CHITRADURGA NEWS | 11 SEPTEMBER 2026
ಚಿತ್ರದುರ್ಗ: ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.
ಇದನ್ನೂ ಓದಿ: ಗೌರಿ-ಗಣೇಶ ಹಬ್ಬ | ಶಾಂತಿ-ಸುವ್ಯವಸ್ಥೆಗೆ ಜಿಲ್ಲಾಡಳಿತ ಕಟ್ಟೆಚ್ಚರ
ನಗರದ ಕಾಂಗ್ರೆಸ್ ಕಚೇರಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಯವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು.
ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ವರ್ಗಗಳ ವಿಭಾಗದ ಅಧ್ಯಕ್ಷ ಬಿ.ಮಂಜುನಾಥ್ ಮಾತನಾಡಿ, ಕಾಂಗ್ರೆಸ್ಗೆ ಶಕ್ತಿಯಾಗಿರುವ ಸತೀಶ್ ಜಾರಕಿಹೊಳಿ, ಅವರ ಪುತ್ರಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹಾಗೂ ಸಂಬಂಧಿಕರ ನಿವಾಸಗಳ ಮೇಲೆ ಇಡಿ ದಾಳಿ ನಡೆಸುವ ಮೂಲಕ ಅವರ ಆತ್ಮಸ್ಥೈರ್ಯ ಕುಗ್ಗಿಸುವ ಕುತಂತ್ರ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.
ಬಿಜೆಪಿ ತನ್ನ ಪಕ್ಷದಲ್ಲಿರುವ ಭ್ರಷ್ಟರ ವಿರುದ್ಧ ಮೊದಲು ಇಡಿ ದಾಳಿ ನಡೆಸಲಿ. ಕಾಂಗ್ರೆಸ್ ನಾಯಕರನ್ನೇ ಗುರಿಯಾಗಿಸಿಕೊಂಡು ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು. ಇಡಿ ಹಾಗೂ ಸಿಬಿಐ ಕೇಂದ್ರ ಸರ್ಕಾರದ ಕೈಗೊಂಬೆಗಳಾಗಿವೆ ಎಂದು ಆರೋಪಿಸಿದ ಅವರು, ಸತೀಶ್ ಜಾರಕಿಹೊಳಿ ಅವರ ಮೇಲೆ ಪದೇಪದೆ ದಾಳಿ ನಡೆಸಿದರೆ ಕಾಂಗ್ರೆಸ್ ಸುಮ್ಮನಿರುವುದಿಲ್ಲ. ಅಗತ್ಯವಿದ್ದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 10 | ಹತ್ತಿ ರೇಟ್…
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್ಪೀರ್ ಮಾತನಾಡಿ, ಸತೀಶ್ ಜಾರಕಿಹೊಳಿ ರಾಜಕೀಯದ ಜೊತೆಗೆ ಉದ್ಯಮದಲ್ಲಿಯೂ ತೊಡಗಿಸಿಕೊಂಡು ಆರ್ಥಿಕವಾಗಿ ಬೆಳೆದಿದ್ದಾರೆ. ಇದನ್ನು ಬಿಜೆಪಿ ಮೊದಲು ಅರ್ಥಮಾಡಿಕೊಳ್ಳಬೇಕು. ಪ್ರಧಾನಿ ಮೋದಿ ಕೇರ್ ಫಂಡ್ಗೆ ಸಂಬಂಧಿಸಿದಂತೆ ಆರೋಪಗಳು ಕೇಳಿಬಂದಿದ್ದರೂ ತನಿಖೆ ಏಕೆ ನಡೆಯುತ್ತಿಲ್ಲ ಎಂದು ಪ್ರಶ್ನಿಸಿದರು.
ರಾಜ್ಯಾದ್ಯಂತ ಕಾಂಗ್ರೆಸ್ ವಿರುದ್ಧ ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಗಳಿಗೆ ಹಣ ಎಲ್ಲಿಂದ ಬರುತ್ತಿದೆ ಎಂಬುದನ್ನು ಬಿಜೆಪಿ ಸ್ಪಷ್ಟಪಡಿಸಲಿ ಎಂದು ಸವಾಲು ಹಾಕಿದ ಅವರು, ಸತೀಶ್ ಜಾರಕಿಹೊಳಿ ಹಾಗೂ ಪ್ರಿಯಾಂಕಾ ಜಾರಕಿಹೊಳಿ ಸೇರಿದಂತೆ ಕಾಂಗ್ರೆಸ್ ನಾಯಕರ ಮೇಲೆ ದಾಳಿ ನಡೆಸುವ ಬದಲು ಬಿಜೆಪಿ ತನ್ನ ಪಕ್ಷದಲ್ಲಿರುವ ಭ್ರಷ್ಟರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದರು.
ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ ಮಾತನಾಡಿ, ರಾಜಕೀಯದಲ್ಲಿ ಎತ್ತರಕ್ಕೆ ಬೆಳೆಯುತ್ತಿರುವ ಸತೀಶ್ ಜಾರಕಿಹೊಳಿ ಅವರನ್ನು ಕುಗ್ಗಿಸುವ ಉದ್ದೇಶದಿಂದ ಇಡಿ ದಾಳಿ ನಡೆಸಲಾಗುತ್ತಿದೆ. ಬಿಜೆಪಿ ತನ್ನ ಪಕ್ಷದಲ್ಲಿರುವ ಭ್ರಷ್ಟರನ್ನು ರಕ್ಷಿಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.
ಇದನ್ನೂ ಓದಿ: ಸಹಾಯಧನ, ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಕಾಂಗ್ರೆಸ್ ನಾಯಕರ ಮೇಲೆ ಪದೇಪದೆ ದಾಳಿ ನಡೆಸಿದರೆ ಮುಂದಿನ ಚುನಾವಣೆಯಲ್ಲಿ ರಾಜ್ಯದ ಜನರು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು.
ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್ ಮಾತನಾಡಿ, ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ಕರ್ನಾಟಕದ ಪ್ರಬಲ ನಾಯಕರನ್ನು ಇಡಿ ದಾಳಿಯ ಮೂಲಕ ಮಾನಸಿಕವಾಗಿ ಕುಗ್ಗಿಸುವ ಪ್ರಯತ್ನ ನಡೆಯುತ್ತಿದೆ. ಬಿಜೆಪಿ ಪಕ್ಷದಲ್ಲಿಯೇ ಸಾಕಷ್ಟು ಭ್ರಷ್ಟರಿದ್ದು, ಅಂತಹವರ ವಿರುದ್ಧ ಮೊದಲು ಇಡಿ ದಾಳಿ ನಡೆಯಲಿ ಎಂದು ಆಗ್ರಹಿಸಿದರು.
ಸತೀಶ್ ಜಾರಕಿಹೊಳಿ ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಮಾನಸಿಕವಾಗಿ ಕುಗ್ಗಿಸಲು ಬಿಜೆಪಿ ನಡೆಸುತ್ತಿರುವ ಪ್ರಯತ್ನ ಫಲಿಸುವುದಿಲ್ಲ ಎಂದು ಟೀಕಿಸಿದರು.
ಇದನ್ನೂ ಓದಿ: ಯಂಗ್ ಇಂಡಿಯಾ ಸ್ಪೋಟ್ರ್ಸ್ ಫೆಲೋಷಿಪ್ಗೆ ಅರ್ಜಿ ಆಹ್ವಾನ
ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಹಿರಿಯ ಉಪಾಧ್ಯಕ್ಷ ಹಾಗೂ ವಕ್ತಾರ ಜಿ.ಎಸ್.ಕುಮಾರ್ಗೌಡ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್ಕುಮಾರ್, ಡಿ.ಎನ್.ಮೈಲಾರಪ್ಪ, ಜಿ.ವಿ.ಮಧುಗೌಡ, ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್, ಕಾರ್ಮಿಕ ವಿಭಾಗದ ಅಧ್ಯಕ್ಷ ಸೈಯದ್ ಮೊಹಿದ್ದೀನ್ ಚೋಟು, ಬಸವರಾಜ್ ಬಚ್ಚಬೋರನಹಟ್ಟಿ, ಯೂತ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಧುಪಾಲೆಗೌಡ, ಅಬ್ದುಲ್ಲಾ, ಪೈಲೆಟ್ ನಾಗರಾಜ್, ಶಶಿಕಿರಣ್, ಚಾಂದ್ಪೀರ್, ಭರಮಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್, ಚಿತ್ರದುರ್ಗ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಕಾಶ್, ತಿಪ್ಪೇಸ್ವಾಮಿ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಆರ್.ಶಿವಣ್ಣ, ನೇತ್ರಾವತಿ, ಇಂದಿರಾ, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನಿರಾ ಎ.ಮಕಾಂದಾರ್, ಮರುಳಾರಾಧ್ಯ ಸೇರಿದಂತೆ ವಿವಿಧ ವಿಭಾಗಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

