ನಾಯಕನಹಟ್ಟಿ ತಿಪ್ಪೇಶನ ಜಾತ್ರೆಯಲ್ಲಿ ಜಕಾತಿ ವಸೂಲಿಗೆ ಬ್ರೇಕ್‌ | ಮುಕ್ತಿ ಬಾವುಟ ಹರಾಜಿಗೆ ಮಾರ್ಗಸೂಚಿ | ಸಚಿವ ಡಿ.ಸುಧಾಕರ್‌

CHITRADURGA NEWS | 24 FEBRUARY 2024
ಚಿತ್ರದುರ್ಗ: ಬರಗಾಲದ ಹಿನ್ನಲೆಯಲ್ಲಿ, ಭಕ್ತಾದಿಗಳ ಮನವಿಯಂತೆ ಈ ಬಾರಿ ನಾಯಕನಹಟ್ಟಿಯ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಹಾಕಲಾಗುವ, ಅಂಗಡಿ ಹಾಗೂ ವಾಣಿಜ್ಯ ವ್ಯಾಪಾರ ಮಳಿಗೆಗಳ ಜಕಾತಿ ವಸೂಲಿ ಮಾಡುವುದಿಲ್ಲ ಎಂದು ಯೋಜನಾ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‌ ಹೇಳಿದರು.

ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿಯ ಶ್ರೀ ಗುರು ತಿಪ್ಪೇರುದ್ರಸ್ವಾಮಿಯ ದೊಡ್ಡ ರಥೋತ್ಸವ-2024 ರ ಸಿದ್ಧತೆ ಕುರಿತು ನಾಯಕನಹಟ್ಟಿ ಒಳಮಠ ಸಮುದಾಯಭವನದ ಆವರಣದಲ್ಲಿ ಶನಿವಾರ ಏರ್ಪಡಿಸಲಾದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಾಯಕನಹಟ್ಟಿಯ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಕ್ಷೇತ್ರದ ಜಾತ್ರೆಯು ಮಾರ್ಚ್‌19 ರಿಂದ ಏಪ್ರಿಲ್‌ 1ರವರೆಗೆ ನಡೆಯಲಿದ್ದು, ಜಾತ್ರೆಯ ಅಂಗವಾಗಿ ಮಾರ್ಚ್‌ 26ರಂದು ದೊಡ್ಡ ರಥೋತ್ಸವ ಜರುಗಲಿದೆ. ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಅವಕಾಶ ಕಲ್ಪಿಸಿರುವುದರಿಂದ, ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಜಾತ್ರೆಗೆ ಆಗಮಿಸುವ ನಿರೀಕ್ಷೆ ಇದೆ. ಹೀಗಾಗಿ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ನಾಯಕನಹಟ್ಟಿ ಜಾತ್ರೆಗೆ ಹೆಚ್ಚಿನ ಬಸ್‍ಗಳ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಿದರು.

ಇದನ್ನೂ ಓದಿ: ಚಿತ್ರದುರ್ಗ ರೈಲ್ವೆ ನಿಲ್ದಾಣ ಮೇಲ್ದರ್ಜೆಗೆ ಮುಹೂರ್ತ ಫಿಕ್ಸ್‌ | ಅಮೃತ್ ಭಾರತ್ ರೈಲ್ವೆ ಯೋಜನೆಯಡಿ ಕಾಮಗಾರಿ

ನಾಯಕನಹಟ್ಟಿಯಲ್ಲಿ ಪ್ರಸ್ತುತ ಇರುವ ಕೊಳವೆ ಬಾವಿಗಳ ಜೊತೆಗೆ ಅಗತ್ಯಕ್ಕೆ ಅನುಗುಣವಾಗಿ ಹೊಸದಾಗಿ ಕೊಳವೆ ಬಾವಿ ಕೊರೆದು, ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ನಾಯಕನಹಟ್ಟಿ ಸಂಪರ್ಕಿಸುವ ಎಲ್ಲಾ ರಸ್ತೆಗಳನ್ನು ದುರಸ್ತಿಗೊಳಿಸಬೇಕು. ರಸ್ತೆಗಳಲ್ಲಿ ಗುಂಡಿಗಳು ಕಂಡುಬಂದರೆ ಸಂಬಂದಪಟ್ಟ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಂದು ಹೇಳಿದರು.

ರಥೋತ್ಸವದ ತರುವಾಯ ನಡೆಯುವ ಮುಕ್ತಿ ಬಾವುಟ ಹರಾಜಿನ ಹಣ ಪಾವತಿಗೆ ಸಂಬಂಧಿಸಿದಂತೆ ಯಾವುದೇ ನಿಯಮಗಳು ಇಲ್ಲದಿರುವುದರಿಂದ, ಹರಾಜಿನಲ್ಲಿ ಯಶಸ್ವಿಯಾಗುವವರು ಸಮರ್ಪಕವಾಗಿ ಹಣ ಪಾವತಿ ಮಾಡುತ್ತಿಲ್ಲ, ಹೀಗಾಗಿ ಇದಕ್ಕೆ ಸೂಕ್ತ ನಿಯಮ ರೂಪಿಸಲು ಸಾರ್ವಜನಿಕರು ಸಭೆಯಲ್ಲಿ ಪ್ರಸ್ತಾಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಮುಕ್ತಿ ಬಾವುಟ ಹರಾಜಿನ ಮೊತ್ತ ಪಾವತಿ ಸಂಬಂಧ ಸೂಕ್ತ ಮಾರ್ಗಸೂಚಿ ರೂಪಿಸಲಾಗುವುದು. ಹರಾಜಿನಲ್ಲಿ ಭಾಗವಹಿಸುವವರು ಮೊದಲೇ ನೊಂದಣಿ ಮಾಡಿಕೊಳ್ಳಬೇಕು. ಕೂಗಿದ ಹರಾಜು ಮೊತ್ತವನ್ನು ನಿಗದಿತ ಸಮಯದಲ್ಲಿ ದೇವಸ್ಥಾನ ಮಂಡಳಿಗೆ ಕಟ್ಟುವಂತೆ ವ್ಯವಸ್ಥೆ ರೂಪಿಸುವುದಾಗಿ ಸಚಿವ ಡಿ.ಸುಧಾಕರ್ ಭರವಸೆ ನೀಡಿದರು.

ಮೊಳಕಾಲ್ಮೂರು ಶಾಸಕ ಎನ್.ವೈ. ಗೋಪಾಲಕೃಷ್ಣ ಮಾತನಾಡಿ, ಜಾತ್ರೆಗೆ ಆಗಮಿಸುವ ಭಕ್ತಾಧಿಗಳಿಗೆ ಕುಡಿಯುವ ನೀರು, ರಸ್ತೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಉತ್ತಮವಾಗಿರಬೇಕು. ಬೇಸಿಗೆ ಸಂದರ್ಭವಾದ ಕಾರಣ ಆರೋಗ್ಯಕ್ಕೆ ಬಹಳ ವಿಶೇಷ ಕಾಳಜಿ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಒಳಮಠದ ಎದುರಿನ ನಾಯಕನಹಟ್ಟಿ ಸಂಪರ್ಕಿಸುವ ಸೇತುವೆ ಹಾಗೂ ರಸ್ತೆ ಕಾಮಗಾರಿಗೆ ರೂ.50 ಲಕ್ಷ ಅನುದಾನ ನೀಡಲಾಗಿದೆ. ತಿಪ್ಪೇರುದ್ರಸ್ವಾಮಿ ದೇವಸ್ಥಾನಕ್ಕೆ ಸಂಬಂಧಿಸಿದ ಹಣವನ್ನು ಕೇವಲ ಬಡ್ಡಿಗಾಗಿ ಬ್ಯಾಂಕಿನಲ್ಲಿ ಠೇವಣಿ ಇರಿಸುವುದಲ್ಲ, ದೇವಸ್ಥಾನದ ಹಣವನ್ನು ಕ್ಷೇತ್ರದ ಅಭಿವೃದ್ಧಿಗೆ ಹಾಗೂ ಜಾತ್ರಾ ಮಹೋತ್ಸವದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಬಳಸಬೇಕು ಎಂದರು.

ಇದನ್ನೂ ಓದಿ: ಪತ್ನಿ ಮೇಲೆ ಬಿತ್ತು ಸ್ವಾಮಿ ಕಣ್ಣು | ಹಾರಿತು ಪ್ರಾಣ ಪಕ್ಷಿ | ಇಬ್ಬರಿಗೆ ಜೀವಾವಧಿ ಶಿಕ್ಷೆ

ಜಿಲ್ಲಾಧಿಕಾರಿಗಳು ದೇವಸ್ಥಾನಕ್ಕೆ ಸಂಬಂಧಿಸಿದ ಹಣದಲ್ಲಿ ಕನಿಷ್ಟ ರೂ. 10 ಲಕ್ಷ ಹಣವನ್ನು ಜಾತ್ರೆಯ ಅಥವಾ ಕ್ಷೇತ್ರದ ಅಭಿವೃದ್ಧಿಯ ಕೆಲಸ ಕಾರ್ಯಗಳ ನಿರ್ವಹಣೆ ಹಾಗೂ ಮೂಲಭೂತ ಸೌಕರ್ಯಗಳ ವ್ಯವಸ್ಥೆಗೆ ಬಳಕೆ ಮಾಡುವಂತೆ ಸಲಹೆ ನೀಡಿದರು.

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿ, ಬರಗಾಲ ಹಾಗೂ ಸಾರ್ವತ್ರಿಕ ಲೋಕಸಭಾ ಚುನಾವಣೆ ಸಮೀಪ ಇರುವುದರಿಂದ ಬಹು ಬೇಗನೇ ಜಾತ್ರೆ ವ್ಯವಸ್ಥೆಯ ಸಿದ್ಧತೆಗಳನ್ನು ಅಧಿಕಾರಿಗಳು ಮಾಡಬೇಕು. ಕುಡಿಯುವ ನೀರಿಗೆ ಪಟ್ಟಣ ಪಂಚಾಯತಿ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಬೇಕು. ಬೇರೆ ಸ್ಥಳೀಯ ಸಂಸ್ಥೆಗಳು ಹಾಗೂ ಹಾಲಿನ ಟ್ಯಾಂಕರ್‍ಗಳನ್ನು ತರಿಸಿ ನೀರು ಸರಬರಾಜು ಮಾಡಲು ತಾತ್ಕಾಲಿಕ ವ್ಯವಸ್ಥೆ ಮಾಡಿಕೊಳ್ಳುವಂತೆ ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಟ್ಟಣದ ಬೀದಿ ದೀಪಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು. ಪಟ್ಟಣದ ಖಾಲಿ ಜಾಗದಲ್ಲಿನ ಜಾಲಿ ಗಿಡಗಳನ್ನು ಕಡಿದು ಸ್ವಚ್ಛಗೊಳಿಸಬೇಕು. ಸ್ವಚ್ಛತಾ ಕಾರ್ಯಕ್ಕಾಗಿ ಬೇರೆ ನಗರ ಸ್ಥಳಿಯ ಸಂಸ್ಥೆಗಳಿಂದ ಅಗತ್ಯವಿರುವಷ್ಟು ಪೌರ ಕಾರ್ಮಿಕರನ್ನು ನೇಮಿಸಿಕೊಳ್ಳಬೇಕು. ಸಂಚಾರಿ ಶೌಚಾಲಯಗಳ ಬದಲಿಗೆ ಖಾಲಿ ಸ್ಥಳಗಳಲ್ಲಿ ಕನಿಷ್ಠ 50 ರಂತೆ ತಾತ್ಕಾಲಿಕ ಶೌಚಾಲಯಗಳನ್ನು ನಿರ್ಮಿಸಬೇಕು. ರಸ್ತೆ ಸಾರಿಗೆ ಅಧಿಕಾರಿಗಳು ಹೊರ ಜಿಲ್ಲೆಗಳ ಡಿಪೋಗಳಿಂದ ಪತ್ರಿ ಬಾರಿ ನಿಯೋಜಿಸುತ್ತಿದ್ದ ಬಸ್ ಸಂಖ್ಯೆಗಳಿಗಿಂತ ಶೇ.20 ಹೆಚ್ಚಿನ ಬಸ್‍ಗಳನ್ನು ನಿಯೋಜನೆ ಮಾಡಬೇಕು ಎಂದರು.

ಸ್ವಚ್ಛತೆ, ಕುಡಿಯುವ ನೀರು, ಸಾರಿಗೆ, ರಕ್ಷಣೆ, ಆರೋಗ್ಯ ಸೇರಿದಂತೆ ಇತರೆ ವಿಷಯಗಳಿಗೆ ಪ್ರತ್ಯೇಕ ಸಮಿತಿಗಳನ್ನು ರಚಿಸಬೇಕು. ಈ ಸಮಿತಿಗಳು ಪರಸ್ಪರ ಸಮನ್ವಯತಯಿಂದ ಕಾರ್ಯನಿರ್ವಹಿಸಬೇಕು. ಆರೋಗ್ಯ ಇಲಾಖೆಯಿಂದ ತಾತ್ಕಾಲಿಕವಾಗಿ ಆಸ್ಪತ್ರೆ ತೆರೆಬೇಕು. ಅಗತ್ಯ ಔಷಧಿಗಳನ್ನು ಸಂಗ್ರಹಿಸಿ ಇಟ್ಟುಕೊಳ್ಳಬೇಕು. ತುರ್ತು ಸಂದರ್ಭಕ್ಕಾಗಿ ಕನಿಷ್ಟ 3 ಅಗ್ನಿಶಾಮಕ ವಾಹನ ಹಾಗೂ ಅಂಬ್ಯುಲೆನ್ಸ್‍ಗಳನ್ನು ಸ್ಥಳದಲ್ಲಿರಿಸಬೇಕು.

ರಥೋತ್ಸವ ದಿನದಂದು ಜನದಟ್ಟಣೆ ಹಾಗೂ ವಾಹನ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಹಾಗೂ ಸಾರ್ವಜನಿಕರು ತೊಂದರೆ ಎದುರಿಸದಂತೆ ಪೊಲೀಸ್ ಇಲಾಖೆ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಬೇಕು. ಪ್ರಾಣಿಬಲಿ ನಿಷೇಧವನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಾಯಕನಹಟ್ಟಿ ಪಟ್ಟಣದಲ್ಲಿ ಅಗ್ನಿಶಾಮಕ ಕಚೇರಿ ಪ್ರಾರಂಭ, ಬರಗಾಲದ ಹಿನ್ನಲೆಯಲ್ಲಿ ಅಂಗಡಿ ಮುಂಗಟ್ಟುಗಳಿಗೆ ಯಾವುದೇ ಜಕಾತಿ ವಸೂಲಿ ಮಾಡಬಾರದು, ಸ್ವಚ್ಛತೆಗೆ ಆದ್ಯತೆ ನೀಡುವುದು, ಜಾತ್ರೆಯ ದೊಡ್ಡ ರಥೋತ್ಸದಂದು ಹಾಗೂ ದೊಡ್ಡ ರಥೋತ್ಸವದ ನಂತರ ಸತತವಾಗಿ ಎರಡು ದಿನಗಳ ಕಾಲ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡುವುದು, ಜಾತ್ರೆಯ ಅಂಗವಾಗಿ 24*7 ನಿರಂತರ ವಿದ್ಯುತ್ ಪೂರೈಕೆ ಮಾಡುವಂತೆ ಪೂರ್ವಭಾವಿ ಸಭೆಯಲ್ಲಿ ಗ್ರಾಮಸ್ಥರು ಮನವಿ ಮಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತೀಕ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್, ಮುಖಂಡರಾದ ಪಟೇಲ್ ಜಿ.ಎಂ.ತಿಪ್ಪೇಸ್ವಾಮಿ, ಎಂ.ವೈ.ಟಿ.ಸ್ವಾಮಿ, ಬಾಲರಾಜು, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಶಿವಸ್ವಾಮಿ. ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ್‌ ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version