
CHITRADURGA NEWS | 26 FEBRUARY 2026
ಚಿತ್ರದುರ್ಗ: ದಾವಣಗೆರೆ-ಚಿತ್ರದುರ್ಗ ನಡುವಿನ ನೇರ ರೈಲ್ವೇ ಮಾರ್ಗ ಕಾಮಗಾರಿ 2027ರ ಜೂನ್ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ. ಇದರ ಜೊತೆಗೆ 2027ರ ಡಿಸೆಂಬರ್ ಅಂತ್ಯದ ವೇಳೆಗೆ ದಾವಣಗೆರೆ-ಚಿತ್ರದುರ್ಗ-ತುಮಕೂರು, ರಾಯದುರ್ಗ-ತುಮಕೂರು, ಗದಗ-ವಾಡಿ ಸೇರಿದಂತೆ ಹಲವು ರೈಲ್ವೆ ಮಾರ್ಗಗಳನ್ನು ಪೂರ್ಣಗೊಳಿಸಿ ಜನರ ಸೇವೆಗೆ ಅನುವು ಮಾಡಿಕೊಡಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.

ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ಗುರುವಾರ ಚಿತ್ರದುರ್ಗ ತಾಲ್ಲೂಕಿನ ಭರಮಸಾಗರ ಹೋಬಳಿಯ ಹಂಪನೂರು ಗ್ರಾಮದ ಬಳಿ ನೂತನ ರೈಲ್ವೆ ಕಾಮಗಾರಿಗಳ ಪ್ರಗತಿಯನ್ನು ವೀಕ್ಷಿಸಿದ ಬಳಿಕ ಕೇಂದ್ರ ಸಚಿವ ವಿ.ಸೋಮಣ್ಣ ಮಾಧ್ಯಮದವರೊಂದಿಗೆ ಮಾತನಾಡಿದರು.
ಜಿಲ್ಲೆಯಲ್ಲಿ ಈ ನೂತನ ರೈಲ್ವೆ ಯೋಜನೆಯ ಭೌತಿಕ ಕಾಮಗಾರಿ ಪ್ರಗತಿ ನಿರೀಕ್ಷಿತ ಮಟ್ಟದಲ್ಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಇಲ್ಲಿಯವರೆಗೆ ಜಿಲ್ಲೆಯಲ್ಲಿ ಕೇವಲ 8-9% ರಷ್ಟು ಮಾತ್ರ ಕೆಲಸವಾಗಿದೆ. 2027ರ ಜನವರಿ ವೇಳೆಗೆ ಭರಮಸಾಗರ ವರೆಗಿನ ಹಾಗೂ ಜೂನ್ ವೇಳೆಗೆ ಚಿತ್ರದುರ್ಗದ ವರೆಗಿನ ರೈಲ್ವೆ ಮಾರ್ಗದ ಕಾಮಗಾರಿ ಪೂರ್ಣಗೊಳಿಸಿ, ರೈಲು ಸಂಚಾರಕ್ಕೆ ಮುಕ್ತಗೊಳಿಸುವ ಗುರಿ ಹೊಂದಲಾಗಿದೆ.
ತುಮಕೂರು-ದಾವಣಗೆರೆ ನೇರ ರೈಲ್ವೆ ಮಾರ್ಗ ಯೋಜನೆ ಈ ಭಾಗದ ಜನರ ಬಹುಕಾಲದ ಕನಸು, ಈ ಮಹತ್ವಾಕಾಂಕ್ಷೆಯ ಯೋಜನೆಯಿಂದ ದಾವಣಗೆರೆ ಮತ್ತು ಬೆಂಗಳೂರು ನಡುವಿನ ಪ್ರಯಾಣದ ದೂರ ಸುಮಾರು 80 ಕಿಲೋಮೀಟರ್ಗಳಷ್ಟು ಕಡಿಮೆಯಾಗಲಿದ್ದು, ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಭಾಗದ ಜನರ ದಶಕಗಳ ಬೇಡಿಕೆಯಾಗಿದ್ದ ಈ ಯೋಜನೆಗೆ ರಾಜ್ಯ ಸರ್ಕಾರವು ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಸಂಪೂರ್ಣ ಸಹಕಾರ ನೀಡುತ್ತಿದೆ.
ಇದನ್ನೂ ಓದಿ: ಫೆ.28 ರಿಂದ ದ್ವಿತೀಯ PU ಪರೀಕ್ಷೆ-1 | 14,281 ವಿದ್ಯಾರ್ಥಿಗಳು, 26 ಪರೀಕ್ಷಾ ಕೇಂದ್ರಗಳು
ಚಿತ್ರದುರ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಹಳಿ ನಿರ್ಮಾಣ ಮತ್ತು ಇತರ ತಾಂತ್ರಿಕ ಕೆಲಸಗಳ ವೇಗದ ಬಗ್ಗೆ ಸಚಿವರು ತೃಪ್ತಿ ವ್ಯಕ್ತಪಡಿಸಿದರು. ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡುವಂತೆ ಎಂಜಿನಿಯರ್ಗಳಿಗೆ ಸೂಚಿಸಿದ ಅವರು, ಈ ಮಾರ್ಗವು ಕಾರ್ಯಾರಂಭ ಮಾಡಿದರೆ ಮಧ್ಯ ಕರ್ನಾಟಕದ ಜಿಲ್ಲೆಗಳ ಆರ್ಥಿಕ ಮತ್ತು ಕೈಗಾರಿಕಾ ಅಭಿವೃದ್ಧಿಗೆ ಹೊಸ ವೇಗ ಸಿಗಲಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ವಿಶ್ವಾಸ ವ್ಯಕ್ತಪಡಿಸಿದರು.
ಕಾಮಗಾರಿ ಚುರುಕುಗೊಳಿಸಲು ಹಾಗೂ ಸ್ಥಳೀಯ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುವಂತೆ ರೈಲ್ವೆ ಇಂಜಿನಿಯರ್ ಹಾಗೂ ಗುತ್ತಿಗೆದಾರರಿಗೆ ತಾಕೀತು ಮಾಡಿದ ಕೇಂದ್ರ ಸಚಿವ ವಿ.ಸೋಮಣ್ಣ, ಇನ್ನು ಮುಂದೆ ಪ್ರತಿ ತಿಂಗಳು ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸುವುದಾಗಿ ಸಚಿವರು ತಿಳಿಸಿದರು.
ರೈತರ ಸಹಕಾರಕ್ಕೆ ಮನವಿ:
ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಸಣ್ಣಪುಟ್ಟ ವ್ಯತ್ಯಾಸಗಳಿದ್ದರೆ ರೈತರು ಸಹಕರಿಸಬೇಕು. ಈ ಯೋಜನೆಗಾಗಿ ಸಾವಿರಾರು ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತಿದೆ. ಕಳೆದ ಎರಡು ವರ್ಷಗಳಿಂದ ಸ್ವಾಧೀನ ಪಡಿಸಿಕೊಂಡ ಭೂಮಿಯಲ್ಲಿ ರೈತರು ಬೆಳೆದ ಬೆಳೆಯ ಕಟಾವು ಮಾಡಲು ಸ್ಥಳೀಯ ಜನಪ್ರತಿನಿಧಿಗಳ ಕೋರಿಕೆಯ ಮೇರೆಗೆ ಅವಕಾಶ ಮಾಡಿಕೊಡಲಾಗಿತ್ತು. ಇನ್ನು ಮುಂದೆ ಇದಕ್ಕೆ ಅವಕಾಶವಿಲ್ಲ. ರೈಲ್ವೇ ಇಲಾಖೆ ಸ್ವಾಧೀನ ಪಡಿಸಿಕೊಂಡ ಭೂಮಿಯಲ್ಲಿ ರೈತರು ಬೆಳೆ ಬೆಳೆಯುವಂತಿಲ್ಲ. ಒಂದು ವೇಳೆ ರೈತರು ಕಾಮಗಾರಿಗೆ ಅಡ್ಡಿ ಪಡಿಸಿದರೆ ಜಿಲ್ಲಾಡಳಿತ ಹಾಗೂ ಪೊಲೀಸರ ನೆರವು ಪಡೆದುಕೊಳ್ಳುವಂತೆ ಕೇಂದ್ರ ಸಚಿವ ವಿ.ಸೋಮಣ್ಣ ಈ ಸಂದರ್ಭದಲ್ಲಿ ಸ್ಪಷ್ಟ ಪಡಿಸಿದರು.
ಇದನ್ನೂ ಓದಿ: ಡಾ.ಬಿ.ಆರ್.ಅಂಬೇಡ್ಕರ್, ಡಾ.ಬಾಬು ಜಗಜೀವನ್ ರಾಂ ಪ್ರಶಸ್ತಿ | ಅರ್ಜಿ ಆಹ್ವಾನ
ಲಕ್ಷ್ಮೀಸಾಗರದ ಬಳಿ ಮುಖ್ಯ ರೈಲ್ವೆ ನಿಲ್ದಾಣ ನಿರ್ಮಿಸಲು ಅಧಿಕಾರಿಗಳು ಜಾಗ ಗುರುತಿಸಿದ್ದಾರೆ. ಸಿರಿಗೆರೆಯ ಶ್ರೀಗಳು ನೀಡಿರುವ ಸೂಚನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಭಕ್ತರಿಗೆ ಅನುಕೂಲವಾಗುವಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಭರವಸೆಯನ್ನು ಕೇಂದ್ರ ಸಚಿವ ವಿ.ಸೋಮಣ್ಣ ನೀಡಿದರು.
ರೈಲ್ವೆ ಸೇತುವೆ ನಿರ್ಮಿಸಲು ನಿರ್ದೇಶನ:
ದಾವಣಗೆರೆ-ತುಮಕೂರು ನೂತನ ರೈಲ್ವೇ ಮಾರ್ಗದಲ್ಲಿ ಒಟ್ಟಾರೆ 192 ರೈಲ್ವೇ ಸೇತುವೆಗಳನ್ನು ನಿರ್ಮಿಸಲಾಗುತ್ತಿದೆ. ಮುಂಚಿತವಾಗಿಯೇ ಸ್ಥಳದ ಪರಿಶೀಲನೆ ನಡೆಸಿ ಸೇತುವೆಗಳ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಕಡಿಮೆ ಅಂತರಕ್ಕೆ ರೈಲ್ವೇ ಸೇತುವೆ ನಿರ್ಮಿಸಲು ಕೋರಿಕೆ ಬಂದರೆ ಮನ್ನಣೆ ನೀಡಲಾಗದು. ಒಂದು ವೇಳೆ ಅಗತ್ಯ ಇರುವ ಕಡೆ ಸೇತುವೆ ನಿರ್ಮಿಸಲು ಶಾಸಕರು ಹಾಗೂ ಸಂಸದರು ಕೋರಿಕೆ ಸಲ್ಲಿಸಿದರೆ ಅಧಿಕಾರಿಗಳು ಪರಿಗಣಿಸುವಂತೆ ಕೇಂದ್ರ ಸಚಿವ ವಿ.ಸೋಮಣ್ಣ ನಿರ್ದೇಶನ ನೀಡಿದರು.
ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಲು ತಾಕೀತು:
ರೈಲ್ವೆ ಯೋಜನೆಗೆ ಅಗತ್ಯ ಇರುವ ಭೂಸ್ವಾಧೀನ ಪ್ರಕ್ರಿಯೆಯನ್ನು ವಿಶೇಷ ಭೂಸ್ವಾಧೀನಾಧಿಕಾರಿ ಪೂರ್ಣಗೊಳಿಸಬೇಕು. ಭರಮಸಾಗರ-ಚಿತ್ರದುರ್ಗ ನಡುವಿನ 28 ಕಿ.ಮೀ. ರೈಲ್ವೇ ಮಾರ್ಗದ ನಡುವೆ ಯಾವುದೇ ಭೂ ಸ್ವಾಧೀನ ಪ್ರಕ್ರಿಯೆ ಬಾಕಿ ಉಳಿಸಿಬಾರದು. ಇರುವ ಸಣ್ಣ ಪುಟ್ಟ ತೊಂದರೆಗಳನ್ನು ಶೀಘ್ರವೇ ಪರಿಹರಿಸಬೇಕು. ಈ ನಿಟ್ಟಿನಲ್ಲಿ ಅನಗತ್ಯ ವಿಳಂಬ ಮಾಡುವುದು ಬೇಡ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದರು.
ಇದನ್ನೂ ಓದಿ: ಮೊಬೈಲ್ ಅಂಗಡಿ ಮಾಲಿಕನಿಗೆ ಚಾಕುವಿನಿಂದ ಹಲ್ಲೆ | ಆಸ್ಪತ್ರೆ ಬಳಿ ಹಿಂದೂ ಸಂಘಟನೆಗಳ ಪ್ರತಿಭಟನೆ | ಆರೋಪಿ ಬಂಧನಕ್ಕೆ ಬಲೆ
ಸಂಸದ ಗೋವಿಂದ ಎಂ. ಕಾರಜೋಳ ಮಾತನಾಡಿ, ನೇರ ರೈಲ್ವೆ ಕಾಮಗಾರಿ ವೇಗವು ಅತ್ಯಂತ ನಿಧಾನಗತಿಯಲ್ಲಿದ್ದು, ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕೆಲಸದಲ್ಲಿ ವಿಳಂಬ ಮಾಡುತ್ತಿರುವ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಹಾಗೂ ಅಂತಹವರಿಗೆ ಕೂಡಲೇ ನೋಟಿಸ್ ಜಾರಿ ಮಾಡಬೇಕು.
ಕಾಮಗಾರಿ ತ್ವರಿತ ಗೊಳಿಸಿ ನಿಗದಿತ ಅವಧಿಯಲ್ಲಿ ಕೆಲಸ ಮುಗಿಸಬೇಕು ಎಂದು ತಿಳಿಸಿದರು. 2027ರ ವೇಳೆಗೆ ದಾವಣಗೆರೆ-ಚಿತ್ರದುರ್ಗ-ತುಮಕೂರು ನಡುವಿನ ನೂತನ ನೇರ ರೈಲ್ವೆ ಯೋಜನೆಯ ಕಾಮಗಾರಿ ಪೂರ್ಣಗೊಳಿಸಿಕೊಡುವುದಾಗಿ ಮಂತ್ರಿಗಳು ಹಾಗೂ ಅಧಿಕಾರಿಗಳು ಭರವಸೆ ನೀಡಿದ್ದು, ನಿಗದಿತ ಕಾಲಮಿತಿಯೊಳಗೆ ಅಭಿವೃದ್ಧಿ ಕೆಲಸಗಳು ಮುಗಿಯುವ ವಿಶ್ವಾಸ ವ್ಯಕ್ತಪಡಿಸಿದರು.
ಇದೇ ವೇಳೆ ಕೇಂದ್ರ ಸಚಿವ ವಿ.ಸೋಮಣ್ಣ ಭರಮಸಾಗರ ರೈಲ್ವೇ ನಿಲ್ದಾಣ ಗುರುತಿಸಿರುವ ಜಾಗದ ಪರಿಶೀಲನೆ ನಡೆಸಿದರು.
ಇದನ್ನೂ ಓದಿ: ಚಾಕು ಇರಿದ ಆರೋಪಿ ಬಂಧನ | ಕೆಲವೇ ಗಂಟೆಗಳಲ್ಲಿ ಆರೋಪಿ ಪತ್ತೆ ಮಾಡಿದ ಪೊಲೀಸರು
ಈ ವೇಳೆ ಹೊಳಲ್ಕೆರೆ ಶಾಸಕ ಡಾ.ಚಂದ್ರಪ್ಪ, ರೈಲ್ವೆ ಇಲಾಖೆ ನಿರ್ಮಾಣ ವಿಭಾಗ ಮುಖ್ಯ ಇಂಜಿನಿಯರ್ ಪ್ರದೀಪ್ ಪುರಿ, ದಾವಣಗೆರೆ ಜಿಲ್ಲಾಧಿಕಾರಿ ಗಂಗಾಧರ್ ಸ್ವಾಮಿ, ರೈಲ್ವೆ ಮಾರ್ಗದ ವಿಶೇಷ ಭೂಸ್ವಾಧೀನಾಧಿಕಾರಿ ವೆಂಕಟೇಶ್ ನಾಯಕ್ ಸೇರಿದಂತೆ ರೈಲ್ವೇ ಇಲಾಖೆ ಅಧಿಕಾರಿಗಳು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
