CHITRADURGA NEWS | 06 MARCH 2026
ಚಿತ್ರದುರ್ಗ: ಜಿಲ್ಲಾಧಿಕಾರಿ ಕಚೇರಿ ಎದುರು ಕಳೆದ ನಾಲ್ಕು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸಿದ್ದ ರೈತಸಂಘದ ಜಿಲ್ಲಾಧ್ಯಕ್ಷ ಕೆ.ಟಿ.ತಿಪ್ಪೇಸ್ವಾಮಿ ಶುಕ್ರವಾರ ತೀವ್ರ ಅಸ್ವಸ್ಥಗೊಂಡಿದ್ದಾರೆ.
ಇದನ್ನೂ ಓದಿ: ಸಿದ್ದು ಬಜೆಟ್ನಲ್ಲಿ ಭದ್ರೆಗೆ ಸಿಕ್ಕ ಅನುದಾನವೆಷ್ಟು ? ಬಬ್ಬೂರು ಕೃಷಿ ತರಬೇತಿ ಕೇಂದ್ರಕ್ಕೆ ಕೊಡುಗೆ
ಸಿದ್ದಯ್ಯನಕೋಟೆ ಶ್ರೀಗಳು ಮನವೊಲಿಸಿ ಉಪವಾಸ ಸತ್ಯಾಗ್ರಹದಿಂದ ಹಿಂದೆ ಸರಿಯುವಂತೆ ಮಾಡಿದ ಕೆಲ ಸಲಮಯದಲ್ಲೇ ಅಸ್ವಸ್ಥಗೊಂಡಿದ್ದ ಅವರನ್ನು ತುಮಕೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಉಪವಾಸ ಕುಳಿತ ನಮ್ಮನ್ನು ಜಿಲ್ಲಾಧಿಕಾರಿ, ಜನಪ್ರತಿನಿಧಿಗಳು, ಸಚಿವರು, ಸಂಸದರು ವಿಚಾರಿಸಿ, ಮನವೊಲಿಸುವ ಕೆಲಸವನ್ನೇ ಮಾಡಲಿಲ್ಲ ಎಂದು ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷರಾದ ಈಚಘಟ್ಟ ಸಿದ್ದವೀರಪ್ಪ, ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ಜಿಲ್ಲಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ, ಸಿದ್ರಾಮಣ್ಣ, ಕೊರಟಗೆರೆ ಮಹೇಶ್ ಇತರರು ಅಸಮಧಾನ ವ್ಯಕ್ತಪಡಿಸಿದ್ದಾರೆ.
ತಕ್ಷಣ ಜಿಲ್ಲಾಧಿಕಾರಿಗಳು, ಸಚಿವರು, ಶಾಸಕರು ಆಸ್ಪತ್ರೆಗೆ ಭೇಟಿ ನೀಡಿ ತಿಪ್ಪೇಸ್ವಾಮಿ ಅವರ ಆರೋಗ್ಯದ ಉಸ್ತುವಾರಿ ವಹಿಸಿಕೊಳ್ಳಬೇಕು. ಜೊತೆಗೆ ಆಸ್ಪತ್ರೆ ವೆಚ್ಚ ಭರಿಸಬೇಕು. ಈ ಮೂಲಕವಾದರೂ ಮಾನವೀಯತೆಯನ್ನು ಈಗಲಾದರೂ ಪ್ರದರ್ಶಿಸಬೇಕು ಎಂದು ಆಗ್ರಹಿಸಿದ್ದಾರೆ.
ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಸಿದ್ದಯ್ಯನಕೋಟೆ ಶ್ರೀ:
ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನಕ್ಕೆ ಒತ್ತಾಯಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ರೈತರು ಶುಕ್ರವಾರ ಸತ್ಯಾಗ್ರಹ ಅಂತ್ಯಗೊಳಿಸಿದ್ದಾರೆ.
ಇದನ್ನೂ ಓದಿ: ವಿಜೃಂಭಣೆಯಿಂದ ಜರುಗಿದ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ತೇರು | ಲಕ್ಷಾಂತರ ಭಕ್ತರು ಭಾಗೀ..
ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿದ ಮೊಳಕಾಲ್ಮೂರು ತಾಲೂಕು ಸಿದ್ದಯ್ಯನಕೋಟೆ ಶ್ರೀಗಳು ರೈತರ ಮನವೊಲಿಸಿ ಎಳನೀರು ಕುಡಿಸಿದರು. ಈ ವೇಳೆ ಜಗತ್ತಿಗೆ ಅನ್ನ ಕೊಡುವ ಅನ್ನದಾತ ಉಪವಾಸ ಬೀಳಬೇಕಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ ಹಣ ನೀಡದ ಸರ್ಕಾರಗಳನ್ನೇ ಬೀಳಿಸುವ ತಾಕತ್ತು ಪ್ರದರ್ಶಿಸಬೇಕು ಎಂದು ಸಲಹೆ ನೀಡಿದರು.
ಶ್ರೀಗಳು ಹಾಗೂ ಹಲವು ಮುಖಂಡರ ಒತ್ತಾಸೆಗೆ ಮಣಿದು ಉಪವಾಸನಿರತ ರೈತ ಮುಖಂಡ ಕೆ.ಟಿ.ತಿಪ್ಪೇಸ್ವಾಮಿ ಸ್ವಾಮೀಜಿ ಅವರು ತಂದಿದ್ದ ಎಳೆನೀರು ಸೇವಿಸಿದರು. ಈ ಮೂಲಕ ಐದು ದಿನಗಳ ಉಪವಾಸ ಸತ್ಯಾಗ್ರಹಕ್ಕೆ ತೆರೆ ಎಳೆದರು.
ಬಳಿಕ ಮಾತನಾಡಿದ ಕೆ.ಟಿ.ತಿಪ್ಪೇಸ್ವಾಮಿ, ಈ ಬಾರಿ ಬಜೆಟ್ನಲ್ಲಿ 5 ಸಾವಿರ ಕೋಟಿ ರೂ. ಅನುದಾನ ಭದ್ರಾ ಯೋಜನಗೆ ಮೀಸಲಿಡಬೇಕೆಂದು ಆಗ್ರಹಿಸಲಾಗಿತ್ತು. ಜೊತೆಗೆ ಸಚಿವರು, ಶಾಸಕರ ಮೂಲಕ ಮುಖ್ಯಮಂತ್ರಿಗೆ ಒತ್ತಡ ತರಲಾಗಿತ್ತು. ಆದರೆ, ಬಜೆಟ್ನಲ್ಲಿ ಯೋಜನೆಯನ್ನು 2027ರೊಳಗೆ ಪೂರ್ಣಗೊಳಿಸುವುದಾಗಿ ಹೇಳಿದ್ದರೂ ಹಣವನ್ನು ಹಂಚಿಕೆ ಮಾಡಿಲ್ಲದಿರುವುದು ಬೇಸರ ತರಿಸಿದೆ ಎಂದರು.
ಇದನ್ನೂ ಓದಿ: ನಾಯಕನಹಟ್ಟಿ ರಥೋತ್ಸವ | ಮುಕ್ತಿ ಭಾವುಟ ಹರಾಜು | ಈ ವರ್ಷ ಎಷ್ಟು ಮೊತ್ತಕ್ಕೆ ?
ಕೇಂದ್ರ ಮತ್ತು ರಾಜ್ಯ ಸರ್ಕಾರದ ಮೇಲೆ ಒತ್ತಡ ತರಲು ಯಾವ ರೀತಿಯ ಹೋರಾಟ ಕೈಗೆತ್ತಿಕೊಳ್ಳಬೇಕು ಸೇರಿ ವಿವಿಧೆಡೆ ಸಭೆ ಆಯೋಜಿಸಿ ಚರ್ಚೆ ನಡೆಸಿ ಬಳಿಕ ತೀರ್ಮಾನ ಕೈಗೊಳ್ಳಲಾಗುವುದು. ಜಿಲ್ಲೆಗೆ ನೀರು ಹರಿಯಬೇಕು, ಎಲ್ಲ ಕೆರೆಗಳು ಮೈದುಂಬಬೇಕು. ಅಲ್ಲಿಯವರೆಗೂ ಹೋರಾಟ ನಿರಂತರವಾಗಿರಲಿದೆ ಎಂದು ಹೇಳಿದರು.
ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಈಚಘಟ್ಟ ಸಿದ್ದವೀರಪ್ಪ ಮಾತನಾಡಿ, ಕೃಷಿ ಕ್ಷೇತ್ರ ಉಳಿಸಿಕೊಳ್ಳದಿದ್ದರೇ ಇಡೀ ಜಗತ್ತು ನಾಶವಾಗಲಿದೆ. ಆದರೆ, ಈ ಪರಿಜ್ಞಾನ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಇಲ್ಲದಿರುವುದು ದುಃಖದ ವಿಷಯ ಎಂದರು.
ಜಿಲ್ಲೆಯಲ್ಲಿ ಅಂತರ್ಜಲ ತೀವ್ರ ಕುಸಿತ ಕಂಡಿದ್ದು ವಿಷದ ನೀರು ಸೇವನೆ ಮಾಡಲಾಗುತ್ತಿದೆ. ಈ ಕಾರಣಕ್ಕೆ ಕೊಳವೆಬಾವಿ ಕೊರೆಯುವುದನ್ನು ನಿಷೇಧಿಸಲಾಗಿದೆ. ಇಂತಹ ಕೆಟ್ಟ ವಾತಾವರಣಕ್ಕೆ ಸರ್ಕಾರಿ ವ್ಯವಸ್ಥೆಯೇ ಕಾರಣ. ಈಗಲಾದರೂ ನೀರು ಕೊಟ್ಟು ಜನರನ್ನು ಬದುಕಿಸಿಕೊಳ್ಳುವ ಔಧಾರ್ಯ ಪ್ರದರ್ಶಿಸಬೇಕಿತ್ತು. ಆದರೆ, ಬಜೆಟ್ನಲ್ಲಿ ಸಿದ್ದರಾಮಯ್ಯ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಭದ್ರಾ ಯೋಜನೆ ವಿಷಯ ಪ್ರಸ್ತಾಪಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: ಮೈಸೂರಿನ ಶ್ರೀ ರಾಮಕೃಷ್ಣ ವಿದ್ಯಾಶಾಲೆ | 8ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ
ಭದ್ರಾ ಮೇಲ್ದಂಡೆ ಯೋಜನೆಗೆ ಹಣ ತರುವಲ್ಲಿ ರಾಜ್ಯದ ಮೇಲೆ ಶಾಸಕರು, ಕೇಂದ್ರದ ಮೇಲೆ ಸಂಸದರು ಒತ್ತಡ ತರಬೇಕು. ಈ ಕುರಿತು ಸ್ಪಷ್ಟ ಹೇಳಿಕೆ ಸರ್ಕಾರಗಳು ಹೊರಡಿಸಬೇಕು. ಇಲ್ಲದಿದ್ದರೇ ಹೋರಾಟವನ್ನು ತೀವ್ರ ಸ್ವರೂಪಕ್ಕೆ ಕೊಂಡೊಯ್ಯುವುದು ಅನಿವಾರ್ಯವಾಗಲಿದೆ. ಜೈಲಿಗೆ ಹೋಗಲು, ಲಾಠಿ ಏಟು ತಿನ್ನಲು ನಾವು ಸಿದ್ಧರಿದ್ದೇವೆ. ಇದಕ್ಕೆ ಅವಕಾಶವನ್ನು ಜನಪ್ರತಿನಿಧಿಗಳು ಕೊಡಬಾರದು ಎಂದು ಹೇಳಿದರು.
ಹಿರಿಯ ಮುಖಂಡ ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ಮುಖಂಡರಾದ ನರೇನಹಳ್ಳಿ ಅರುಣ್ಕುಮಾರ್, ಆರ್.ಶೇಷಣ್ಣಕುಮಾರ್, ಕೊರಟಗೆರೆ ಮಹೇಶ್ವರಪ್ಪ, ರಂಗಸ್ವಾಮಿ, ಚಿತ್ತಪ್ಪ, ನಿರಂಜನಮೂರ್ತಿ, ರೆಡ್ಡಿಹಳ್ಳಿ ವೀರಣ್ಣ, ಇಂಧೂದರ, ಜಯಣ್ಣ, ಕರಿಸಿದ್ದಯ್ಯ, ಚಂದ್ರಮೌಳಿ, ಸತೀಶ್, ಪ್ರಶಾಂತ್ ರೆಡ್ಡಿ, ಮಲ್ಲಾಪುರ ತಿಪ್ಪೇಸ್ವಾಮಿ, ತಿಮ್ಮಣ್ಣ, ಬಸ್ತಿಹಳ್ಳಿ ಸುರೇಶ್ಬಾಬು, ಚಳ್ಳಕೆರೆ ಬಸವರಾಜ್, ಜೋಗಿಮಟ್ಟಿ ಮಹೇಶಬಾಬು ಇತರರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
