
CHITRADURGA NEWS | 04 JUNE 2026
ಚಿತ್ರದುರ್ಗ: ಭಾರತದಲ್ಲಿ ಪ್ರತಿವರ್ಷ ಸುಮಾರು 13.5 ಲಕ್ಷ ಜನರು ತಂಬಾಕು ಸೇವನೆಯಿಂದ ಸಾವನ್ನಪ್ಪುತ್ತಿದ್ದಾರೆ. ಕರ್ನಾಟಕದಲ್ಲಿಯೂ 15 ವರ್ಷ ಮೇಲ್ಪಟ್ಟ ಯುವಜನತೆ ಅತಿ ಹೆಚ್ಚಾಗಿ ತಂಬಾಕು ವ್ಯಸನಕ್ಕೆ ತುತ್ತಾಗುತ್ತಿರುವುದು ಆತಂಕಕಾರಿ ವಿಚಾರ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎನ್.ಕಾಶೀ ಕಳವಳ ವ್ಯಕ್ತಪಡಿಸಿದರು.
ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆಯಲ್ಲಿ ಪೆಟ್ರೋಲ್, ಡೀಸೆಲ್ ಕೊರತೆ ಇಲ್ಲ | DC ಟಿ.ವೆಂಕಟೇಶ್
ನಗರದ ಬಸಪ್ಪ ಆಸ್ಪತ್ರೆ ಆವರಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ವಿವೇಕಾನಂದ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಈ ವರ್ಷದ ವಿಶ್ವ ತಂಬಾಕು ರಹಿತ ದಿನದ ಘೋಷವಾಕ್ಯವಾದ “ಆಕರ್ಷಣೆಯನ್ನು ಬಹಿರಂಗಪಡಿಸುವುದು – ನಿಕೋಟಿನ್ ಮತ್ತು ತಂಬಾಕು ವ್ಯಸನವನ್ನು ಎದುರಿಸುವುದು” ಎಂದು ತಿಳಿಸಿದ ಅವರು, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮವನ್ನು ಜಿಲ್ಲಾದ್ಯಂತ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲಾಗುವುದು.
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ತಡೆಗಟ್ಟುವುದು, ಶಾಲಾ-ಕಾಲೇಜುಗಳ ಬಳಿ ತಂಬಾಕು ಮಾರಾಟದ ವಿರುದ್ಧ ಕಾರ್ಯಾಚರಣೆ, ವ್ಯಸನಿಗಳಿಗೆ ಆಪ್ತಸಮಾಲೋಚನೆ ಹಾಗೂ ತಂಬಾಕು ಮುಕ್ತ ಹಳ್ಳಿಗಳ ಘೋಷಣೆ ಸೇರಿದಂತೆ ಹಲವು ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.
ಇದನ್ನೂ ಓದಿ: ಡಿಕೆಶಿ ನೂತನ ಸಿಎಂ | ಪಿ.ರಘು ಅಭಿಮಾನಿಗಳಿಂದ ದುರ್ಗದಲ್ಲಿ ಸಂಭ್ರಮಾಚರಣೆ
ಜಿಲ್ಲಾ ತಂಬಾಕು ನಿಯಂತ್ರಣ ಕೋಶವು ಕಳೆದ ವರ್ಷ ಜಿಲ್ಲೆಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, 102 ಶಿಕ್ಷಣ ಸಂಸ್ಥೆಗಳ 16,398 ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿ, 78 ಸಂಸ್ಥೆಗಳನ್ನು ತಂಬಾಕು ಮುಕ್ತಗೊಳಿಸಲಾಗಿದೆ. ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಒಟ್ಟು 92 ಕಾರ್ಯಾಚರಣೆಗಳನ್ನು ನಡೆಸಲಾಗಿದೆ.
ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ 3 ಮತ್ತು ತಹಶೀಲ್ದಾರರ ಅಧ್ಯಕ್ಷತೆಯಲ್ಲಿ 5 ಪ್ರಗತಿ ಪರಿಶೀಲನಾ ಸಭೆಗಳು ನಡೆದಿವೆ. ವಿವಿಧ ಇಲಾಖೆಗಳಿಗೆ 9 ತರಬೇತಿ ಹಾಗೂ ಶಾಲಾ-ಕಾಲೇಜುಗಳಲ್ಲಿ 2609 ಐಇಸಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ತಂಬಾಕು ವ್ಯಸನಿಗಳಿಗೆ 96 ಗುಂಪು ಚರ್ಚೆ ನಡೆಸಲಾಗಿದ್ದು, ಜಿಲ್ಲೆಯ ವಿವಿಧ ಆಸ್ಪತ್ರೆಗಳ ತಂಬಾಕು ವ್ಯಸನ ಮುಕ್ತ ಕೇಂದ್ರಗಳ ಮೂಲಕ 10,700 ವ್ಯಸನಿಗಳಿಗೆ ಕೌನ್ಸಿಲಿಂಗ್ ನೀಡಲಾಗಿದ್ದು, ಇವರಲ್ಲಿ 80 ಜನರು ತಂಬಾಕು ತ್ಯಜಿಸಿದ್ದಾರೆ. ಜಿಲ್ಲೆಯ 4 ಗ್ರಾಮಗಳು, ಎಲ್ಲಾ ಪ್ರವಾಸಿ ತಾಣಗಳು ಹಾಗೂ 5 ಪ್ರಮುಖ ದೇವಸ್ಥಾನಗಳನ್ನು ತಂಬಾಕು ಮುಕ್ತ ವಲಯಗಳೆಂದು ಘೋಷಿಸಲಾಗಿದೆ ಎಂದು ಮಾಹಿತಿ ನೀಡಿದರು.
ನಗರದ ಬಸಪ್ಪ ಆಸ್ಪತ್ರೆಯ ಆವರಣದಿಂದ ಆರಂಭವಾದ ಜಾಗೃತಿ ಜಾಥಾವು ತುರುವನೂರು ರಸ್ತೆ ಮಾರ್ಗವಾಗಿ ರೆಡ್ಡಿ ಕಲ್ಯಾಣ ಮಂಟಪದವರೆಗೆ ಸಾಗಿ, ಸಾರ್ವಜನಿಕರಲ್ಲಿ ತಂಬಾಕು ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಿತು. ನಂತರ ಪುನಃ ಬಸಪ್ಪ ಆಸ್ಪತ್ರೆಯ ಆವರಣದಲ್ಲಿ ಜಾಥಾ ಮುಕ್ತಾಯಗೊಂಡಿತು.
ಇದನ್ನೂ ಓದಿ: ಅಡಿಕೆ ಧಾರಣೆ | 4 ಜೂನ್ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್
ಕಾರ್ಯಕ್ರಮದಲ್ಲಿ ವಿವೇಕಾನಂದ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ಕಾರ್ಯದರ್ಶಿ ಡಾ. ರಂಗಾರೆಡ್ಡಿ, ಪ್ರಾಂಶುಪಾಲೆ ರಿನಿರಾಜನ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣ ನಾಯ್ಕ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಬಿ.ಎಂ.ಪ್ರಭುದೇವ್, ಸಮಾಜ ಕಾರ್ಯಕರ್ತ ಕೆ.ಎಂ. ತಿಪ್ಪೇಸ್ವಾಮಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಮೂಗಪ್ಪ, ದತ್ತಾಂಶ ನಮೂದು ನಿರ್ವಾಹಕಿ ಸಾಗರಿಕ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಕಚೇರಿಯ ಸಿಬ್ಬಂದಿ ಹಾಗೂ ನಸಿರ್ಂಗ್ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಮತ್ತು ಬೋಧಕ ಸಿಬ್ಬಂದಿ ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
