡಲಾಗಿದ್ದು, ಕಳೆದ ಬಾರಿಯ ಮಧ್ಯಸ್ಥಿಕೆ ಅಭಿಯಾನದಲ್ಲಿ ರಾಜ್ಯದಲ್ಲಿ 5 ಸಾವಿರಕ್ಕೂ ಹೆಚ್ಚಿನ ಪ್ರಕರಣಗಳು ಇತ್ಯರ್ಥವಾಗಿವೆ. ಇದೀಗ 2ನೇ ಬಾರಿ ಮಧ್ಯಸ್ಥಿಕೆ ರಾಷ್ಟ್ರಕ್ಕಾಗಿ 2.0 ಈಗಾಗಲೇ ಇದೇ ಜನವರಿ 02 ರಿಂದ ಆರಂಭವಾಗಿದ್ದು, ಜನವರಿ ತಿಂಗಳ ಅಂತ್ಯದವರೆಗೆ ಮಧ್ಯಸ್ಥಿಕೆಗೆ ಯೋಗ್ಯವಾದ ಪ್ರಕರಣಗಳನ್ನು ಗುರುತಿಸಿ, ಮಧ್ಯಸ್ಥಿಕೆ ಕೇಂದ್ರಕ್ಕೆ ಕಳುಹಿಸಿ, ಇತ್ಯರ್ಥಪಡಿಸಲಾಗುವುದು ಎಂದು ತಿಳಿಸಿದರು.
ಜಿಲ್ಲೆಯ ಒಟ್ಟು 42 ನುರಿತ ಮಧ್ಯಸ್ಥಿಕೆದಾರರು ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಪಕ್ಷಗಾರರಿಗೆ ಕಾನೂನಾತ್ಮಕವಾಗಿ ಸಹಕಾರ ನೀಡುತ್ತಾರೆ. ಈಗಾಗಲೇ ಜಿಲ್ಲೆ ವ್ಯಾಪ್ತಿಯ 24 ನ್ಯಾಯಾಲಯಗಳಲ್ಲಿ ಈ ಸಂಬಂಧವಾಗಿ ಪ್ರತಿದಿನ ಮಧ್ಯಸ್ಥಿಕೆ ಮುಖಾಂತರ ಇತ್ಯರ್ಥಪಡಿಸಿಕೊಳ್ಳಬಹುದಾದ ಪ್ರಕರಣಗಳನ್ನು ನ್ಯಾಯಾಲಯವು ಗುರುತಿಸಿ, ಪ್ರತಿ ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರದಲ್ಲಿ ಇರುವ ಮಧ್ಯಸ್ಥಿಕೆ ಕೇಂದ್ರಕ್ಕೆ ಪ್ರಕರಣಗಳನ್ನು ರವಾನಿಸುತ್ತಿದ್ದಾರೆ.
ಇದನ್ನೂ ಓದಿ: ಬಿಲ್ ಕಲೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ವಿಶೇಷವಾಗಿ ಮಧ್ಯಸ್ಥಿಕೆದಾರರ ಸಮಕ್ಷಮ ಪಕ್ಷಗಾರರು ಮಾಡಿಕೊಂಡ ರಾಜಿ ಒಪ್ಪಂದಗಳನ್ನು ಪುನಃ ನ್ಯಾಯಾಲಯದ ಕಾನೂನು ಅಡಿಯಲ್ಲಿ ಪಕ್ಷಗಾರರು ಮಾಡಿಕೊಂಡಿರುವ ಒಡಂಬಡಿಕೆ ಹಾಗೂ ಒಪ್ಪಂದದ ಅಂಶಗಳನ್ನು ಕಾನೂನಾತ್ಮಕ, ನ್ಯಾಯಯುತವಾಗಿಯೇ ಇದೆಯೇ ಎಂಬುದನ್ನು ಪರಮರ್ಶಿಸಿ ಅಧಿಕೃತ ಮೊಹರು ಹಾಕುವ ಮುಖಾಂತರ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುವುದು ಎಂದರು.
ನ್ಯಾಯಾಲಯಗಳಲ್ಲಿ ಚಾಲ್ತಿಯಲ್ಲಿರುವ ಕೌಟುಂಬಿಕ, ವೈವಾಹಿಕ, ಅಪಘಾತ ವಿಮಾ ಪ್ರಕರಣ, ಚೆಕ್ ಅಮಾನ್ಯ ಪ್ರಕರಣ, ವಾಣಿಜ್ಯ ವಿವಾದಗಳು, ಗ್ರಾಹಕರ ವ್ಯಾಜ್ಯಗಳು, ಸಾಲ ವಸೂಲಾತಿ ಪ್ರಕರಣ, ಆಸ್ತಿ ವಿಭಾಗ ಪ್ರಕರಣ, ಭೂಸ್ವಾಧೀನ ಪ್ರಕರಣ ಮತ್ತು ಎಲ್ಲಾ ಸಿವಿಲ್ ಸ್ವರೂಪ ಪ್ರಕರಣಗಳನ್ನು ಮಧ್ಯಸ್ಥಿಕೆ ಮುಖಾಂತರ ಇತ್ಯರ್ಥ ಪಡಿಸಿಕೊಳ್ಳಲು ಪಕ್ಷಗಾರರಿಗೆ ಸೂಕ್ತ ಮಾರ್ಗದರ್ಶನ ಮತ್ತು ವೇದಿಕೆ ಕಲ್ಪಿಸಿಕೊಡಲಾಗಿದೆ. ಈ ಸಂಬಂಧ 3 ಸಾವಿರ ಪ್ರಕರಣಗಳನ್ನು ಗುರುತಿಸಲಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ 51,026 ಪ್ರಕರಣಗಳು ಬಾಕಿ:
ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಸದ್ಯ 51,026 ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ರೋಣ್ ವಾಸುದೇವ್ ತಿಳಿಸಿದರು.
ಇದನ್ನೂ ಓದಿ: ಸಾರಿಗೆ ಪ್ರಾಧಿಕಾರದ ಸಭೆ | ವಾಹನಗಳ ಮೇಲೆ ಜಾಹೀರಾತು ಅಳವಡಿಕೆಗೆ ಅನುಮೋದನೆ
ಪ್ರಸ್ತುತ ಜಿಲ್ಲೆಯ ಐದು ನ್ಯಾಯಾಲಯಗಳಲ್ಲಿ ನ್ಯಾಯಾಧೀಶರ ಕೊರತೆ ಇದ್ದರೂ, ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಕರಣಗಳ ಶೀಘ್ರ ವಿಲೇವಾರಿಗೆ ಪ್ರಯತ್ನಿಸಲಾಗುತ್ತಿದೆ. ಮುಂಬರುವ ಮಾರ್ಚ್ ನಲ್ಲಿನ ಲೋಕ್ ಅದಾಲತ್ಗಾಗಿ ಈಗಾಗಲೇ 6,480 ಪ್ರಕರಣಗಳನ್ನು ಗುರುತಿಸಲಾಗಿದ್ದು, ಇದೇ ಜನವರಿ 17 ರವರೆಗೆ 798 ಪ್ರಕರಣಗಳು ಇತ್ಯರ್ಥಗೊಂಡಿವೆ. ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.
ಲೋಕ್ ಅದಾಲತ್ಗೆ ಸಂಬಂಧಿಸಿದಂತೆ ಯಾವುದಾದರೂ ಪ್ರಶ್ನೆಗಳಿದ್ದರೆ ಇ-ಮೇಲ್ dlsachitradurga3@gmail.com ಗೆ ಸಂಪರ್ಕಿಸಬಹುದು ಹಾಗೂ ಟೋಲ್ ಫ್ರಿ ಸಂಖ್ಯೆ 15100 ಸಹ ಸಂಪರ್ಕಿಸಬಹುದು ಹಾಗೂ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದಲ್ಲಿ ಇರುವ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳ ಕಚೇರಿಗೆ ಖುದ್ದಾಗಿ ಭೇಟಿ ಮಾಡಿ ತಮ್ಮ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಬಹುದು ಎಂದು ತಿಳಿಸಿದರು.
ಪೋಕ್ಸೋ ಪ್ರಕರಣ ಹೆಚ್ಚಳಕ್ಕೆ ಜಿಲ್ಲಾ ನ್ಯಾಯಾಧೀಶರ ಕಳವಳ:
ಜಿಲ್ಲೆಯಲ್ಲಿ ಪೋಕ್ಸೋ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಹೆಚ್ಚಳ ಆಗುತ್ತಿರುವ ಬಗ್ಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೋಣ್ ವಾಸುದೇವ್ ಅವರು ಕಳವಳ ವ್ಯಕ್ತಪಡಿಸಿದರು.
ಇದನ್ನೂ ಓದಿ: ಅಡಿಕೆ ಧಾರಣೆ | 17 ಜನವರಿ | ಇಂದಿನ ಅಡಿಕೆ ರೇಟ್
ಪೋಕ್ಸೋ ಕುರಿತು ಗ್ರಾಮ ಮಟ್ಟ, ತಾಲ್ಲೂಕು ಮಟ್ಟದಲ್ಲಿಯೂ ವಿವಿಧ ಇಲಾಖೆಗಳು ಸಮನ್ವಯದೊಂದಿಗೆ ನಾವು ಕೂಡ ಈ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವುದು ಬೇಸರದ ಸಂಗತಿ ಎಂದು ತಿಳಿಸಿದ ಅವರು, ಪೋಕ್ಸೋ ಕುರಿತು ಕಾನೂನಿನ ಬಗ್ಗೆ ಯುವ ಪೀಳಿಗೆ ಹಾಗೂ ಜನರಲ್ಲಿ ಇನ್ನೂ ಹೆಚ್ಚಿನ ತಿಳುವಳಿಕೆ ನೀಡಬೇಕಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
