ಹಿರಿಯೂರು
ಐಮಂಗಲದಲ್ಲಿ ಗ್ಯಾರಂಟಿ ಯೋಜನೆಗಳ ಸಾರ್ಥಕ ಸಮಾವೇಶ | ಉಚಿತ ಯೋಜನೆಗಳನ್ನು ಹಾಡಿ ಹೊಗಳಿದ ಮಹಿಳೆಯರು

CHITRADURGA NEWS | 18 FEBRUARY 2024
ಚಿತ್ರದುರ್ಗ: ಬಡವರಿಗಾಗಿ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಭರವಸೆ ನೀಡಿದರು.
ಹಿರಿಯೂರು ತಾಲೂಕು ಐಮಂಗಲ ಗ್ರಾಮದ ಬೋರಪ್ಪ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದ ಕುರಿತು ‘ಐಮಂಗಲ ಹೋಬಳಿ ಮಟ್ಟದ ಸಮಾವೇಶ” ಉದ್ಘಾಟಿಸಿ ಮಾತನಾಡಿದರು.

ಇದನ್ನೂ ಓದಿ: ನಿಮ್ಮೂರಲ್ಲಿ ಕುಡಿಯುವ ನೀರಿನ ಸಮಸ್ಯೆಯೇ | ಇಲ್ಲಿದೆ ನೋಡಿ ಸಹಾಯವಾಣಿ
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಮಹಿಳೆಯರಿಗೆ ನೀಡಲಾಗಿದೆ. ಶೇ.98ರಷ್ಟು ಮಹಿಳೆಯರು ಗ್ಯಾರಂಟಿ ಯೋಜನೆಗಳ ಸದುಪಯೋಗ ಪಡೆದಿದ್ದಾರೆ.

ಗ್ಯಾರಂಟಿ ಯೋಜನೆಗಳಿಂದ ಬಡವರು ಸ್ವಾವಲಂಬನೆಯಿಂದ ಸಮರ್ಥವಾಗಿ ಕುಟುಂಬ ಹಾಗೂ ಜೀವನ ನಿರ್ವಹಣೆ ಮಾಡುತ್ತಿದ್ದಾರೆ. ಇನ್ನೂ 5 ವರ್ಷಗಳ ಕಾಲ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ. ಇದರ ಜೊತೆಗೆ ಅಭಿವೃದ್ಧಿ ಕಾರ್ಯಗಳಿಗೂ ಒತ್ತು ನೀಡಲಾಗುವುದು ಎಂದರು.
ಇದನ್ನೂ ಓದಿ: ಮಠಗಳಲ್ಲಿ ಹೋಮ-ಹವನ ನಾಚಿಕೆಗೇಡಿನ ಸಂಗತಿ
ನಮ್ಮ ಸರ್ಕಾರ ಚುನಾವಣೆಗೂ ಮುನ್ನ ಜನರಿಗೆ ನೀಡಿದ ಆಶ್ವಾಸನೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ನುಡಿದಂತೆ ನಡೆದಿದ್ದೇವೆ ಎಂದು ತಿಳಿಸಿದ ಅವರು, ಗ್ಯಾರಂಟಿ ಯೋಜನೆಗಳ ಮುಂದುವರಿಕೆ ಜತೆಗೆ ಅಭಿವೃದ್ಧಿ ಕಾರ್ಯವನ್ನೂ ಮಾಡಲಾಗುವುದು. ಈಚೆಗೆ ಹಿರಿಯೂರು ವಿಧಾನಸಭಾ ಕ್ಷೇತ್ರಕ್ಕೆ ಸುಮಾರು 100 ಕೋಟಿ ಅನುದಾನ ನೀಡಲಾಗಿದೆ. ಅವಶ್ಯಕತೆ ಇರುವ ಕಡೆ ಅಭಿವೃದ್ಧಿಗೆ ಅನುದಾನ ನೀಡಲಾಗುತ್ತದೆ ಎಂದು ಹೇಳಿದರು.
ಹಿರಿಯೂರು ತಹಶೀಲ್ದಾರ್ ರಾಜೇಶ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದೆ. ಹಿರಿಯೂರು ತಾಲ್ಲೂಕಿನಲ್ಲಿ ಅನ್ನಭಾಗ್ಯ ಯೋಜನೆಯಡಿ 65,019 ಕುಟುಂಬಗಳು, ಗೃಹಲಕ್ಷ್ಮೀ ಯೋಜನೆಯಡಿ 66,014 ಫಲಾನುಭವಿಗಳು, ಗೃಹಜ್ಯೋತಿ ಯೋಜನೆಯಡಿ 64,778 ಕುಟುಂಬಗಳು ಪ್ರಯೋಜನ ಪಡೆದಿವೆ. ಶಕ್ತಿ ಯೋಜನೆಯಡಿ ಮಹಿಳೆಯರು ಸರ್ಕಾರದ ಸಾರಿಗೆ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ.
ಇದನ್ನೂ ಓದಿ: ಮೈತ್ರಿ ಅಭ್ಯರ್ಥಿ ಗೆಲುವಿಗೆ ಜೆಡಿಎಸ್ ಕಾರ್ಯಕರ್ತರ ಪಣ
ಹಿರಿಯೂರು ತಾಲ್ಲೂಕಿನಲ್ಲಿ ಯುವನಿಧಿ ಯೋಜನೆಯಡಿ 517ಕ್ಕೂ ಹೆಚ್ಚು ಫಲಾನುಭವಿಗಳು ನೋಂದಣಿಯಾಗಿದ್ದಾರೆ ಎಂದು ಮಾಹಿತಿ ನೀಡಿದ ಅವರು, ತಾಂತ್ರಿಕ ಕಾರಣಗಳಿಂದ ಗ್ಯಾರಂಟಿ ಯೋಜನೆಗಳಿಂದ ಫಲಾನುಭವಿಗಳು ಹೊರಗುಳಿದಿದ್ದು, ಅಂತಹವರು ಅಗತ್ಯ ದಾಖಲಾತಿಗಳನ್ನು ಸಂಬಂಧಪಟ್ಟ ಇಲಾಖೆಗೆ ತಲುಪಿಸಿದರೆ ನಿಯಮಾನುಸಾರ ಕ್ರಮವಹಿಸಿ ಗ್ಯಾರಂಟಿ ಯೋಜನೆಯ ಸೌಲಭ್ಯ ಪಡೆಯಬಹುದಾಗಿದೆ ಎಂದರು.
ಕಾರ್ಯಕ್ರಮಕ್ಕೆ ಆಗಮಿಸಿದ್ದ ಫಲಾನುಭವಿ ಐಮಂಗಲ ಹೋಬಳಿ ಪಾಲವ್ವನಹಳ್ಳಿಯ ಶಾರದಮ್ಮ ತನ್ನ ಅನಿಸಿಕೆ ವ್ಯಕ್ತಪಡಿಸಿ, ವಯಸ್ಸಾದ ಕಾರಣಕ್ಕೆ ಕೂಲಿ ಕೆಲಸಕ್ಕೂ ನನ್ನನ್ನು ಯಾರು ಕರೆಯುತ್ತಿರಲಿಲ್ಲ. ನನ್ನ ಇಬ್ಬರು ಮಕ್ಕಳು ಮೃತಪಟ್ಟಿದ್ದು, ಜಮೀನು ಸಹ ಇಲ್ಲ. ಹಾಗಾಗಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಸಾಕಷ್ಟು ಅನುಕೂಲವಾಗಿದೆ.
ಇದನ್ನೂ ಓದಿ: ಅಡಿಕೆ ಸಿಪ್ಪೆಯನ್ನು ಗೊಬ್ಬರ ಮಾಡುವುದು ಹೇಗೆ ಗೊತ್ತಾ
ಮನೆಯ ಯಜಮಾನಿಗೆ ರೂ.2000 ನೀಡುವ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಔಷಧೋಪಚಾರಕ್ಕೆ ಬಳಸುತ್ತಿದ್ದೇನೆ. ಇದರಿಂದ ಸಾಕಷ್ಟು ಅನುಕೂಲವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಡಿಎಚ್ಓ ಡಾ.ಜಿ.ಪಿ.ರೇಣುಪ್ರಸಾದ್, ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ ಬಸವನಗೌಡ ಪಾಟೀಲ್, ಸಹಾಯಕ ಕಾರ್ಯಪಾಲಕ ಅಭಿಯಂತರ ಅಸ್ಲಾಂಬಾಷಾ, ಬೆಸ್ಕಾಂ ಎಇಇ ಪೀರ್ಸಾಬ್, ತಾಲ್ಲೂಕು ಆರೋಗ್ಯಾಧಿಕಾರಿ ವೆಂಕಟೇಶ್ ಸೇರಿದಂತೆ ಮುಖಂಡರಾದ ಈರಲಿಂಗೇಗೌಡ, ಹೆಚ್.ಮಹಂತೇಶ್, ಕೃಷ್ಣಮೂರ್ತಿ, ತಿಪ್ಪೇಸ್ವಾಮಿ, ಜಯಣ್ಣ, ಟಿ.ಎಲ್.ಬಸವರಾಜಪ್ಪ, ಸಿದ್ದೇಶ್ವರ್, ಷಡಾಕ್ಷರಿ, ಐಮಂಗಲ ಹೋಬಳಿಯ ವಿವಿಧ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಫಲಾನುಭವಿಗಳು ಇದ್ದರು. ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಘವೇಂದ್ರ ಸ್ವಾಗತಿಸಿದರು.
