
CHITRADURGA NEWS | 30 AUGUST 2026
ಚಿತ್ರದುರ್ಗ: ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿಕೊಂಡು ನಾಲ್ಕೈದು ವರ್ಷಗಳ ಕಾಲ ತಾಳ್ಮೆಯಿಂದ ಕಾದು, ಪಕ್ಷದ ಸಂಘಟನೆಗಾಗಿ ನಿರಂತರವಾಗಿ ಕೆಲಸ ಮಾಡಿದ ಪರಿಣಾಮ ಇಂದು ಸಚಿವನಾಗಿದ್ದೇನೆ. ನಿರಂತರ ಪರಿಶ್ರಮ ಮತ್ತು ತಾಳ್ಮೆಯಿದ್ದರೆ ಯಾವುದೇ ಕ್ಷೇತ್ರದಲ್ಲಾಗಲಿ ಯಶಸ್ಸು ಗಳಿಸಬಹುದು ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಹೇಳಿದರು.
ಇದನ್ನೂ ಓದಿ: 9 ತಿಂಗಳಲ್ಲಿ ಜಿಲ್ಲೆಯ 33 ರೈಲ್ವೆ ಮೇಲ್ಸೇತುವೆ, ಕೆಳಸೇತುವೆ ಕಾಮಗಾರಿ ಪೂರ್ಣ | ಸಚಿವ ವಿ.ಸೋಮಣ್ಣ
ನಗರದ ವಾಲ್ಮೀಕಿ ಭವನದಲ್ಲಿ ಭಾನುವಾರ ಚಿತ್ರದುರ್ಗ ನಾಯಕ ಸಮಾಜದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭೋತ್ಸವ ಹಾಗೂ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಹೆಚ್ಚಿನ ಅಂಕ ಗಳಿಸಿ ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳ ಜವಾಬ್ದಾರಿ ಮತ್ತಷ್ಟು ಹೆಚ್ಚಿದೆ. ತಂದೆ-ತಾಯಿಗಳ ಪರಿಶ್ರಮ ಮತ್ತು ತ್ಯಾಗಕ್ಕೆ ಚ್ಯುತಿ ಬಾರದಂತೆ ಮುಂದಿನ ವಿದ್ಯಾಭ್ಯಾಸದಲ್ಲಿ ಸಾಧನೆ ಮಾಡಬೇಕು. ಪ್ರತಿಭಾ ಪುರಸ್ಕಾರವು ಇತರ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗಲಿದೆ ಎಂದರು.
ಸಾಮಾನ್ಯ ಕುಟುಂಬದಲ್ಲಿ ಜನಿಸಿದ ತಾನು ರಾಜಕೀಯ ಜೀವನದಲ್ಲಿ ಹಲವು ಏಳು-ಬೀಳುಗಳನ್ನು ಕಂಡಿದ್ದೇನೆ. 2008ರಲ್ಲಿ ಪಕ್ಷದಿಂದ ಟಿಕೆಟ್ ದೊರೆಯದಿದ್ದಾಗ ಬೇಸರವಾದರೂ ಬೇರೆ ಪಕ್ಷಕ್ಕೆ ಹೋಗದೆ ಕಾಂಗ್ರೆಸ್ನಲ್ಲೇ ಉಳಿದು ಪಕ್ಷದ ಕೆಲಸ ಮಾಡಿದೆ. ಅದರ ಫಲವಾಗಿ 2013ರಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ದೊರೆಯಿತು. ಅಂದಿನಿಂದ ಇಲ್ಲಿಯವರೆಗೆ ಮೂರನೇ ಬಾರಿಗೆ ಶಾಸಕನಾಗಿ, ಇದೀಗ ಸಚಿವನಾಗುವ ಅವಕಾಶ ದೊರೆತಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಗೃಹಲಕ್ಷ್ಮಿ ಎಫೆಕ್ಟ್ | ಗುಲಾಬಿ ಬಣ್ಣಕ್ಕೆ ತಿರುಗಿದ ರಂಗಯ್ಯನ ಬಾಗಿಲು
ರಾಜಕೀಯದಲ್ಲಿ ಟೀಕೆಗಳು ಮರೆಯಾಗುತ್ತವೆ; ಆದರೆ ಮಾಡಿದ ಕೆಲಸಗಳು ಶಾಶ್ವತವಾಗಿ ಉಳಿಯುತ್ತವೆ. ನಾಯಕ ಸಮಾಜದವರು ಮುಂದಿಟ್ಟಿರುವ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ಹೇಳಿದರು. ತೋಟಗಾರಿಕೆ ಇಲಾಖೆಗೆ ಸೇರಿದ ಏಳು ಎಕರೆ ಜಾಗವನ್ನು ಪಡೆದುಕೊಂಡಿದ್ದು, ಅಲ್ಲಿ ಜಿಲ್ಲಾಧಿಕಾರಿ ಕಚೇರಿ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು. ನಾಮಕಲ್ ಗ್ಯಾರೇಜ್ನಿಂದ ಕೋಟೆಗೆ ರಸ್ತೆ ಸಂಪರ್ಕ ಕಲ್ಪಿಸುವುದು ಹಾಗೂ ರಸ್ತೆ ಅಗಲೀಕರಣಕ್ಕೂ ಗಮನ ಹರಿಸಲಾಗುವುದು. ಚಳ್ಳಕೆರೆ ತಾಲ್ಲೂಕಿನಲ್ಲಿ ಸಂಶೋಧನಾ ಕೇಂದ್ರ ಸ್ಥಾಪನೆಗೆ 100 ಎಕರೆ ಜಾಗ ಪಡೆಯಲು ಪ್ರಯತ್ನಿಸಲಾಗುತ್ತಿದೆ ಎಂದರು.
ಸಮಾಜ ಕಲ್ಯಾಣ ಮಂತ್ರಿಯಾಗಿದ್ದ ಅವಧಿ ಸುವರ್ಣಯುಗ
ಮಾಜಿ ಸಚಿವ ಎಚ್.ಆಂಜನೇಯ ಮಾತನಾಡಿ, ತಾವು ಸಮಾಜ ಕಲ್ಯಾಣ ಸಚಿವರಾಗಿದ್ದ ಅವಧಿಯನ್ನು ಸುವರ್ಣಯುಗ ಎಂದು ಬಣ್ಣಿಸಿದರು. ಅಕ್ಷರ ವಂಚಿತ ಸಮುದಾಯದಿಂದ ಬಂದ ತಾನು ಶಿಕ್ಷಣ ಮತ್ತು ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದಾಗಿ ಹೇಳಿದರು.
ಚಿತ್ರದುರ್ಗ ನಗರದ ಹಲವು ಕಡೆ ಅವೈಜ್ಞಾನಿಕವಾಗಿ ಡಿವೈಡರ್ಗಳನ್ನು ನಿರ್ಮಿಸಲಾಗಿದೆ. ತಮ್ಮ ಅಧಿಕಾರಾವಧಿಯಲ್ಲಿ ರಸ್ತೆ ಅಗಲೀಕರಣಕ್ಕೆ ₹20 ಕೋಟಿ ಮಂಜೂರು ಮಾಡಿಸಿದ್ದೆ. ನಂತರದ ದಿನಗಳಲ್ಲಿ ಸೂಕ್ತ ಯೋಜನೆಯಿಲ್ಲದೆ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದನ್ನೂ ಓದಿ: ಸೆ.6ರಂದು ಬೆಂಗಳೂರಿನಲ್ಲಿ ವಿದೇಶದಲ್ಲಿ ಅಧ್ಯಯನ–2026 ಶಿಕ್ಷಣ ಮೇಳ
ಗುಡ್ಡಗಳ ನಾಶವನ್ನು ತಡೆಯಬೇಕು. ಗಣಿಗಾರಿಕೆಯಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ನಡೆದಿರುವ ಬಗ್ಗೆ ಗಮನ ಹರಿಸಬೇಕು. ನಗರಸಭೆಗೆ ಸೇರಿದ ಜಾಗವನ್ನು ₹4 ಕೋಟಿಗೆ ಪಡೆದು, ವಾಲ್ಮೀಕಿ ಭವನ ನಿರ್ಮಾಣಕ್ಕೆ ₹10 ಕೋಟಿ ಮಂಜೂರು ಮಾಡಿಸಿದ್ದಾಗಿ ತಿಳಿಸಿದರು. ಭವನದಲ್ಲಿರುವ ಲೋಪಗಳನ್ನು ಸರಿಪಡಿಸಿ, ಎಸಿ ಹಾಗೂ ಅಗತ್ಯ ಸೌಕರ್ಯ ಕಲ್ಪಿಸಿ ಸಾರ್ವಜನಿಕರ ಬಳಕೆಗೆ ಅನುಕೂಲ ಮಾಡಿಕೊಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಿದರು.
ಕೋಟೆ ಅಭಿವೃದ್ಧಿಗೆ ₹26 ಕೋಟಿ ಆಡಳಿತಾತ್ಮಕ ಒಪ್ಪಿಗೆ
ಶಾಸಕ ಕೆ.ಸಿ.ವೀರೇಂದ್ರಪ್ಪ ಮಾತನಾಡಿ, ಐತಿಹಾಸಿಕ ಕೋಟೆ ಅಭಿವೃದ್ಧಿಗೆ ₹26 ಕೋಟಿ ಅನುದಾನಕ್ಕೆ ಆಡಳಿತಾತ್ಮಕ ಒಪ್ಪಿಗೆ ದೊರೆತಿದ್ದು, ಮುಂದಿನ ತಿಂಗಳು ಟೆಂಡರ್ ಕರೆಯಲಾಗುವುದು ಎಂದರು. ನಾಮಕಲ್ ಗ್ಯಾರೇಜ್ನಿಂದ ಕೋಟೆಗೆ ರಸ್ತೆ ಸಂಪರ್ಕ ಕಲ್ಪಿಸಲಾಗುವುದು. ಕೆಂಪೇಗೌಡ ಹಾಗೂ ಸಂಗೊಳ್ಳಿ ರಾಯಣ್ಣ ಪ್ರಾಧಿಕಾರದ ಮಾದರಿಯಲ್ಲಿ ರಾಜವೀರ ಮದಕರಿನಾಯಕ ಪ್ರಾಧಿಕಾರ ರಚಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ಮನವಿ ಮಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಾಯಕ ಸಮಾಜದ ಅಧ್ಯಕ್ಷ ಬಿ.ಕಾಂತರಾಜು ಮಾತನಾಡಿ, ವಾಲ್ಮೀಕಿ ಭವನ ಹೊರಗಿನಿಂದ ಸುಂದರವಾಗಿ ಕಾಣುತ್ತಿದ್ದರೂ ಮಳೆ ಬಂದಾಗ ಒಳಗೆ ನೀರು ಸೋರಿಕೆಯಾಗುತ್ತದೆ. ಕಾಮಗಾರಿಯಲ್ಲಿ ಲೋಪಗಳಿದ್ದು, ತುರ್ತಾಗಿ ದುರಸ್ತಿ ಮಾಡಬೇಕಾಗಿದೆ. ಚಿತ್ರದುರ್ಗ ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಯಾಗಬೇಕು, ದುರ್ಗೋತ್ಸವ ಆಚರಣೆ ನಡೆಯಬೇಕು ಹಾಗೂ ನಗರದ ರಸ್ತೆಗಳನ್ನು ಅಗಲೀಕರಣ ಮಾಡಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ: ಕೇಂದ್ರದ ಮಾನದಂಡಗಳ ಅನ್ವಯ ಬರ ಘೋಷಣೆ | ಉಳಿದ ತಾಲೂಕು ಸೇರ್ಪಡೆ ಸಾಧ್ಯತೆಯೂ ಇದೆ
ನಾಯಕ ಸಮಾಜಕ್ಕೆ ಪ್ರತ್ಯೇಕ ನಿವೇಶನ ಅಥವಾ ಕಟ್ಟಡ ಇಲ್ಲದಿರುವುದರಿಂದ ನಗರ ವ್ಯಾಪ್ತಿಯಲ್ಲಿ ಐದು ಎಕರೆ ಜಾಗ ಮಂಜೂರು ಮಾಡಬೇಕು. ನಿರ್ಮಾಣ ಹಂತದಲ್ಲಿರುವ ನೂತನ ಕೆಎಸ್ಆರ್ಟಿಸಿ ಬಸ್ ಡಿಪೋ ಹಾಗೂ ಹೈಟೆಕ್ ಬಸ್ ನಿಲ್ದಾಣಕ್ಕೆ ಭೀಮಪ್ಪ ನಾಯಕರ ಹೆಸರು ನಾಮಕರಣ ಮಾಡಬೇಕು. ಕೋಟೆಗೆ ತೆರಳುವ ಪ್ರವಾಸಿಗರಿಗೆ ಸೂಕ್ತ ರಸ್ತೆ ಸಂಪರ್ಕ ಕಲ್ಪಿಸಬೇಕು ಎಂಬ ಬೇಡಿಕೆಗಳ ಮನವಿಯನ್ನು ಸಚಿವ ಟಿ.ರಘುಮೂರ್ತಿಗೆ ಸಲ್ಲಿಸಿದರು.
ಜಾತಿ ತಾರತಮ್ಯವಿಲ್ಲದ ಸಮ ಸಮಾಜ ನಿರ್ಮಾಣವಾಗಲಿ
ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಮಾತನಾಡಿ, ಜಾತಿ ವ್ಯವಸ್ಥೆಯಿಂದ ಕೂಡಿರುವ ದೇಶದಲ್ಲಿ ಇಂದಿಗೂ ಜಾತಿ ಆಧಾರಿತ ತಾರತಮ್ಯ ಸಂಪೂರ್ಣವಾಗಿ ನಿಂತಿಲ್ಲ. ಯಾವುದೇ ಜಾತಿ ಭೇದವಿಲ್ಲದೆ ಎಲ್ಲರನ್ನೂ ಸಮಾನವಾಗಿ ಕಾಣುವ ಸಮ ಸಮಾಜ ನಿರ್ಮಾಣವಾಗಬೇಕು ಎಂದು ಕರೆ ನೀಡಿದರು.
ನಾಯಕ ಸಮಾಜಕ್ಕೆ ಪುರಸ್ಕಾರಕ್ಕಿಂತ ತಿರಸ್ಕಾರವೇ ಹೆಚ್ಚಾಗಿದೆ. ಸಮಾಜದವರಾದ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿಯವರನ್ನು ಸನ್ಮಾನಿಸುತ್ತಿರುವುದು ಸಂತಸದ ವಿಚಾರ. ಪ್ರತಿಭಾವಂತ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.
ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
ಕಾರ್ಯಕ್ರಮದಲ್ಲಿ ನಿವೃತ್ತ ಜಿಲ್ಲಾಧಿಕಾರಿ ಶ್ರೀರಂಗಯ್ಯ, ನಗರಸಭೆ ಮಾಜಿ ಅಧ್ಯಕ್ಷ ಮಂಜುನಾಥಗೊಪ್ಪೆ ಸೇರಿದಂತೆ ಸಮಾಜದ ಪ್ರಮುಖರು ಉಪಸ್ಥಿತರಿದ್ದರು.
ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ, ಬಿಇಡಿ, ಎಂಜಿನಿಯರಿಂಗ್, ಮೆಡಿಕಲ್ ಹಾಗೂ ಸ್ನಾತಕೋತ್ತರ ಪದವಿಗಳಲ್ಲಿ ಹೆಚ್ಚಿನ ಅಂಕ ಗಳಿಸಿದ ನಾಯಕ ಸಮಾಜದ ನೂರಕ್ಕೂ ಹೆಚ್ಚು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

