CHITRADURGA NEWS | 30 JULY 2026
ಚಿತ್ರದುರ್ಗ: ಆಧುನಿಕ ಸಮಾಜದಲ್ಲಿ ದೇಶವು ಎಷ್ಟೇ ಪ್ರಗತಿ ಸಾಧಿಸಿದರೂ, ಸಮಾಜ ಎಷ್ಟೇ ಮುಂದುವರಿದರೂ ಅದರ ಜೊತೆಗೆ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಮಾನವ ಕಳ್ಳಸಾಕಾಣಿಕೆಯಂತಹ ಕಪ್ಪು ಛಾಯೆ ನಮ್ಮನ್ನು ಕಾಡುತ್ತಲೇ ಇದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಜಿ.ಡಿ.ಮಹಾವರ್ಕರ್ ಕಳವಳ ವ್ಯಕ್ತಪಡಿಸಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜುಲೈ 30 | ಹತ್ತಿ ರೇಟ್ ಎಷ್ಟಿದೆ?
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಇಲಾಖೆಗಳ ವತಿಯಿಂದ ಹಮ್ಮಿಕೊಂಡಿದ್ದ ಮಾನವ ಕಳ್ಳ ಸಾಕಾಣಿಕೆ ತಡೆ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದಲ್ಲಿ ನಡೆಯುತ್ತಿರುವ ಅನ್ಯಾಯ, ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಶೋಷಣೆಗಳ ಕುರಿತು ಬುದ್ಧಿಜೀವಿಗಳು, ವಿದ್ಯಾವಂತರು ಹಾಗೂ ಸಮಾಜದ ಉನ್ನತ ಮಟ್ಟದ ವ್ಯಕ್ತಿಗಳು ಚಿಂತನೆ ನಡೆಸಬೇಕಾದ ಅಗತ್ಯವಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯ ಸಂಕಟಕ್ಕೂ ಸ್ಪಂದಿಸುವ ಕೆಲಸವಾಗಬೇಕು ಎಂದರು.
ಇ0ದಿನ ದಿನಗಳಲ್ಲಿ ಯುವಕರು, ಮಹಿಳೆಯರು ಹಾಗೂ ಸಣ್ಣ ಸಣ್ಣ ಮಕ್ಕಳು ಶೋಷಣೆಗೆ ಒಳಗಾಗುತ್ತಿದ್ದು, ಅವರ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ. ಇಂತಹ ಅಪರಾಧಗಳನ್ನು ಹೇಗೆ ಪತ್ತೆ ಹಚ್ಚಬೇಕು, ಇದರಿಂದ ರಕ್ಷಣೆ ಪಡೆಯುವುದು ಹೇಗೆ ಹಾಗೂ ಕಾನೂನಾತ್ಮಕ ಚೌಕಟ್ಟಿನಲ್ಲಿ ಪರಿಹಾರ ಕಂಡುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ವ್ಯಾಪಕ ಚಿಂತನೆ-ಮಂಥನ ನಡೆಯಬೇಕಿದೆ ಎಂದರು.
ಇದನ್ನೂ ಓದಿ: ಅಧಿಕಾರೇತರ ನಾಮ ನಿರ್ದೇಶಿತ ಸದಸ್ಯರ ನೇಮಕ | ಅರ್ಜಿ ಅಹ್ವಾನ
ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕಾನೂನಿನ ಅರಿವು ಮೂಡಿಸುವ ಮೂಲಕ ಈ ಕಾರ್ಯಕ್ರಮದ ಉದ್ದೇಶವನ್ನು ಯಶಸ್ವಿಗೊಳಿಸಬೇಕು. ಪ್ರತಿಯೊಬ್ಬರೂ ತಮ್ಮ ತಮ್ಮ ಕರ್ತವ್ಯದ ವ್ಯಾಪ್ತಿಯಲ್ಲಿ ಇಂತಹ ಶೋಷಣೆಗಳ ವಿರುದ್ಧ ಜಾಗೃತಿ ಮೂಡಿಸಲು ಶ್ರಮಿಸಬೇಕು ಎಂದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸುಧೀನ್ ಕುಮಾರ್ ಮಾತನಾಡಿ, ಸಾಮಾನ್ಯವಾಗಿ ಆಚರಿಸುವ ಹಬ್ಬ-ಹರಿ ದಿನಗಳು, ಉತ್ಸವಗಳಂತೆ ಮಾನವ ಕಳ್ಳಸಾಕಾಣಿಕೆ ತಡೆ ದಿನಾಚರಣೆಯು ಸಂಭ್ರಮದ ಕಾರ್ಯಕ್ರಮವಲ್ಲ. ಮಹತ್ವದ ಉದ್ದೇಶದಿಂದ ಈ ದಿನ ಆಚರಿಸಲಾಗುತ್ತಿದ್ದು, ಈ ಸಾಮಾಜಿಕ ಪಿಡುಗನ್ನು ತಡೆಯಲು ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ಶ್ರಮಿಸಬೇಕಾಗಿದೆ ಎಂದರು.
ನಮ್ಮ ಮನೆಯ ಹೆಣ್ಣುಮಗಳು ಸ್ವಲ್ಪ ಸಮಯ ತಡವಾಗಿ ಮನೆಗೆ ಬಂದಾಗ, ಇಲ್ಲವೇ ಫೋನ್ ಸಂಪರ್ಕಕ್ಕೆ ಸಿಗದೇ ಇದ್ದಾಗ ಉಂಟಾಗುವ ಆತಂಕ ಮತ್ತು ನೋವು ಎಂಥದ್ದು ಎಂಬುದು ಅನುಭವಿಸಿದವರಿಗಷ್ಟೇ ಗೊತ್ತು. ಪೊಲೀಸ್ ಅಧಿಕಾರಿಯೇ ಆಗಿದ್ದರೂ, ಅಂತಹ ಸಂದರ್ಭದಲ್ಲಿ ಅವರು ಕೇವಲ ಒಬ್ಬ ತಂದೆಯಾಗಿ, ಕುಟುಂಬದ ಸದಸ್ಯರಾಗಿ ಆ ನೋವನ್ನು ಅನುಭವಿಸುತ್ತಾರೆ.
ಇದನ್ನೂ ಓದಿ: ಶಿಕ್ಷಣದ ಜೊತೆಗೆ ಜ್ಞಾನ, ಸಂಸ್ಕಾರ ನೀಡಿದಾಗಲೇ ಅದ್ಭುತ ದೇಶ ನಿರ್ಮಾಣ ಸಾಧ್ಯ | ಎಂ.ಸಿ.ರಘುಚಂದನ್
ನಮ್ಮ ಸ್ವಂತ ಕುಟುಂಬದ ಸದಸ್ಯರೇ ಕಳೆದುಹೋದರೆ ಹೇಗಿರಬಹುದು ಎಂದು ಒಂದು ಕ್ಷಣ ಯೋಚಿಸಿದರೆ ಎದೆ ಜಲ್ಲೆನಿಸುತ್ತದೆ. ಹೀಗಿರುವಾಗ, ಮಾನವ ಕಳ್ಳಸಾಕಾಣಿಕೆಗೆ ಒಳಗಾಗುವ ಬಾಧಿತರ ಸ್ಥಿತಿ ಮತ್ತು ಅವರ ಕುಟುಂಬದ ನೋವು ಎಷ್ಟಿರಬೇಡ ಎಂದು ಅವರು ಕಳವಳ ವ್ಯಕ್ತಪಡಿಸಿದರು.
ಮಕ್ಕಳು ಎಂದರೆ ದೇವರಿಗೆ ಸಮಾನ, ಸ್ತ್ರೀಯರು ದೇವತೆಗಳು ಎಂದು ಬರೀ ಮಾತಿನಲ್ಲಿ ಹೇಳಿ ಸುಮ್ಮನಾದರೆ ಸಾಲದು. ಕೇವಲ ಕಾನೂನು, ಆದೇಶಗಳಿಂದ ಮಾತ್ರವೇ ಈ ಸಮಸ್ಯೆ ತಡೆಯಲು ಸಾಧ್ಯವಿಲ್ಲ. ಅಧಿಕಾರಿಗಳು ಹಾಗೂ ಸಾರ್ವಜನಿಕರು ಇದನ್ನು ವೈಯಕ್ತಿಕ ಹೊಣೆಗಾರಿಕೆಯಾಗಿ ಸ್ವೀಕರಿಸಬೇಕು. ಮಕ್ಕಳು ಮತ್ತು ಮಹಿಳೆಯರ ಸುರಕ್ಷತೆಯ ವಿಷಯ ಬಂದಾಗ ಅತ್ಯಂತ ಜಾಗರೂಕರಾಗಿ, ವೈಯಕ್ತಿಕ ಕಾಳಜಿಯಿಂದ ಕಾರ್ಯನಿರ್ವಹಿಸುವುದು ಅತ್ಯಗತ್ಯ ಎಂದು ಕಿವಿಮಾತು ಹೇಳಿದರು.
ವಕೀಲರ ಸಂಘದ ಅಧ್ಯಕ್ಷ ಹೆಚ್.ಎಸ್.ಮಹೇಶ್ವರಪ್ಪ ಮಾತನಾಡಿ, ಸಮಾಜದಲ್ಲಿ ಮಾನವ ಹಕ್ಕುಗಳ ರಕ್ಷಣೆ ಹಾಗೂ ಸೌಹಾರ್ದಯುತ ವಾತಾವರಣ ನಿರ್ಮಾಣಕ್ಕೆ ಮಾನವ ಕಳ್ಳ ಸಾಗಾಣಿಕೆ ತಡೆಯುವುದು ಅತ್ಯಂತ ಪ್ರಮುಖವಾಗಿದೆ ಎಂದು ಹೇಳಿದರು.
ಇದನ್ನೂ ಓದಿ: ರುಡ್ ಸೆಟ್ ಸಂಸ್ಥೆಯಲ್ಲಿ ಸಮಗ್ರ ಕೃಷಿ ತರಬೇತಿ
ಇಂದಿನ ದಿನಗಳಲ್ಲಿ ಮಹಿಳೆಯರು ಹಾಗೂ ಉದ್ಯೋಗ ಹುಡುಕುವ ಶ್ರಮಿಕರನ್ನು ಗುರಿಯಾಗಿಸಿಕೊಂಡು ಶೋಷಣೆ ಮಾಡಲಾಗುತ್ತಿದೆ. ಏಜೆಂಟ್ಗಳ ಮೂಲಕ ವಿದೇಶಗಳಲ್ಲಿ ಅಥವಾ ಹೊರರಾಜ್ಯಗಳಲ್ಲಿ ಹೆಚ್ಚಿನ ಸಂಬಳ ಹಾಗೂ ಉತ್ತಮ ಸೌಲಭ್ಯ ನೀಡುವುದಾಗಿ ಆಮಿಷ ಒಡ್ಡಿ ವಂಚಿಸಲಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ, ಶಿಕ್ಷಣ, ಪ್ರಾಣ ರಕ್ಷಣೆ ಹಾಗೂ ಸ್ವತಂತ್ರವಾಗಿ ಜೀವಿಸುವ ಮೂಲಭೂತ ಹಕ್ಕುಗಳನ್ನು ನೀಡಿದೆ. ಈ ಹಕ್ಕುಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪುವಂತಾಗಬೇಕು. ಸರ್ಕಾರದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಾರ್ವಜನಿಕರು ಒಗ್ಗೂಡಿ ಶ್ರಮಿಸಿದರೆ ಮಾತ್ರ ಮಾನವ ಕಳ್ಳಸಾಗಾಣಿಕೆಯಂತಹ ಪಿಡುಗನ್ನು ಸಮಾಜದಿಂದ ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸಾಧ್ಯ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸಿ.ಎಸ್.ಗಾಯತ್ರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುನೀಲ್ ಕುಮಾರ್ ಮಾತನಾಡಿದರು. ಮಾನವ ಕಳ್ಳ ಸಾಗಾಣಿಕೆ ತಡೆಗಟ್ಟುವಿಕೆ ವಿಷಯದ ಕುರಿತು ಹಿರಿಯ ವಕೀಲ ಕೆ.ಎಸ್.ವಿಜಯ್ ಉಪನ್ಯಾಸ ನೀಡಿದರು.
ಇದನ್ನೂ ಓದಿ: ಆಗಸ್ಟ್ 02 ರಂದು ಸಿವಿಲ್ ಪೊಲೀಸ್ ಪರೀಕ್ಷೆ | ನಿಷೇಧಾಜ್ಞೆ ಜಾರಿ | ಡಿಸಿ
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕಿ ಜಯಲಕ್ಷಮ್ಮ, ಕಾರ್ಮಿಕ ಅಧಿಕಾರಿ ಅನಿಲ್ ಬಾಲಚಂದ್ರ ಬಗಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎ.ಎಂ.ವೀಣಾ ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

