
CHITRADURGA NEWS | 26 OCTOBER 2024
ಚಿತ್ರದುರ್ಗ: ರಾಜ್ಯದಲ್ಲಿ ಹಿಂಗಾರು ಹಂಗಾಮಿನಲ್ಲಿ 56,900 ಹೆಕ್ಟೇರ್ ಬೆಳೆ ಹಾನಿಯಾಗಿರುವ ಕುರಿತು ಪ್ರಾಥಮಿಕ ಅಂದಾಜು ಮಾಹಿತಿ ಇದೆ. ಮುಂದಿನ ಮೂರಾಲ್ಕು ದಿನದಲ್ಲಿ ಜಂಟಿ ಸಮೀಕ್ಷೆ ಪೂರ್ಣಗೊಳಿಸಿದ ನಂತರ ನಿಖರ ಮಾಹಿತಿ ದೊರಯಲಿದೆ. ಇದಾದ ಬಳಿಕ ಕೂಡಲೇ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದರು.
ಚಿತ್ರದುರ್ಗ ಜಿಲ್ಲೆಯ ಬೆಳಗಟ್ಟ, ಕಾಸಾವರಹಟ್ಟಿ, ಸಾದರಹಳ್ಳಿ, ಲಕ್ಷ್ಮೀಸಾಗರ ಮತ್ತಿತರೆಡೆಗಳಲ್ಲಿ ಮಳೆಯಿಂದ ಆಗಿರುವ ಬೆಳೆ ಹಾನಿ ಪರಿಶೀಲಿಸಿ ಮಾತನಾಡಿದರು.

ಇದನ್ನೂ ಓದಿ: ವಿದ್ಯುತ್ ಅವಘಡ | ಬೆಂಕಿಯಿಂದ ಹೊತ್ತಿ ಉರಿದ ಮನೆ
ಬೆಳೆ ಹಾನಿಗೆ ರೈತರುಗೆ ಪರಿಹಾರ ನೀಡಲು ಬೇಕಾದಷ್ಟು ಅನುದಾನ ಲಭ್ಯವಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ರೂ.15.50 ಕೋಟಿ ಹಣ ಜಿಲ್ಲಾಧಿಕಾರಿಗಳ ಬಳಿ ಇದೆ. ರಾಜ್ಯದಲ್ಲಿ ಎಲ್ಲಾ ಜಿಲ್ಲೆಗಳಿಗೂ ಸೇರಿ ರೂ.666 ಕೋಟಿ ಹಣ ನೀಡಲಾಗಿದ್ದು, ತಕ್ಷಣ ಪರಿಹಾರ ನೀಡಲಾಗುವುದು ಎಂದರು.
ಪರಿಹಾರ ಹೆಚ್ಚಳಕ್ಕೆ ಒತ್ತಾಯ:
ನೈಸರ್ಗಿಕ ವಿಕೋಪಗಳ ಪರಿಹಾರ ವಿತರಣೆ ಮಾರ್ಗಸೂಚಿಗಳನ್ನು ಪರಿಷ್ಕರಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಇದರ ಜೊತೆಗೆ ಬೆಳೆ ಪರಿಹಾರ ಮೊತ್ತದ ಹೆಚ್ಚಳಕ್ಕೂ ರಾಜ್ಯ ಸರ್ಕಾರದಿಂದ ಒತ್ತಡ ಹೇರಲಾಗುವುದು ಎಂದು ಕಂದಾಯ ಸಚಿವರು ಹೇಳಿದರು.

ದೆಹಲಿಯಲ್ಲಿ ಪ್ರಧಾನ ಮಂತ್ರಿಗಳನ್ನು ಮುಖ್ಯಮಂತ್ರಿಗಳೊಂದಿಗೆ ಭೇಟಿ ಮಾಡಿ ಬೆಳೆ ಪರಿಹಾರ ಮೊತ್ತ ಹೆಚ್ಚಳಕ್ಕೆ ಒತ್ತಾಯಿಸಲಾಗಿದೆ. ಸದ್ಯ ಹಳೆಯ ಕಾಲದ ಬೆಲೆಗಳನ್ನು ಪರಿಗಣಿಸಿ ಬೆಳೆ ಪರಿಹಾರ ಮೊತ್ತ ನೀಡಲಾಗುತ್ತಿದೆ. ಇದರಿಂದ ರೈತರಿಗೆ ನ್ಯಾಯ ಒದಗಿಸಲು ಆಗುವುದಿಲ್ಲ.
ಇದನ್ನೂ ಓದಿ: ಮಳೆಯಿಂದ ಈರುಳ್ಳಿ, ಶೇಂಗಾ ಬೆಳೆ ನಾಶ | ಪರಿಹಾರಕ್ಕೆ ರೈತರ ಆಗ್ರಹ
ಆದ್ದರಿಂದ ಬೆಳೆ ಪರಿಹಾರದ ಮೊತ್ತವನ್ನು ಪರಿಷ್ಕøರಿಸುವಂತೆ ಕೇಳಲಾಗಿದೆ. ಕೇಂದ್ರದಲಿ ಎನ್.ಡಿ.ಎ ಮೈತ್ರಿಕೂಟ ಅಧಿಕಾರದಲ್ಲಿದೆ. ರಾಜ್ಯದ ವಿಪಕ್ಷ ನಾಯಕರು ಬೆಳೆ ಪರಿಹಾರ ಹೆಚ್ಚಳದ ಕುರಿತು ಪ್ರಧಾನ ಮಂತ್ರಿಗಳಿಗೊಂದಿಗೆ ಸಮಾಲೋಚಿಸುವಂತೆ ರಾಜ್ಯದ ಜನರ ಪರವಾಗಿ ಅವರಿಗೂ ಮನವಿ ಮಾಡುವುದಾಗಿ ಸಚಿವ ಕೃಷ್ಣ ಭೈರೇಗೌಡ ಹೇಳಿದರು.
ದಾವಣಗೆರೆ, ಚಿತ್ರದುರ್ಗ, ವಿಜಯನಗರ, ತುಮಕೂರು ಸೇರಿದಂತೆ ಮಧ್ಯ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಮಳೆಯಾಗಿದೆ. ಈ ಬಾರಿ ರಾಜ್ಯದಲ್ಲಿ ಅಕ್ಟೋಬರ್ ತಿಂಗಳಲ್ಲಿ 170 ಮಿ.ಮೀ ಆಗಿದ್ದು, ಇದು ಸರಾಸರಿ ವಾಡಿಕೆ ಮಳೆಗಿಂತಲ್ಲೂ 70 ಮಿ.ಮೀ ಹೆಚ್ಚಾಗಿದೆ. ಇದರಿಂದಾಗಿ ಬಹಳಷ್ಟು ಕಡೆ ಬೆಳೆ ಹಾನಿ ಉಂಟಾಗಿದೆ. ಹೀಗಾಗಿ ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಯಿಂದ ಜಂಟಿಯಾಗಿ ಬೆಳೆ ಹಾನಿ ಕುರಿತು ಸಮೀಕ್ಷೆ ನಡೆಸಲು ಸೂಚನೆ ನೀಡಲಾಗಿದೆ.
ಇದನ್ನೂ ಓದಿ: ಹೊಳಲ್ಕೆರೆ ಪಟ್ಟಣದಲ್ಲಿ 2 ದಿನ ವಿದ್ಯುತ್ ವ್ಯತ್ಯಯ
ಹಿಂಗಾರು ಮಳೆಯ ವೇಳೆ ಸಿಡಿಲು, ಮನೆ ಕುಸಿತ ಹಾಗೂ ಮಳೆಯ ಪ್ರವಾಹದಲ್ಲಿ ಕೊಚ್ಚಿಹೋಗಿ ರಾಜ್ಯದ್ಯಂತ 21 ಜನ ಅಸುನೀಗಿದ್ದಾರೆ. ಇಲ್ಲಿಯವರೆಗೂ ಮುಂಗಾರು ಹಾಗೂ ಹಿಂಗಾರು ಸೇರಿ ಒಟ್ಟಾರೆ 115 ಜನರ ಪ್ರಾಣಹಾನಿಯಾಗಿದ್ದು, ಇವರೆಲ್ಲರಿಗೂ ಪರಿಹಾರ ನೀಡಲಾಗಿದೆ.
ಹಿಂಗಾರು ಹಂಗಾಮಿನಲ್ಲಿ 122 ಮನೆಗೆ ಹಾನಿಯಾಗಿದ್ದು, ಪರಿಹಾರ ನೀಡಲು ನಿರ್ದೇಶನ ನೀಡಲಾಗಿದೆ. ಅ.26 ರಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಅತಿವೃಷ್ಠಿ ಉಂಟಾಗಿರುವ 10 ಜಿಲ್ಲೆಗಳ ಅಧಿಕಾರಿಗಳ ಪರಿಶೀಲನಾ ಸಭೆ ಕರೆಯಲಾಗಿದೆ. ಸರ್ಕಾರದಿಂದ ಅಗತ್ಯ ನೆರವು ಸಹ ನೀಡಲಾಗುವುದು. ಬೆಳೆ ಹಾನಿ ಸಮೀಕ್ಷೆ ಕಾರ್ಯ ಚುರುಕಾಗಿ ನಡೆಯುತ್ತಿದೆ ಎಂದು ಸಚಿವ ಕೃಷ್ಣ ಭೈರೇಗೌಡ ಹೇಳಿದರು.
ಇದನ್ನೂ ಓದಿ: ದಿನ ಭವಿಷ್ಯ | 26 ಅಕ್ಟೋಬರ್ | ಆದಾಯಕ್ಕಿಂತ ಹೆಚ್ಚು ಖರ್ಚು, ಮಕ್ಕಳ ಆರೋಗ್ಯದಲ್ಲಿ ಎಚ್ಚರ, ಶುಭ ಸುದ್ದಿ
ಮುಂಗಾರು ಹಂಗಾಮಿನಲ್ಲಿ ಸುಮಾರು ರೂ.100 ಕೋಟಿಯಷ್ಟು ಬೆಳೆ ಹಾಗೂ ಮನೆ ಹಾನಿ ಪರಿಹಾರ ನೀಡಲಾಗಿದೆ. ಉಳಿದ ರೂ.100 ಕೋಟಿ ಪರಿಹಾರ ವಿತರಣೆಯು ಚಾಲ್ತಿಯಲ್ಲಿದೆ. ಮಧ್ಯ ಕರ್ನಾಟಕ ಪದೇ ಪದೇ ಬರಗಾಲಕ್ಕೆ ತುತ್ತಾಗುತ್ತಿವೆ. ಭದ್ರಾ ಯೋಜನೆಯಲ್ಲಿ ರಾಜ್ಯಕ್ಕೆ ಹೆಚ್ಚಿನ ನೀರು ಲಭ್ಯವಿದೆ. ಹಾಗಾಗಿ ಈ ಭಾಗದ ರೈತರ ಅಭಿವೃದ್ಧಿಗಾಗಿ ಭದ್ರಾ ಮೇಲ್ದಂಡೆ ಯೋಜನೆ ರೂಪಿಸಲಾಗಿದೆ. ಈ ಯೋಜನೆಗೆ ಕೇಂದ್ರ ಸರ್ಕಾರದಿಂದ ರೂ.5300 ಕೋಟಿ ಹಣ ಬರುವುದು ಬಾಕಿಯಿದೆ. ಇಲ್ಲಿಯವರೆಗೂ ನಯಾಪೈಸೆ ಅನುದಾನ ಬಂದಿಲ್ಲ. ವಿರೋಧ ಪಕ್ಷದ ನಾಯಕರು ಕೂಡಲೇ ಕೇಂದ್ರಕ್ಕೆ ಒತ್ತಾಯಿಸಿ ಹಣ ತಂದರೆ, ಈ ಭಾಗದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮ ಜಾರಿ ಮಾಡಲಾಗುವುದು.
ಇದನ್ನೂ ಓದಿ: ಅಡಿಕೆ ಧಾರಣೆ | ಚನ್ನಗಿರಿ ಮಾರುಕಟ್ಟೆಯಲ್ಲಿ 50 ಸಾವಿರದ ಗಡಿ ದಾಟಿದ ರಾಶಿ ಅಡಿಕೆ
ಗ್ಯಾರೆಂಟಿ ಯೋಜನೆಗಳು ಜನರ ಮನೆ ಬಾಗಿಲಿಗೆ ತಲುಪತ್ತಿವೆ. ಇದರಲ್ಲಿ ಯಾವುದೇ ಕಮಿಷನ್, ಪರ್ಸಂಟೇಜ್ ನೀಡಬೇಕಿಲ್ಲ. ಸಾರ್ವಜನಿಕರು ಯೋಜನೆಯ ಲಾಭ ಪಡೆಯಲು ಯಾರ ಮನೆಗೂ ಹೋಗಿ ಸಲ್ಯೂಟ್ ಹೊಡೆಯುವ ಅವಶ್ಯಕತೆಯಿಲ್ಲ. ನೇರವಾಗಿ ಯೋಜನೆಗಳು ಜನರಿಗೆ ತಲುಪುತ್ತಿವೆ. ವಿಶ್ವಕ್ಕೆ ಮಾದರಿ ಎನಿಸಿದ ಯೋಜನೆಗಳನ್ನು ಜಾರಿ ಮಾಡಿದ ಸಮಾಧಾನ ನಮಗಿದೆ. ಇನ್ನೂ ಮೂರುವರೆ ವರ್ಷದಲ್ಲೇ ಬೇರೆ ಬೇರೆ ಕ್ಷೇತ್ರಗಳಲ್ಲಿಯೂ ಅಭಿವೃದ್ಧಿ ಮಾಡಿ, ಜನರು ನಮ್ಮ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವ ಪ್ರಯತ್ನ ಪಡುವುದಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.
ಮಳೆಹಾನಿ ಪ್ರದೇಶಕ್ಕೆ ಕಂದಾಯ ಸಚಿವರ ಭೇಟಿ, ಪರಿಶೀಲನೆ:
ಚಿತ್ರದುರ್ಗ ತಾಲ್ಲೂಕಿನ ವಿವಿಧೆಡೆ ಮಳೆಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಳೆದ ಕೆಲ ದಿನಗಳಿಂದ ಬಿದ್ದಂತಹ ಹೆಚ್ಚಿನ ಮಳೆಯಿಂದಾಗಿ ಬೆಳೆಹಾನಿಯಾಗಿದ್ದು, ಬೆಳೆಹಾನಿಯಾಗಿರುವ ಚಿತ್ರದುರ್ಗ ತಾಲ್ಲೂಕಿನ ಬೆಳಗಟ್ಟ, ಕಾಸವರಹಟ್ಟಿ, ಕೆ.ಬಳ್ಳೇಕಟ್ಟೆ, ಸಾದರಹಳ್ಳಿ ಸೇರಿದಂತೆ ವಿವಿಧೆಡೆ ರೈತರ ಜಮೀನುಗಳಿಗೆ ಭೇಟಿ ನೀಡಿ, ಹಾನಿಯಾಗಿರುವ ಬೆಳೆ ಪರಿಶೀಲನೆ ನಡೆಸಿ, ಮಾಹಿತಿ ಪಡೆದುಕೊಂಡರು.
ಇದನ್ನೂ ಓದಿ: ಏರುತ್ತಲೇ ಇದೆ ನೀರಿನ ಮಟ್ಟ | ವಿವಿ ಸಾಗರಕ್ಕೆ ಇಂದು ಬಂದ ನೀರೆಷ್ಟು ?
ಚಿತ್ರದುರ್ಗ ತಾಲ್ಲೂಕಿನ ಬೆಳಗಟ್ಟ ಗ್ರಾಮದ ಸುಜಾತಾ ಭಾರ್ಗವರೆಡ್ಡಿ ಅವರ ಜಮೀನಿಗೆ ಭೇಟಿ ನೀಡಿ, ಹೆಚ್ಚಿನ ಮಳೆಯಿಂದ ಹಾನಿಯಾಗಿರುವ 1.5 ಎಕರೆಯ ಈರುಳ್ಳಿ ಬೆಳೆ ವೀಕ್ಷಿಸಿದರು. ನಂತರ ಹಾಯ್ಕಲ್ ಸಮೀಪದ ಕಾಸವರಹಟ್ಟಿಯ ರಸ್ತೆಯ ರೈತರೊಬ್ಬರ ಮೆಕ್ಕೆಜೋಳ ಬೆಳೆಹಾನಿ ಪರಿಶೀಲಿಸಿದರು. ಇದಾದ ನಂತರ ಸಾದರಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಅವರು, ಸಾದರಹಳ್ಳಿಯ ಕೆರೆಕೋಡಿ ಒಡೆದು ಉಂಟಾದ ಬೆಳೆಹಾನಿ ಪ್ರದೇಶಗಳ ವೀಕ್ಷಣೆ ಮಾಡಿದರು.
ಈ ವೇಳೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಆರ್.ಕಾರ್ತಿಕ್, ತಹಶೀಲ್ದಾರ್ ಡಾ.ನಾಗವೇಣಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಶರಣಪ್ಪ ಬೋಗಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
