ಮುಖ್ಯ ಸುದ್ದಿ
ನಗರ ಪ್ರದೇಶಗಳಲ್ಲಿ ಡೆಂಗ್ಯು ಹೆಚ್ಚಳ | ಆರೋಗ್ಯ ಇಲಾಖೆಯಿಂದ ಲಾರ್ವಾ ಸಮೀಕ್ಷೆ

CHITRADURGA NEWS | 28 MAY 2024
ಚಿತ್ರದುರ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮಂಗಳವಾರದಿಂದ ಆರಂಭವಾದ ಮೂರು ದಿನಗಳ ಡೆಂಗ್ಯೂ ನಿಯಂತ್ರಣಕ್ಕಾಗಿ ವಿಶೇಷ ಲಾರ್ವಾ ಸಮೀಕ್ಷೆ ಕಾರ್ಯಕ್ರಮ ನಗರದ ವಾರ್ಡ್ ಸಂಖ್ಯೆ 21ರಲ್ಲಿ ಜರುಗಿತು.
ಇದನ್ನೂ ಓದಿ: ವಿದ್ಯಾನಗರದ ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ

ಈ ವೇಳೆ ಜಿಲ್ಲಾ ಕೀಟ ಶಾಸ್ತ್ರಜ್ಞೆ ನಂದಿನಿ ಕಡಿ ಮಾತನಾಡಿ, ನಗರ ಪ್ರದೇಶಗಳಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿ ಕಂಡು ಬಂದಿದ್ದರಿಂದ, ಜಿಲ್ಲಾ ಮಟ್ಟದ ಅಂತರ್ ಇಲಾಖಾ ಸಮನ್ವಯ ಸಭೆಯಲ್ಲಿ ಜಿಲ್ಲಾಧಿಕಾರಿಗಳವರ ಮಾರ್ಗದರ್ಶನದಂತೆ ಸೊಳ್ಳೆಗಳ ನಿಯಂತ್ರಣಕ್ಕಾಗಿ ಲಾರ್ವಾ ಸಮೀಕ್ಷೆ ಹಮ್ಮಿಕೊಂಡಿದೆ.
ನಗರದ ಒಟ್ಟು 36 ವಾರ್ಡ್, 3 ನಗರ ಆರೋಗ್ಯ ಕೇಂದ್ರಗಳಿಂದ ಒಟ್ಟು 41117 ಮನೆ ಮನೆ ಭೇಟಿ ಲಾರ್ವಾ ಸಮೀಕ್ಷೆ, ಜ್ವರ ಪರೀಕ್ಷೆ, ಅಲ್ಲಲ್ಲಿ ಗುಂಪು ಸಭೆಯ ಮೂಲಕ ಡೆಂಗ್ಯೂ ನಿಯಂತ್ರಣ ಮಾಹಿತಿ ಶಿಕ್ಷಣ ನೀಡುವುದರ ಮೂಲಕ ಜನ ಜಾಗೃತಿ ಮೂಡಿಸಲಾಗುತ್ತಿದೆ. ಕೀಟಗಳು ನಮ್ಮನ್ನಾಳುವ ಮುನ್ನ ಜಾಗೃತರಾಗಿ ಎಂದು ಹೇಳಿದರು.
ಇದನ್ನೂ ಓದಿ: ಮೇ.30 ರಂದು ವಿದ್ಯುತ್ ವ್ಯತ್ಯಯ
ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ ಮಾತನಾಡಿ, ಮನೆಯ ಸುತ್ತಾ ಮುತ್ತಾ ಪರಿಸರ ಸ್ವಚ್ಛವಾಗಿ ಇಟ್ಟುಕೊಳ್ಳಿ. ಘನತ್ಯಾಜ್ಯ ವಸ್ತುಗಳನ್ನು ಸರಿಯಾದ ಜಾಗದಲ್ಲಿ ವಿಲೇವಾರಿ ಮಾಡಿ ಹಂಚು, ಒಡೆದ ಮಡಕೆ, ಪ್ಲಾಸ್ಟಿಕ್ ಬಾಟಲ್, ಎಳನೀರಿನ ಚಿಪ್ಪು ಇವುಗಳಲ್ಲಿ ಮಳೆ ನೀರು ಸಂಗ್ರಹವಾಗಿ ಸೊಳ್ಳೆಗಳ ಉತ್ಪತ್ತಿ ತಾಣಗಳಾಗದಂತೆ ಕಾಳಜಿವಹಿಸಿ. ಹೂವಿನ ಗಿಡಗಳ ಕುಂಡಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಿ ಎಂದು ಹೇಳಿದರು.
ಇದನ್ನೂ ಓದಿ: ಡಿವೈಡರ್ಗೆ ಅಪ್ಪಳಿಸಿ ಕಾರು ಪಲ್ಟಿ | ಸ್ಥಳದಲ್ಲೇ ಇಬ್ಬರ ದುರ್ಮರಣ
ಡೆಂಗ್ಯೂ ಬಗ್ಗೆ ಆತಂಕ ಭಯ ಬೇಡ. ವಾರಕ್ಕೊಮ್ಮೆಯಾದರೂ ನೀರು ಸಂಗ್ರಹಿಸುವ ತೊಟ್ಟಿ ಟ್ಯಾಂಕ್ ಬ್ಯಾರೆಲ್ ಸ್ವಚ್ಛವಾಗಿ ತೊಳೆದು ಒಣಗಿಸಿ. ನೀರು ಸಂಗ್ರಹಿಸಿ ಮುಚ್ಚಳ ಮುಚ್ಚಿ. ತೀವ್ರ ಜ್ವರ, ತಲೆನೋವು, ಕಣ್ಣಿನ ಹಿಂಭಾಗ ನೋವು, ಮೈಕೈ ನೋವು ಕಂಡು ಬಂದಲ್ಲಿ ಸ್ವಯಂ ಚಿಕಿತ್ಸೆ ಮಾಡಿಕೊಳ್ಳದೇ ಹತ್ತಿರದ ನಗರ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರೀಕ್ಷೆ, ಚಿಕಿತ್ಸೆ ಸಲಹೆ ಪಡೆದುಕೊಳ್ಳಿ. ಸಾರ್ವಜನಿಕರೆ ಎಚ್ಚರವಾಗಿ, ಬುದ್ಧಿವಂತರಾಗಿ ಸೊಳ್ಳೆಗಳ ಕಡಿತದಿಂದ ಸ್ವಯಂ ರಕ್ಷಣೆ ಮಾಡಿಕೊಳ್ಳಿ. ಮಾರಣಾಂತಿಕ ಡೆಂಗ್ಯೂ ನಿಯಂತ್ರಿಸಿ ಎಂದರು.
ಮಂಗಳವಾರದಿಂದ ಆರಂಭವಾದ ಮೂರು ದಿನಗಳ ಡೆಂಗ್ಯೂ ನಿಯಂತ್ರಣಕ್ಕಾಗಿ ವಿಶೇಷ ಲಾರ್ವಾ ಸಮೀಕ್ಷೆ ಕಾರ್ಯಕ್ರಮದಲ್ಲಿ ಒಟ್ಟು 200 ತಂಡ 400 ಸಿಬ್ಬಂದಿಗಳು ಸಮೀಕ್ಷೆ ಕಾರ್ಯ ನಡೆಸಲಿದ್ದಾರೆ.
ಇದನ್ನೂ ಓದಿ: ಡಿಪ್ಲೊಮೋ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿ | ಅರ್ಜಿ ಅಹ್ವಾನ
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣಾನಾಯ್ಕ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಜಾನಕಿ, ಮಾರುತಿನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಯಶಸ್, ನಗರಸಭೆ ಆರೋಗ್ಯ ನಿರೀಕ್ಷಣಾಧಿಕಾರಿ ನಾಗರಾಜ್, ಆರೋಗ್ಯ ಇಲಾಖೆಯ ಆರೋಗ್ಯ ಸುರಕ್ಷತಾಧಿಕಾರಿಗಳಾದ ತಿಪ್ಪಮ್ಮ, ರೇಣುಕಾ, ಶೋಭಾ, ಶಿಲ್ಪ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ರಂಗಾರೆಡ್ಡಿ, ಮಲ್ಲಿಕಾರ್ಜುನ, ನಾಗರಾಜ್, ತಿಪ್ಪೇಸ್ವಾಮಿ, ಶ್ರೀನಿವಾಸ್, ಪ್ರಶಾಂತ್, ಆಶಾ ಕಾರ್ಯಕರ್ತೆಯರು, ಸಾರ್ವಜನಿಕರು ಭಾಗವಹಿಸಿದ್ದರು.
