ಮುಖ್ಯ ಸುದ್ದಿ
ಮುಖ್ಯ ರಸ್ತೆ ಅಗಲೀಕರಣ ಫಿಕ್ಸ್ | 15 ದಿನಗಳಲ್ಲಿ ದಾಖಲೆ ಸಂಗ್ರಹಿಸಿ | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ
CHITRADURGA NEWS | 07 JANUARY 2025
ಚಿತ್ರದುರ್ಗ: ಮೊದಲ ಹಂತದಲ್ಲಿ ಚಿತ್ರದುರ್ಗ ನಗರದ ಚಳ್ಳಕೆರೆ ಗೇಟ್ನಿಂದ ಹೊಳಲ್ಕೆರೆ ರಸ್ತೆಯ ಕನಕ ವೃತ್ತದ ವರೆಗಿನ ರಸ್ತೆ ಅಗಲೀಕರಣ ಮಾಡುವುದು ನಿಶ್ಚಿತ ಎಂದು ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ತಿಳಿಸಿದ್ದಾರೆ.
ಮಂಗಳವಾರ ನಗರಸಭೆ ಕಚೇರಿಯಲ್ಲಿ ರಸ್ತೆ ಅಗಲೀಕರಣ ಹಿನ್ನೆಲೆಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಹಲವು ಕಟ್ಟುನಿಟ್ಟಿನ ಸೂಚನೆ ನೀಡಿ, 15 ದಿನಗಳ ಒಳಗಾಗಿ ಮುಖ್ಯರಸ್ತೆಗೆ ಸಂಬಂಧಿಸಿದ ದಾಖಲೆ ಸಂಗ್ರಹಿಸಲು ಸೂಚನೆ ನೀಡಿದರು.
ಇದನ್ನೂ ಓದಿ: ವಿವಿ ಸಾಗರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗೀನ ಅರ್ಪಣೆ | ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ
ಕಾನೂನು ತೊಡಕುಗಳು ಉಂಟಾಗದಂತೆ ಎಚ್ಚರಿಕೆ ವಹಿಸಿ, ಚಿತ್ರದುರ್ಗ ನಗರದ ಪ್ರಮುಖ ರಸ್ತೆ ಅಗಲೀಕರಣ ಕಾರ್ಯ ಕೈಗೊಳ್ಳಬೇಕು. ರಸ್ತೆಯ ಮಧ್ಯ ಭಾಗದಿಂದ 21 ಮೀಟರ್ ಅಗಲೀಕರಣ ಕಾರ್ಯ ಕೈಗೊಳ್ಳಲು ಈಗಾಗಲೆ ನಿರ್ಧರಿಸಲಾಗಿದೆ. ನಗರದ ಅಭಿವೃದ್ಧಿ ದೃಷ್ಟಿಯಿಂದ ಈ ಕೆಲಸ ಕೈಗೊಳ್ಳುವುದು ಖಚಿತ ಎಂದರು.
ಈ ಕಾರ್ಯದಲ್ಲಿ ಯಾವುದೇ ಕಾನೂನು ತೊಡಕುಗಳು ಅಡ್ಡಿಯಾಗದಂತೆ ನೋಡಿಕೊಳ್ಳಲು, ಪೂರಕವಾದ ಸೂಕ್ತ ದಾಖಲಾತಿಗಳು, ನಕ್ಷೆಗಳ ಮೂಲ ಪ್ರತಿಗಳನ್ನು ಸಂಗ್ರಹಿಸಬೇಕು ಎಂದು ನಗರಸಭೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದನ್ನೂ ಓದಿ: ವಿವಿ ಸಾಗರ ಜಲಾಶಯದ ಇಂದಿನ ಮಟ್ಟ 129.80
ದಾಖಲಾತಿಗಳನ್ನು ಸಂಗ್ರಹಿಸಿ, ಶಾಸಕರ ಗಮನಕ್ಕೆ ತರಬೇಕು, ದಾಖಲೆಗಳ ಪರಿಶೀಲನೆ ಬಳಿಕವೇ ಅಗಲೀಕರಣ ಪ್ರಾರಂಭಿಸಬೇಕು. ಈ ಕಾರ್ಯ 15 ದಿನಗಳ ಒಳಗಾಗಿ ಪೂರ್ಣಗೊಳ್ಳಬೇಕು.
ಈಗಿನ ಪ್ರಮುಖ ರಸ್ತೆ ಈ ಮೊದಲು ರಾಷ್ಟ್ರೀಯ ಹೆದ್ದಾರಿಯಾಗಿತ್ತು, ಹೀಗಾಗಿ ರಸ್ತೆಗೆ ಸಂಬಂಧಿಸಿದ ದಾಖಲೆ ಹಾಗೂ ನಕ್ಷೆಗಳು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಬಳಿ ಲಭ್ಯವಿರುವ ಸಾಧ್ಯತೆಗಳಿವೆ. ಒಟ್ಟಾರೆಯಾಗಿ ಮೂಲ ದಾಖಲೆಗಳನ್ನು ಸಂಗ್ರಹಿಸಿ, ಪರಿಶೀಲಿಸಿ, ರಸ್ತೆ ಅಗಲೀಕರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ವೀರೇಂದ್ರ ಪಪ್ಪಿ ಅವರು ಸೂಚನೆ ನೀಡಿದರು.
ಇದನ್ನೂ ಓದಿ: ಅಡಿಕೆ ಬೆಲೆಯಲ್ಲಿ ಭರ್ಜರಿ ಏರಿಕೆ
ಚಿತ್ರದುರ್ಗ ನಗರದಲ್ಲಿನ ಜನಸಂಖ್ಯೆ, ವಾಹನಗಳ ಸಂಖ್ಯೆ, ಸಂಚಾರ ದಟ್ಟಣೆ, ಮುಖ್ಯ ರಸ್ತೆಯಲ್ಲಿನ ವ್ಯಾಪಾರ ವಹಿವಾಟು, ಸರಕು ವಾಹನಗಳ ನಿಲುಗಡೆ, ಸಂಚಾರ ನಿಯಮಗಳ ಪಾಲನೆ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಚಿತ್ರದುರ್ಗ ನಗರವನ್ನು ಉತ್ತಮವಾಗಿ ಅಭಿವೃದ್ಧಿಪಡಿ, ನಗರಸಭೆಯನ್ನು ಮಹಾನಗರ ಪಾಲಿಕೆ ಮಾಡುವ ನಿಟ್ಟಿನಲ್ಲಿ ನಗರಸಭೆಯ ಅಧ್ಯಕ್ಷರಾಗಿರುವ ಸುಮಿತಾ ಅವರಿಗೆ ಉತ್ತಮ ಅವಕಾಶವಿದ್ದು, ಈ ನಿಟ್ಟಿನಲ್ಲಿ ಅವರು ಕೂಡ ರಸ್ತೆ ಅಗಲೀಕರಣ ಕಾರ್ಯಕ್ಕೆ ಕೈಜೋಡಿಸುವಂತೆ ಶಾಸಕ ವೀರೇಂದ್ರ ಪಪ್ಪಿ ಅವರು ಮನವಿ ಮಾಡಿದರು.
ಸಭೆಯಲ್ಲಿ ಭಾಗವಹಿಸಿದ್ದ ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿ, ಚಿತ್ರದುರ್ಗ ನಗರದ ಅಭಿವೃದ್ಧಿಗೆ ಪೂರಕವಾಗಿ ರಸ್ತೆ ಅಗಲೀಕರಣ ಕಾರ್ಯವನ್ನು ಯಾವುದೇ ಕಾನೂನು ತೊಡಕು ಬಾರದ ರೀತಿಯಲ್ಲಿ, ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಬಳಿಕವೇ ಅಗಲೀಕರಣ ನಡೆಸುವಂತೆ ಸಲಹೆ ನೀಡಿದ್ದಾರೆ ಎಂದು ಶಾಸಕರು ಮಾಹಿತಿ ನೀಡಿದರು.
ಇದನ್ನೂ ಓದಿ: ಚಿತ್ರದುರ್ಗ ಮುಖ್ಯ ರಸ್ತೆ ಅಗಲೀಕರಣಕ್ಕೆ ತೀರ್ಮಾನ | ಸಚಿವ ಡಿ.ಸುಧಾಕರ್ ಸೂಚನೆ | ಎಲ್ಲ ಶಾಸಕರ ಸಹಮತ
ನಗರಸಭೆ ಅಧ್ಯಕ್ಷೆ ಸುಮಿತಾ, ಪೌರಾಯುಕ್ತೆ ರೇಣುಕಾ, ವಿಶೇಷ ಭೂ ಸ್ವಾಧೀನಾಧಿಕಾರಿ ವೆಂಕಟೇಶ್ ನಾಯಕ್, ಲೋಕೋಪಯೋಗಿ ಇಲಾಖೆ ಎಇಇ ಚಂದ್ರಪ್ಪ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಎಇಇ ನವೀನ್, ನಗರಸಭೆ ಕಾನೂನು ಸಲಹೆಗಾರ ಉಮೇಶ್, ನಗರಸಭೆ ಎಇಇ ಸತ್ಯನಾರಾಯಣ್ ಇತರರಿದ್ದರು.