CHITRADURGA NEWS | 10 may 2025
ಚಿತ್ರದುರ್ಗ: ಗ್ಯಾರಂಟಿ ಯೋಜನೆಗಳು ಅರ್ಹರಿಗೆ ತಲುಪದಿದ್ದಲ್ಲಿ, ತಲುಪದಿರಲು ಕಾರಣ ಪತ್ತೆಹಚ್ಚಿ, ಪರಿಶೀಲಿಸಿ, ಪರಿಹಾರ ಕಲ್ಪಿಸಿ, ಅರ್ಹರಿಗೆ ಯೋಜನೆಗಳನ್ನು ತಲುಪಿಸಬೇಕು ಎಂದು ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಆರ್.ಶಿವಣ್ಣ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಪಂಚ ಗ್ಯಾರಂಟಿ ಯೋಜನೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ ಯೋಜನೆ, ಯುವನಿಧಿ ಹಾಗೂ ಅನ್ನಭಾಗ್ಯ ಯೋಜನೆಗಳು ಅರ್ಹರೆಲ್ಲರಿಗೂ ತಲುಪುವ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಪವಿತ್ರ ಮಾತನಾಡಿ, ಗೃಹಲಕ್ಷ್ಮಿ ಯೋಜನೆಯಡಿ ಜಿಲ್ಲೆಯಲ್ಲಿ 3,85,484 ಫಲಾನುಭವಿಗಳಿಗೆ 2023ರ ಆಗಸ್ಟ್ ಮಾಹೆಯಿಂದ 2024ರ ಡಿಸೆಂಬರ್ ಮಾಹೆಯವರೆಗೂ ರೂ.76,77,98000/-ಗಳನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ. 2025ರ ಜನವರಿ ಮಾಹೆಯಿಂದ ಹಣ ಪಾವತಿ ಪ್ರಾರಂಭವಾಗಿದೆ ಎಂದು ತಿಳಿಸಿದರು.
ಗೃಹಲಕ್ಷ್ಮೀ ಯೋಜನೆ ಕುರಿತು ಪ್ರಚಾರದ ಕೊರತೆ ಇದ್ದು, ಗೃಹಲಕ್ಷ್ಮೀ ಯೋಜನೆಯಡಿ ನೋಂದಣಿಯಾಗದೇ ಇರುವ ಫಲಾನುಭವಿಗಳನ್ನು ನೋಂದಣಿ ಮಾಡಿಸಲು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಪ್ರತಿ ಗ್ರಾಮಗಳಲ್ಲಿಯೂ ಪ್ರಚಾರ ಮಾಡಿಸಬೇಕು. ಅರ್ಹರು ಯಾರೂ ಸಹ ಯೋಜನೆಯಿಂದ ವಂಚಿತರಾಗದಂತೆ ಕ್ರಮವಹಿಸಬೇಕು ಎಂದು ಆರ್.ಶಿವಣ್ಣ ಹೇಳಿದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯ ಆರ್.ಪ್ರಕಾಶ್ ಮಾತನಾಡಿ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇ.100ರಷ್ಟು ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಅದರಂತೆ ಚಿತ್ರದುರ್ಗ ಜಿಲ್ಲೆಯಲ್ಲಿ ಕೂಡ ಅನುಷ್ಠಾನಗೊಳಿಸಬೇಕು ಎಂದು ಸಲಹೆ ನೀಡಿದರು.
Also Read: ಮೇ.26 ರಿಂದ SSLC ಪರೀಕ್ಷೆ-2 | ನೋಂದಣಿಗೆ ಸೂಚನೆ
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಮಾತನಾಡಿ, ಗೃಹಲಕ್ಷ್ಮೀ ಯೋಜನೆಯ ಹಣದಿಂದ ಸಾಕಷ್ಟು ಬದಲಾವಣೆಗಳಾಗಿದ್ದು, ಈ ಹಣದಿಂದ ಸ್ವಯಂ ಉದ್ಯೋಗ ನಡೆಸುತ್ತಿರುವ ಫಲಾನುಭವಿಗಳ ಯಶೋಗಾಥೆಗಳ ವಿವರವನ್ನು ಪ್ರಚುರ ಪಡಿಸಲು ಕ್ರಮವಹಿಸಬೇಕು ಎಂದು ಹೇಳಿದರು.
ಶಕ್ತಿ ಯೋಜನೆ: ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ವೆಂಕಟೇಶ್ ಮಾತನಾಡಿ, ರಾಜ್ಯ ರಸ್ತೆ ಸಾರಿಗೆ ನಿಗಮದ ವಾಹನಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯ ನೀಡುವ ಶಕ್ತಿ ಯೋಜನೆಯು 2023ರ ಜೂನ್ 11 ರಿಂದ ಜಾರಿಗೊಳಿಸಿದ್ದು, ಚಿತ್ರದುರ್ಗ ವಿಭಾಗದ ವತಿಯಿಂದ 2023ರ ಜೂನ್ ಮಾಹೆಯಿಂದ 2025ರ ಮೇ 04 ರವರೆಗೆ ನಗರ, ಸಾಮಾನ್ಯ ಹಾಗೂ ವೇಗದೂತ ಸಾರಿಗೆಗಳಲ್ಲಿ ಒಟ್ಟು 4,36,09138 ಮಹಿಳಾ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸಿದ್ದಾರೆ ಹಾಗೂ ಪ್ರಯಾಣ ದರದ ಮೊತ್ತ ಒಟ್ಟು ರೂ. 177,33,69463/- ಆಗಿರುತ್ತದೆ.
ಪ್ರತಿ ನಿತ್ಯ ಸರಾಸರಿ 62837 ಮಹಿಳಾ ಪ್ರಯಾಣಿಕರು ಶಕ್ತಿ ಯೋಜನೆಯ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ಪ್ರತಿ ನಿತ್ಯ ಸರಾಸರಿ ಶಕ್ತಿ ಯೋಜನೆಯಿಂದ ಚಿತ್ರದುರ್ಗ ವಿಭಾಗಕ್ಕೆ ರೂ.25,55,287/-ಆದಾಯವಾಗಿರುತ್ತದೆ. ಶಕ್ತಿ ಯೋಜನೆ ಬಹಳ ಯಶಸ್ವಿಯಾಗಿ ನಡೆಯುತ್ತಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಸಭೆಗೆ ಮಾಹಿತಿ ನೀಡಿದರು.
Also Read: ಅಡಿಕೆ ಧಾರಣೆ | ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಡಿ.ಎನ್.ಮೈಲಾರಪ್ಪ ಮಾತನಾಡಿ, ಶಕ್ತಿ ಯೋಜನೆ ಕುರಿತು ವ್ಯಾಪಕ ಪ್ರಚಾರ ನೀಡಬೇಕು. ಶಕ್ತಿ ಯೋಜನೆಯಿಂದ ಕೆಎಸ್ಆರ್ಟಿಸಿ ಸಂಸ್ಥೆಯು ಆರ್ಥಿಕವಾಗಿ ಸಬಲವಾಗಿದೆ ಎಂದು ತಿಳಿಸಿದ ಅವರು, ಶಕ್ತಿ ಯೋಜನೆಯಡಿ ಉಚಿತ ಪ್ರಯಾಣ ಬೆಳೆಸುವ ಮಹಿಳಾ ಫಲಾನುಭವಿಗಳಿಗಳೊಂದಿಗೆ ಕೆಎಸ್ಆರ್ಟಿಸಿ ಸಿಬ್ಬಂದಿಯವರು ಸೌಜನ್ಯಯೊಂದಿಗೆ ವರ್ತಿಸಲು ತಿಳುವಳಿಕೆ ನೀಡಬೇಕು ಎಂದು ತಿಳಿಸಿದರು.
ಚಿತ್ರದುರ್ಗ-ದಾವಣಗೆರೆ ಹಾಗೂ ಮುಂದಕ್ಕೆ ಕಾರ್ಯಾಚರಣೆ ಮಾಡುವ ಎಲ್ಲ ವೇಗದೂತ ಸಾರಿಗೆಗಳನ್ನು ಕಡ್ಡಾಯವಾಗಿ ಭರಮಸಾಗರ ಗ್ರಾಮದ ಸರ್ವೀಸ್ ರಸ್ತೆಯ ಮೂಲಕ ಕಾರ್ಯಾಚರಣೆ ಮಾಡಿ, ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕು ಎಂದು ಸದಸ್ಯ ಟಿ.ನಿರಂಜನ್ ಸಲಹೆ ನೀಡಿದರು.
ಯುವನಿಧಿ: ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ 5312 ಪದವಿ ಫಲಾನುಭವಿಗಳು ಹಾಗೂ 103 ಡಿಪ್ಲೊಮಾ ಫಲಾನುಭವಿಗಳು ಸೇರಿದಂತೆ ಒಟ್ಟು 5415 ನಿರುದ್ಯೋಗಿಗಳು ಯುವನಿಧಿ ಸೌಲಭ್ಯ ಪಡೆದಿರುತ್ತಾರೆ. 2024ರ ಜನವರಿ ಮಾಹೆಯಿಂದ 2025ರ ಫೆಬ್ರವರಿ ಅಂತ್ಯದವರೆಗೆ ರೂ.10,0495500/-ಗಳನ್ನು ನಿರುದ್ಯೋಗಿಗಳ ಖಾತೆಗೆ ಡಿಬಿಟಿ ಮಾಡಲಾಗಿದೆ ಎಂದು ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದರು.
Also Read: ಆರೋಪಿ ಕಾಲಿಗೆ ಗುಂಡು | ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿ | ಸೀಬಾರ ಬಳಿ ಘಟನೆ
ಅನ್ನಭಾಗ್ಯ: ಜನವರಿ-2025ರ ಮಾಹೆಯ ಡಿಬಿಟಿ ಅನುದಾನ ಬಿಡುಗಡೆಯಾಗಿರುವುದಿಲ್ಲ. ಡಿಬಿಟಿ ಸ್ಥಗಿತಗೊಂಡಿದೆ. ಫೆಬ್ರವರಿ-2025ರ ಮಾಹೆಯಿಂದ ಅನ್ನಭಾಗ್ಯ ಯೋಜನೆಯಡಿ ನೇರ ನಗದು ವರ್ಗಾವಣೆ ಬದಲಾಗಿ ಹೆಚ್ಚುವರಿ 05 ಕೆ.ಜಿ.ಅಕ್ಕಿಯನ್ನು ವಿತರಿಸಲಾಗುತ್ತಿರುತ್ತದೆ ಎಂದು ಆಹಾರ ಇಲಾಖೆ ಜಂಟಿ ನಿರ್ದೇಶಕ ಮಧುಸೂದನ್ ತಿಳಿಸಿದರು.
ಆಯಾ ಏರಿಯಾಗಳಲ್ಲಿರುವ ನ್ಯಾಯಬೆಲೆ ಅಂಗಡಿಗಳಲ್ಲಿ ಆಹಾರ ಧಾನ್ಯಗಳನ್ನು ಜಿಲ್ಲಾ ಮತ್ತು ತಾಲ್ಲೂಕು ಸಮಿತಿಯವರ ಸಮ್ಮುಖದಲ್ಲಿ ವಿತರಣೆ ಮಾಡಿದರೆ ಕ್ರಮವಹಿಸಬೇಕು ಎಂದು ಸಮಿತಿ ಅಧ್ಯಕ್ಷ ಆರ್.ಶಿವಣ್ಣ ತಿಳಿಸಿದರು.
ಇದೇ ಮೇ.15ರಂದು ಜಿಲ್ಲಾ ಕೇಂದ್ರ ಹಾಗೂ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಸಮಿತಿಯವರ ಸಮ್ಮುಖದಲ್ಲಿ ವಿತರಿಸಲಾಗುವುದು ಎಂದು ಆಹಾರ ಇಲಾಖೆ ಜಂಟಿ ನಿರ್ದೇಶಕ ಮಧುಸೂದನ್ ಹೇಳಿದರು.
Also Read: ಗ್ರಾಮ ಪಂಚಾಯತಿ ಉಪಚುನಾವಣೆ | ವೇಳಾಪಟ್ಟಿ ಪ್ರಕಟ
ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಡಿ.ಎನ್.ಮೈಲಾರಪ್ಪ, ಟಿ.ನಿರಂಜನ್, ಸದಸ್ಯರಾದ ಆರ್.ಪ್ರಕಾಶ್, ಅಬ್ದುಲ್ಲಾ ಶಾ ವಲಿ, ಟಿ.ಕೃಷ್ಣಮೂರ್ತಿ, ಹೇಮಂತ್ ಯಾದವ್, ಮಹಮ್ಮದ್ ಇಸ್ಮಾಯಿಲ್, ಶಿವಕುಮಾರ್, ಎಲ್.ಇಂದಿರಾ, ಜಿಪಂ ಮುಖ್ಯ ಯೋಜನಾಧಿಕಾರಿ ಗಾಯತ್ರಿ ಸೇರಿದಂತೆ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
