
CHITRADURGA NEWS | 11 SEPTEMBER 2025
ಚಿತ್ರದುರ್ಗ: ಚಿತ್ರದುರ್ಗದ ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ ರಾಜ್ಯ ಸರ್ಕಾರ ಡಿಜೆ.ಗೆ ಅನುಮತಿ ನೀಡದಿರುವುದನ್ನು ಪ್ರಶ್ನಿಸಿ ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರು ಒನಕೆ ಓಬವ್ವ ವೃತ್ತದಲ್ಲಿ ಬುಧವಾರ ಸಂಜೆ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಇದನ್ನೂ ಓದಿ: ಹೊಳಲ್ಕೆರೆ | PDO ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ
ಹಿಂದೂ ಮಹಾಗಣಪತಿ ಪ್ರತಿಷ್ಠಾಪನಾ ಪೆಂಡಾಲ್ ಸಮೀಪದಿಂದ ಮೆರವಣಿಗೆ ಮೂಲಕ ಹೊರಟ ಪ್ರತಿಭಟನಾಕಾರರು ಮದಕರಿನಾಯಕ ವೃತ್ತ, ಅಂಬೇಡ್ಕರ್ ಸರ್ಕಲ್, ಗಾಂಧಿವೃತ್ತದ ಮೂಲಕ ಒನಕೆ ಓಬವ್ವ ವೃತ್ತಕ್ಕೆ ಆಗಮಿಸಿದಾಗ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ನುಗ್ಗುವುದನ್ನು ಪೊಲೀಸರು ತಡೆದರು.
ಬೃಹಧಾಕಾರವಾದ ಕೇಸರಿ ಭಾವುಟಗಳನ್ನು ಕೈಯಲ್ಲಿಡಿದಿದ್ದ ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ದ ಧಿಕ್ಕಾರಗಳನ್ನು ಕೂಗಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗ ಸುತ್ತಲೂ ಬ್ಯಾರಿಕೇಡ್ಗಳನ್ನು ಅಡ್ಡವಿಟ್ಟು ಪೊಲೀಸರು ಕಾವಲು ಕಾಯುತ್ತಿದ್ದರು.
ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡುತ್ತ, ಹದಿನೆಂಟು ವರ್ಷಗಳಿಂದಲೂ ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಯಶಸ್ವಿಯಾಗಿ ನಡೆದಿದೆ. ಸಣ್ಣ ಅಹಿತಕರ ಘಟನೆಯಾಗಿಲ್ಲ. ರಾಜ್ಯ ಸರ್ಕಾರ ಏಕೆ ಡಿಜೆ.ಗೆ ಅನುಮತಿ ನೀಡುತ್ತಿಲ್ಲ. ವಿಶ್ವಹಿಂದೂ ಪರಿಷತ್ನ ಶರಣ್ ಪಂಪ್ವೆಲ್ ಚಿತ್ರದುರ್ಗ ಪ್ರವೇಶಕ್ಕೆ ಜಿಲ್ಲಾಧಿಕಾರಿ ನಿರ್ಬಂಧ ಹೇರಿರುವುದನ್ನು ಹಿಂದಕ್ಕೆ ಪಡೆಯಬೇಕು.
ಇದನ್ನೂ ಓದಿ: ಚಿತ್ರದುರ್ಗ ಜಿಲ್ಲಾಧಿಕಾರಿ ನೂತನ ಕಟ್ಟಡ ವೈದ್ಯಕೀಯ ಕಾಲೇಜಿಗೆ ಹಸ್ತಾಂತರ | ಬೆಂಗಳೂರಿನಲ್ಲಿ ಸಭೆ
ರಾಜ್ಯ ಹೊರ ರಾಜ್ಯಗಳಿಂದ ಲಕ್ಷಾಂತರ ಭಕ್ತರು ಹಿಂದೂ ಮಹಾಗಣಪತಿ ಶೋಭಾಯಾತ್ರೆಯಲ್ಲಿ ಪಾಲ್ಗೊಂಡು ಭಕ್ತಿ ಪ್ರದರ್ಶಿಸುತ್ತಿದ್ದಾರೆ. ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಗಣಪತಿ ಮೆರವಣಿಗೆಗೆ ರಾಜ್ಯ ಸರ್ಕಾರ ಡಿಜೆ.ಗೆ ಅನುಮತಿ ಕೊಟ್ಟಿದೆ. ಅದೇ ರೀತಿ ಇಲ್ಲಿಯೂ ಡಿಜೆ.ಗೆ ಅವಕಾಶ ನೀಡಬೇಕೆಂದು ಒತ್ತಾಯಿಸಿದರು.
ಡಿವೈಎಸ್ಪಿ. ದಿನಕರ್, ವೃತ್ತ ನಿರೀಕ್ಷಕರು, ಸಬ್ಇನ್ಸ್ಪೆಕ್ಟರ್ಗಳು, ಮೀಸಲು ಪೊಲೀಸ್ ಹಾಗೂ ಗೃಹರಕ್ಷಕದಳದವರು ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಸುತ್ತುವರೆದು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು.
ಪ್ರಬಂಜನ್, ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಭದ್ರಿನಾಥ್, ಸಿದ್ದಾರ್ಥಗುಂಡಾರ್ಪಿ, ಬಿಜೆಪಿ.ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಉಮೇಶ್ ಕಾರಜೋಳ, ಚನ್ನಕೇಶವ, ಶರಣ್ಕುಮಾರ್, ಸಂದೀಪ್ ಸೇರಿದಂತೆ ವಿ.ಹೆಚ್.ಪಿ. ಹಾಗೂ ಬಜರಂಗದಳದ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
