CHITRADURGA NEWS | 19 JUNE 2024
ಚಿತ್ರದುರ್ಗ: ಮುಚ್ಚುವ ಹಂತದಲ್ಲಿದ್ದ ಚಿಕ್ಕಾಲಘಟ್ಟ ಗ್ರಾಮದ ಸರ್ಕಾರಿ ಶಾಲೆಯನ್ನು ಉಳಿಸಿದ್ದೇನೆ. ಇದರಿಂದ ಗ್ರಾಮೀಣ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ತಿಳಿಸಿದರು.
ತಾಲ್ಲೂಕಿನ ಹಿರೇಗುಂಟನೂರು ಹೋಬಳಿ ಆಲಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಾಲಘಟ್ಟ ಗ್ರಾಮದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಆಡಳಿತದಿಂದ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಜನ ಸ್ಪಂದನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಗ್ರಾಮವನ್ನು ಗಣಿ ಭಾದಿತ ಪ್ರದೇಶದ ವ್ಯಾಪ್ತಿಗೆ ಸೇರಿಸಬೇಕು ಎಂಬುದು ಗ್ರಾಮಸ್ಥರ ಒತ್ತಾಯವಾಗಿದೆ. ಇದನ್ನು ಆದ್ಯತೆಯಾಗಿ ಪರಿಗಣಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಮುಂದಿನ ದಿನಗಳಲ್ಲಿ ಗ್ರಾಮಕ್ಕೆ ಮನೆಗಳು ಮಂಜೂರಾಗಲಿವೆ. ಗ್ರಾಮ ಸಭೆ ನಡೆಸಿ ಅರ್ಹ ಫಲಾನುಭವಿಗಳಿಗೆ ಮನೆ ಹಂಚುವ ಕಾರ್ಯ ಮಾಡಲಾಗುವುದು’ ಎಂದು ಹೇಳಿದರು.
ಕ್ಲಿಕ್ ಮಾಡಿ ಓದಿ: ದೊಡ್ಡ ಮಾತನಾಡುತ್ತಿದ್ದಾರೆ ನೂತನ ಸಂಸದರು | ಮಾಜಿ ಸಂಸದ ಬಿ.ಎನ್.ಚಂದ್ರಪ್ಪ
‘ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಈಗಾಗಲೇ ಜಾಗ ಗುರುತಿಸಲಾಗಿದೆ. ಶೀಘ್ರದಲ್ಲೇ ಶುದ್ಧ ನೀರಿನ ಘಟಕವನ್ನು ಸ್ಥಾಪಿಸಿ, ಕಾರ್ಯಾರಂಭ ಮಾಡಲಾಗುವುದು’ ಎಂದು ಭರವಸೆ ನೀಡಿದರು.

‘ತಾಲ್ಲೂಕಿನ ಗ್ರಾಮಾಂತರ ಪ್ರದೇಶದ 158 ಹಳ್ಳಿಗಳಿಗೆ ವಾಣಿವಿಲಾಸ ಸಾಗರದ ಕುಡಿಯುವ ನೀರಿನ ಯೋಜನೆ ಅನುಷ್ಠಾಠನಗೊಳಿಸಲಾಗುತ್ತಿದೆ. ಈ ಯೋಜನೆ ವ್ಯಾಪ್ತಿಯಲ್ಲಿ ಚಿಕ್ಕಾಲಘಟ್ಟ ಗ್ರಾಮ ಸೇರ್ಪಡೆಯಾಗಿರಲಿಲ್ಲ. ತದನಂತರದಲ್ಲಿ ಒತ್ತಾಯಪೂರ್ವಕವಾಗಿ ಚಿಕ್ಕಾಲಘಟ್ಟ ಗ್ರಾಮವನ್ನೂ ಯೋಜನಾ ವ್ಯಾಪ್ತಿಗೆ ಸೇರಿಸಲು ಕ್ರಮ ಕೈಗೊಂಡಿದ್ದೇನೆ’ ಎಂದರು.
ಕ್ಲಿಕ್ ಮಾಡಿ ಓದಿ: ಎರಡು ವರ್ಷದಲ್ಲಿ ಭದ್ರಾ ಮೇಲ್ದಂಡೆ ಕಾಮಗಾರಿ ಪೂರ್ಣ | ಸಂಸದ ಗೋವಿಂದ ಎಂ.ಕಾರಜೋಳ ಭರವಸೆ
‘ಗ್ರಾಮದ ಈಶ್ವರ ದೇವಸ್ಥಾನ ಹಾಗೂ ದುರ್ಗಾಂಭ ದೇವಾಲಯಗಳ ಜೀರ್ಣೋದ್ಧಾರಕ್ಕೆ ಮುಜರಾಯಿ ಇಲಾಖೆಯಿಂದ ತಲಾ ₹ 5 ಲಕ್ಷದಂತೆ ಒಟ್ಟು ₹10 ಲಕ್ಷ ಅನುದಾನ ಒದಗಿಸಲಾಗಿದೆ. ಗ್ರಾಮದ ಸಿ.ಸಿ ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕೆ ರೂ.15 ಲಕ್ಷ ಅನುದಾನ ಒದಗಿಸಿದ್ದು. ಗ್ರಾಮದ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗಿದೆ’ ಎಂದು ಹೇಳಿದರು.
ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಮಾತನಾಡಿ, ‘ಇಡೀ ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತ ತಮ್ಮ ಗ್ರಾಮಕ್ಕೆ ಆಗಮಿಸಿ, ಸಮಸ್ಯೆ ಅಹವಾಲುಗಳನ್ನು ಆಲಿಸಿದೆ. ನಿಗದಿತ ಸಮಯದೊಳಗೆ ಈ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡಲಾಗುವುದು. ಕುರಿತು ಅರ್ಜಿಯೊಂದಿಗೆ ನೀವು ನೀಡಿರುವ ಮೊಬೈಲ್ ನಂಬರ್ಗೆ ಸಮಸ್ಯೆ ಪರಿಹಾರದ ಹಂತದ ಕುರಿತು ಸಂದೇಶ ಕಳುಹಿಸಿಕೊಡಲಾಗುವುದು. ಸರ್ಕಾರದ ಜನಪರ ಆಡಳಿತದ ಪರಿಣಾಮವಾಗಿ ಜನಸ್ಪಂದನ ಕಾರ್ಯಕ್ರಮ ರೂಪುಗೊಂಡಿದೆ’ ಎಂದರು.

ತಹಶೀಲ್ದಾರ್ ಡಾ.ನಾಗವೇಣಿ ಮಾತನಾಡಿ, ಜನಸ್ಪಂದನ ಕಾರ್ಯಕ್ರಮದಲ್ಲಿ ಐಪಿಜಿಆರ್ಎಸ್ ತಂತ್ರಾಂಶದ ಮೂಲಕ ನೀವು ನೀಡಿರುವ ಅರ್ಜಿಯನ್ನು ಸ್ವೀಕರಿಸಲಾಗುವುದು. ಹೀಗೆ ಸ್ವೀಕರಿಸಿದ ಅರ್ಜಿಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ಕಳುಹಿಸಿಕೊಟ್ಟು ಸಮಸ್ಯೆಗೆ ಪರಿಹಾರ ದೊರಕಿಸಿಕೊಡಲಾಗುವುದು. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೋರಿದರು.
ಲೋಕಸಭೆ ಚುನಾವಣೆ ನಂತರ ಆಯೋಜಿಸಲಾದ ಜನ ಸ್ಪಂದನ ಕಾರ್ಯಕ್ರಮಕ್ಕೆ ಚಿಕ್ಕಾಲಘಟ್ಟ ಗ್ರಾಮಸ್ಥರಿಂದ ಉತ್ತಮ ಪ್ರತಿಕ್ರಿಯೆ ದೊರಕಿತು. ಗ್ರಾಮಕ್ಕೆ ಆಗಮಿಸಿದ ಶಾಸಕ ವಿರೇಂದ್ರ ಪಪ್ಪಿ ಅವರನ್ನು ಹಸಿರು ತೋರಣದಿಂದ ಅಲಂಕೃತಗೊಂಡ ಜೋಡೆತ್ತಿನ ಬಂಡಿಯ ಮೇಲೆ ಗ್ರಾಮಕ್ಕೆ ಕರೆತರಲಾಯಿತು. ಪೂರ್ಣಕುಂಭ ಹೊತ್ತ ಅಂಗನಾಡಿ ಕಾರ್ಯಕರ್ತೆಯರು ಸ್ವಾಗತಕೋರಿದರು. ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಕ್ಲಿಕ್ ಮಾಡಿ ಓದಿ: ಸೋರುತ್ತಿದೆ ನನ್ನಿವಾಳ ಕೆರೆ | ಏರಿ ಆವರಿಸಿದ ಸೀಮೆಜಾಲಿ
ಕಟ್ಟಡ ಕಾರ್ಮಿಕ ಹಾಗೂ ಕಲ್ಯಾಣ ಮಂಡಳಿ ವತಿಯಿಂದ 25 ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ಪೋನ್, ಸಮವಸ್ತ್ರ, ಶಿಕ್ಷಣ ಇಲಾಖೆ ವತಿಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ ಹಾಗೂ ಅಂಗವಿಕಲರ ಕಲ್ಯಾಣ ಇಲಾಖೆ ವತಿಯಿಂದ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ಟಾಪ್ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಶಾಸಕ ವಿರೇಂದ್ರ ಪಪ್ಪಿ, ಗ್ರಾಮ ವಿಕಚೇತನರೊಬ್ಬರಿಗೆ ಸರ್ಕಾರದಿಂದ ನೀಡಲಾದ ಟ್ರೈಸಿಕಲ್ ಸ್ಕೂಟರ್ ದುರಸ್ಥಿಯನ್ನು ಸ್ವತಂ ಖರ್ಚಿನಿಂದ ಮಾಡಿಸಿಕೊಡುವುದಾಗಿ ಭರವಸೆ ನೀಡಿದರು. ಜನಸ್ಪಂದನ ಕಾರ್ಯಕ್ರಮದ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಹನುಮಂತಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್, ಗ್ರೇಡ್-2 ತಹಶೀಲ್ದಾರ್ ನಾಗರಾಜ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಣ್ಣ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ನರಸಿಂಹಮೂರ್ತಿ, ಆಲಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎಂ.ನಾಗರಾಜ್, ಉಪಾಧ್ಯಕ್ಷೆ ನಿರ್ಮಲಮ್ಮ, ಗ್ರಾಮ ಪಂಚಾಯಿತಿ ಸದಸ್ಯರು ಸೇರಿದಂತೆ ತಾಲ್ಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
