ಮುಖ್ಯ ಸುದ್ದಿ
ಮುರುಘಾ ಮಠದ ಆಡಳಿತ ನಿರ್ವಹಣೆಗೆ ನಿವೃತ್ತ ಐಎಎಸ್ ಅಧಿಕಾರಿ ನೇಮಕ | ಸಿ.ಶಿವಯೋಗಿ ಕಳಸದ ಸಮಿತಿ ಅಧ್ಯಕ್ಷ
CHITRADURGA NEWS | 2 MARCH 2024
ಚಿತ್ರದುರ್ಗ: ಮುರುಘಾ ಮಠದ ಆಡಳಿತದಲ್ಲಿ ಮಹತ್ತರ ಬದಲಾವಣೆಯಾಗಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನದಂತೆ ರಾಜ್ಯ ಸರ್ಕಾರ ಮುರುಘರಾಜೇಂದ್ರ ಬೃಹನ್ಮಠ, ಎಸ್ಜೆಎಂ ವಿದ್ಯಾಪೀಠದ ಆಡಳಿತ ನಿರ್ವಹಣೆಗೆ ನಿವೃತ್ತ ಐಎಎಸ್ ಅಧಿಕಾರಿ ಸಿ.ಶಿವಯೋಗಿ ಕಳಸದ ಅವರನ್ನು ನೇಮಕ ಮಾಡಿದೆ.
ಮುಂದಿನ ಮೂರು ದಿನಗಳಲ್ಲಿ ಮಠ ಹಾಗೂ ಎಸ್ಜೆಎಂ ವಿದ್ಯಾಪೀಠದ ಆಡಳಿತ ನಿರ್ವಹಣೆಗೆ ಸಮಿತಿ ರಚನೆ ಮಾಡಲು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಫೆ.27 ರಂದು ನಿರ್ದೇಶನ ನೀಡಿತ್ತು.
ಇದನ್ನೂ ಓದಿ: ಗ್ರಾಮ ಪಂಚಾಯಿತಿ ಸದಸ್ಯರ ಸಾಮೂಹಿಕ ರಾಜಿನಾಮೆ !
ಅದರಂತೆ ರಾಜ್ಯ ಸರ್ಕಾರ ಮಠದ ಆಡಳಿತ ಸಮಿತಿಯ ಅಧ್ಯಕ್ಷರನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಸಿ.ಶಿವಯೋಗಿ ಕಳಸದ ಅವರನ್ನು ನಿಯೋಜನೆ ಮಾಡಿದೆ. ಮುಂದುವರೆದಂತೆ ಸಮಿತಿಯನ್ನೂ ನೇಮಕ ಮಾಡುವುದಾಗಿ ಆದೇಶದಲ್ಲಿ ತಿಳಿಸಲಾಗಿದೆ.
ಪೋಕ್ಸೊ ಕಾಯ್ದೆಯಡಿ ಆರೋಪಿಯಾಗಿರುವ ಶ್ರೀ ಶಿವಮೂರ್ತಿ ಮುರುಘಾ ಶರಣರು ಮಠ ಹಾಗೂ ವಿದ್ಯಾಪೀಠದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಮಾಜಿ ಸಚಿವ ಎಚ್.ಏಕಾಂತಯ್ಯ ಸುಪ್ರೀಂ ಕೋರ್ಟ್ನಲ್ಲಿ ದಾವೆ ಹಾಕಿದ್ದರು.
ಇದನ್ನೂ ಓದಿ: ಜಲಕ್ಷಾಮದ ಸುಳಿಗೆ ಸಿಲುಕಿದೆ ಚಿತ್ರದುರ್ಗ
ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದ ಸರ್ವೋಚ್ಛ ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ಹೊಸ ಸಮಿತಿ ನೇಮಕ ಮಾಡಲು ಸೂಚನೆ ನೀಡಿತ್ತು. ಮುರುಘಾ ಶರಣರು ಹಾಗೂ ಅರ್ಜಿದಾರರಾದ ಎಚ್.ಏಕಾಂತಯ್ಯ ಈ ಸಮಿತಿಯ ಭಾಗವಾಗಿರಬಾರದು ಎಂದು ಉಲ್ಲೇಖಿಸಲಾಗಿತ್ತು.
ಅದರಂತೆ ಸದ್ಯ ಆಡಳಿತ ಸಮಿತಿಗೆ ಶಿವಯೋಗಿ ಕಳಸದ ಅಧ್ಯಕ್ಷರಾಗಿದ್ದು, ಸದಸ್ಯರನ್ನು ಶೀಘ್ರ ನೇಮಕ ಮಾಡಲಾಗುವುದು ಎಂದು ಕಂದಾಯ ಇಲಾಖೆ ಆದೇಶದಲ್ಲಿ ಮಾಹಿತಿ ನೀಡಿದೆ.
ಇದನ್ನೂ ಓದಿ: ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಬೆಲೆ 459 ರೂ. ಹೆಚ್ಚಳ
ಶರಣರ ವಿರುದ್ಧ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆ–2012, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಮೇಲಿನ ದೌರ್ಜನ್ಯ ತಡೆ ಕಾಯ್ದೆ–1989 ಮತ್ತು ಬಾಲ ನ್ಯಾಯ (ಮಕ್ಕಳ ಸಂರಕ್ಷಣೆ ಹಾಗೂ ಆರೈಕೆ) ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ದೋμÁರೋಪಪಟ್ಟಿ ಸಲ್ಲಿಸಿದ್ದಾರೆ.
ಈ ಹಿಂದೆ ಮಠಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್.ವಸ್ತ್ರದ್ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿತ್ತು.
ಇದನ್ನೂ ಓದಿ: ಪ್ರತ್ಯೇಕ ಚುನಾವಣಾ ಕಚೇರಿ ತೆರೆದರೆ ನಿರಾಸೆ ಕಟ್ಟಿಟ್ಟಬುತ್ತಿ