
CHITRADURGA NEWS | 22 SEPTEMBER 2025
ಚಿತ್ರದುರ್ಗ: ಕರ್ನಾಟಕ ರೈತ ಸಂಘದಿಂದ ನಗರದ ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಸೋಮವಾರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ರೈತರು ಈರುಳ್ಳಿ ಸುರಿದು ಜಿಲ್ಲಾಡಳಿತದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: ಚಿತ್ರದುರ್ಗದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಚಿವರಿಂದ ಚಾಲನೆ

ಈ ವೇಳೆ ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾಧ್ಯಕ್ಷೆ ಶಾಂತಾ ಅಶೋಕ್ ಮಾತನಾಡಿ, ಅಡುಗೆ ಮನೆಗೆ ಅತ್ಯಗತ್ಯವಾಗಿ ಬೇಕಾಗಿರುವ ಈರುಳ್ಳಿ ಇಲ್ಲದಿದ್ದರೆ ಮಹಿಳೆಯರು ಅಡುಗೆ ಕೋಣೆ ಪ್ರವೇಶಿಸುವುದಿಲ್ಲ. ಪ್ರತಿಯೊಂದು ತರಕಾರಿಯೂ ಊಟಕ್ಕೆ ಬೇಕೆ ಬೇಕು. ಈರುಳ್ಳಿ ನಷ್ಟವಾಗಿರುವುದಕ್ಕೆ ಕೂಡಲೆ ಪರಿಹಾರ ಕೊಡಬೇಕು. ಇಲ್ಲವಾದಲ್ಲಿ ಸರ್ಕಾರಿ ಕಚೇರಿಗಳಿಗೆ ಬೀಗ ಹಾಕಿ ಅಧಿಕಾರಿಗಳನ್ನು ಹೊರಗೆ ಕಳಿಸುತ್ತೇವೆಂದು ಎಚ್ಚರಿಸಿದರು.
ಸಾಲ ಮಾಡಿ ಬೀಜ, ಗೊಬ್ಬರ ಖರೀಧಿಸಿ ಭೂಮಿಗೆ ಸುರಿದಿದ್ದೇವೆ. ಖರ್ಚು ಮಾಡಿರುವ ಕೂಲಿಯು ಕೈಗೆ ಸಿಕ್ಕಿಲ್ಲ. ಈರುಳ್ಳಿ, ಮೆಕ್ಕೆಜೋಳ, ಶೇಂಗಾ ಒಟ್ಟಾರೆ ಎಲ್ಲಾ ಬೆಳೆಗಳು ಹಾನಿಯಾಗಿವೆ. ತಡಮಾಡದೆ ರೈತರಿಗೆ ಪರಿಹಾರ ನೀಡಬೇಕು. ಇಲ್ಲವಾದಲ್ಲಿ ಬಾಬಾಗೌಡ ಪಾಟೀಲ್ ನೇತೃತ್ವದಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆಂದು ಹೇಳಿದರು.
ಅಭಿವೃದ್ದಿ ಕಾಮಗಾರಿಗಳಿಗೆ ಕೋಟ್ಯಾಂತರ ರೂ.ಗಳನ್ನು ಖರ್ಚು ಮಾಡಿ ಕಮಿಷನ್ ಹೊಡೆಯಲು ಸರ್ಕಾರದಲ್ಲಿ ಹಣವಿದೆ. ರೈತರಿಗೆ ಪರಿಹಾರ ನೀಡಲು ಹಣವಿಲ್ಲದಷ್ಟು ಬಡವಾಗಿದೆಯೇ ಎಂದು ಸರ್ಕಾರವನ್ನು ಪ್ರಶ್ನಿಸಿದರು?
ಇದನ್ನೂ ಓದಿ: ಚಿತ್ರದುರ್ಗ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಗೆ ಕಾರ್ಯಕಾರಿ ಸಮಿತಿ ನೇಮಕ
ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ ಮಾತನಾಡಿ, ಜಿಲ್ಲೆಯ ಪ್ರಮುಖ ಬೆಳೆ ಈರುಳ್ಳಿ, ಪ್ರತಿ ವರ್ಷದಂತೆ ಈ ಬಾರಿಯೂ ನಷ್ಟವಾಗಿದೆ. ಮಳೆ ಹೆಚ್ಚಾಗಿ ಹೊಲದಲ್ಲಿಯೇ ಕೊಳೆಯುತ್ತಿದೆ. ಕೂಲಿ ಕೂಡ ಸಿಗುತ್ತಿಲ್ಲ.
ಉತ್ತರ ಕನ್ನಡ ಜಿಲ್ಲೆಯ ರೈತರಿಗೆ ಸಾಲ ಮನ್ನ ಮಾಡಿ ಪರಿಹಾರ ಕೊಡುವುದಾಗಿ ಘೋಷಿಸಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಧ್ಯ ಕರ್ನಾಟಕದ ಬಯಲು ಸೀಮೆ ಚಿತ್ರದುರ್ಗದ ರೈತರ ಕಷ್ಟ ಏಕೆ ಅರ್ಥವಾಗುತ್ತಿಲ್ಲ?
ಎಕರೆಗೆ 30 ರಿಂದ 40 ಸಾವಿರ ರೂ.ಗಳನ್ನು ಖರ್ಚು ಮಾಡಿರುವ ರೈತರು ಅತಂತ್ರವಾಗಿದ್ದಾರೆ. ಕೂಡಲೆ ಪರಿಹಾರದ ಹಣ ನೀಡಬೇಕೆಂದು ಜಿಲ್ಲಾಡಳಿತವನ್ನು ಆಗ್ರಹಿಸಿದರು.
ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಉಪಾಧ್ಯಕ್ಷ ಕೆ.ಪಿ.ಭೂತಯ್ಯ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ, ಕಳೆದ ತಿಂಗಳು 20 ದಿನಗಳ ಕಾಲ ಮಳೆ ಸುರಿದು ಮೋಡ ಕವಿದ ವಾತಾವರಣವಿದ್ದುದರಿಂದ ಈರುಳ್ಳಿ ನಾಶವಾಗಿದ್ದು, ಅಲ್ಪಸ್ವಲ್ಪ ಉಳಿದ ಈರುಳ್ಳಿ ಗುಣಮಟ್ಟವಿಲ್ಲವೆಂದು ಒಂದು ಕ್ವಿಂಟಾಲ್ಗೆ 150 ರಿಂದ 200 ರೂ.ಗಳಿಗೆ ಮಾರಾಟವಾಗುತ್ತಿದೆ. ಇದರಿಂದ ರೈತನ ಕಣ್ಣಲ್ಲಿ ನೀರು ಬರುವಂತಾಗಿದೆ.
ಇದನ್ನೂ ಓದಿ: ಈ ಫೈಲ್ ಓಪನ್ ಮಾಡಿದ್ರೆ ನಿಮ್ಮ ಫೋನ್ ಹ್ಯಾಕ್ ಆಗುತ್ತೆ | ಎಚ್ಚರ ವಹಿಸುವಂತೆ ಪೊಲೀಸ್ ಇಲಾಖೆ ಸೂಚನೆ
ರಾಜ್ಯ ಸರ್ಕಾರ ಕೂಡಲೆ ನೆರೆಯ ಆಂಧ್ರ ಸರ್ಕಾರದಂತೆ ಬೆಳೆ ಪರಿಹಾರ ಹಣವನ್ನು ತಕ್ಷಣವೇ ಬಿಡುಗಡೆಗೊಳಿಸಿ ಈರುಳ್ಳಿ ಖರೀಧಿ ಕೇಂದ್ರ ತೆರೆಯಬೇಕು. ಕಂದಾಯ ಇಲಾಖೆ ನಿರ್ಲಕ್ಷೆಯಿಂದ ರೈತರಿಗೆ ಬೆಳೆ ಪರಿಹಾರ ಕೈಸೇರಿಲ್ಲ. ಪ್ರತಿ ಎಕರೆಗೆ ಮೂವತ್ತು ಸಾವಿರ ರೂ.ಗಳ ಪರಿಹಾರ ಕೊಡಬೇಕೆಂದು ಒತ್ತಾಯಿಸಿದರು.
ರೈತ ಮುಖಂಡರುಗಳಾದ ಎಂ.ಬಿ.ತಿಪ್ಪೇಸ್ವಾಮಿ, ಬಸ್ತಿಹಳ್ಳಿ ಜಿ.ಸುರೇಶ್ಬಾಬು, ಟಿ.ಮುನಿಸ್ವಾಮಿ, ಕರಿಬಸವಯ್ಯ, ಆರ್.ಚೇತನ್ ಯಳನಾಡು, ಓ.ಟಿ.ತಿಪ್ಪೇಸ್ವಾಮಿ, ಎಂ.ಎಸ್.ಪ್ರಭು, ಎನ್.ನಾಗರಾಜ, ಎಸ್.ಕೆ.ಕುಮಾರಸ್ವಾಮಿ, ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಧನಂಜಯ ಹಂಪಯ್ಯನಮಾಳಿಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
