CHITRADURGA NEWS | 11 AUGUST 2026
ಚಿತ್ರದುರ್ಗ: ಜಿಲ್ಲೆಯಲ್ಲಿ ತೀವ್ರ ಮಳೆ ಕೊರತೆಯಾಗಿದ್ದು, ಬಿತ್ತನೆ ವೈಫಲ್ಯ ಹಾಗೂ ಮಧ್ಯಂತರ ಬೆಳೆ ಪರಿಹಾರ ನೀಡಲು ಶಿಫಾರಸ್ಸು ಮಾಡುವಂತೆ ಪ್ರಕೃತಿ ವಿಕೋಪ ಪರಿಹಾರಗಳ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಹೇಳಿದರು.
ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ‘ಜಿಲ್ಲಾ ವಿಪತ್ತು ನಿರ್ವಹಣೆ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೃಷಿ ರೈತರು ಮಾತ್ರವಲ್ಲದೆ ತೋಟಗಾರಿಕೆ ಹಾಗೂ ರೇಷ್ಮೆ ಬೆಳೆಗಾರರಿಗೂ ಬೆಳೆ ವಿಮೆ ಮತ್ತು ಸರ್ಕಾರದ ಇತರ ಸೌಲಭ್ಯಗಳು ತಲುಪುವಂತೆ ಅಧಿಕಾರಿಗಳು ಕ್ರಮಗಳನ್ನು ಕೈಗೊಳ್ಳಬೇಕು.ರಾಗಿ ಬೆಳೆಗೆ ನೊಂದಣಿ ಮಾಡಿಕೊಳ್ಳಲು ಆಗಸ್ಟ್ 14 ರವರೆಗೆ ಅವಕಾಶವಿದ್ದು, ಇನ್ನು ಸುಮಾರು 20 ರಿಂದ 25 ಸಾವಿರ ರೈತರು ಹೆಚ್ಚುವರಿಯಾಗಿ ನೊಂದಾಯಿಸಲು ಪ್ರಯತ್ನಿಸಬೇಕು.
ಸೆಪ್ಟೆಂಬರ್ನಲ್ಲೂ ಮಳೆ ಕೊರತೆಯಾಗುವ ಮುನ್ಸೂಚನೆ ಇರುವುದರಿಂದ ‘ಬಿತ್ತನೆ ವೈಫಲ್ಯ’ ಹಾಗೂ ಮಧ್ಯಂತರ ಪರಿಹಾರದ ಅಡಿ ರೈತರಿಗೆ ಶೇಕಡಾ 25 ರಷ್ಟು ಪರಿಹಾರ ದೊರಕುವಂತೆ ಮಾಡಬೇಕು ಎಂದು ಸಚಿವ ಟಿ.ರಘುಮೂರ್ತಿ ಸೂಚಿಸಿದರು.
ಇದನ್ನೂ ಓದಿ: ವಿವಿ ಸಾಗರ, ಗಾಯತ್ರಿ ಜಲಾಶಯಗಳಿಗೆ ಸಾರ್ವಜನಿಕರು ಮತ್ತು ಪ್ರವಾಸಿಗರ ಪ್ರವೇಶ ತಾತ್ಕಾಲಿಕ ನಿಷೇಧ
ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು ಸುಮಾರು 3.75 ಲಕ್ಷ ರೈತರಿದ್ದು, ಪ್ರಸಕ್ತ ಸಾಲಿನಲ್ಲಿ ಸುಮಾರು 6.24 ಲಕ್ಷ ಹೆಕ್ಟೇರ್ ಪೈಕಿ 1.18 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿ ಭೂಮಿಗೆ ಬಿತ್ತನೆ ವೈಫಲ್ಯದಡಿ ಬೆಳೆ ವಿಮೆ ಹಾಗೂ ಪರಿಹಾರಕ್ಕೆ ಸಂಬಂಧಿಸಿದ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಮುಂಬರುವ ದಿನಗಳಲ್ಲಿ ಮಧ್ಯಂತರ ಪರಿಹಾರಕ್ಕೂ ಪ್ರಸ್ತಾವನೆ ಕಳುಹಿಸಲಾಗಿದೆ. ಇದರಿಂದಾಗಿ ಜಿಲ್ಲೆಯ ಶೇ.85 ರಷ್ಟು ರೈತರಿಗೆ ವಿಮಾ ಸೌಲಭ್ಯ ದೊರೆಯಲಿದೆ. ಮಳೆ ಆಶ್ರಿತ ಹಾಗೂ ನೀರಾವರಿ ಎರಡೂ ವಿಭಾಗದ ಬೆಳೆ ಹಾನಿ ಪ್ರದೇಶಗಳನ್ನು ಒಳಗೊಂಡು ಶೇಕಡಾ 100 ರಷ್ಟು ಅರ್ಹ ರೈತರಿಗೆ ಪರಿಹಾರ ತಲುಪಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳವ ಭರವಸೆ ನೀಡಿದರು.
ಚಿತ್ರದುರ್ಗ ತಾಲ್ಲೂಕಿನಲ್ಲಿ ಒಟ್ಟು 65,675 ಹೆಕ್ಟೇರ್ ಕೃಷಿ ಸಾಗುವಳಿ ಕ್ಷೇತ್ರವಿದ್ದು, 58,850 ರೈತರು ಇದ್ದಾರೆ. ಮುಂಗಾರು ಹಂಗಾಮಿನಲ್ಲಿ 154.2ಮಿ.ಮೀ. ವಾಡಿಕೆ ಮಳೆ ನಿರೀಕ್ಷೆ ಇದ್ದು, 119.5 ಮಿ.ಮೀ. ಮಳೆ ಆಗಿದ್ದು, ಶೇಕಡಾ 23 ಮಳೆ ಕೊರತೆಯಾಗಿದೆ. ಇದುವರೆಗೂ 25,154 ಹೆಕ್ಟೇರ್ ಬಿತ್ತನೆಯಾಗಿದ್ದು, ಒಟ್ಟಾರೆ ಶೇಕಡಾ 38.3% ಬಿತ್ತನೆಯಾಗಿದೆ. ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಅಡಿಯಲ್ಲಿ 43,127 ರೈತರು ವಿಮೆ ಮಾಡಿಸಿದ್ದಾರೆ.ಚಿತ್ರದುರ್ಗ ತಾಲೂಕಿನಲ್ಲಿ 22,508 ಹೆಕ್ಟೇರ್ ಪ್ರದೇಶ ‘ತಡೆಹಿಡಿದ ಬಿತ್ತನೆ’ ವ್ಯಾಪ್ತಿಗೆ ಬರುತ್ತದೆ. 33,306 ರೈತರು ಇದರ ಲಾಭ ಪಡೆಯುತ್ತಾರೆ.
ಜಿಲ್ಲೆಯಲ್ಲಿ ಒಟ್ಟು 3,02,505 ರೈತರಿದ್ದು ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಕೃಷಿ ಬೆಳೆಗೆ 1,96,553 ರೈತರು, ಹವಾಮಾನ ಆಧಾರಿತ ಬೆಳೆ ವಿಮೆಯಡಿ ತೋಟಗಾರಿಕೆ ಬೆಳೆಗಳಿಗೆ 46,947 ರೈತರು ಸೇರಿ ಒಟ್ಟು ಸೇರಿ 2,43,075 ರೈತರು ಬೆಳೆ ವಿಮೆ ವ್ಯಾಪ್ತಿಗೆ ಒಳಪಟ್ಟಿದ್ದಾರೆ. ಜಿಲ್ಲೆಯ ಸುಮಾರು ಶೇಕಡಾ 90 ರಷ್ಟು ರೈತರಿಗೆ ಬೆಳೆ ವಿಮೆ ಯೋಜನೆಯ ಪ್ರಯೋಜನ ತಲುಪುತ್ತಿದೆ ಎಂದು ಕೃಷಿ ಜಂಟಿ ನಿರ್ದೇಶಕ ಮಂಜುನಾಥ್ ಹಾಗೂ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಸವಿತಾ ಮಾಹಿತಿ ನೀಡಿದರು.
ಇದನ್ನೂ ಓದಿ: ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ | ರೈತರಿಂದ ಅರ್ಜಿ ಅಹ್ವಾನ
ಸಭೆಯಲ್ಲಿ ಶಾಸಕಾರದ ಬಿ.ಜಿ.ಗೋವಿಂದಪ್ಪ, ಕೆ.ಸಿ.ವೀರೇಂದ್ರ ಪಪ್ಪಿ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು, ರಾಜ್ಯ ದ್ರಾಕ್ಷ ರಸ ಮಂಡಳಿ ಅಧ್ಯಕ್ಷ ಡಾ.ಯೋಗಿಶ್ ಬಾಬು, ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಗಂಜಿಗಟ್ಟೆ ಶಿವಣ್ಣ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್ಪೀರ್, ಜಿ.ಪಂ.ಸಿಇಓ ಡಾ.ಆಕಾಶ್.ಎಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

