
CHITRADURGA NEWS | 07 JULY 2024
ಚಿತ್ರದುರ್ಗ: ಡೆಂಗ್ಯೂ (Dengue) ರೋಗಕ್ಕೆ ನಿರ್ದಿಷ್ಟ ಚಿಕಿತ್ಸೆ ಇಲ್ಲದಿರುವುದರಿಂದ ರೋಗ ಬಾರದಂತೆ ಮುಂಜಾಗ್ರತಾ ಕ್ರಮ ವಹಿಸಬೇಕು. ಕೋವಿಡ್ ಉಲ್ಬಣಗೊಂಡಿದ್ದ ಸಮಯದಲ್ಲಿ ಕೈಗೊಂಡ ಕ್ರಮದ ಮಾದರಿಯಲ್ಲೇ ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳು ಡೆಂಗ್ಯೂ ನಿಯಂತ್ರಣಕ್ಕೂ ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳಬೇಕಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡೆಂಗ್ಯೂ ನಿಯಂತ್ರಣದ ಕುರಿತು ಜರುಗಿದ ಅಂತರ್ ಇಲಾಖೆ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದು ಆಂತಕದ ಸಂಗತಿಯಾಗಿದೆ. ನಗರ ಪ್ರದೇಶ ಹಾಗೂ ಗ್ರಾಮಗಳಲ್ಲಿ ಡೆಂಗ್ಯೂ ಕುರಿತು ಜನರಲ್ಲಿ ಅರಿವು ಮೂಡಿಸುವ ಜತೆ ಜಾಗರೂಕತೆಯಿಂದ ಪ್ರಕರಣಗಳನ್ನು ನಿರ್ವಹಿಸಬೇಕು. ಯಾವುದೇ ಜೀವ ಹಾನಿ ಉಂಟಾಗದಂತೆ ಚಿಕಿತ್ಸೆ ನೀಡಬೇಕು’ ಎಂದು ತಿಳಿಸಿದರು.
ಕ್ಲಿಕ್ ಮಾಡಿ ಓದಿ: ಪಿಸಿಪಿಎನ್ಡಿಟಿ ಸಲಹಾ ಸಮಿತಿ ಪುನರ್ ರಚನೆ | ಅಧ್ಯಕ್ಷರಾಗಿ ಡಾ.ಸೌಮ್ಯ ಆಯ್ಕೆ

‘ಸರ್ಕಾರದ ಆದೇಶದಂತೆ ಪ್ರತಿ ಶುಕ್ರವಾರ ಆಂದೋಲನದ ಮಾದರಿಯಲ್ಲಿ ಸೊಳ್ಳೆಗಳ ಲಾರ್ವ ನಾಶದ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಡೆಂಗ್ಯೂ ನಿಯಂತ್ರಣ ಕಾರ್ಯಗಳ ಮೇಲ್ವಿಚಾರಣೆಗಾಗಿ ಪ್ರತಿ ತಾಲ್ಲೂಕಿಗೆ ಒಬ್ಬರು ನೋಡಲ್ ಅಧಿಕಾರಿಯನ್ನು ನೇಮಿಸಲಾಗುವುದು’ ಎಂದು ಹೇಳಿದರು.
‘ಸಾರ್ವಜನಿಕರು ತಮ್ಮ ಮನೆಯ ಒಳಗೆ ಹಾಗೂ ಸುತ್ತಮುತ್ತ ಎಲ್ಲೂ ಕೂಡ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ನೀರು ಸಂಗ್ರಹಿಸುವ ತೊಟ್ಟಿ, ಡ್ರಂ ಇತ್ಯಾದಿಗಳನ್ನು ಸೊಳ್ಳೆ ನುಸುಳದಂತೆ ಮುಚ್ಚಿಯೇ ಶೇಖರಿಸಬೇಕು. ವಾರಕ್ಕೊಮ್ಮೆ ಸ್ವಚ್ಛವಾಗಿ ತೊಳೆದು, ಒಣಗಿಸಿದ ಬಳಕವೇ ಮತ್ತೆ ನೀರು ಸಂಗ್ರಹಿಸಬೇಕು. ಹೀಗಾದಲ್ಲಿ ಮಾತ್ರ ಡೆಂಗ್ಯೂ ಅನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಸಾಧ್ಯ. ಇದಕ್ಕೆ ಸಾರ್ವಜನಿಕರು ಸ್ಥಳೀಯ ಸಂಸ್ಥೆಯೊಂದಿಗೆ ಸಹಕರಿಸುವ ಅಗತ್ಯವಿದೆ’ ಎಂದು ಮನವಿ ಮಾಡಿದರು.
ಕ್ಲಿಕ್ ಮಾಡಿ ಓದಿ: ಸ್ವಯಂ ಘೋಷಿತ ಆಸ್ತಿ ತೆರಿಗೆ ಪಾವತಿ | 31 ರವರೆಗೆ ಅವಧಿ ವಿಸ್ತರಣೆ
‘ಡೆಂಗ್ಯೂ ಜ್ವರ ಕಂಡುಬಂದ ರೋಗಿಗಳಿಗೆ ಆಸ್ಪತ್ರೆಗಳಲ್ಲಿ ತುರ್ತು ಸ್ಪಂದನೆ ದೊರಯಬೇಕು. ರೋಗ ಲಕ್ಷಣ ಆಧರಿಸಿ ಸೂಕ್ತ ಚಿಕಿತ್ಸೆ ನೀಡಬೇಕು. ಎಲ್ಲಾ ಪ್ರಾಥಮಿಕ, ತಾಲ್ಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ವೈದ್ಯಾಧಿಕಾರಿಗಳು ಹಾಜರಿದ್ದು ರೋಗಿಗಳಿಗೆ ಚಿಕಿತ್ಸೆ ನೀಡಬೇಕು’ ಎಂದರು.
ಜಿಪಂ ಸಿಇಓ ಎಸ್.ಜೆ.ಸೋಮಶೇಖರ್, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಪೌರಾಯುಕ್ತೆ ಎಂ.ರೇಣುಕಾ ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
