CHITRADURGA NEWS | 06 MAY 2026
ಚಿತ್ರದುರ್ಗ: ಜಿಲ್ಲೆಯಲ್ಲಿ ಶಿಕ್ಷಣ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಿ ನಡೆಯುತ್ತಿರುವ ಅನಧಿಕೃತ ಶಾಲೆಗಳ ವಿರುದ್ಧ ಕೂಡಲೇ ಕಾನೂನು ಕ್ರಮ ಜರುಗಿಸಬೇಕು ಎಂದು ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎನ್.ಆರ್.ಮಹೇಶ್ವರಪ್ಪ ಶಿಕ್ಷಣ ಇಲಾಖೆ ಅಧಿಕಾರಿಗೆ ಸೂಚನೆ ನೀಡಿದರು.
ಇದನ್ನೂ ಓದಿ: ವೀರಶೈವ ಸಮುದಾಯದ ರುದ್ರಭೂಮಿಗೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಭೇಟಿ, ಪರಿಶೀಲನೆ
ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅನೇಕ ಶಾಲೆಗಳು ರಾಜ್ಯ ಪಠ್ಯಕ್ರಮದ ಅನುಮತಿ ಪಡೆದು, ಸಿಬಿಎಸ್ಇ ಅಥವಾ ಐಸಿಎಸ್ಇ ಎಂದು ಪ್ರಚಾರ ಮಾಡುತ್ತಿವೆ. ಇದು ಫೋಷಕರಿಗೆ ಮಾಡುವ ವಂಚನೆಯಾಗಿದೆ. ಶೈಕ್ಷಣಿಕ ವರ್ಷದ ಪ್ರವೇಶಾತಿ ಪ್ರಕ್ರಿಯೆ ಆರಂಭವಾಗುವ ಮುನ್ನವೇ ಆಯಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಅನಧಿಕೃತ ಶಾಲೆಗಳ ಪಟ್ಟಿಯನ್ನು ಬಹಿರಂಗಪಡಿಸಬೇಕು ಎಂದು ಸಲಹೆ ನೀಡಿದರು.
ಶಾಲೆ ನಡೆಸಲು ಇರಬೇಕಾದ ಕನಿಷ್ಠ ಜಮೀನು, ಕಟ್ಟಡದ ಸುರಕ್ಷತೆ ಮತ್ತು ಇತರೆ ನಿಯಮಗಳ ಪಾಲಿಸದ ಶಾಲೆಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಕೆಲವು ಶಾಲೆಗಳು ಒಂದೇ ಆವರಣದಲ್ಲಿ ವಿವಿಧ ಪಠ್ಯಕ್ರಮಗಳನ್ನು ನಡೆಸುತ್ತಾ ನಿಯಮಗಳನ್ನು ಉಲ್ಲಂಘಿಸುತ್ತಿವೆ. ಇಂತಹ ಶಾಲೆಗಳ ಪಟ್ಟಿಯನ್ನು ಪತ್ರಿಕೆಗಳ ಮೂಲಕ ಪ್ರಕಟಿಸಬೇಕು ಎಂದು ತಿಳಿಸಿದ ಅವರು, ಫೋಷಕರು ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆಯು ಎಚ್ಚೆತ್ತುಕೊಳ್ಳಬೇಕಾದ ಅಗತ್ಯವಿದೆ ಎಂದರು.
ಶಾಲಾ ಆಸ್ತಿ ಸಂರಕ್ಷಣೆಗೆ ಕ್ರಮವಹಿಸಿ:
ಶಾಲಾ ಜಾಗವನ್ನು ಒತ್ತುವರಿ ಮಾಡಿಕೊಳ್ಳುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳ ಆಸ್ತಿ ಸಂರಕ್ಷಣೆಗಾಗಿ ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾ ಕೃಷಿಕ ಸಮಾಜದ ಖಜಾಂಚಿ ಭಕ್ತ ಪ್ರಹ್ಲಾದ್ ಸಲಹೆ ನೀಡಿದರು.
ಇದನ್ನೂ ಓದಿ: ಮೇ.17 ರಂದು ಜಿಲ್ಲಾ ಯಾದವ (ಗೊಲ್ಲರ) ಸಂಘದ ಚುನಾವಣೆ | ಗುರುತಿನ ಚೀಟಿ ಪಡೆಯಲು AC ಕಾಂತರಾಜ್ ಸೂಚನೆ
ಸರ್ಕಾರಿ ಶಾಲೆಗಳಿಗೆ ಈ ಹಿಂದೆ ಅನೇಕರು ಭೂದಾನ ಮಾಡಿರುತ್ತಾರೆ. ಈ ನಿಟ್ಟಿನಲ್ಲಿ ಶಾಲೆಯ ದಾಖಲೆಗಳನ್ನು ಕ್ರಮಬದ್ಧಗೊಳಿಸಿ ನೋಂದಣಿ ಮಾಡಿಸಬೇಕು. ಈ ಕುರಿತು ಶಿಕ್ಷಣ ಇಲಾಖೆ ಸಮಗ್ರ ಸುತ್ತೋಲೆ ತಂದು ದಾಖಲಾತಿ ಸಂರಕ್ಷಣೆಗೆ ಮಾಡುವುದು ಒಳಿತು ಅಭಿಪ್ರಾಯಪಟ್ಟ ಅವರು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕರ್ನಾಟಕ ಪಬ್ಲಿಕ್ ಶಾಲೆಗಳ (ಕೆಪಿಎಸ್) ಸಂಖ್ಯೆಯನ್ನು ಹೆಚ್ಚಿಸಬೇಕು ಎಂದು ಸಲಹೆ ನೀಡಿದರು.
ಜಾನುವಾರುಗಳಿಗೆ ಆಧಾರ್ ಮಾದರಿಯ ಟ್ಯಾಗಿಂಗ್: ಜಿಲ್ಲೆಯಲ್ಲಿ ಇದೇ ಎಪ್ರಿಲ್ 27 ರಿಂದ ಕಾಲುಬಾಯಿ ರೋಗದ ಲಸಿಕಾ ಅಭಿಯಾನ ಆರಂಭವಾಗಿದ್ದು, ಈಗಾಗಲೇ 90,000 ಜಾನುವಾರುಗಳಿಗೆ ಲಸಿಕೆ ನೀಡಲಾಗಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ.ಕುಮಾರ್ ಸಭೆಗೆ ಮಾಹಿತಿ ನೀಡಿದರು.
ಈ ಬಾರಿ ಲಸಿಕೆ ನೀಡಿದ ತಕ್ಷಣವೇ ಜಾನುವಾರುಗಳಿಗೆ ‘ಇನಾಫ್’ ತಂತ್ರಾಂಶದಡಿ 12 ಅಂಕಿಯ ಆಧಾರ್ ಸಂಖ್ಯೆಯ ಟ್ಯಾಗ್ ಅಳವಡಿಸಿ ನೋಂದಾಯಿಸಲಾಗುತ್ತಿದೆ. ಇದರಿಂದ ಲಸಿಕೆ ಪಡೆದ ಜಾನುವಾರುಗಳ ನಿಖರ ಮಾಹಿತಿ ಲಭ್ಯವಾಗಲಿದ್ದು, ನಕಲಿ ದಾಖಲಾತಿಗೆ ಅವಕಾಶವಿರುವುದಿಲ್ಲ. ಜೂನ್ ತಿಂಗಳಿನಿಂದ ಕುರಿ ಮತ್ತು ಮೇಕೆಗಳಿಗೆ ಬರುವ ‘ಗಳಲೆ ರೋಗ’ ತಡೆಗೆ ರಾಷ್ಟ್ರೀಯ ಕಾರ್ಯಕ್ರಮದಡಿ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ: ಯಡಿಯೂರಪ್ಪ ಅಭಿಮಾನೋತ್ಸವಕ್ಕೆ 10 ಸಾವಿರ ಬಸ್, 50 ಸಾವಿರ ಕಾರು | 2 ಕೃತಿ ಬಿಡುಗಡೆ
ಅನಿವಾರ್ಯ ಕಾರಣಗಳಿಂದ ಜಾನುವಾರುಗಳು ಮೃತಪಟ್ಟರೆ ನೀಡಲಾಗುತ್ತಿದ್ದ ವಿಮಾ ಪರಿಹಾರದ ಮೊತ್ತವನ್ನು ಹೆಚ್ಚಿಸಲಾಗಿದ್ದು, ದನ ಅಥವಾ ಎತ್ತುಗಳಿಗೆ ರೂ.15,000 ಹಾಗೂ ಕುರಿ-ಮೇಕೆಗಳಿಗೆ ಅವುಗಳ ವಯಸ್ಸಿಗೆ ಅನುಗುಣವಾಗಿ ರೂ.5,000 ದಿಂದ ರೂ.7,000 ವರೆಗೆ ಪರಿಹಾರ ನೀಡಲಾಗುತ್ತಿದೆ ಎಂದು ತಿಳಿಸಿದರು.
ಚಿತ್ರದುರ್ಗ ಜಿಲ್ಲೆಗೆ ಪ್ರತ್ಯೇಕ ಹಾಲುಒಕ್ಕೂಟಕ್ಕೆ ಪ್ರಸ್ತಾವನೆ ಸಲ್ಲಿಸಿ: ಶಿವಮೊಗ್ಗ ಹಾಲು ಒಕ್ಕೂಟದಿಂದ ಚಿತ್ರದುರ್ಗ ಜಿಲ್ಲೆಯನ್ನು ಪ್ರತ್ಯೇಕಿಸಿ, ಕೆಎಂಇಆರ್ಸಿ ಅನುದಾನದಡಿಯಲ್ಲಿ ಚಿತ್ರದುರ್ಗ ಹಾಲು ಒಕ್ಕೂಟ ಸ್ಥಾಪನೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾ ಕೃಷಿಕ ಸಮಾಜದ ಸದಸ್ಯರು ಸಭೆಯಲ್ಲಿ ತೀರ್ಮಾನಿಸಿದರು.
ರೇಷ್ಮೆ ಕೃಷಿ ಕುರಿತು ವಿಚಾರ ಸಂಕಿರಣ ಆಯೋಜಿಸಿ:
ರೇಷ್ಮೆ ಕೃಷಿಯ ಕುರಿತು ಜಿಲ್ಲೆಯ ರೈತರಿಗೆ ತರಬೇತಿ, ಕ್ಷೇತ್ರೋತ್ಸವ, ವಿಚಾರ ಸಂಕಿರಣ ಆಯೋಜಿಸುವ ಮೂಲಕ ರೇಷ್ಮೆ ಕೃಷಿ ಉತ್ತೇಜಿಸಬೇಕು ಎಂದು ಜಿಲ್ಲಾ ಕೃಷಿಕ ಸಮಾಜದ ರಾಗಿ ಶಿವಮೂರ್ತಪ್ಪ ಸಲಹೆ ನೀಡಿದರು.
ಜಿಲ್ಲೆಯ ಒಟ್ಟು 3,238 ಹೆಕ್ಟೇರ್ ಪ್ರದೇಶದಲ್ಲಿ ರೇಷ್ಮೆ ಬೆಳೆಯಲಾಗುತ್ತಿದ್ದು, ಒಟ್ಟು 3,830 ರೇಷ್ಮೆ ಬೆಳೆಗಾರರು ಜಿಲ್ಲೆಯಲ್ಲಿದ್ದಾರೆ. ಕಳೆದ ಮಾರ್ಚ್ ತಿಂಗಳೊಂದರಲ್ಲೇ 18 ಲಕ್ಷ ಚಾಕಿ ವಿತರಿಸಲಾಗಿದ್ದು, 1,500 ಮೆಟ್ರಿಕ್ ಟನ್ ರೇಷ್ಮೆ ಉತ್ಪಾದನೆಯ ಗುರಿ ತಲುಪಲಾಗಿದೆ. ರೈತರಿಗೆ ರೇಷ್ಮೆ ಕೃಷಿ ಸುಲಭಗೊಳಿಸಲು ಇಲಾಖೆ ಕಳೆದ ವರ್ಷದಿಂದ ಹಲವಾರು ನೆರವು ನೀಡಿದೆ. ಜಿಲ್ಲೆಯಾದ್ಯಂತ 35 ರೇಷ್ಮೆ ಹುಳು ಸಾಕಾಣಿಕೆ ಮನೆಗಳಿಗೆ ಸಹಾಯಧನ ನೀಡಲಾಗಿದ್ದು, ಕಡಿಮೆ ವೆಚ್ಚದಲ್ಲಿ ಕೃಷಿ ಮಾಡಲು ಬಯಸುವವರಿಗಾಗಿ 10 ಗರಿ ಶೆಡ್ಗಳನ್ನು ನಿರ್ಮಿಸಿಕೊಡಲಾಗಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮೇ 06 | ಮೆಕ್ಕೆಜೋಳ ರೇಟ್…
150 ಹೆಕ್ಟೇರ್ ರೇಷ್ಮೆ ಪ್ರದೇಶಕ್ಕೆ ಹನಿ ನೀರಾವರಿ ಅಳವಡಿಸಲು ಆರ್ಥಿಕ ನೆರವು ಒದಗಿಸಲಾಗಿದೆ. ರೇಷ್ಮೆ ಬೆಳೆಗಾರರಿಗೆ ಅನುಕೂಲವಾಗುವಂತೆ ಸೌರ ದೀಪ ವಿತರಿಸಲಾಗುತ್ತಿದೆ. ಹಿರಿಯೂರು ತಾಲ್ಲೂಕಿನಲ್ಲಿ 600 ಹೆಕ್ಟೇರ್, ಚಳ್ಳಕೆರೆ 400 ಹೆಕ್ಟೇರ್, ಚಿತ್ರದುರ್ಗ 350 ಹೆಕ್ಟೇರ್, ಹೊಸದುರ್ಗ 320 ಹೆಕ್ಟೇರ್, ಮೊಳಕಾಲ್ಮೂರು 300 ಹೆಕ್ಟೇರ್ ಹಾಗೂ ಹೊಳಲ್ಕೆರೆ 120 ಹೆಕ್ಟೇರ್ ಪ್ರದೇಶವನ್ನು ರೇಷ್ಮೆ ಕೃಷಿ ಹೊಂದಿದೆ ಎಂದು ರೇಷ್ಮೆ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಿಥುನ್ ಕುಮಾರ್, ಜಿಲ್ಲಾ ಕೃಷಿಕ ಸಮಾಜದ ಸದಸ್ಯರಾದ ಭಕ್ತ ಪ್ರಹ್ಲಾದ್, ಚಂದ್ರಶೇಖರಪ್ಪ, ಶಿವಲಿಂಗಪ್ಪ, ಪರಮೇಶ್ವರಪ್ಪ, ಧರಣೇಶ್, ಕಾಂತರಾಜು, ರಮೇಶಪ್ಪ, ರಾಗಿ ಶಿವಮೂರ್ತಪ್ಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
