CHITRADURGA NEWS | 02 December 2025
ಚಿತ್ರದುರ್ಗ: ಭಾರತ ಕಮ್ಯುನಿಸ್ಟ್ ಪಕ್ಷದ ಶತಮಾನೋತ್ಸವ ಸಂಭ್ರಮದ ಅಂಗವಾಗಿ ಹೊರಟಿರುವ ಜಾಥ ಮಂಗಳವಾರ ಚಿತ್ರದುರ್ಗಕ್ಕೆ ಆಗಮಿಸಿತು.
ಇದನ್ನೂ ಓದಿ: ಕ್ಯಾಂಪಸ್ ಸಂದರ್ಶನದಲ್ಲಿ SJMIT 18 ವಿದ್ಯಾರ್ಥಿಗಳ ಆಯ್ಕೆ
ಈ ವೇಳೆ ಸಿ.ಪಿ.ಐ. ರಾಜ್ಯ ಕಾರ್ಯದರ್ಶಿ ಸಾ.ತಿ.ಸುಂದರೇಶ್ ಮಾತನಾಡಿ, ಧರ್ಮ ಜಾತಿ ಆಧಾರದ ಮೇಲೆ ದೇಶವನ್ನು ವಿಭಜಿಸುತ್ತಿರುವ ಬಿಜೆಪಿ, ಆರ್.ಎಸ್.ಎಸ್. ಕೈಗೆ ಅಧಿಕಾರ ಕೊಡಬಾರದು. ಅದಕ್ಕಾಗಿ 24 ದಿನಗಳ ಕಾಲ ರಾಜ್ಯದ ಮೂಲೆ ಮೂಲೆಗೆ ನಮ್ಮ ಜಾಥ ಸಂಚರಿಸಲಿದೆ.
ನೂರು ವರ್ಷಗಳ ಹಿಂದೆ ಸಿಪಿಐ. ಉದಯವಾದಾಗ ದೇಶ ಸಂಕಷ್ಟದಲ್ಲಿತ್ತು. ಆಗ ನಮ್ಮ ನಾಯಕರುಗಳು ಬ್ರಿಟೀಷರ ವಿರುದ್ದ ಹೋರಾಡಿ ಅನೇಕರು ಜೈಲು ಸೇರಿ ಪ್ರಾಣ ತ್ಯಾಗ ಮಾಡಿದ ಇತಿಹಾಸವಿದೆ. ಈಗ ಮತ್ತೆ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಬೇಕಿದೆ. ದೇಶದ ಸಂಪತ್ತನ್ನು ಉದ್ಯಮಿ, ಬಂಡವಾಳಶಾಹಿಗಳ ಕೈಗೆ ಕೊಡಲು ಹೊರಟಿರುವ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವುದು ನಮ್ಮ ಜಾಥ ಉದ್ದೇಶ ಎಂದರು.
ಗಾಂಧಿಜಿಯನ್ನು ಕೊಂದ ಆರ್.ಎಸ್.ಎಸ್.ನವರು. ಬ್ರಿಟೀಷರ ಪರವಾಗಿದ್ದರು. ನಾಡಿನ ಬಹುತ್ವ, ಹಿಂದೂ-ಮುಸಲ್ಮಾನರ ಐಕ್ಯತೆಯನ್ನು ಉಳಿಸಬೇಕಿದೆ. ರೈತರು, ಕಾರ್ಮಿಕರು, ಮಹಿಳೆಯರು, ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ಶೋಷಣೆ ನಿಲ್ಲಬೇಕು. ಸೌಜನ್ಯಾಳನ್ನು ಕೊಂದವರಿಗೆ ಶಿಕ್ಷೆಯಾಗಬೇಕು. ಸಮಾನತೆ ನಮ್ಮ ಕನಸು.
ಇದನ್ನೂ ಓದಿ: ಇಂದಿನ ಅಡಿಕೆ ಬೆಲೆ | ಡಿಸೆಂಬರ್ 2 | ಯಾವ ಅಡಿಕೆ ರೇಟ್ ಎಷ್ಟು ?
ಪ್ರತಿ ದಲಿತ ಕಾಲೋನಿಗಳು ಸ್ಲಂಗಳಾಗುತ್ತಿವೆ. ಸೂರಿಗಾಗಿ ಸಮರ ನಮ್ಮ ಹೋರಾಟ. ಮನೆಗಳನ್ನು ನೀಡುವ ಬದಲು ಬಡವರಿಗೆ ನಿವೇಶನಗಳನ್ನು ಕೊಡಿ. ಆಶ್ರಯ ಯೋಜನೆ ಜಾರಿಗೆ ತಂದವರು ಮುಖ್ಯಮಂತ್ರಿಯಾಗಿದ್ದ ಎಸ್.ಬಂಗಾರಪ್ಪನವರು. ಕೇಂದ್ರದಲ್ಲಿರುವ ಜನ ವಿರೋಧಿ ಸರ್ಕಾರ ತೊಲಗಿಸಿ ಬಡವರಿಗೆ ಸೂರು ಒದಗಿಸುವುದು ನಮ್ಮ ಆಶಯ ಎಂದು ತಿಳಿಸಿದರು.
ಸಿಪಿಐ ಜಿಲ್ಲಾ ಕಾರ್ಯದರ್ಶಿ ಕಾಂ.ಜಿ.ಸಿ.ಸುರೇಶ್ಬಾಬು ಮಾತನಾಡಿ, ಕಮ್ಯುನಿಸ್ಟ್, ಕಾಂಗ್ರೆಸ್, ಮುಸ್ಲಿಂ ಲೀಗ್ ಬಿಟ್ಟರೆ ಬೇರೆ ಯಾರು ಬ್ರಿಟೀಷರ ವಿರುದ್ದ ಹೋರಾಡಲಿಲ್ಲ. ಕೋಮುಗಲಭೆ, ಸಂಘರ್ಷ ಇವುಗಳೆ ಬಿಜೆಪಿ.ಯ ನೀತಿಗಳು, 1925 ರಲ್ಲಿ ಕಾರ್ಮಿಕರ ಪರವಾಗಿ ಕಾನೂನು ಜಾರಿಗೆ ಬರುವಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷದ ಬಹುದೊಡ್ಡ ಕೊಡುಗೆಯಿದೆ. ಆರ್.ಎಸ್.ಎಸ್. ಕೂಡ ನೂರು ವರ್ಷಗಳನ್ನು ಪೂರೈಸಿದೆ ಎಂದು ಸಂಭ್ರಮಾಚರಣೆಯನ್ನು ಆಚರಿಸಿತು. ಆದರೆ ದೇಶದ ಸ್ವಾತಂತ್ರ್ಯಕ್ಕಾಗಿ ಇವರ ಹೋರಾಟ ಶೂನ್ಯ ಎಂದು ಟೀಕಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್ಪೀರ್ ಮಾತನಾಡುತ್ತ ಕಾಂಗ್ರೆಸ್, ಕಮ್ಯುನಿಸ್ಟ್ ಪಕ್ಷದ ಉದ್ದೇಶ ಒಂದೆ. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಅನೇಕ ಹಿರಿಯರು ತ್ಯಾಗ ಬಲಿದಾನಗಳನ್ನು ಸಮರ್ಪಿಸಿದ್ದಾರೆ. ಊಟ, ವಸತಿ, ಬಟ್ಟೆಗಾಗಿ ಹೋರಾಡಿದವರಲ್ಲಿ ಕಮ್ಯುನಿಸ್ಟ್ ಮುಂಚೂಣಿಯಲ್ಲಿದೆ. ಡಾ.ಬಿ.ಆರ್.ಅಂಬೇಡ್ಕರ್ ರಚಿಸಿರುವ ಸಂವಿಧಾನಕ್ಕೆ ಧಕ್ಕೆ ಬಂದಿರುವುದರಿಂದ ಉಳಿಸಿಕೊಳ್ಳಲು ಮತ್ತೆ ಹೋರಾಟ ಮಾಡಬೇಕಿದೆ. ಎಲ್ಲರಿಗೂ ಸಮಾನ ಹಕ್ಕು ಸಿಗಬೇಕು. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚುನಾವಣೆ ಪೂರ್ವದಲ್ಲಿ ಘೋಷಿಸಿದಂತೆ ಪಂಚ ಗ್ಯಾರೆಂಟಿಗಳನ್ನು ಜಾರಿಗೆ ತಂದಿರುವುದರಿಂದ ಬಡವರಿಗೆ ಅನುಕೂಲವಾಗಿ ಎಂದರು.
ಇದನ್ನೂ ಓದಿ: ಟ್ರ್ಯಾಕ್ಟರ್ -ಕಾರ್ ಡಿಕ್ಕಿ | ಸ್ಥಳದಲ್ಲಿ ಓರ್ವ ಸಾವು
ಸಿಪಿಐ ರಾಜ್ಯ ಮಂಡಳಿ ಸಹ ಕಾರ್ಯದರ್ಶಿ ಹೆಚ್.ಎಂ.ಸಂತೋಷ್, ಸರ್ವೋದಯ ಕರ್ನಾಟಕ ಪಕ್ಷದ ಜಿಲ್ಲಾಧ್ಯಕ್ಷ ಜೆ.ಯಾದವರೆಡ್ಡಿ ಮಾತನಾಡಿದರು.
ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಂ.ನಿಶಾನಿ ಜಯಣ್ಣ, ಕಮ್ಯುನಿಸ್ಟ್ ಪಕ್ಷದ ಉಮಾಪತಿ, ಕುಮಾರಸ್ವಾಮಿ, ಹನುಮಂತಪ್ಪ, ಜನಾರ್ಧನ್, ವೇದಮ್ಮ, ಭಾಗ್ಯಮ್ಮ, ಅಮಿನಾಭಿ, ಪ್ರಸನ್ನಕುಮಾರ್, ಈ.ಸತ್ಯಕೀರ್ತಿ, ಜಿಲ್ಲಾ ಗ್ಯಾರೆಂಟಿ ಅನುಷ್ಟಾನಗಳ ಸಮಿತಿ ಅಧ್ಯಕ್ಷ ಆರ್.ಶಿವಣ್ಣ, ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ ಇನ್ನು ಮುಂತಾದವರು ವೇದಿಕೆಯಲ್ಲಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
