
ಚಿತ್ರದುರ್ಗ ನ್ಯೂಸ್.ಕಾಂ: ಮುರುಘಾ ಮಠದ ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿದ್ದ ವಾರ್ಡನ್ ರಶ್ಮಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.
ಶ್ರೀಗಳ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಮಠದ ವಿದ್ಯಾರ್ಥಿ ನಿಲಯದ ಪಾಲಕಿಯಾಗಿ ಸೇವೆ ಸಲ್ಲಿಸುತ್ತಿದ್ದ ರಶ್ಮಿ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿತ್ತು. ಸದರಿ ಪ್ರಕರಣದಲ್ಲಿ 2ನೇ ಆರೋಪಿಯಾಗಿ ಕಳೆದ ಒಂದೂವರೆ ವರ್ಷದಿಂದ ನ್ಯಾಯಾಂಗ ಬಂಧನದಲ್ಲಿರಿಸಲಾಗಿತ್ತು.
ಇದನ್ನೂ ಓದಿ: ಜೈಲಿನಿಂದ ಹೊರಬಂದ ಮುರುಘಾ ಶರಣರು

ಈ ಕುರಿತು ಎಸ್.ರಶ್ಮಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರಿದ್ದ ಏಕಸದಸ್ಯ ಪೀಠ 2 ಲಕ್ಷ ರೂ. ವೈಯಕ್ತಿಕ ಬಾಂಡ್ ಹಾಗೂ ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತಾ ಖಾತರಿ ನೀಡಬೇಕು. ಸಾಕ್ಷ್ಯ ನಾಶಕ್ಕೆ ಯತ್ನಿಸಬಾರದು. ನ್ಯಾಯಾಲಯದ ವಿಚಾರಣೆಗೆ ಹಾಜರಾಗಬೇಕು ಮತ್ತು ಸಹಕರಿಸಬೇಕು ಎಂಬ ಷರತ್ತುಗಳನ್ನು ವಿಧಿಸಿ ಗುರುವಾರ ಜಾಮೀನು ಮಂಜೂರು ಮಾಡಿದೆ.
ಶರಣರ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿದ್ದ ಮಠದ ವ್ಯವಸ್ಥಾಪಕ ಪರಮಶಿವಯ್ಯ ಅವರಿಗೆ ಮೊದಲು ಜಾಮೀನು ಮಂಜೂರಾಗಿತ್ತು. ಆನಂತರ ಇತ್ತೀಚೆಗಷ್ಟೇ ಮೊದಲನೇ ಆರೋಪಿಯಾಗಿದ್ದ ಶ್ರೀ ಶಿವಮೂರ್ತಿ ಮುರುಘಾ ಶರಣರಿಗೆ ಜಾಮೀನು ಸಿಕ್ಕಿತ್ತು. ಈಗ 2ನೇ ಆರೋಪಿ ವಾರ್ಡನ್ ಎಸ್.ರಶ್ಮಿ ಅವರಿಗೆ ಜಾಮೀನು ಮಂಜೂರಾಗಿದೆ.
ಏನಿದು ಮುರುಘಾ ಶರಣರ ಮೇಲಿನ ಪೋಕ್ಸೋ:
ಮುರುಘಾ ಶರಣರು ನಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಇಬ್ಬರು ಬಾಲಕಿಯರು ಮೈಸೂರಿನ ಒಡನಾಡಿ ಸಂಸ್ಥೆಯ ಮೂಲಕ ನಜರಾಬಾದ್ ಪೊಲೀಸ್ ಠಾಣೆಯಲ್ಲಿ 2022 ಆಗಸ್ಟ್ ತಿಂಗಳಲ್ಲಿ ದೂರು ದಾಖಲಿಸಿದ್ದರು.
ಆ ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ವರ್ಗಾಯಿಸಲಾಗಿತ್ತು. ಇಲ್ಲಿ ವಿಚಾರಣೆ ನಡೆಸಿದ ತನಿಖಾಧಿಕಾರಿ ಡಿವೈಎಸ್ಪಿ ಅನೀಲ್ಕುಮಾರ್ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ್ದರು.
ಚಾರ್ಜ್ಶೀಟ್ನಲ್ಲಿ ಬಾಲಕಿಯರು, ಶ್ರೀಗಳು ನಮ್ಮನ್ನು ಖಾಸಗಿ ಕೊಠಡಿಗೆ ಕರೆಯಿಸಿಕೊಳ್ಳುತ್ತಿದ್ದರು. ವಾರ್ಡನ್ ಎಸ್.ರಶ್ಮಿ ಇದಕ್ಕೆ ಸಹಕಾರ ನೀಡುತ್ತಿದ್ದರು ಎಂದು ಆರೋಪಿಸಿದ್ದರು.
ಈ ಹಿನ್ನೆಲೆಯಲ್ಲಿ ಐಪಿಸಿ 1860 ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ – 2021(ಪೋಕ್ಸೋ) ಅಡಿಯಲ್ಲಿ ಪ್ರಕರಣ ದಾಖಲಿಸಿ 2022 ಸೆಪ್ಟಂಬರ್ 1 ರಂದು ಬಂಧನವಾಗಿತ್ತು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
