
CHITRADURGA NEWS | 06 MARCH 2026
ಚಿತ್ರದುರ್ಗ: ರಾಜ್ಯ ಸರ್ಕಾರ ಒಳ ಮೀಸಲಾತಿಯಂತೆ 56,432 ಹುದ್ದೆಗಳನ್ನು ನೇಮಕ ಮಾಡಿಕೊಳ್ಳುವಂತೆ ಒತ್ತಾಯಿಸಿ ಮಾ.10 ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗವುದೆಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ನೌಕರರ ಒಕ್ಕೂಟದ ರಾಜ್ಯಾಧ್ಯಕ್ಷ ಹಿರೆಹಳ್ಳಿ ಮಲ್ಲಿಕಾರ್ಜುನ ತಿಳಿಸಿದರು.
ಇದನ್ನೂ ಓದಿ: ಮಾದಿಗ ಸಮುದಾಯದಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ | ಒಳಮೀಸಲಾತಿಯಂತೆ ನೇಮಕಾತಿಗೆ ಆಗ್ರಹ

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ತಿಂಗಳಲ್ಲಿ ನೇಮಕಾತಿ ಮಾಡುವಂತೆ ಸರ್ಕಾರ ಆದೇಶಿಸಿದೆ. ಇಲ್ಲಿಯವರೆಗೂ ಅಧಿಕಾರ ನಡೆಸಿದ ಎಲ್ಲಾ ರಾಜಕಾರಣಿಗಳು ಒಳ ಮೀಸಲಾತಿ ಜಾರಿಗೊಳಿಸದೆ ಮಾದಿಗರಿಗೆ ವಂಚಿಸುತ್ತಲೆ ಬರುತ್ತಿದ್ದಾರೆ. ಕಳೆದ 35 ವರ್ಷಗಳಿಂದಲೂ ಒಳ ಮೀಸಲಾತಿಗಾಗಿ ಹೋರಾಟ ನಡೆಯುತ್ತಿದೆ.
ಅಧಿಕಾರದಲ್ಲಿದ್ದಾಗ ಒಳ ಮೀಸಲಾತಿಯನ್ನು ಜಾರಿ ಮಾಡದ ನಮ್ಮ ಜನಾಂಗದವರೆ ಅಧಿಕಾರದಿಂದ ಕೆಳಗಿಳಿದ ಕೂಡಲೆ ಒಳ ಮೀಸಲಾತಿ ಬಗ್ಗೆ ಕೂಗು ಹಾಕುವುದು ಯಾವ ಪುರುಷಾರ್ಥಕ್ಕಾಗಿ ಎಂದು ಪ್ರಶ್ನಿಸಿದರು?
ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಉಡಾಫೆ ಉತ್ತರ ಕೊಡುತ್ತಿದ್ದಾರೆ. ಮಾದಿಗರ ಸಮಸ್ಯೆಗಳೆಂದರೆ ಅವರಿಗೆ ಕಾಲ ಕಸವಾಗಿದೆ. ಒಳ ಮೀಸಲಾತಿ ಜಾರಿಗೊಳಿಸುವಂತೆ ಸುಪ್ರೀಂಕೋರ್ಟ್ ತೀರ್ಪು ನೀಡಿ ಒಂದು ವರ್ಷ ಏಳು ತಿಂಗಳುಗಳಾಗಿದೆ. ರಾಜ್ಯ ಸರ್ಕಾರ ಇನ್ನು ಮೀನಾಮೇಷ ಎಣಿಸುತ್ತಿದೆ.
ಇದನ್ನೂ ಓದಿ: 4ನೇ ದಿನಕ್ಕೆ ಕಾಲಿಟ್ಟ ರೈತರ ಉಪವಾಸ ಸತ್ಯಾಗ್ರಹ | ಭದ್ರೆಗೆ ಅನುದಾನಕ್ಕೆ ಬಿಗಿಪಟ್ಟು
ಜಸ್ಟಿಸ್ ನಾಗಮೋಹನ್ದಾಸ್ ಆಯೋಗದ ವರದಿಯನ್ನು ಸರ್ಕಾರ ಒಪ್ಪಿಕೊಂಡಿದೆ. ಆದರೆ ಒಳ ಮೀಸಲಾತಿ ಜಾರಿಗೆ ತರಲು ಮನಸ್ಸಿಲ್ಲ. ಛಲವಾದಿಗಳು ಒಳ ಮೀಸಲಾತಿಯನ್ನು ವಿರೋಧಿಸುತ್ತಿದ್ದಾರೆ. ಒಳ ಮೀಸಲಾತಿಯನ್ನು ಯಾರು ವಿರೋಧಿಸುತ್ತಾರೋ ಅವರುಗಳೆಲ್ಲಾ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿರೋಧಿಗಳು ಎಂದರು.
ಪ್ರೊ.ಸಿ.ಕೆ.ಮಹೇಶ್ ಮಾತನಾಡಿ, ಮಾದಿಗ ರಾಜಕಾರಣಿಗಳು ಒಳ ಮೀಸಲಾತಿಗೆ ಸಂಬಂಧಿಸಿದಂತೆ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡುತ್ತಿದ್ದಾರೆ. ಒಳ ಮೀಸಲಾತಿಯನ್ನು ಅನುಷ್ಟಾನಕ್ಕೆ ತರಬಾರದೆಂಬುದು ರಾಜಕಾರಣಿಗಳ ಉದ್ದೇಶ.
ಸಚಿವ ಹೆಚ್.ಸಿ.ಮಹದೇವಪ್ಪನವರ ಬಾಯಲ್ಲಿ ಅಂಬೇಡ್ಕರ್ ಇದ್ದಾರೆ. ಒಳಗೆಲ್ಲಾ ಬ್ರಾಹ್ಮಣ್ಯವಿದೆ. ಜ್ಞಾನ ಪ್ರಕಾಶ್ಸ್ವಾಮೀಜಿ ಅಂಬೇಡ್ಕರ್, ಬುದ್ದನಿಗೆ ಅವಮಾನ ಮಾಡುತ್ತಿರುವುದನ್ನು ಖಂಡಿಸುತ್ತೇವೆ ಎಂದರು.
ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್….
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಡಿ.ದುರುಗೇಶ್, ಚಿಕ್ಕಣ್ಣ, ಕೆ.ಕುಮಾರ್, ಸುಧಾಕರ್, ರಾಮುಗೋಸಾಯಿ ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
