
CHITRADURGA NEWS | 02 SEPTEMBER 2026
ಚಿತ್ರದುರ್ಗ: ಕಾಳಸಂತೆಯಲ್ಲಿ ಪಡಿತರ ಅಕ್ಕಿ ಮಾರಾಟ ಮಾಡುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಯುವ ಕರ್ನಾಟಕ ವೇದಿಕೆ ಕಾರ್ಯಕರ್ತರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ: ಚಿತ್ರದುರ್ಗದ ನೂತನ ಜಿಲ್ಲಾಧಿಕಾರಿಯಾಗಿ ಎಸ್. ರಮ್ಯ ಅಧಿಕಾರ ಸ್ವೀಕಾರ
ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು, ಕಾಳಸಂತೆಯಲ್ಲಿ ಅಕ್ಕಿ ಮಾರಾಟ ಮಾಡುತ್ತಿರುವವರ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ಉಪ ವಿಭಾಗಾಧಿಕಾರಿ ಕಾಂತರಾಜ್ ಅವರಿಗೆ ಮನವಿ ಸಲ್ಲಿಸಿದರು.
ರಾಜ್ಯ ಸರ್ಕಾರ ಬಡವರು ಹಸಿವಿನಿಂದ ನರಳಬಾರದು ಎಂಬ ಉದ್ದೇಶದಿಂದ ನ್ಯಾಯಬೆಲೆ ಅಂಗಡಿಗಳ ಮೂಲಕ ಉಚಿತವಾಗಿ ಪಡಿತರ ಅಕ್ಕಿ ವಿತರಿಸುತ್ತಿದೆ. ಆದರೆ ಕೆಲವರು ಪಡಿತರ ಅಕ್ಕಿಯನ್ನು ಸಂಗ್ರಹಿಸಿ ಕಾಳಸಂತೆಯಲ್ಲಿ ಮಾರಾಟ ಮಾಡಿ ಅಕ್ರಮವಾಗಿ ಹಣ ಸಂಪಾದಿಸುತ್ತಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿ, ಆಹಾರ ಇಲಾಖೆ ಉಪ ನಿರ್ದೇಶಕರು ಹಾಗೂ ತಹಶೀಲ್ದಾರ್ ಅವರಿಗೆ ಹಲವು ಬಾರಿ ದೂರು ನೀಡಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಪಡಿತರ ಚೀಟಿದಾರರಿಂದ ಕಡಿಮೆ ಬೆಲೆಗೆ ಅಕ್ಕಿ ಖರೀದಿಸುವ ಕಾಳಸಂತೆಕೋರರು ಅದನ್ನು ಹೆಚ್ಚಿನ ಬೆಲೆಗೆ ಹೋಟೆಲ್ಗಳು ಹಾಗೂ ಅಕ್ಕಿ ಮಿಲ್ಗಳಿಗೆ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಸರ್ಕಾರದ ಉದ್ದೇಶಕ್ಕೆ ಧಕ್ಕೆಯಾಗುವುದರ ಜತೆಗೆ ಬಡ ಪಡಿತರ ಚೀಟಿದಾರರಿಗೆ ಅನ್ಯಾಯವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನ್ಯಾಯಬೆಲೆ ಅಂಗಡಿಗಳಲ್ಲಿ ತೂಕದಲ್ಲಿಯೂ ಮೋಸ ನಡೆಯುತ್ತಿದೆ. ಅಲ್ಲದೆ ಪ್ರತಿ ಪಡಿತರ ಚೀಟಿದಾರರಿಂದ ₹20 ಅಕ್ರಮವಾಗಿ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪಗಳಿದ್ದು, ಅಧಿಕಾರಿಗಳು ನ್ಯಾಯಬೆಲೆ ಅಂಗಡಿಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರೆ ಅಕ್ರಮಗಳು ಬೆಳಕಿಗೆ ಬರಲಿವೆ ಎಂದು ಹೇಳಿದರು.
ಇದನ್ನೂ ಓದಿ: ಆಂಧ್ರ DCM ಪವನ್ಕಲ್ಯಾಣ್ ಜನ್ಮ ದಿನಾಚರಣೆ | ಆಡುಮಲ್ಲೇಶ್ವರದಲ್ಲಿ ಪ್ರಾಣಿ ದತ್ತು ಸ್ವೀಕಾರ
ಕಾಳಸಂತೆಯಲ್ಲಿ ಪಡಿತರ ಅಕ್ಕಿ ಸಾಗಾಟ ತಡೆಯಲು ವಿಶೇಷ ತಪಾಸಣಾ ತಂಡ ರಚಿಸಬೇಕು. ನ್ಯಾಯಬೆಲೆ ಅಂಗಡಿಗಳ ಮೇಲೆ ನಿರಂತರ ನಿಗಾ ವಹಿಸಿ ಅಕ್ರಮ ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಯುವ ಕರ್ನಾಟಕ ವೇದಿಕೆ ಜಿಲ್ಲಾಧ್ಯಕ್ಷ ರವಿಕುಮಾರ್ ನಾಯ್ಕ ಎಚ್ಚರಿಸಿದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

