ಚಿತ್ರದುರ್ಗ ನ್ಯೂಸ್.ಕಾಂ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ(ಸಿಡಬ್ಲುಸಿ) ಸದಸ್ಯ, ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ, ಚಿತ್ರದುರ್ಗ ಮೂಲದ ಡಾ.ಸೈಯದ್ ನಾಸೀರ್ ಹುಸೇನ್ ಅವರಿಗೆ ಚಿತ್ರದುರ್ಗದಲ್ಲಿ ಇಂದು ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.
1970 ಆಗಸ್ಟ್ 27 ರಂದು ಅವಿಭಜಿತ ಚಿತ್ರದುರ್ಗ ಜಿಲ್ಲೆಯಾಗಿದ್ದ ಚನ್ನಗಿರಿಯಲ್ಲಿ ಜನಿಸಿದ್ದ ಸೈಯದ್ ನಾಸೀರ್ ಹುಸೇನ್, ಚಿತ್ರದುರ್ಗ, ಬಳ್ಳಾರಿ, ಮೈಸೂರುಗಳಲ್ಲಿ ವಿದ್ಯಾಭ್ಯಾಸ ಮಾಡಿದ್ದಾರೆ.
ಇದನ್ನೂ ಓದಿ: ಮುರುಘಾ ಮಠದ ಪ್ರಕರಣ | ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಾಜಿ ಸಚಿವ ಎಚ್.ಏಕಾಂತಯ್ಯ

ಅತ್ಯಂತ ಕಿರಿಯ ವಯಸ್ಸಿಗೆ ಕಾಂಗ್ರೆಸ್ಸಿನ ಸಿಡಬ್ಲ್ಯುಸಿ ಸಮಿತಿ ಸದಸ್ಯರಾಗುವ ಮೂಲಕ ಅಖಿಲ ಭಾರತ ಕಾಂಗ್ರೆಸ್ ವಲಯದಲ್ಲಿ ಕರ್ನಾಟಕದ ಛಾಪು ಮೂಡಿಸುವಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಜೊತೆ ಹೆಜ್ಜೆ ಹಾಕುತ್ತಿದ್ದಾರೆ.
ತೆರೆ ಮರೆಯಲ್ಲೇ ಪಕ್ಷ ಸಂಘಟಿಸುವ ಚತುರ ಎಂದೇ ಗುರುತಿಸಿಕೊಂಡುರುವ ನಾಸೀರ್ ಹುಸೇನ್, ಪ್ರತಿಷ್ಠಿತ ಜೆಎನ್ಯುನಲ್ಲಿ ಪಿಎಚ್ಡಿ ಮಾಡಿದ್ದಾರೆ.
ಮೈಸೂರಿನ ಸೆಂಟ್ ಫಿಲೋಮಿನಾ ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗುವ ಮೂಲಕ ವಿದ್ಯಾರ್ಥಿ ದೆಸೆಯಲ್ಲೇ ನಾಯಕತ್ವದ ಗುಣ ಮೈಗೂಡಿಸಿಕೊಂಡಿದ್ದ ಅವರು, ಆನಂತರ ಜೆಎನ್ಯುನಲ್ಲಿ ಕಾರ್ಯದರ್ಶಿ, ಉಪಾಧ್ಯಕ್ಷ, ಅಧ್ಯಕ್ಷರಾದ ಏಕೈಕ ಕನ್ನಡಿಗ.

ತಮ್ಮ ರಾಜಕೀಯ ಚಿಂತನೆಗಳಿಂದ ರಾಷ್ಟ್ರ ನಾಯಕರ ಗಮನ ಸೆಳೆದ ಡಾ.ಸೈಯದ್ ನಾಸೀರ್ ಹುಸೇನ್, 2004 ರಲ್ಲಿ ಯುವ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯದರ್ಶಿಯಾಗಿ ನೇಮಕವಾಗಿ, 2014ರವರೆಗೆ ಎರಡೂ ಅವಧಿಗೆ ಈ ಹುದ್ದೆಯಲ್ಲಿದ್ದರು.
ಭಾರತ ಬಾಲ ಕಾರ್ಮಿಕ ಮಂಡಳಿ ಮತ್ತು ತಂಬಾಕು ಮಂಡಳಿಗಳಲ್ಲಿ ಸೇವೆ ಸಲ್ಲಿಸಿದ್ದ ಸೈಯದ್ ನಾಸೀರ್ ಹುಸೇನ್, ಸಿನಿಮಾ ಕಾರ್ಮಿಕರ ನಿಧಿ ಸಂಸ್ಥೆಯಲ್ಲೂ ದುಡಿದಿದ್ದಾರೆ. ಸುನಾಮಿಯಿಂದ ತತ್ತರಿಸಿದ್ದ ಅಂಡಮಾನ್-ನಿಕೋಬಾರ್ ಅಭಿವೃದ್ಧಿಗೆ ತೊಡಗಿಸಿಕೊಂಡಿದ್ದರು.
ರಾಜ್ಯ ರಾಷ್ಟ್ರದ ವಿವಿಧ ಚುನಾವಣೆಗಳಲ್ಲಿ ಪಕ್ಷದ ಕಾರ್ಯ ಯೋಜನೆ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ದೇಶಾದ್ಯಂತ ಸಂಚರಿಸಿ ಪಕ್ಷ ಸಂಘಟನೆ ಮಾಡಿದ್ದಾರೆ. 2014 ರಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರರಾದ ನಂತರ ಅವರ ಮಾತಿನ ವೈಭವ ಗರಿಗೆದರಿದೆ.
2018ರಲ್ಲಿ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾದ ಡಾ.ಸೈಯದ್ ನಾಸೀರ್ ಹುಸೇನ್ ಹಲವು ಸ್ಥಾಯಿ ಸಮಿತಿಗಳಲ್ಲಿ ಕೆಲಸ ಮಾಡಿದ್ದಾರೆ. ರಾಜ್ಯಸಭೆಯ ಸಚೇತಕರೂ ಆಗಿರುವ ಅವರು ನಾಡು ಕಂಡ ಶ್ರೇಷ್ಠ ಕಾಂಗ್ರೆಸ್ಸಿಗ ಎಂದು ಚಿತ್ರದುರ್ಗದಲ್ಲಿ ಸನ್ಮಾನಿಸಲಾಗುತ್ತಿದೆ.

ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್ ಹಾಗೂ ಎಂ.ಜಯಣ್ಣ ಸ್ಮಾರಕ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಮಾಜಿ ಸಚಿವ ಎಚ್.ಆಂಜನೇಯ ನೇತೃತ್ವದಲ್ಲಿ ತರಾಸು ರಂಗಮಂದಿರದಲ್ಲಿ ಸನ್ಮಾನ ಸಮಾರಂಭ ನಡೆಯಲಿದೆ.
ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಕಾರ್ಯಕ್ರಮ ಉದ್ಘಾಟಿಸುವರು. ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಸಚಿವ ನಾಗೇಂದ್ರ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಶಾಕಕರಾದ ಅಬ್ದುಲ್ ಜಬ್ಬಾರ್, ಎನ್.ವೈ.ಗೋಪಾಲಕೃಷ್ಣ, ಬಿ.ಜಿ.ಗೋವಿಂದಪ್ಪ, ಟಿ.ರಘುಮೂರ್ತಿ, ಕೆ.ಸಿ.ವೀರೇಂದ್ರ(ಪಪ್ಪಿ), ಕ.ಎಸ್.ಬಸವಂತಪ್ಪ, ಕೆಪಿಸಿಸಿ ಅಸಂಘಟಿತ ಕಾರ್ಮಿಕ ವಿಭಾಗದ ಅಧ್ಯಕ್ಷ ಜಿ.ಎಸ್.ಮಂಜುನಾಥ್ ಸೇರಿದಂತೆ ಹಲವು ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
