
CHITRADURGA NEWS | 29 JANUARY 2024
ಚಿತ್ರದುರ್ಗ: ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮದಲ್ಲಿ ಹನುಮಾನ್ ಧ್ವಜ ಇಳಿಸುವ ಮೂಲಕ ಸಮಸ್ತ ಹಿಂದೂ ಸಮಾಜಕ್ಕೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಒನಕೆ ಓಬವ್ವ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯ ಖನಿಜ ನಿಗಮದ ಮಾಜಿ ಅಧ್ಯಕ್ಷ ಎಸ್.ಲಿಂಗಮೂರ್ತಿ ಭಾಗವಹಿಸಿ ಮಾತನಾಡುತ್ತಾ, ಪೊಲೀಸರನ್ನು ಬಳಸಿಕೊಂಡು ದೌರ್ಜನ್ಯ ನಡೆಸಿ ಧ್ವಜ ಇಳಿಸಿರುವ ಸರ್ಕಾರ, ಅದೇ ಪೊಲೀಸರ ಮೂಲಕ ಧ್ವಜವನ್ನು ಮತ್ತೆ ಪುನರ್ ಪ್ರತಿಷ್ಠಾಪಿಸಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: ದಿವ್ಯಪ್ರಭು ಧಾರವಾಡ ಜಿಲ್ಲಾಧಿಕಾರಿ
ಪೊಲೀಸರ ಬಲದಿಂದ ಕಾಂಗ್ರೆಸ್ ಸರ್ಕಾರ ಕೆರಗೋಡಿನಲ್ಲಿ ಹನುಮ ಧ್ವಜವನ್ನು ಇಳಿಸಿ ಹಿಂದೂಗಳ ಭಾವನೆಗೆ ಧಕ್ಕೆ ತಂದಿದೆ. ಇದಕ್ಕೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರ ಹೊಣೆ ಎಂದರು.
ಧರ್ಮವನ್ನು ಬಿಟ್ಟು ಯಾರು ಬದುಕಲು ಸಾಧ್ಯವಿಲ್ಲ. ರಾಮ, ಆಂಜನೇಯ ಇಲ್ಲದ ಊರುಗಳೆ ಇಲ್ಲ. ದೇಶದ ಪ್ರಧಾನಿ ನರೇಂದ್ರಮೋದಿ ಅವರು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟಿಸಿದಾಗ ಇಡೀ ಜಗತ್ತಿನ ಎಮ್ಮ ಧರ್ಮಗಳ ಮುಖ್ಯಸ್ಥರು ಶ್ಲಾಘಿಸಿದ್ದಾರೆ. ಈ ಮೂಲಕ ಇಡೀ ಜಗತ್ತು ಭಾರತದತ್ತ ನೋಡುವಂತಾಗಿದೆ ಎಂದು ಹೇಳಿದರು.
ನಿನ್ನೆ ತಾನೆ ಚಿತ್ರದುರ್ಗದಲ್ಲಿ ಶೋಷಿತರ ಜಾಗೃತಿ ಸಮಾವೇಶ ನಡೆಸಿದ್ದಾರೆ. ಆದರೆ, ಕಳೆದ 70 ವರ್ಷಗಳ ಕಾಲ ಆಡಳಿತ ನಡೆಸಿದ ಇವರಿಗೆ ಎಂದೂ ಶೋಷಿತರು ನೆನಪೇ ಆಗಲಿಲ್ಲ. ಈಗ ಚುನಾವಣೆ ಹತ್ತಿರವಾದಾಗ ಗಿಮಿಕ್ ಮಾಡುತ್ತಿದ್ದಾರೆ ಎಂದು ದೂರಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ ಮಾತನಾಡಿ, ಕೆರೆಗೋಡಿನಲ್ಲಿ ಕಾಂಗ್ರೆಸ್ ಸರ್ಕಾರ ಹನುಮಧ್ವಜ ಇಳಿಸುವ ಮೂಲಕ ಅಶಾಂತಿ ಸೃಷ್ಟಿಸಲು ಮುಂದಾಗಿದೆ ಎಂದರು.
ಇದನ್ನೂ ಓದಿ: ಬ್ಯಾಟರಿ ಚಾಲಿತ ವೀಲ್ಚೇರ್ ಅರ್ಜಿ ಆಹ್ವಾನ
ಗ್ರಾಮ ಪಂಚಾಯಿತಿ ಅನುಮತಿ ಪಡೆದೇ ಅಲ್ಲಿ ಧ್ವಜಸ್ಥಂಭ ನೆಟ್ಟು ಧ್ವಜ ಹಾರಿಸಲಾಗಿದೆ. ಆದರೆ, ರಾಜ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರ ಅನಗತ್ಯವಾಗಿ ಪೊಲೀಸರ ಬಲ ಉಪಯೋಗಿಸಿಕೊಂಡು ಧ್ವಜ ಇಳಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದುಗಳಿಗೆ ತುರ್ತು ಪರಿಸ್ಥಿತಿ ನಿರ್ಮಾಣವಾದಂತಾಗಿದೆ. ಈ ಸರ್ಕಾರ ಬಂದಾಗಿನಿಂದಲೂ ಹಿಂದೂಗಳ ಮೇಲೆ ದೌರ್ಜನ್ಯವೆಸಗುತ್ತಿದೆ ಎಂದು ದೂರಿದರು.
ಕಾಂಗ್ರೆಸ್ ಸರ್ಕಾರ ಹಿಂದುಗಳನ್ನು ಗುರಿಯಾಗಿಸಿಕೊಂಡು ದ್ವೇಷ ರಾಜಕಾರಣ ಮಾಡುತ್ತಿದೆ. ಹುಬ್ಬಳ್ಳಿಯಲ್ಲಿ 31 ವರ್ಷಗಳ ಹಳೆಯ ಕೇಸು ಕೆದಕಿ ಅಲ್ಲಿ ಶ್ರೀಕಾಂತ ಪೂಜಾರಿ ಅವರನ್ನು ಬಂಧಿಸಲಾಗಿತ್ತು ಎಂದು ಹೇಳಿದರು.
ಕೆರೆಗೋಡಿನಲ್ಲಿ ಮತ್ತೆ ಹನುಮಾನ್ ಧ್ವಜ ಹಾರಾಟ ಮಾಡುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಮುರುಳಿ ತಿಳಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಡಾ.ಸಿದ್ಧಾರ್ಥ್, ಜಿ.ಟಿ.ಸುರೇಶ್, ನವೀನ್ ಚಾಲುಕ್ಯ, ಡಾ.ಮಂಜುನಾಥ್, ಪಾಲಯ್ಯ, ಕಲ್ಲೇಶಯ್ಯ, ನರೇಂದ್ರ ಹೊನ್ನಾಳ್, ನಾಗರಾಜ ಬೇದ್ರೆ, ರಾಮರೆಡ್ಡಿ, ಶೈಲೇಶ್, ವೆಂಕಟೇಶ್ ಯಾದವ್, ಮಲ್ಲಿಕಾರ್ಜುನ್, ಶ್ಯಾಮಲ ಶಿವಪ್ರಕಾಶ್, ಶೈಲಜಾರೆಡ್ಡಿ, ಮಂಜುಳಮ್ಮ, ಕವನ, ಬಸಮ್ಮ, ದಗ್ಗೆ ಶಿವಪ್ರಕಾಶ್, ಶಂಭು, ತಿಪ್ಪೇಸ್ವಾಮಿ, ರೂಪಾ ಸುರೇಶ್, ತಿಪ್ಪೇಸ್ವಾಮಿ, ಸಂಪತ್ಕುಮಾರ್ ಮತ್ತಿತರರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
