ಮುಖ್ಯ ಸುದ್ದಿ
ಲೋಕಸಭೆ ಚುನಾವಣೆ ಸ್ಪರ್ಧೆಗೆ ಭೋವಿ ಸಮುದಾಯಕ್ಕೆ ಟಿಕೆಟ್ ನೀಡಿ | ಕಾಂಗ್ರೆಸ್ ನಾಯಕರಿಗೆ ಮನವಿ

CHITRADURGA NEWS | 17 FEBRUARY 2024
ಚಿತ್ರದುರ್ಗ: ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಭೋವಿ ಸಮುದಾಯ ಹೆಚ್ಚಾಗಿದೆ. ಆದ್ದರಿಂದ ಸಾಮಾಜಿಕ ನ್ಯಾಯದಡಿ ಕಾಂಗ್ರೆಸ್ನಿಂದ ಭೋವಿ ಸಮುದಾಯಕ್ಕೆ ಈ ಬಾರಿ ಟಿಕೆಟ್ ನೀಡಬೇಕು ಎಂದು ಭೋವಿ ಸಂಘದ ಜಿಲ್ಲಾಧ್ಯಕ್ಷ ತಿಪ್ಪೇಸ್ವಾಮಿ ಒತ್ತಾಯಿಸಿದರು.
ಕ್ಷೇತ್ರದಲ್ಲಿ 2.5 ಲಕ್ಷ ಭೋವಿ ಸಮುದಾಯದ ಮತದಾರರಿದ್ದಾರೆ. 40 ವರ್ಷದಿಂದ ಕಾಂಗ್ರೆಸ್ ಪಕ್ಷ ಸಮುದಾಯವನ್ನು ಗುರುತಿಸುವ ಪ್ರಯತ್ನ ಮಾಡಿಲ್ಲ. ಆದರೂ ಸಹ ಪ್ರತಿ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲುವಿನಲ್ಲಿ ಮುಖ್ಯ ಪಾತ್ರವಹಿಸಿದ್ದೇವೆ. ಈ ಬಾರಿ ಟಿಕೆಟ್ ನೀಡುವ ಮೂಲಕ ಅನ್ಯಾಯವನ್ನು ಸರಿಪಡಿಸಬೇಕು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಟ್ಟ ಕೊಡುಗೆ ಎಷ್ಟು ?

ರಾಜ್ಯದ 5 ಕ್ಷೇತ್ರಗಳು ಪರಿಶಿಷ್ಟ ಜಾತಿಗೆ ಮೀಸಲಾಗಿವೆ. ಇದರಲ್ಲಿ 2 ಕ್ಷೇತ್ರವನ್ನು ಲಂಬಾಣಿ, ಭೋವಿ ಸಮುದಾಯಕ್ಕೆ ಮೀಸಲಿಡಬೇಕು. ಉಳಿದ ಮೂರು ಕ್ಷೇತ್ರಗಳಲ್ಲಿ ಎಡಗೈ, ಬಲಗೈ ಸಮುದಾಯಕ್ಕೆ ಟಿಕೆಟ್ ನೀಡಿ. ಚಿತ್ರದುರ್ಗ ಕ್ಷೇತ್ರದಲ್ಲಿ ಈಗಾಗಲೇ ಎಡಗೈ ಸಮುದಾಯದವರಿಗೆ ಟಿಕೆಟ್ ನೀಡಲಾಗಿದೆ. ಈ ಬಾರಿಯಾದರೂ ನಮಗೆ ಅವಕಾಶ ನೀಡಿ ಎಂದು ಒತ್ತಾಯಿಸಿದರು.
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳಲ್ಲಿ 5 ಜನ ಭೋವಿ ಸಮುದಾಯದವರಿದ್ದಾರೆ. ಅದರಂತೆ ನೇರ್ಲಗುಂಟೆ ರಾಮಪ್ಪ ರವರು ಸ್ಥಳೀಯರಾಗಿದ್ದು ಅವರಿಗೆ ಟಿಕೆಟ್ ನೀಡಬೇಕೆಂದು ಪಕ್ಷದ ಮುಖಂಡರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ: 12 ಪೆಟ್ಟಿಗೆ ದೇವರುಗಳ ಗುಗ್ಗರಿ ಹಬ್ಬ ಮಹೋತ್ಸವ | ಮೂರು ದಿನ ಸಂಭ್ರಮ
ಮುಖಂಡ ಕನಕದಾಸ್ ಮಾತನಾಡಿ, ಭೋವಿ ಸಮುದಾಯದವರಿಗೆ ಟಿಕೆಟ್ ನೀಡುವಂತೆ ಈಗಾಗಲೇ ಕಾಂಗ್ರೆಸ್ ಪಕ್ಷದ ನಾಯಕರಿಗೆ ಮನವಿ ಸಲ್ಲಿಸಲಾಗಿದೆ. ಟಿಕೆಟ್ ನೀಡುವ ವಿಶ್ವಾಸ ನಮಗಿದೆ ಎಂದರು.
ಜಿಪಂ ಮಾಜಿ ಸದಸ್ಯರಾದ ಅನಿಲ್ ಕುಮಾರ್, ತಿಪ್ಪೇಸ್ವಾಮಿ, ಮುಖಂಡರಾದ ಪಿ.ದೇವರಾಜು, ಎಚ್.ಆಂಜನೇಯ ಉಪಸ್ಥಿತರಿದ್ದರು.
