CHITRADURGA NEWS | 01 APRIL 2026
ಚಿತ್ರದುರ್ಗ: ದೇಶದ ಭವಿಷ್ಯದ ಯೋಜನೆಗಳ ರೂಪಿಸುವಿಕೆಗೆ ಅಡಿಪಾಯವಾಗಿರುವ ಜನಗಣತಿ ಪ್ರಕ್ರಿಯೆಗೆ ಜಿಲ್ಲೆಯಲ್ಲಿ ಬುಧವಾರ ಚಾಲನೆ ದೊರೆಯಿತು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಏಪ್ರಿಲ್ 01 | ಮೆಕ್ಕೆಜೋಳ, ರಾಗಿ ರೇಟ್
ಚಿತ್ರದುರ್ಗ ನಗರದ ವಿ.ಪಿ.ಬಡಾವಣೆಯಲ್ಲಿರುವ ಜಿಲ್ಲಾ ನ್ಯಾಯಾಧೀಶರ ನಿವಾಸ ಹಾಗೂ ಜಿಲ್ಲಾಧಿಕಾರಿಗಳ ನಿವಾಸದಲ್ಲಿ ಬುಧವಾರ ಜನಗಣತಿ-2027ರ ಮೊದಲ ಹಂತದ ಮನೆಪಟ್ಟಿ ಕಾರ್ಯಕ್ರಮಕ್ಕೆ ಹಾಗೂ ಸ್ವಯಂ ಗಣತಿ ಪ್ರಕ್ರಿಯೆಗೆ ಜಿಲ್ಲಾ ನ್ಯಾಯಾಧೀಶರಾದ ರೋಣ ವಾಸುದೇವ್ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ರೋಣ ವಾಸುದೇವ್, ಭಾರತ ಜನಗಣತಿ ಕಾರ್ಯಕ್ರಮ ರಾಷ್ಟ್ರದ ಅಭಿವೃದ್ಧಿಯ ದೃಷ್ಠಿಯಿಂದ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು.
ಏಪ್ರಿಲ್ 01 ರಿಂದ 15 ರವರೆಗೆ ಸಾರ್ವಜನಿಕರು ತಮ್ಮ ಕುಟುಂಬದ ವಿವರಗಳನ್ನು ಆನ್ಲೈನ್ ಮೂಲಕ ಸ್ವಯಂ ದಾಖಲಿಸಲು ಅವಕಾಶ ಕಲ್ಪಿಸಲಾಗಿದ್ದು, ಜಿಲ್ಲೆಯ ಎಲ್ಲ ಸಾರ್ವಜನಿಕರು ಸ್ವಯಂ ಗಣತಿ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು. ತಮ್ಮ ಮನೆ ಬಾಗಿಲಿಗೆ ಬರುವ ಗಣತಿ ಅಧಿಕಾರಿಗಳೊಂದಿಗೆ ಸೌಜನ್ಯದಿಂದ ವರ್ತಿಸಿ, ನಿಖರವಾದ ಮಾಹಿತಿ ನೀಡುವ ಮೂಲಕ ರಾಷ್ಟ್ರೀಯ ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಇದನ್ನೂ ಓದಿ: ಹಿರಿಯೂರು | ಅಂಬಲಗೆರೆ ಶ್ರೀ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ
ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿ, ಸುಮಾರು 18 ಲಕ್ಷ ಜನಸಂಖ್ಯೆ ಹೊಂದಿರುವ ಚಿತ್ರದುರ್ಗ ಜಿಲ್ಲೆಯ ಎಲ್ಲಾ ಆರು ತಾಲ್ಲೂಕುಗಳಲ್ಲಿಯೂ ಏಕಕಾಲಕ್ಕೆ ಜನಪ್ರತಿನಿಧಿಗಳು ಹಾಗೂ ಪ್ರಮುಖರ ಉಪಸ್ಥಿತಿಯಲ್ಲಿ ಸ್ವಯಂ ಗಣತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಏಪ್ರಿಲ್ 01 ರಿಂದ 15 ರವರೆಗೆ ಸಾರ್ವಜನಿಕರು ಮೊಬೈಲ್ ಆಪ್ ಮೂಲಕ ತಾವೇ ಸ್ವತಃ ತಮ್ಮ ಮಾಹಿತಿಯನ್ನು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಸ್ವಯಂ ಗಣತಿ 15 ದಿನಗಳ ಅವಧಿ ಮುಗಿದ ನಂತರ ಜನಗಣತಿ ಸಿಬ್ಬಂದಿಗಳು ಜಿಲ್ಲೆಯ ಪ್ರತಿ ಮನೆಗಳಿಗೆ ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. ಜನಗಣತಿ ಸಿಬ್ಬಂದಿಗಳು ಮನೆ ಬಾಗಿಲಿಗೆ ಬರುವ ಮುನ್ನವೇ ಜಿಲ್ಲೆಯ ನಾಗರಿಕರು ಆಪ್ ಮೂಲಕ ಸ್ವಯಂ ಪ್ರೇರಿತರಾಗಿ ತಮ್ಮ ನಿಖರವಾದ ಮಾಹಿತಿಗಳನ್ನು ದಾಖಲಿಸಿ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮನವಿ ಮಾಡಿದರು.
ನಗರಸಭೆ ಪೌರಾಯುಕ್ತೆ ಎಸ್.ಲಕ್ಷ್ಮೀ ಮಾತನಾಡಿ, ಇಂದಿನಿಂದ ಏಪ್ರಿಲ್ 15 ರವರೆಗೆ ಜನಗಣತಿಯ ಮೊದಲ ಹಂತವು ನಡೆಯಲಿದೆ. ಈ ಅವಧಿಯಲ್ಲಿ ಸಾರ್ವಜನಿಕರು ತಾವಾಗಿಯೇ ಆನ್ಲೈನ್ ಮೂಲಕ ಮಾಹಿತಿ ದಾಖಲಿಸಲು ಸ್ವಯಂ ನೋಂದಣಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.
ಸಾರ್ವಜನಿಕರು https://se.census.gov.in ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ತಮ್ಮ ವಿವರಗಳನ್ನು ದಾಖಲಿಸಬಹುದು. ಮೊಬೈಲ್ ಸಂಖ್ಯೆಗೆ ಬರುವ ಒಟಿಪಿ ಮೂಲಕ ದೃಢೀಕರಣ ಪಡೆದು, ಮನೆಯ ಸ್ಥಿತಿಗತಿ ಮತ್ತು ಲಭ್ಯವಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಬೇಕು.
ಇದನ್ನೂ ಓದಿ: ಅಬ್ಬಿನಹೊಳೆ ಶ್ರೀ ರಂಗನಾಥಸ್ವಾಮಿ ಬ್ರಹ್ಮರಥೋತ್ಸವ ಏಪ್ರಿಲ್ 03ಕ್ಕೆ
ಈ ಮನೆಯ ನಿರ್ಮಾಣಕ್ಕೆ ಬಳಸಿದ ಸಾಮಗ್ರಿಗಳು, ಮನೆಯಲ್ಲಿರುವ ಕುಡಿಯುವ ನೀರಿನ ಸೌಲಭ್ಯಗಳು ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳ ಬಗ್ಗೆ ಪ್ರಶ್ನೆಗಳು ಇರುತ್ತವೆ. ಏಪ್ರಿಲ್ 16ರಿಂದ ಗಣತಿದಾರರು ಖುದ್ದಾಗಿ ಮನೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಬಿ.ಎಂ.ಗೋವಿಂದರಾಜ್, ಕಂದಾಯ ನಿರೀಕ್ಷಕ ಪ್ರಾಣೇಶ್, ನಗರಸಭೆ ಪರಿಸರ ಅಭಿಯಂತರ ಜಾಫರ್, ವ್ಯವಸ್ಥಾಪಕ ಜಯಣ್ಣ, ಆರೋಗ್ಯ ನಿರೀಕ್ಷಕರು ಹೀನಾ ಕೌಸರ್, ರುಕ್ಮೀಣಿ, ಬಾಬುರೆಡ್ಡಿ ಸೇರಿದಂತೆ ಜನಗಣತಿ ಅಧಿಕಾರಿಗಳು, ಸಿಬ್ಬಂದಿ ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
