
CHITRADURGA NEWS | 11 APRIL 2026
ಚಿತ್ರದುರ್ಗ: ವೈಜ್ಞಾನಿಕವಾಗಿ ರಸ್ತೆಗಳ ನಿರ್ವಹಣೆ ಮಾಡುವುದರಿಂದ ಸಾಕಷ್ಟು ರಸ್ತೆ ಅಪಘಾತಗಳನ್ನು ತಡೆಯಬಹುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
ಇದನ್ನೂ ಓದಿ: ದಿನ ಭವಿಷ್ಯ | ಏಪ್ರಿಲ್ 12 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ದೂರದ ಪ್ರಯಾಣ ಬೇಡ
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅವೈಜ್ಞಾನಿಕ ರಸ್ತೆ, ಹಂಪ್ಗಳು ಅಪಘಾತಗಳಿಗೆ ಕಾರಣವಾಗುತ್ತವೆ. ಆದ್ದರಿಂದ ಇವುಗಳನ್ನು ಕೂಡಲೇ ಸರಿಪಡಿಸಬೇಕು. ರಸ್ತೆ ಸುರಕ್ಷತೆಗೆ ಪೂರಕವಾದ ಸೂಚನಾ ಫಲಕಗಳನ್ನು ಅಳವಡಿಸಬೇಕು. ಅತಿ ಹೆಚ್ಚು ಅಪಘಾತಗಳು ಸಂಭವಿಸುವ ಸ್ಥಳಗಳನ್ನು ಗುರುತಿಸಿ, ಅಲ್ಲಿ ಅಗತ್ಯ ಸುಧಾರಣಾ ಕ್ರಮಗಳನ್ನು ಕೈಗೊಳ್ಳಬೇಕು.
ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನಗಳನ್ನು ಅಕ್ರಮವಾಗಿ ಪಾರ್ಕಿಂಗ್ ಮಾಡುವುದರಿಂದ ಅಪಘಾತಗಳು ಸಂಭವಿಸುತ್ತಿವೆ. ಇಂತಹ ವಾಹನಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು. ಪೊಲೀಸ್ ಉಪಾಧೀಕ್ಷಕರು ಅಫಘಾತಗಳನ್ನು ಇಳಿಮುಖಗೊಳಿಸಲು ತಮ್ಮ ವ್ಯಾಪ್ತಿಯಲ್ಲಿನ ಅಪಘಾತ ವಲಯ ಹಾಗೂ ಬ್ಲಾಕ್ ಸ್ಪಾಟ್ಗಳನ್ನು ಗುರುತಿಸಿ, ಅಲ್ಲಿ ಕೈಗೊಳ್ಳಬೇಕಾದ ರಸ್ತೆ ಸುರಕ್ಷತಾ ಕ್ರಮಗಳ ಕುರಿತು ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ, ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ವರದಿಯನ್ನು ಕಳುಹಿಸಿಕೊಡಿ, ಸಂಬಂಧ ಪಟ್ಟವರು ರಸ್ತೆ ಸುಧಾರಣೆ ಕ್ರಮ ಕೈಗೊಂಡು ಸಮಿತಿಗೆ ಅನುಪಾಲನೆ ವರದಿ ನೀಡಬೇಕು.
ಇದನ್ನೂ ಓದಿ: ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ
ಒಂದು ವೇಳೆ ಸೂಕ್ತ ಕ್ರಮ ಕೈಗೊಳ್ಳದೇ ಅಪಘಾತಗಳು ಸಂಭವಿಸಿದರೆ ಸಂಬಂಧ ಪಟ್ಟ ಅಧಿಕಾರಿಯ ವಿರುದ್ದ ಪ್ರಕರಣ ದಾಖಲಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಮತ್ತು ಸಾರ್ವಜನಿಕರಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಲು ಕಾರ್ಯಕ್ರಮ ಆಯೋಜಿಸುವಂತೆ ಸಾರಿಗೆ ಮತ್ತು ಪೊಲೀಸ್ ಇಲಾಖೆಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಅಪಘಾತ ಸಂಭವಿಸಿದ ಕೂಡಲೇ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ಮತ್ತು ತುರ್ತು ಚಿಕಿತ್ಸೆ ದೊರೆಯುವಂತೆ ಆರೋಗ್ಯ ಇಲಾಖೆಯು ಕ್ರಮವಹಿಸಬೇಕು. ರಸ್ತೆ ಸುರಕ್ಷತೆಯು ಕೇವಲ ಒಂದು ಇಲಾಖೆಯ ಜವಾಬ್ದಾರಿಯಲ್ಲ, ಜಿಲ್ಲೆಯಲ್ಲಿ ಸಂಭವಿಸುವ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಮತ್ತು ಅಮೂಲ್ಯವಾದ ಜೀವಗಳನ್ನು ಉಳಿಸಲು ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶಿಸಿದರು.
ಅಪಘಾತಗಳಲ್ಲಿ ಇಳಿಮುಖ : ಬೇಕಿದೆ ಇನ್ನೂ ಹೆಚ್ಚಿನ ಸುಧಾರಣೆ
ಕಳೆದ ಮೂರು ವರ್ಷಗಳಿಗೆ ಹೊಲಿಸಿದರೆ ಜಿಲ್ಲೆಯಲ್ಲಿ ಅಪಘಾತಗಳ ಪ್ರಮಾಣ ಇಳಿಮುಖವಾಗಿದೆ. ಅಪಘಾತಗಳ ಸಂಖ್ಯೆಯನ್ನು ಮತ್ತಷ್ಟು ಕಡಿಮೆ ಮಾಡಲು ಪೊಲೀಸ್ ಇಲಾಖೆಯೊಂದಿಗೆ ಲೋಕೋಪಯೋಗಿ, ಸಾರಿಗೆ ಮತ್ತು ಆರೋಗ್ಯ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು.
ಇದನ್ನೂ ಓದಿ: ಮಾತೃ ಭಾಷೆ ಜೊತೆಗೆ ಆಂಗ್ಲ ಭಾಷೆ ಕಲಿಯಿರಿ | ಯೋಗೀಶ್ ಸಹ್ಯಾದ್ರಿ
ವಿಶೇಷವಾಗಿ ಅಪಘಾತ ಸಂಭವಿಸಿದ ಮೊದಲ ಒಂದು ಗಂಟೆ ಅತ್ಯಂತ ನಿರ್ಣಾಯಕವಾಗಿದ್ದು, ಆರೋಗ್ಯ ಇಲಾಖೆ ತಕ್ಷಣ ಸ್ಪಂದಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಸಭೆಯಲ್ಲಿ ತಿಳಿಸಿದರು.
2023 ರಲ್ಲಿ ಒಟ್ಟು 441 ಪ್ರಾಣಾಪಾಯಕಾರಿ ಅಪಘಾತಗಳು ಸಂಭವಿಸಿದ್ದು, 463 ಜನರು ಸಾವನ್ನಪ್ಪಿದ್ದರು. ಒಟ್ಟು 1,110 ಸಾಮಾನ್ಯ ಅಪಘಾತಗಳಲ್ಲಿ 2,600 ಜನರು ಗಾಯಗೊಂಡಿದ್ದರು. 2024 ರಲ್ಲಿ ಪ್ರಾಣಾಪಾಯಕಾರಿ ಅಪಘಾತಗಳ ಸಂಖ್ಯೆ 419ಕ್ಕೆ ಇಳಿಕೆಯಾಗಿದೆ. ಆದರೆ, ಸಾವಿನ ಸಂಖ್ಯೆಯಲ್ಲಿ ಸ್ವಲ್ಪ ಏರಿಕೆ ಕಂಡುಬಂದಿತ್ತು. ಕಟ್ಟುನಿಟ್ಟಿನ ಕ್ರಮಗಳಿಂದಾಗಿ 2025ರಲ್ಲಿ ಪ್ರಾಣಾಪಾಯಕಾರಿ ಅಪಘಾತಗಳ ಸಂಖ್ಯೆ 384ಕ್ಕೆ ಕುಸಿದಿದೆ. ಅಂದರೆ ಸುಮಾರು 35 ಅಪಘಾತಗಳು ಕಡಿಮೆಯಾಗಿವೆ. ಸಾವಿನ ಸಂಖ್ಯೆಯು 471 ರಿಂದ 425ಕ್ಕೆ ಇಳಿಕೆಯಾಗುವ ಮೂಲಕ ಸುಮಾರು 50 ಜನರ ಜೀವ ಉಳಿಸಲಾಗಿದೆ.
ಅಪಘಾತಗಳ ಸಂಖ್ಯೆ ಇಳಿಕೆಯಾಗಲು ಪೋಲಿಸ್ ಇಲಾಖೆಯ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಅಪಘಾತಗಳಿಗೆ ಮುಖ್ಯ ಕಾರಣವಾಗುತ್ತಿರುವ ಅಂಶಗಳ ಮೇಲೆ ವಿಶೇಷ ನಿಗಾ ವಹಿಸಲಾಗಿದೆ. ಮದ್ಯಪಾನ ಮಾಡಿ ವಾಹನ ಚಾಲನೆ 2023ರಲ್ಲಿ ಇಡೀ ವರ್ಷಕ್ಕೆ 365 ಪ್ರಕರಣಗಳಿದ್ದರೆ, 2026ರ ಮೊದಲ ಮೂರು ತಿಂಗಳಲ್ಲೇ 321 ಪ್ರಕರಣಗಳನ್ನು ಪತ್ತೆಹಚ್ಚಲಾಗಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
1,599 ಅತಿವೇಗದ ಪ್ರಕರಣಗಳನ್ನು ದಾಖಲಿಸಲಾಗಿದೆ. ಬ್ಲ್ಯಾಕ್ ಸ್ಪಾಟ್ಗಳ ಗುರುತಿಸುವಿಕೆ, ಹೆಲ್ಮೆಟ್ ಜಾಗೃತಿ, ಪ್ರತಿಫಲಕ ಸ್ಟಿಕ್ಕರ್ ಅಳವಡಿಕೆ, ಡಿಎಲ್ ರದ್ದತಿ ಶಿಫಾರಸು ಮತ್ತು ರಸ್ತೆ ಬದಿಯ ಅಕ್ರಮ ಪಾರ್ಕಿಂಗ್ ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಹೇಳಿದರು.
ಅಕ್ರಮ ಆಟೋಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ನಿರ್ದೇಶನ:
ಪರವಾನಿಗೆ ಪಡೆಯದೇ ಹಾಗೂ ನೊಂದಣಿ ಇಲ್ಲದೇ ಸಂಚರಿಸುತ್ತಿರುವ ಆಟೋ ರಿಕ್ಷಾಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. 20 ವರ್ಷಗಳ ಮೇಲ್ಪಟ್ಟ ಮೈನ್ಸ್ ಲಾರಿಗಳು ಓಡಾಟ ಈಗಾಗಲೇ ನಿರ್ಬಂಧಿಸಲಾಗಿದ್ದು, ಒಂದು ವೇಳೆ ಇಂತಹ ಲಾರಿಗಳು ಸಂಚಾರ ಮಾಡಿದರೆ ಅಂತಹ ವಾಹನಗಳನ್ನು ಸೀಜ್ ಮಾಡಬೇಕು. ಅಪಘಾತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಟ್ಯಾಕ್ಟರ್-ಟ್ಯಾಲಿಲಿಗಳಿಗೆ ರೇಡಿಯಂ ಸ್ಟಿಕ್ಕರ್ ಅಳವಡಿಕೆ ಮಾಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಪ್ರಸ್ತುತ 7,993 ಆಟೋಗಳಿಗೆ ಅಧಿಕೃತ ಪರವಾನಗಿ ನೀಡಲಾಗಿದೆ. ಆದರೆ, ಒಟ್ಟು ನೋಂದಾಯಿತ ಆಟೋಗಳ ಸಂಖ್ಯೆ 10,223 ರಷ್ಟಿದ್ದು, ಸುಮಾರು 2,230 ಆಟೋಗಳು ಪರವಾನಗಿ ಇಲ್ಲದೆ ರಸ್ತೆಗಿಳಿಯುತ್ತಿರುವುದು ಗಮನಕ್ಕೆ ಬಂದಿದೆ. ಪರವಾನಗಿ ಇಲ್ಲದ ಆಟೋಗಳ ಪೈಕಿ ಸುಮಾರು 1,000 ವಾಹನಗಳು ಬೇರೆಡೆಗೆ ಸ್ಥಳಾಂತರವಾಗಿರಬಹುದು ಅಥವಾ ನೋಂದಣಿ ರದ್ದಾಗಿರಬಹುದು ಎಂದು ಅಂದಾಜಿಸಲಾಗಿದೆ.
ಇದನ್ನೂ ಓದಿ: ಮೇ.1 ರಂದು ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಅನಿರ್ಧಿಷ್ಠಾವಧಿ ಹೋರಾಟ
ಆದಾಗ್ಯೂ, ಇನ್ನುಳಿದ ಒಂದು ಸಾವಿರಕ್ಕೂ ಅಧಿಕ ಆಟೋಗಳು ಕಾನೂನುಬಾಹಿರವಾಗಿ ಸಂಚರಿಸುತ್ತಿದ್ದು, ಇವುಗಳ ವಿರುದ್ಧ ತಕ್ಷಣವೇ ಜಂಟಿ ಕಾರ್ಯಾಚರಣೆ ನಡೆಸಲಾಗುವುದು. ಜಿಲ್ಲೆಯಲ್ಲಿ 25 ಸಾವಿರಕ್ಕೂ ಹೆಚ್ಚು ಟ್ಯಾಕ್ಟರ್ಗಳಿದ್ದು, ಆಂದೋಲದನದ ಮೂಲಕ 2500 ಟ್ಯಾಕ್ಟರ್ಗಳಿಗೆ ಮಾತ್ರ ರೇಡಿಯಂ ಸ್ಟಿಕ್ಕರ್ ಅಳವಡಿಕೆ ಮಾಡಲಾಗಿದ್ದು, ಎಲ್ಲ ಟ್ಯಾಕ್ಟರ್ಗಳಿಗೆ ರೇಡಿಯಂ ಸ್ಟಿಕ್ಕರ್ ಅಳವಡಿಕೆ ಆಂದೋಲನ ಮುಂದುವರಿಸುವುದಾಗಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ ಕಾಳೆಸಿಂಘೆ ಸಭೆಯಲ್ಲಿ ಮಾಹಿತಿ ನೀಡಿದರು.
ಇದೇ ವೇಳೆ ಚಿತ್ರದುರ್ಗ ನಗರದಲ್ಲಿ ಟ್ರಾಫಿಕ್ ಸಿಗ್ನಲ್ಗಳ ನಿರ್ವಹಣೆ, ರಬ್ಬರ್ ಹಂಪ್ಸ್, ಸಿ.ಸಿ. ಟಿವಿ ಕ್ಯಾಮೆರಾ ಅಳವಡಿಸಿಕೆ ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಂಡು ನಗರದಲ್ಲಿ ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಕ್ರಮಕೈಗೊಳ್ಳುವಂತೆ ನಗರಸಭೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಕೃಷ್ಣ ಸರ್ಕಲ್ ವೇಗ ನಿಯಂತ್ರಕಗಳನ್ನು ಅಳವಡಿಸಲು ಸೂಚನೆ:
ಹೊಳಲ್ಕೆರೆ ರಸ್ತೆಯಲ್ಲಿನ ಕೃಷ್ಣ ಸರ್ಕಲ್ ಅವೈಜ್ಞಾನಿಕವಾಗಿದ್ದು, 3 ರಸ್ತೆಗಳು ಸಂಗಮಿಸುತ್ತಿದ್ದು, ಅಪಘಾತ ಕಾರಣವಾಗಬಹುದು. ಇದರೊಂದಿಗೆ ಮುರುಘಾ ಮಠದ ಬಳಿ ಹಳೆ ಪಿ.ಬಿ.ರಸ್ತೆಗೆ ಸೇರುವ ರಸ್ತೆಯ ಅಪಘಾತ ವಲಯವಾಗಿದೆ. ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಕೂಡಲೇ ಇಲ್ಲಿ ವೇಗ ನಿಯಂತ್ರಕಗಳನ್ನು ಅಳವಡಿಸಬೇಕು. ಕೃಷ್ಣ ಸರ್ಕಲ್ ವೃತ್ತವನ್ನು ವೈಜ್ಞಾನಿಕವಾಗಿ ಮರು ನಿರ್ಮಾಣ ಮಾಡಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದರು.
ಇದನ್ನೂ ಓದಿ: ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
ಸಭೆಯಲ್ಲಿ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ನಾಗರಾಜ್, ಪೊಲೀಸ್ ಉಪಾಧೀಕ್ಷಕರುಗಳಾದ ಅರುಣ್ ನಾಗೇಗೌಡ, ಶಿವಕುಮಾರ್, ಸತ್ಯನಾರಾಯಣ್ ರಾವ್ ಎಂ.ಜಿ ಪೌರಾಯುಕ್ತೆ ಲಕ್ಷ್ಮಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
