CHITRADURGA NEWS | 21 JULY 2026
ಚಿತ್ರದುರ್ಗ: ಜಿಲ್ಲಾ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಲು 10 ರಿಂದ 15 ಸಾವಿರದವರೆಗೆ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಗಂಭೀರ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಜಿಲ್ಲಾ ಸರ್ಜನ್ ಡಾ. ರವೀಂದ್ರ ಅವರನ್ನು ಕೆಡಿಪಿ (ತ್ರೈಮಾಸಿಕ) ಸಭೆಗೆ ಕರೆಸಿ, ಮಾಹಿತಿ ಪಡೆದು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಇದನ್ನೂ ಓದಿ: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ AICC ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹುಟ್ಟುಹಬ್ಬ ಆಚರಣೆ
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆಸಿದ ತಾಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಲು ಹಣ ಪಡೆಯುವುದು, ಹಣ ಕೊಟ್ಟವರಿಗೆ ಮಾತ್ರ ತುರ್ತು ಚಿಕಿತ್ಸೆ ಹಾಗೂ ಬಿಪಿಎಲ್ ಕಾರ್ಡ್ ಇರುವರಿಗೆ ಎಂಆರ್ಐ ಸ್ಕ್ಯಾನಿಂಗ್ಗೆ ಆದ್ಯತೆ ನೀಡುವುದು ಅತ್ಯಂತ ಗಂಭೀರ ವಿಷಯವಾಗಿದೆ.
ಬಡವರ ಆರೋಗ್ಯದೊಂದಿಗೆ ಚೆಲ್ಲಾಟ ನಡೆಸುವುದನ್ನ ನಾನು ಸಹಿಸುವುದಿಲ್ಲ. ಬಡವರಿಗೆ ಸೇವೆ ಮಾಡಬೇಕೆನ್ನುವ ಮನೋಭಾವನೆಯನ್ನ ಜಿಲ್ಲಾ ಸರ್ಜನ್ ವೃತ್ತಿಯಲ್ಲಿರುವವರು ಬೆಳೆಸಿಕೊಳ್ಳಬೇಕು. ವೈದ್ಯಾಧಿಕಾರಿಗಳೇ ನಿಮ್ಮ ಮಾತನ ಕೇಳುವುದಿಲ್ಲ ಎಂದರೆ ಸಾಮಾನ್ಯರ ಜನರ ಗತಿ ಏನು? ಎಂದು ಜಿಲ್ಲಾ ಸರ್ಜನ್ ವೈದ್ಯಾಧಿಕಾರಿ ಡಾ.ರವೀಂದ್ರ ಅವರಿಗೆ ಎಚ್ಚರಿಕೆ ನೀಡಿದರು.
ಜಿಲ್ಲಾ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಲು ಮಹಿಳೆಯರನ್ನು ಎರಡರಿಂದ ಮೂರು ದಿನಗಳವರೆಗೆ ಕಾಯಿಸಿ, ಹಣ ನೀಡಿದ ನಂತರವೇ ಹೆರಿಗೆ ಮಾಡಿಸುತ್ತಾರೆ ಎಂಬ ಆರೋಪಗಳು ಜನರಿಂದ ನಮಗೆ ಕೇಳಿಬಂದಿವೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಬಡವರಿಗೆ ಉಚಿತ ಹಾಗೂ ಗುಣಮಟ್ಟದ ಆರೋಗ್ಯ ಸೇವೆ ದೊರೆಯಬೇಕು. ಆದರೆ ಕೆಲ ವೈದ್ಯರು ಖಾಸಗಿ ಆಸ್ಪತ್ರೆಗಳತ್ತ ಹೆಚ್ಚು ಆಸಕ್ತಿ ತೋರಿಸುತ್ತಿದ್ದು, ಬಡವರ ಸೇವೆಗೆ ಆದ್ಯತೆ ನೀಡುತ್ತಿಲ್ಲ ಎಂಬ ಬೇಸರವನ್ನೂ ವ್ಯಕ್ತಪಡಿಸಿದರು.
ಇದನ್ನೂ ಓದಿ: ಪದವಿ ಪೂರ್ವ ಕಾಲೇಜು ಪ್ರಾಚಾರ್ಯರ ಸಂಘಕ್ಕೆ ಜಿಲ್ಲಾಧ್ಯಕ್ಷರಾಗಿ ಡಾ.ಕೃಷ್ಣಪ್ಪ ಆಯ್ಕೆ
ಗ್ರಾಮೀಣ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಔಷಧಿ ಹಾಗೂ ಚಿಕಿತ್ಸೆಯಲ್ಲಿ ಯಾವುದೇ ಕೊರತೆ ಉಂಟಾಗಬಾರದು. ಕ್ಯಾನ್ಸರ್ ಸೇರಿದಂತೆ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರನ್ನು ಗುರುತಿಸಿ ಸರ್ಕಾರದ ವತಿಯಿಂದ ಸಮರ್ಪಕ ಚಿಕಿತ್ಸೆ ಒದಗಿಸಬೇಕು ಎಂದು ವೈದ್ಯಾಧಿಕಾರಿ ಡಾ.ಗಿರೀಶ್ ಅವರಿಗೆ ಸೂಚಿಸಿದರು.
ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಹಲವಾರು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಮುಂದುವರಿದಿದ್ದು, ಅಧಿಕಾರಿಗಳು ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಮಸ್ಯೆ ಪರಿಹರಿಸಬೇಕು. ಗ್ರಾಮಗಳಲ್ಲಿ ಚಾಲ್ತಿಯಲ್ಲಿರುವ ಬೋರ್ವೆಲ್ಗಳಿಗೆ ನಿರಂತರ ಜ್ಯೋತಿ ವಿದ್ಯುತ್ ಸಂಪರ್ಕ ಬೆಸ್ಕಾಂ ಇಲಾಖೆ ಅಧಿಕಾರಿಗಳು ಕಲ್ಪಿಸಿಕೊಡಬೇಕು.
ಗ್ರಾಮ ಪಂಚಾಯಿತಿ ಅಧಿಕಾರಿಗಳ ಜೊತೆಗೆ ಜನರಿಗೆ ಕುಡಿಯುವ ನೀರಿನ ಸಮಸ್ಯೆಗೆ ವಿದ್ಯುತ್ ಸಮಸ್ಯೆ ಎದುರಾಗದಂತೆ ಕ್ರಮವಹಿಸಬೇಕು, ಶುದ್ಧ ಕುಡಿಯುವ ನೀರಿನ ಘಟಕಗಳ ಅವಶ್ಯಕತೆ ಇರುವ ಗ್ರಾಮಗಳ ವರದಿ ನೀಡಿದರೆ ಡಿಎಂಎಫ್ ಯೋಜನೆಯಡಿ ಹೊಸ ಘಟಕಗಳನ್ನು ಸ್ಥಾಪಿಸುವುದಾಗಿ ತಿಳಿಸಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
ಜಲ ಜೀವನ್ ಮಿಷನ್ (ಜೆಜೆಎಂ) ಕಾಮಗಾರಿಗಳಲ್ಲಿ ನಿರ್ಲಕ್ಷ್ಯ ವಹಿಸಿರುವ ಗುತ್ತಿಗೆದಾರರಿಗೆ ನೋಟಿಸ್ ನೀಡಬೇಕು. ಕಾಮಗಾರಿ ಪೂರ್ಣಗೊಳ್ಳದ ಗ್ರಾಮಗಳ ಪಟ್ಟಿ ಸಿದ್ಧಪಡಿಸಿ, ಕಳಪೆ ಕಾಮಗಾರಿಯನ್ನು ಮಾಡಿರುವಂತಹ ಗುತ್ತಿಗೆಗಾರರ ಬಿಲ್ ಪಾವತಿಸಬಾರದು ಎಂದು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಶಿವಮೂರ್ತಿ ಅವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ರೈತರ ಹೆಸರಲ್ಲಿ ಇತರರು ಕೃಷಿಗೊಂಡಗಳನ್ನ ನಿರ್ಮಿಸಿ ಸರ್ಕಾರದಿಂದ ಬರುವ ಅನುದಾನವನ್ನು ಪಡೆದು, ಅವುಗಳನ್ನು ಸಮರ್ಪಕವಾಗಿ ಬಳಸದೇ, ಮುಚ್ಚಿಸಿರುವ ಸರಿಯಲ್ಲ. ರೈತರಿಗೆ ಅವಶ್ಯಕವಾಗಿ ಕೃಷಿ ಹೊಂಡಬೇಕು ಆದ್ರೆ ಇದರಿಂದ ದುಡ್ಡು ಮಾಡಿಕೊಳ್ಳುವವರು ಅವುಗಳನ್ನು ಮುಚ್ಚಿ ಬಿಲ್ಲುಗಳನ್ನು ಪಡೆಯುತ್ತಿರುವುದು ಸರ್ಕಾರಕ್ಕೆ ಮಾಡುತ್ತಿರುವ ದ್ರೋಹ. ಇಂತಹ ಕೆಲಸವನ್ನು ಇನ್ನು ಮುಂದೆ ಮಾಡದಂತೆ ಕ್ರಮವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ 56 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಕೇವಲ 26 ಸಾವಿರ ಹೆಕ್ಟೇರ್ನಲ್ಲಿ ಮಾತ್ರ ಬಿತ್ತನೆ ಆಗಿರುವುದು ಆತಂಕಕಾರಿ ಆಗಿದೆ. ಹಿರೇಗುಂಟನೂರು ಹಾಗೂ ಭರಮಸಾಗರ ಹೋಬಳಿಗಳಲ್ಲಿ ಮೆಕ್ಕೆಜೋಳ ಮತ್ತು ತುರುವನೂರು ಭಾಗದಲ್ಲಿ ಸೂರ್ಯಕಾಂತಿ ಬೆಳೆ ಬಿತ್ತನೆ ನಡೆಯುತ್ತಿದ್ದು, ಬೆಳೆ ಸಮೀಕ್ಷೆಯನ್ನು ಸಮರ್ಪಕವಾಗಿ ನಡೆಸಿ ರೈತರಿಗೆ ವಿಮೆ ಸೌಲಭ್ಯ ಕಡ್ಡಾಯವಾಗಿ ದೊರೆಯುವಂತೆ ಅಧಿಕಾರಿಗಳು ಜಾಗೃತಿ ಮೂಡಿಸವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಬೇಕು.
ಇದನ್ನೂ ಓದಿ: ಕ್ರೀಡಾಪಟುಗಳಿಗೆ ವಿವಿಧ ಪ್ರಶಸ್ತಿ, ಪ್ರೋತ್ಸಾಹಧನಕ್ಕೆ ಅರ್ಜಿ ಅಹ್ವಾನ
ರಸಗೊಬ್ಬರ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಯೂರಿಯಾ ಗೊಬ್ಬರ ಎಂಆರ್ಪಿ ದರಕ್ಕಿಂತ ಹೆಚ್ಚಿನ ದರಕ್ಕೆ ಗೊಬ್ಬರ ಮಾರಾಟ ಮಾಡಿದರೆ ಅಂತಹ ಅಂಗಡಿಗಳ ಪರವಾನಗಿ ರದ್ದುಪಡಿಸುವಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡುತ್ತಾ, ಅಂಗನವಾಡಿಗಳಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ ಗುಣಮಟ್ಟದಿಂದ ನೀಡಬೇಕು. ಬಾಣಂತಿಯರ ಆರೋಗ್ಯದ ಬಗ್ಗೆ ವೈದ್ಯಾಧಿಕಾರಿಗಳು ನಿರಂತರ ನಿಗಾ ವಹಿಸಿ, ತಾಯಿ ಹಾಗೂ ಶಿಶು ಮರಣ ಪ್ರಮಾಣ ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಅಂಗನವಾಡಿಗಳಿಗೆ ಕಳಪೆ ಆಹಾರ ಪೂರೈಕೆ ಮಾಡಿದ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಎಚ್ಚರಿಸಿದರು. ಜೊತೆಗೆ ಪೋಕ್ಸೋ ಪ್ರಕರಣಗಳ ತಡೆಗೆ ಜಾಗೃತಿ ಕಾರ್ಯಕ್ರಮಗಳನ್ನು ಹೆಚ್ಚಿಸಬೇಕೆಂದರು.
ತೋಟಗಾರಿಕೆ, ಮೀನುಗಾರಿಕೆ, ರೇಷ್ಮೆ, ನಿರ್ಮಿತಿ ಕೇಂದ್ರ, ಸಮಾಜ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಆಹಾರ ಇಲಾಖೆ ಅಕ್ಷರದ ದಾಸೋಹ, ಪಿಆರ್ಇಡಿ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಿ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.
ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆ | ವಿದ್ಯುತ್ ಗೋಪುರಗಳ ನಿರ್ಮಾಣಕ್ಕೆ ಅನುಮತಿ | ಗೋವಿಂದ ಕಾರಜೋಳ
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಆಡಳಿತ ಅಧಿಕಾರಿ ಮಂಜುನಾಥ್ ಸ್ವಾಮಿ, ಜಿಲ್ಲಾ ಗ್ಯಾರೆಂಟಿ ಸಮಿತಿ ಜಿಲ್ಲಾಧ್ಯಕ್ಷ ಶಿವಣ್ಣ, ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಕಾಶ್, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ರವಿಕುಮಾರ್, ತಹಶೀಲ್ದಾರ್ ಗೋವಿಂದ್ ರಾಜ್, ಕೆಡಿಪಿ ಸದಸ್ಯರಾದ ನಾಗರಾಜ್, ಸಂತೋಷ್, ವಿಜಯ್ ಕುಮಾರ್ ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

