
CHITRADURGA NEWS | 19 MAY 2025
ಚಿತ್ರದುರ್ಗ: ದಾವಣಗೆರೆ -ಚಿತ್ರದುರ್ಗ- ತುಮಕೂರು ನೇರ ರೈಲ್ವೆ ಯೋಜನೆಯನ್ನು 2027ರ ಡಿಸೆಂಬರ್ ಅಂತ್ಯಕ್ಕೆ ಪೂರ್ಣಗೊಳಿಸಿ, ಲೋಕಾರ್ಪಣೆಗೊಳಿಸಲಾಗುವುದು ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.
ಇದನ್ನೂ ಓದಿ: 1 ಕಿ.ಮೀ ತಿರಂಗಾ ಯಾತ್ರೆ | ದುರ್ಗದ ಬೀದಿಗಳಲ್ಲಿ ದೇಶಭಕ್ತಿಯ ಹೆದ್ದರೆ | ಭಾರತೀಯ ಸೇನೆಗೆ ನಾಗರೀಕರ ಬೆಂಬಲ

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚಿಗೆ ನಡೆದ ದಾವಣಗೆರೆ-ಚಿತ್ರದುರ್ಗ-ತುಮಕೂರು ನೂತನ ರೈಲ್ವೆ ಮಾರ್ಗದ ಕಾಮಗಾರಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ರಾಯದುರ್ಗ-ತುಮಕೂರು ರೈಲು ಮಾರ್ಗದ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆ ಮುಕ್ತಾಯವಾಗಿದ್ದು, ಟೆಂಡರ್ ಕರೆಯಲಾಗಿದೆ. ಅದೇ ರೀತಿ ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲ್ವೆ ಯೋಜನೆಯ ಸಮಸ್ಯೆಯನ್ನು ಬಗೆಹರಿಸಿ, ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ, ಶೀಘ್ರವಾಗಿ ಕಾಮಗಾರಿ ಅನುಷ್ಠಾನಗೊಳಿಸಲಾಗುವುದು. ಎರಡೂ ರೈಲು ಮಾರ್ಗಗಳನ್ನು 2027 ಡಿಸೆಂಬರ್ ಅಂತ್ಯಕ್ಕೆ ಪೂರ್ಣಗೊಳಿಸಿ ಏಕಕಾಲಕ್ಕೆ ಲೋಕಾರ್ಪಣೆ ಮಾಡಲಾಗುವುದು ಎಂದರು.
ಎಲ್ಲ ರೈಲ್ವೆ ಕೆಳ ಸೇತುವೆಗಳಲ್ಲಿನ ಪರಿಸ್ಥಿತಿ ಕುರಿತು ವರದಿ :
ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಹಾಗೂ ಸಂಸದ ಗೋವಿಂದ ಕಾರಜೋಳ ಅವರು ನಗರದ ತುರುವನೂರು ರಸ್ತೆ ಹಾಗೂ ಮೆದೆಹಳ್ಳಿ ರಸ್ತೆಯಲ್ಲಿನ ರೈಲ್ವೆ ಕೆಳ ಸೇತುವೆಯಲ್ಲಿ ಉಂಟಾಗಿರುವ ತೀವ್ರ ಸಮಸ್ಯೆಯ ಬಗ್ಗೆ ಫೋಟೋ ಸಹಿತ ಸಚಿವರಿಗೆ ಮಾಹಿತಿ ನೀಡಿ, ಜಿಲ್ಲೆಯಲ್ಲಿರುವ ಬಹಳಷ್ಟು ರೈಲ್ವೆ ಕೆಳ ಸೇತುವೆಗಳು ಅವೈಜ್ಞಾನಿಕವಾಗಿ ನಿರ್ಮಾಣವಾಗಿದ್ದು, ಇದರಿಂದ ಮಳೆಗಾಲದಲ್ಲಿ ತೀವ್ರ ತೊಂದರೆಯಾಗುತ್ತಿದೆ. ಹೆಚ್ಚಿನ ಪ್ರಮಾಣದಲ್ಲಿ ಮಳೆ ನೀರು ನಿಂತು ಸಾರ್ವಜನಿಕರ ಸಂಚಾರಕ್ಕೆ ಹಾಗೂ ಅಪಾಯಕ್ಕೂ ಕಾರಣವಾಗುತ್ತಿದೆ ಎಂದರು.
ಇದನ್ನೂ ಓದಿ: RAIN: ಜಿಲ್ಲೆಯಾದ್ಯಂತ ಭರ್ಜರಿ ಮಳೆ | ತುಂಬಿ ಹರಿದ ಹಳ್ಳ, ಕೊಳ್ಳಗಳು
ಇದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದ ರೈಲ್ವೆ ಸಚಿವ ವಿ. ಸೋಮಣ್ಣ ಅವರು, ಕಳೆದ ಬಾರಿ ಜಿಲ್ಲೆಗೆ ಬಂದಾಗಲೇ ಈ ಕುರಿತು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೆ, ಆದರೆ ರೈಲ್ವೆ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ, ಸಮಸ್ಯೆ ಬಗೆಹರಿದಿಲ್ಲ.
ಚಿತ್ರದುರ್ಗ ನಗರದ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ರೈಲ್ವೆ ಕೆಳ ಸೇತುವೆಗಳಲ್ಲಿ ಮಳೆ ನೀರು ಶೇಖರಣೆಯಾಗದಂತೆ ಸೂಕ್ತ ಪರಿಹಾರ ಕ್ರಮಕೈಗೊಳ್ಳಬೇಕು.
ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿರುವ ಎಲ್ಲ ರೈಲ್ವೆ ಕೆಳ ಸೇತುವೆಗಳ ಬಗ್ಗೆ ರೈಲ್ವೆ ಅಧಿಕಾರಿಗಳು ಖುದ್ದು ಭೇಟಿ ನೀಡಿ, ಅಲ್ಲಿನ ವಸ್ತು ಸ್ಥಿತಿ ಬಗ್ಗೆ ಹಾಗೂ ಸಮಸ್ಯೆಗಳಿದ್ದಲ್ಲಿ, ಅದರ ನಿವಾರಣೆಗೆ ಕೈಗೊಳ್ಳಬೇಕಾದ ಕಾರ್ಯಗಳ ಬಗ್ಗೆ ಸಮಗ್ರ ವರದಿ ಸಲ್ಲಿಸಬೇಕು. ಅಲ್ಲದೆ ಪರಿಹಾರ ಕಾರ್ಯಗಳ ಬಗ್ಗೆ ಕ್ರಿಯಾ ಯೋಜನೆ ರೂಪಿಸಿ, ಅನುಮೋದನೆಗಾಗಿ ಸಲ್ಲಿಸಬೇಕು ಎಂದು ರೈಲ್ವೆ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಇದನ್ನೂ ಓದಿ: ಒಂದು ವಾರದೊಳಗೆ ಚಿತ್ರದುರ್ಗ-ದಾವಣಗೆರೆ ರಸ್ತೆಯ ರೈಲ್ವೆ ಗೇಟ್ಗೆ ಟೆಂಡರ್ | ಸಚಿವ ವಿ.ಸೋಮಣ್ಣ ಸೂಚನೆ
ಹೊಸದಾಗಿ ನಿರ್ಮಾಣವಾಗುವ ರೈಲ್ವೆ ಮೇಲ್ಸೇತುವೆ ಹಾಗೂ ಕೆಳಸೇತುವೆಗಳಿಗೆ ಭೂಸ್ವಾಧೀನ ಆಗಬೇಕಾಗಿದೆ. ರಾಜ್ಯ ಸರ್ಕಾರಕ್ಕೆ ಭೂಸ್ವಾಧೀನ ಮಾಡುವಂತೆ ಮನವಿ ಮಾಡಲಾಗಿದೆ. ಭೂಸ್ವಾಧೀನಕ್ಕೆ ಹಾಗೂ ಸೇತುವೆಗಳ ಕಾಮಗಾರಿಗೆ ತಗಲುವ ವೆಚ್ಚವನ್ನು ಕೇಂದ್ರ ಸರ್ಕಾರವೇ ಭರಿಸಲಿದೆ ಎಂದು ಹೇಳಿದರು.
ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ:
ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೆ ಮಾರ್ಗದಲ್ಲಿ ಈಗಾಗಲೆ ಶೇ. 90 ರಷ್ಟು ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದೆ. ಆದರೆ ಇನ್ನೂ ಕೆಲವೆಡೆ ಭೂಸ್ವಾಧೀನ ಪ್ರಕ್ರಿಯೆ ನಾನಾ ಕಾರಣಗಳಿಂದಾಗಿ ಬಾಕಿ ಉಳಿದಿದೆ.
ವಿಶೇಷ ಭೂಸ್ವಾಧೀನಾಧಿಕಾರಿ ವೆಂಕಟೇಶ್ ನಾಯಕ್ ಅವರು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಈ ಪ್ರಕ್ರಿಯೆ ತ್ವರಿತಗೊಳಿಸಲು ಶ್ರಮಿಸುತ್ತಿದ್ದಾರೆ ಎಂದು ಶ್ಲಾಘಿಸಿದ ಸಚಿವ ವಿ. ಸೋಮಣ್ಣ ಅವರು, ಬಾಕಿ ಉಳಿದಿರುವ ಎಲ್ಲ ಭೂಸ್ವಾಧೀನ ಕಾರ್ಯದ ಪ್ರಕ್ರಿಯೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ರೈಲ್ವೆ ಇಲಾಖೆಗೆ ಭೂಮಿ ಹಸ್ತಾಂತರಿಸಿದಲ್ಲಿ, ಅವರು ಕಾಮಗಾರಿ ಕೈಗೊಳ್ಳಲು ಅನುಕೂಲವಾಗಲಿದೆ ಎಂದು ಸೂಚನೆ ನೀಡಿದರು.
ಇದನ್ನೂ ಓದಿ: ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಭೂಮಿ ಪೂಜೆ | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ
ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಮಾತನಾಡಿ, ಈ ಮಾರ್ಗದಲ್ಲಿ ಚಿತ್ರದುರ್ಗ ಹಾಗೂ ಹಿರಿಯೂರು ತಾಲ್ಲೂಕು ಸೇರಿ 1211 ಎಕರೆ ಜಮೀನಿನ ಅವಶ್ಯಕತೆ ಇದ್ದು, ಈ ಪೈಕಿ 1026 ಎಕರೆ ಜಮೀನು ಅವಾರ್ಡ್ ಆಗಿ, ಜಮೀನು ಮಾಲೀಕರಿಗೆ ಪರಿಹಾರ ವಿತರಿಸಲಾಗಿದೆ.
ಭರಮಸಾಗರ-ಚಿತ್ರದುರ್ಗ ಮಾರ್ಗದವರೆಗಿನ 36 ಕಿ.ಮೀ. ವ್ಯಾಪ್ತಿಯಲ್ಲಿ 348 ಎಕರೆ ಪೈಕಿ 312 ಎಕರೆ ಈಗಾಗಲೆ ರೈಲ್ವೆ ಇಲಾಖೆಗೆ ಹಸ್ತಾಂತರಿಸಿದ್ದು, ರೈಲ್ವೆ ಕಾಮಗಾರಿ ನಡೆದಿದೆ. ಹೆಚ್ಚುವರಿಯಾಗಿ 41 ಎಕರೆ ಭೂಮಿಗೆ ರೈಲ್ವೆ ಇಲಾಖೆ ಬೇಡಿಕೆ ಸಲ್ಲಿಸಿದ್ದು, ಸ್ವಾಧೀನ ಪ್ರಕ್ರಿಯೆ ಪ್ರಾರಂಬಿಸಲಾಗಿದೆ.
ಚಿತ್ರದುರ್ಗ-ಹಿರಿಯೂರು ಮಾರ್ಗದ 36 ಕಿ.ಮೀ. ವ್ಯಾಪ್ತಿಯಲ್ಲಿ ಅಗತ್ಯವಿರುವ 383 ಎಕರೆ ಪೈಕಿ 338 ಎಕರೆ ಈಗಾಗಲೆ ರೈಲ್ವೆ ಇಲಾಖೆಗೆ ಹಸ್ತಾಂತರಿಸಲಾಗಿದೆ, 44 ಎಕರೆ ಹೆಚ್ಚುವರಿಯಾಗಿ ಡಿ.ಎಸ್. ಹಳ್ಳಿಯಲ್ಲಿ ಸ್ಟೇಷನ್ ನಿರ್ಮಾಣಕ್ಕೆ ರೈಲ್ವೆ ಇಲಾಖೆ ಬೇಡಿಕೆ ಸಲ್ಲಿಸಿದ್ದು, ಸ್ವಾಧೀನ ಪ್ರಕ್ರಿಯೆ ನಡೆದಿದೆ.
ಹಿರಿಯೂರು-ತಾವರೆಕೆರೆ ಮಾರ್ಗದ 29 ಕಿ.ಮೀ. ವ್ಯಾಪ್ತಿಯಲ್ಲಿ 478 ಎಕರೆ ಪೈಕಿ 374 ಎಕರೆ ಜಮೀನು ರೈಲ್ವೆ ಇಲಾಖೆಗೆ ಹಸ್ತಾಂತರಿಸಲಾಗಿದೆ. ಬಾಕಿ 104 ಎಕರೆ ಜಮೀನನ್ನು ಕೂಡ ರೈಲ್ವೆ ಇಲಾಖೆಗೆ ಹಸ್ತಾಂತರಿಸುವ ಪ್ರಕ್ರಿಯೆ ನಡೆದಿದೆ. ರೈಲ್ವೆ ಯೋಜನೆಗಾಗಿ ಬಾಕಿ ಇರುವ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ರೈಲ್ವೆ ಇಲಾಖೆಗೆ ಹಸ್ತಾಂತರಿಸಲಾಗುವುದು ಎಂದರು.
ಇದನ್ನೂ ಓದಿ: ತುರುವನೂರು ರಸ್ತೆಯ ನೂತನ ಬೆಸ್ಕಾಂ ಕಚೇರಿ | ಸಚಿವ ಡಿ.ಸುಧಾಕರ್ ಉದ್ಘಾಟನೆ
ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಸಂಸದ ಗೋವಿಂದ ಎಂ. ಕಾರಜೋಳ, ಶಾಸಕರಾದ ಟಿ.ರಘುಮೂರ್ತಿ, ಡಾ.ಎಂ.ಚಂದ್ರಪ್ಪ, ಕೆ.ಸಿ.ವೀರೇಂದ್ರ ಪಪ್ಪಿ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ರೈಲ್ವೆ ಇಲಾಖೆ ಮುಖ್ಯ ಆಡಳಿತಾಧಿಕಾರಿ (ನಿರ್ಮಾಣ) ಅಜಯ್ ಶರ್ಮಾ, ವಿಭಾಗೀಯ ರೈಲ್ವೆ ವ್ಯವಸ್ಥಾಪಕ (ಡಿಜಿಎಂ) ಮುದಿತ್ ಮಿತ್ತಲ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ, ನೇರ ರೈಲ್ವೆ ಯೋಜನೆ ವಿಶೇಷ ಭೂಸ್ವಾಧೀನಾಧಿಕಾರಿ ವೆಂಕಟೇಶ್ ಇತರರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
