CHITRADURGA NEWS | 13 MARCH 2024
ಚಿತ್ರದುರ್ಗ: ಎಲ್ಲಾ ಇಲಾಖೆಗಳು ಮಾರ್ಚ್ ಅಂತ್ಯಕ್ಕೆ ಎಸ್ಸಿಎಸ್ಪಿ ಹಾಗೂ ಟಿಎಸ್ಪಿ ಯೋಜನೆಯ ಅಡಿ ಶೇ.100 ರಷ್ಟು ಪ್ರಗತಿ ಸಾಧಿಸಬೇಕು. ಬಿಡುಗಡೆಯಾದ ಎಲ್ಲಾ ಹಣವನ್ನು ಖರ್ಚು ಮಾಡಬೇಕು. ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಮುನ್ನವೇ ಕಾಮಗಾರಿಗಳನ್ನು ಆರಂಭಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ, ಎಸ್ಸಿಪಿ ಹಾಗೂ ಟಿಎಸ್ಪಿ ಯೋಜನೆಗಳ ಪ್ರಗತಿ ಪರಿಶೀಲನೆ ಹಾಗೂ ಮ್ಯಾನುಯಲ್ ಸ್ಕ್ಯಾವೆಂಜಿಂಗ್ ಕುರಿತು ಜರುಗಿದ ಸಭೆ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ‘ವಿವಿಧ ಯೋಜನೆಗಳ ಫಲಾನುಭವಿಗಳ ಪಟ್ಟಿಗೆ ಶಾಸಕರು ಹಾಗೂ ಸರ್ಕಾರದಿಂದ ಅನುಮೋದನೆ ಪಡೆದುಕೊಳ್ಳಬೇಕು. ಆರ್ಥಿಕ ಪ್ರಗತಿ ಸಾಧಿಸದಿದ್ದರೆ ನಿಯಮಾನುಸಾರ ಕ್ರಮ ಕೈಗೊಳ್ಳುವುದಾಗಿ’ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡುವಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಮ್ಯಾನುಯಲ್ ಸ್ಕ್ಯಾವೆಂಜಿಂಗ್, ಸಫಾಯಿ ಕರ್ಮಚಾರಿಗಳ ಕುರಿತು ಚರ್ಚಿಸಲಾಯಿತು.
ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿರುವ ದೌರ್ಜನ್ಯ ಪ್ರಕರಣಗಳಲ್ಲಿ, ಸರಿಯಾದ ಹಾಗೂ ಸಮರ್ಪಕವಾದ ಸಾಕ್ಷಿ ಹಾಗೂ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವುದರೊಂದಿಗೆ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಪೊಲೀಸ್ ಹಾಗೂ ಸರ್ಕಾರಿ ಅಭಿಯೋಜನಕರು ಪ್ರಯತ್ನಿಸಬೇಕು ಎಂದು ತಿಳಿಸಿದರು.
ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಶೀಘ್ರವಾಗಿ ನ್ಯಾಯ ದೊರೆತರೆ ಬಾಧಿತರಿಗೆ ಸೂಕ್ತ ರಕ್ಷಣೆ, ಹಣಕಾಸು ಹಾಗೂ ಇತರೆ ಸೌಲಭ್ಯಗಳನ್ನು ಒದಗಿಸಬಹುದು. ಬಹು ವರ್ಷಗಳ ಕಾಲ ನ್ಯಾಯಾಲಯದಲ್ಲಿ ಪ್ರಕರಣ ಉಳಿದರೆ, ಸಾಕ್ಷಿಗಳು ಸರಿಯಾಗಿ ಸ್ಪಂದಿಸುವುದಿಲ್ಲ. ಪ್ರಕರಣಗಳು ವಿಳಂಬವಾದಷ್ಟು ಆರೋಪಿಗಳು ಖುಲಾಸೆಯಾಗುವ ಸಂಭವ ಇರುತ್ತದೆ. ಇದಕ್ಕೆ ಅವಕಾಶ ನೀಡದೆ, ಶೀಘ್ರವಾಗಿ ನ್ಯಾಯ ದೊರಕಿಸಿಕೊಡುವ ಕೆಲಸವಾಗಬೇಕು. ಮುಂದಿನ ತ್ರೈಮಾಸಿಕ ಸಭೆಗೆ ನ್ಯಾಯಾಲಯದಲ್ಲಿ ಒಟ್ಟು ಎಷ್ಟು ಪ್ರಕರಣಗಳು, ಎಷ್ಟು ದಿನಗಳಿಂದ ಬಾಕಿ ಇವೆ, ವಿಚಾರಣೆಯ ಯಾವ ಹಂತದಲ್ಲಿವೆ ಎಂಬುದರ ಸಂಪೂರ್ಣ ವಿವರವನ್ನು ಒದಗಿಸಬೇಕು ಎಂದು ಸೂಚಿಸಿದರು.
ಕ್ಲಿಕ್ ಮಾಡಿ ಓದಿ: https://chitradurganews.com/former-mp-bn-chandrappa-is-upset/
ದೌರ್ಜನ್ಯ ಪ್ರತಿಬಂಧ ಕಾಯ್ದೆ ಕುರಿತು ಎಲ್ಲಾ ಜನಪ್ರತಿನಿಧಿಗಳನ್ನು ಒಳಗೊಂಡಂತೆ ಮೇಲ್ವರ್ಗದ ಕೇರಿಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಜನರು ಹೆಚ್ಚಿಗೆ ಸೇರುವ, ಸರ್ಕಾರದಿಂದ ಆಯೋಜಿಸಲ್ಪಡುವ ಜನಸ್ಪಂದನ, ಗ್ಯಾರಂಟಿ ಫಲಾನುಭವಿಗಳ ಸಮಾವೇಶ ಹಾಗೂ ವಿವಿಧ ಕಾರ್ಯಕ್ರಮಗಳ ಸಂದರ್ಭಗಳನ್ನು ಉಪಯೋಗಿಸಿಕೊಂಡು, ಕಾಯ್ದೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು. ದೌರ್ಜನ್ಯ ನಡೆಯದಂತೆ ತಡೆಯುವುದು ಹಾಗೂ ಅರಿವು ಮೂಡಿಸುವುದು ನಮ್ಮೆಲ್ಲರ ಮೊದಲ ಆದ್ಯತೆ ಆಗಬೇಕು. ಜಿಲ್ಲಾ ಕೇಂದ್ರದಿಂದ ಹೆಚ್ಚು ದೂರದಲ್ಲಿರುವ ಹಳ್ಳಿಗಳಲ್ಲಿಯೇ ಹೆಚ್ಚು ದೌರ್ಜನ್ಯ ಪ್ರಕರಣಗಳು ಕಂಡುಬರುತ್ತವೆ. ಇಂತಹ ಕಡೆ ಪೊಲೀಸರು ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು ಎಂದರು.
ಸಮಾಜ ಕಲ್ಯಾಣ ಇಲಾಖೆಯಿಂದ 31 ಪ್ರಕರಣಗಳಲ್ಲಿ 58 ಜನರಿಗೆ ಪರಿಹಾರ ಧನ ನೀಡಲಾಗಿದೆ. ನ್ಯಾಯಾಲಯದಲ್ಲಿ ಫೆಬ್ರವರಿ ಅಂತ್ಯಕ್ಕೆ 35 ಪ್ರಕರಣಗಳು ಬಾಕಿ ಇವೆ. ಈ ವರ್ಷದ ನವೆಂಬರ್ ಮಾಹೆಯಿಂದ ಫೆಬ್ರವರಿ ಮಾಹೆ ವರೆಗೆ ಒಟ್ಟು 10 ಪ್ರಕರಣಗಳಲ್ಲಿ ಆರೋಪಿಗಳು ಬಿಡುಗಡೆಯಾಗಿದ್ದಾರೆ. ಒಂದು ಪ್ರಕರಣ ಡಿಸ್ಚಾರ್ಜ್ ಆಗಿದೆ. ಯಾವುದೇ ದೌರ್ಜನ್ಯ ಪ್ರಕರಣದಲ್ಲಿ ಶಿಕ್ಷೆಯಾಗಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ ಮಾಹಿತಿ ನೀಡಿದರು.
ಪ್ರಸಕ್ತ ತ್ರೈಮಾಸಿಕ ಅವಧಿಯಲ್ಲಿ ಒಟ್ಟು 15 ಪ್ರಕರಣಗಳು ಜಿಲ್ಲೆಯಲ್ಲಿ ದಾಖಲಾಗಿವೆ. 12 ತನಿಖಾ ಹಂತದಲ್ಲಿ ಇದ್ದು, 3 ಪ್ರಕರಣಗಳಲ್ಲಿ ದೋಷಾರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ಚಿತ್ರದುರ್ಗ ಡಿವೈಎಸ್ಪಿ ದಿನಕರ್ ಮಾಹಿತಿ ನೀಡಿದರು.
ಕ್ಲಿಕ್ ಮಾಡಿ ಓದಿ: https://chitradurganews.com/victory-yatra-of-karataka-damanaka/
ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯವಾಹಿನಿಗೆ ತರಬೇಕು. ತಹಶೀಲ್ದಾರ, ಬಿಇಓಗಳು ಮಕ್ಕಳ ಮನೆಗಳಿಗೆ ತೆರಳಿ ಪೋಷಕರಿಗೆ ತಿಳಿ ಹೇಳಬೇಕು. ಶಾಲೆಗೆ ಬರುವ ಮಕ್ಕಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸಬೇಕು. ವಾಲ್ಮೀಕಿ, ಆದಿ ಜಾಂಬವ, ಬೋವಿ, ಅಂಬೇಡ್ಕರ್ ಅಭಿವೃದ್ಧಿ ನಿಗಮಗಳಲ್ಲಿ ದೊರೆಯುವ ಸೌಲಭ್ಯಗಳ ಕುರಿತು ಹೆಚ್ಚಿನ ಜಾಗೃತಿಯನ್ನು ಮೂಡಿಸುವುದರೊಂದಿಗೆ, ಫಲಾನುಭವಿಗಳಿಗೆ ನೆರವು ನೀಡಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
ಶಾಲೆಯಿಂದ ಹೊರಗುಳಿದ ಮೊಳಕಾಲ್ಮೂರು ತಾಲ್ಲೂಕಿನ 34 ಹಾಗೂ ಚಳ್ಳಕೆರೆ ತಾಲ್ಲೂಕಿನ 64 ಮಕ್ಕಳನ್ನು ಮುಖ್ಯ ವಾಹಿನಿಗೆ ತರಲಾಗಿದೆ. 8 ಮಕ್ಕಳ ಕುಟುಂಬ ಆಂದ್ರ ಪ್ರದೇಶಕ್ಕೆ ಸಂಪೂರ್ಣವಾಗಿ ವಲಸೆ ಹೊಗಿದ್ದಾರೆ. 2 ವಿದ್ಯಾರ್ಥಿಗಳ ಪೋಷಕರು ತಮ್ಮ ಜಗಳದ ನಡುವೆ ಮಕ್ಕಳನ್ನು ಶಾಲೆ ಕಳುಹಿಸುತ್ತಿಲ್ಲ ಎಂದು ಶಿಕ್ಷಣ ಇಲಾಖೆ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು.
ಜಿಲ್ಲೆಯ ವಿವಿಧ ವಿದ್ಯಾರ್ಥಿನಿಲಯಗಳಲ್ಲಿ ಬಾಲ್ಯ ವಿವಾಹ ಹಾಗೂ ಪೋಕ್ಸೋ ಕಾಯ್ದೆ ಕುರಿತು ಅರಿವು ಮೂಡಿಸುವ 16 ಕಾರ್ಯಕ್ರಮಗಳನ್ನು ಮಾಡಲಾಗಿದೆ. ಇದರೊಂದಿಗೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಗಳಲ್ಲಿ ಜಿಂಗಲ್ಗಳ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಕೆ ಉಪನಿರ್ದೇಶಕಿ ಭಾರತಿ ಬಣಕಾರ್ ಸಭೆಯಲ್ಲಿ ತಿಳಿಸಿದರು.
ಜಿ.ಪಂ.ಉಪ ಕಾರ್ಯದರ್ಶಿ ತಿಮ್ಮಪ್ಪ, ಜಿ.ಪಂ. ಯೋಜನಾ ನಿರ್ದೇಶಕಿ ನಂದಿನಿ.ಆರ್.ಬಿ. ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ್, ತೋಟಗಾರಿಕೆ ಉಪನಿರ್ದೇಶಕಿ, ಸವಿತಾ, ಆಹಾರ ಇಲಾಖೆ ಜಂಟಿ ನಿರ್ದೇಶಕ ಮಧುಸೂಧನ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪರಮೇಶ್ವರಪ್ಪ, ಕೈಗಾರಿಕೆ ಇಲಾಖೆ ಉಪನಿರ್ದೇಶಕ ಮಂಜುನಾಥ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್.ಕೆ.ಎಸ್, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಎಂ.ಡಿ. ನವಕೋಟಿ ಮತ್ತು ಬೋರಸ್ವಾಮಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
