ಮುಖ್ಯ ಸುದ್ದಿ
ಖರ್ಚಿಲ್ಲದೆ ಪ್ರಕರಣ ಬಗೆಹರಿಸಿಕೊಳ್ಳಿ | ಜಿಲ್ಲಾ ನ್ಯಾಯಾಲಯದಿಂದ ಸುರ್ವಣಾವಕಾಶ


CHITRADURGA NEWS | 07 JUNE 2024
ಚಿತ್ರದುರ್ಗ: ಸಂಧಾನದ ಮೂಲಕ ಸೌಹಾರ್ದಯುತವಾಗಿ ಪ್ರಕರಣಗಳನ್ನು ಇತ್ಯರ್ಥ ಪಡಿಸುವುದು ಲೋಕ್ ಅದಾಲತ್ ಅಥವಾ ಜನತಾ ನ್ಯಾಯಾಲಯದ ಮೂಲ ಉದ್ದೇಶವಾಗಿದೆ. ಜುಲೈ 13 ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು ಪಕ್ಷಗಾರರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರೋಣ್ ವಾಸುದೇವ್ ಹೇಳಿದರು.
ಇಲ್ಲಿನ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ‘ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಸುಲಭ ಹಾಗೂ ಶೀಘ್ರವಾಗಿ ಯಾವುದೇ ಶುಲ್ಕ, ಖರ್ಚು ವೆಚ್ಚವಿಲ್ಲದೇ ತೀರ್ಮಾನ ಮಾಡಿಕೊಳ್ಳಬಹುದು’ ಎಂದರು.
‘ಜನತಾ ನ್ಯಾಯಾಲಯದಲ್ಲಿ ಒಬ್ಬರು ಹಾಲಿ ನ್ಯಾಯಾಧೀಶರು ಹಾಗೂ ನುರಿತ ವಕೀಲರು ಸಂಧಾನಕಾರರಾಗಿ ಇರುತ್ತಾರೆ. ನ್ಯಾಯಾಲಯದಲ್ಲಿ ಚಾಲ್ತಿ ಇರುವ ಪ್ರಕರಣಗಳನ್ನು ಹಾಗೂ ಇನ್ನೂ ನ್ಯಾಯಾಲಯ ಪ್ರವೇಶಿಸದೇ ಇರುವಂತಹ ಪ್ರಕರಣಗಳನ್ನು ಸಹ ಜನತಾ ನ್ಯಾಯಾಲಯದಲ್ಲಿ ಪರಿಹರಿಸಿಕೊಳ್ಳಬಹುದು’ ಎಂದು ತಿಳಿಸಿದರು.

ಕ್ಲಿಕ್ ಮಾಡಿ ಓದಿ: ಗೋವಿಂದ ಕಾರಜೋಳ ಗೆಲುವಿಗೆ ಬಿಜೆಪಿ ನಾಯಕರು ಕೆಲಸ ಮಾಡಲಿಲ್ಲ
‘ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸೂಚನೆಯಂತೆ ಮುಂದಿನ ತಿಂಗಳು ಜುಲೈ 13 ರಂದು ಜಿಲ್ಲಾ ಹಾಗೂ ತಾಲ್ಲೂಕು ನ್ಯಾಯಾಲಯಗಳಲ್ಲಿ ಬೃಹತ್ ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ. ಕಕ್ಷಿಗಾರರು ಇದರ ಉಪಯೋಗ ಪಡೆದುಕೊಳ್ಳಬೇಕು’ ಎಂದು ಕೋರಿದರು.
‘ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಚಾಲ್ತಿಯಲ್ಲಿದ್ದ 3772 ವ್ಯಾಜ್ಯ ಪ್ರಕರಣ ಹಾಗೂ 113399 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಕಳೆದ ಮೆಗಾ ಲೋಕ್ ಅದಾಲತ್ನಲ್ಲಿ ಇತ್ಯರ್ಥ ಪಡಿಸಲಾಗಿದೆ. ಒಟ್ಟು 118520 ಪ್ರಕರಣಗಳನ್ನು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ವಿಲೇವಾರಿ ಮಾಡಲಾಗಿದೆ’ ಎಂದರು.
‘ಮದುವೆ ಬಂಧನವನ್ನು ಮುರಿಯುವುದು ನ್ಯಾಯಾಲಯದ ಕೆಲಸವಲ್ಲ. ಅಂತಿಮ ಹಂತದವರೆಗೂ ಪತಿ ಪತ್ನಿಯರಿಗೆ ಒಟ್ಟಾಗಿ ಜೀವಿಸಲು ತಿಳಿ ಹೇಳಲಾಗುತ್ತದೆ. ಈ ಹಿನ್ನಲೆಯಲ್ಲಿ ಕಳೆದ ಲೋಕ ಅದಾಲತ್ನಲ್ಲಿ ಚಿತ್ರದುರ್ಗ ನ್ಯಾಯಾಲಯಗಳ ವ್ಯಾಪ್ತಿಯಲ್ಲಿ ವಿಚೇಧನಕ್ಕಾಗಿ ಅರ್ಜಿ ಸಲ್ಲಿಸಿದ್ದ ಒಟ್ಟು 9 ಜೋಡಿಗಳನ್ನು ಪುನಃ ಒಂದು ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು.
ಕ್ಲಿಕ್ ಮಾಡಿ ಓದಿ: ಶೌಚಾಲಯದ ಬಳಿ ನವಜಾತ ಶಿಶು ಪತ್ತೆ | ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಘಟನೆ
‘ಲೋಕ ಅದಾಲತ್ನಲ್ಲಿ ವ್ಯಾಜ್ಯಪೂರ್ವ ಪ್ರಕರಣಗಳಾದ ಚೆಕ್ ಅಮಾನ್ಯ, ಬ್ಯಾಂಕ್ ವಸೂಲಾತಿ, ಉದ್ಯೋಗ, ಕಾರ್ಮಿಕ, ವೇತನ, ವಿದ್ಯುತ್,ನೀರು ಇತರೆ ಸೇವಾ ಶುಲ್ಕದ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ಅವಕಾಶವಿದೆ. ಇದರರೊಂದಿಗೆ ನ್ಯಾಯಾಲಯದ ವ್ಯಾಜ್ಯದಲ್ಲಿರುವ ನಾನ್ ಕಾಂಪೌಡಬಲ್ ಹಾಗೂ ಗಂಭೀರ ತರದ ಅಪರಾಧಿಕ ಪ್ರಕರಣಗಳನ್ನು ಹೊರತು ಪಡಿಸಿ, ಇತರೆ ಪ್ರಕರಣಗಳನ್ನು ರಾಜಿ ಮಾಡಿಕೊಳ್ಳಬಹುದು’ ಎಂದರು.
‘ಕಕ್ಷಿದಾರರು ನೇರವಾಗಿ ಅಥವಾ ವಕೀಲರ ಮೂಲಕ ಲೋಕ ಅದಾಲತ್ನಲ್ಲಿ ಭಾಗವಹಿಸಬಹುದು, ಉಭಯ ಪಕ್ಷಗಾರರಿಗೂ ಒಪ್ಪಿಗೆಯಾದರೇ ಅಂತಿಮ ತೀರ್ಮಾನವಾಗುತ್ತದೆ. ಈ ತಿರ್ಮಾನವು ನ್ಯಾಯಾಲಯದ ಡಿಕ್ರಿಯ ಮೌಲ್ಯ ಹೊಂದಿರುತ್ತದೆ. ತೀರ್ಮಾನ ಪ್ರಕಾರವಾಗಿ ಪಕ್ಷಗಾರರು ನಡೆದುಕೊಳ್ಳದಿದ್ದರೇ ಅವರ ವಿರುದ್ಧ ನ್ಯಾಯಾಲಯದಲ್ಲಿ ಅಮಲ್ದಾರಿ ಅರ್ಜಿಯನ್ನು ಸಲ್ಲಿಸಿ, ಆ ತೀರ್ಮಾನಕ್ಕೆ ಬದ್ಧರಾಗುವಂತೆ ಮಾಡಬಹುದು’ ಎಂದು ಹೇಳಿದರು.
‘ರಾಜಿ ಸಂಧಾನದಿಂದ ಉಭಯ ಪಕ್ಷಗಾರರ ಭಾಂಧವ್ಯ ವೃದ್ಧಿಯಾಗಿ ಪ್ರಕರಣ ಸುಖಾಂತ್ಯ ಕಾಣುತ್ತದೆ. ಲೋಕ ಅದಾಲತ್ ತೀರ್ಮಾನ ಅಂತಿಮವಾಗಿದ್ದು, ಯಾವುದೇ ಮೇಲ್ಮನವಿ ಸಲ್ಲಿಸಲು ಅವಕಾಶ ಇಲ್ಲ. ವರ್ಷಗಟ್ಟಲೇ ನ್ಯಾಯಾಲಯಕ್ಕೆ ಅಲೆಯದೆ ಲೋಕ ಅದಾಲತ್ನಲ್ಲಿ ಪ್ರಕರಣ ಬಗೆಹರಿಸಿಕೊಳ್ಳುವುದು ಉತ್ತಮ ಮಾರ್ಗವಾಗಿದೆ’ ತಿಳಿಸಿದರು.
ಕ್ಲಿಕ್ ಮಾಡಿ ಓದಿ:18 ವರ್ಷದ ಬಳಿಕ ಆಗ್ನೇಯ ಶಿಕ್ಷಕರ ಕ್ಷೇತ್ರ ಕಾಂಗ್ರೆಸ್ ವಶಕ್ಕೆ
‘ಜುಲೈ 29 ರಿಂದ ಆಗಸ್ಟ್ 3 ರವರೆಗೆ ಸರ್ವೋಚ್ಛ ನ್ಯಾಯಾಲಯದಲ್ಲಿ ವಿಶೇಷ ಲೋಕ್ ಅದಾಲತ್ ನಡೆಯಲಿದೆ. ಇದರಲ್ಲಿ 606 ಪ್ರಕರಣಗಳನ್ನು ಇತ್ಯರ್ಥಕ್ಕೆ ಕೈಗೊತ್ತಿಕೊಳ್ಳಲಾಗುವುದು. ಇದಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಜಿಲ್ಲೆಯ 19 ಪ್ರಕರಣಗಳನ್ನು ರಾಜಿ ಸಂಧಾನಕ್ಕಾಗಿ ಸರ್ವೋಚ್ಛ ನ್ಯಾಯಾಲಯ ಗುರುತಿಸಿದೆ’ ಎಂದರು.
‘ಈ ಪ್ರಕರಣಗಳ ಕಕ್ಷಿದಾರರು ಅದಾಲತ್ ಕಲಾಪದಲ್ಲಿ ಪಾಲ್ಗೊಳ್ಳಲು ಅನುಕೂಲವಾಗುವಂತೆ ಜಿಲ್ಲಾ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಗಳಲ್ಲಿ ವಿಡಿಯೋ ಕಾನ್ಫರೆನ್ಸ್ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಪ್ರಕರಣಗಳ ಪಟ್ಟಿಯ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ವೆಬ್ ಸೈಟ್ನಲ್ಲಿ ಲಭ್ಯವಿದೆ. ಪ್ರಕರಣದ ಕಕ್ಷಿದಾರರು ವಿಡಿಯೋ ಕಾನ್ಫರೆನ್ಸ್ ಕೇಂದ್ರಗಳಿಗೆ ಭೇಟಿ ನೀಡಿ ಇದರ ಸದುಯೋಗ ಪಡಿಸಿಕೊಂಡು ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬಹುದು’ ಎಂದು ತಿಳಿಸಿದರು.
ಸಾರ್ವಜನಿಕರು ಲೋಕ ಅದಾಲತ್ ಕುರಿತು ಹೆಚ್ಚಿನ ಮಾಹಿತಿಗಾಗಿ ಇ-ಮೇಲ್ dlsachitradurga1@gmail.com ಹಾಗೂ ಸದಸ್ಯ ಕಾರ್ಯದರ್ಶಿಯವರ ಕಚೇರಿ ಮೊಬೈಲ್ ಸಂಖ್ಯೆ 9141193935 ಹಾಗೂ ದೂರವಾಣಿ ಸಂಖ್ಯೆ 08194- 222322 ಕ್ಕೆ ಸಹ ಸಂಪರ್ಕಿಸಬಹುದು.
