
CHITRADURGA NEWS | 20 DECEMBER 2025
ಚಿತ್ರದುರ್ಗ: ಮಕ್ಕಳು ಶಿಕ್ಷಣದಿಂದ ವಂಚಿತರಾದರೆ ದೇಶದ ಅಭಿವೃದ್ಧಿಗೆ ಅಡಚಣೆಯಾಗುತ್ತದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ಹೇಳಿದರು.
ಇದನ್ನೂ ಓದಿ: ಜಿಲ್ಲಾ ಜಂಗಮ ಸಮಾಜದಿಂದ 2026ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ

ಚಿತ್ರದುರ್ಗ ತಾಲ್ಲೂಕು ಸಿರಿಗೆರೆಯ ಗುರುಶಾಂತೇಶ್ವರ ದಾಸೋಹ ಸಭಾಂಗಣದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರುಗಳ ಸಂಯುಕ್ತಾಶ್ರಯದಲ್ಲಿ “ಮಕ್ಕಳೊಂದಿಗೆ ಅಹವಾಲು ಸ್ವೀಕಾರ ಕಾರ್ಯಕ್ರಮ” ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳು ಕನಿಷ್ಟ 18 ವರ್ಷದವರೆಗೆ ಶಿಕ್ಷಣ ಪಡೆಯುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು. ಇಂದಿನ ಮಕ್ಕಳೇ ಇಂದಿನ ಪ್ರಜೆಗಳು ಎಂದು ತಿಳಿಸಿದ ಅವರು, ಜಿಲ್ಲೆಯ ಎಲ್ಲಾ ಮುಖ್ಯೋಪಾಧ್ಯಾಯರು ತಮ್ಮ ಚೇಂಬರ್ನಲ್ಲಿ ಇಂದಿನ ಮಕ್ಕಳೇ ಇಂದಿನ ಪ್ರಜೆಗಳು ಎಂಬುದಾಗಿ ಮಕ್ಕಳಿಗೆ ಕಾಣುವಂತೆ ನಾಮಫಲಕದಲ್ಲಿ ನಮೂದಿಸುವಂತೆ ಸೂಚಿಸಿದರು.
ಮಕ್ಕಳ ಕುಂದು ಕೊರತೆ, ಸಮಸ್ಯೆ ಆಲಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಬಾಲಕಿಯರು ಅಸುರಕ್ಷಿತ ಸ್ಪರ್ಶ, ಲೈಂಗಿಕ ದೌರ್ಜನ್ಯ ಯಾವುದೇ ಸಂದರ್ಭದಲ್ಲಿ ನಂಬಿಕಸ್ಥ ವ್ಯಕ್ತಿಯೊಂದಿಗೆ ಆತ್ಮೀಯರು ಅಥವಾ ಶಿಕ್ಷಕರೊಂದಿಗೆ ವಿಷಯ ಹಂಚಿಕೆ ಮಾಡಿಕೊಳ್ಳಬೇಕು. ಇಲ್ಲವೇ 1098ಕ್ಕೆ ಕರೆ ಮಾಡಬಹುದು. ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ಕರೆ ಮಾಡಿದರೆ ಕರೆ ಮಾಡಿದವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದರು.
ಇದನ್ನೂ ಓದಿ: ಕೋಟೆನಾಡಿನಲ್ಲಿ ಡಿ.21 ರಂದು ರನ್ ದುರ್ಗ ರನ್ ಸ್ಪರ್ಧೆ | ಭಾಗವಹಿಸಿ ಬಹುಮಾನ ಗೆಲ್ಲಿ
ಅಹವಾಲು ಸಂವಾದ ಕಾರ್ಯಕ್ರಮದಲ್ಲಿ ಶಾಲೆಗಳಲ್ಲಿ ಶೌಚಾಲಯ, ಶಾಲೆಗೆ ಬರಲು ಬಸ್ಸಿನ ಸೌಕರ್ಯ ಕೊರತೆ, ಶಾಲಾ ಕಟ್ಟಡ ಇಲ್ಲದಿರುವುದು, ಮಕ್ಕಳ ಮೇಲೆ ಆಗುವ ಲೈಂಗಿಕ ದೌರ್ಜನ್ಯ, ರಜಾ ದಿನಗಳಂದು ಶಾಲಾ ಆವರಣದಲ್ಲಿ ಅಪರಿಚಿತರು ಮದ್ಯಪಾನ, ಧೂಮಪಾನ ಗುಟ್ಕಾ ಸೇವನೆ ಮಾಡಿ ಉಗುಳುವುದು, ಶಾಲಾ ಶಿಕ್ಷಕರ ಕೊರತೆ, ಶಾಲೆಯಿಂದ ಮನೆಗೆ ಹೋಗುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಚುಡಾಯಿಸುವ ಇನ್ನಿತರ ಅನೇಕ ಸಮಸ್ಯೆಗಳನ್ನು ಮಕ್ಕಳು ಅಹವಾಲು ಮುಖಾಂತರ ಮಾಹಿತಿ ನೀಡಿದರು.
ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ವೈ.ರವಿಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಗಿರಿಜಾ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಓ.ಪರಮೇಶ್ವರಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪುಷ್ಪ ಲತಾ ಬಾವಿಮಠ, ತಾಲೂಕಾ ಆರೋಗ್ಯ ಅಧಿಕಾರಿ ಬಿ.ವಿ.ಗಿರೀಶ್, ಪೊಲೀಸ್ ವೃತ್ತ ನಿರೀಕ್ಷಕ ಪಿ ಪ್ರಸಾದ್, ಕಾರ್ಮಿಕ ನಿರೀಕ್ಷಕ ಪಿ.ಭೀಮೇಶ್, ಪಿಡಿಒ ಆರ್.ಉಮಾ ಅವರು ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಕ್ಕಳಿಂದ ಅಹವಾಲು ಪಡೆಯುವ ಮುಖಾಂತರ ಸೂಕ್ತ ಉತ್ತರ ನೀಡಿ, ಇನ್ನಿತರ ಅಹವಾಲು ಬಗೆಹರಿಸಲು ಮೇಲಾಧಿಕಾರಿಗಳ ಗಮನಕ್ಕೆ ತಂದು ಕ್ರಮವಹಿಸುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಗೋವಿಂದ ರಾಜ್, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ, ಸಂಪನ್ಮೂಲ ವ್ಯಕ್ತಿ ಆಕಾಶವಾಣಿಯ ಡಾ.ನವೀನ್ ಮಸ್ಕಲ್, ಸೇರಿದಂತೆ ಸಿರಿಗೆರೆ ಸುತ್ತಮುತ್ತಲಿನ ಶಾಲೆಗಳ ವಿದ್ಯಾರ್ಥಿಗಳು, ಎಸ್ಡಿಎಂಸಿ ಪದಾಧಿಕಾರಿಗಳು, ಪೋಷಕರು, ಶಾಲಾ ಶಿಕ್ಷಕ ವೃಂದದವರು ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
