Connect with us

ಆರೆಸ್ಸೆಸ್ಸ್-ಬಿಜೆಪಿ ಮೀಸಲಾತಿ ವಿರೋಧಿಗಳು | ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ

ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯ ಸುದ್ದಿ

ಆರೆಸ್ಸೆಸ್ಸ್-ಬಿಜೆಪಿ ಮೀಸಲಾತಿ ವಿರೋಧಿಗಳು | ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ

CHITRADURGA NEWS | 28 JANUARY 2024

ಚಿತ್ರದುರ್ಗ: ಜಾತಿ ಹೆಸರಲ್ಲಿ ಸಮಾಜವನ್ನು ಛಿದ್ರಗೊಳಿಸುವ ಸಂವಿಧಾನ ವಿರೋಧಿ ಆರೆಸ್ಸೆಸ್ಸೆ-ಬಿಜೆಪಿ ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಕರ್ನಾಟಕ ಶೋಷಿತ ಜಾತಿ-ಸಮುದಾಯಗಳ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಚಿತ್ರದುರ್ಗದಲ್ಲಿ ಆಯೋಜಿಸಿದ್ದ ಶೋಷಿತರ ಜಾಗೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಹಿಂದುಳಿದ, ದಲಿತ ಮತ್ತು ಶೋಷಿತ ಜಾತಿ ಸಮುದಾಯಗಳ ಜನ ತಮ್ಮ ಶತ್ರು ಯಾರು ಎನ್ನುವುದನ್ನು ಸ್ಪಷ್ಟವಾಗಿ ಅರ್ಥ ಮಾಡಿಕೊಳ್ಳಬೇಕು. ಶತ್ರುಗಳನ್ನು ಸ್ಪಷ್ಟವಾಗಿ ಗುರುತಿಸಬೇಕು. ಅವರನ್ನು ಸಂಪೂರ್ಣವಾಗಿ ತಿರಸ್ಕರಿಸಿ ನಿಮ್ಮ ಸ್ವಾಭಿಮಾನ ಬೆಳೆಸಿಕೊಳ್ಳಿ ಎಂದು ಸೂಚಿಸಿದರು.

ಇದನ್ನೂ ಓದಿ: ಚಿತ್ರದುರ್ಗ ಲೋಕಸಭೆಗೆ ಶಾಸಕ ಚನ್ನಬಸಪ್ಪ, ಎಸ್.ಲಿಂಗಮೂರ್ತಿ ಉಸ್ತುವಾರಿ.

ಮಂಡಲ್ ವರದಿಯನ್ನು ಬಿಜೆಪಿ ಮತ್ತುRSS ವಿರೋಧಿಸುತ್ತಲೇ ಬಂದಿದೆ. ಸಾಮಾಜಿಕ ನ್ಯಾಯ ಮತ್ತು ಸಮಾನ ಅವಕಾಶಗಳನ್ನು BJP-RSS ನಿರಂತರವಾಗಿ ವಿರೋಧಿಸುತ್ತಲೇ ಇದೆ. ಆದ್ದರಿಂದ ಸಂವಿಧಾನ ಮತ್ತು ಮೀಸಲಾತಿ ಹಾಗೂ ಸಾಮಾಜಿಕ ನ್ಯಾಯದ ವಿರೋಧಿಗಳ ಕೈಗೆ ಅಧಿಕಾರ ಹೋಗಬಾರದು ಎಂದು ಅಂಬೇಡ್ಕರ್ ಎಚ್ಚರಿಸಿದ್ದರು. ಈ ಎಚ್ಚರಿಕೆಯನ್ನು ನಾವು ಮರೆಯಬಾರದು ಎಂದರು.

ಶೋಷಿತರ ಜಾಗೃತಿ ಸಮಾವೇಶ

ಬಾಬಾ ಸಾಹೇಬ್ ಅವರ ಸಂವಿಧಾನ ಇಲ್ಲದೇ ಹೋಗಿದ್ದರೆ ಕೆ.ಎಸ್.ಈಶ್ವರಪ್ಪ ಸಿ.ಟಿ.ರವಿ ಮತ್ತು ಆರ್.ಅಶೋಕ್ ಶಾಸಕರಾಗಿ ವಿಧಾನಸಭೆ ಪ್ರವೇಶಿಸಲು ಸಾಧ್ಯವೇ ಇರಲಿಲ್ಲ. ಯಾರದ್ದೋ ಹೊಲ ಗದ್ದೆಗಳಲ್ಲಿ ಕೂಲಿ ಮಾಡುತ್ತಾ ಕೂರಬೇಕಾಗಿತ್ತು ಎಂದು ಮುಖ್ಯಮಂತ್ರಿಗಳು ಟೀಕಿಸಿದರು.

ಕುರಿ ಕಾಯುವವನ ಮಗ ಮುಖ್ಯಮಂತ್ರಿ ಆಗಿಬಿಟ್ಟೆ ಎನ್ನುವ ಕಾರಣಕ್ಕೆ ಪಟ್ಟ ಭದ್ರರು ನನ್ನನ್ನು ವಿರೋಧಿಸುತ್ತಾರೆ. ಎಲ್ಲಾ ಜಾತಿ, ಎಲ್ಲಾ ಧರ್ಮದ ಮಧ್ಯಮ ವರ್ಗ ಮತ್ತು ಬಡವರಿಗೆ ಅನುಕೂಲ ಆಗುವ ಯೋಜನೆಗಳನ್ನು ಜಾರಿಗೆ ತಂದಿದ್ದಕ್ಕೆ ನನ್ನನ್ನು ವಿರೋಧಿಸುತ್ತಿದ್ದಾರೆ.

ಅನ್ನ ಭಾಗ್ಯ, ಶೂ ಭಾಗ್ಯ, ಸಮವಸ್ತ್ರ ಭಾಗ್ಯ ಸೇರಿ ಸಾಲು ಸಾಲು ಅನುಕೂಲಗಳನ್ನು ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗೆ ಕಲ್ಪಿಸಿದೆ. ಇದಕ್ಕೇ ನನ್ನನ್ನು ವಿರೋಧಿಸುತ್ತಾರೆ. ಆದರೆ ನಾನು ಎದೆ ಗುಂದದೆ ನಿಮ್ಮ ಪರವಾಗಿ ಇರುತ್ತೇನೆ ಎಂದರು.

ಜಾತಿ ತಾರತಮ್ಯ, ಜಾತಿ ಶೋಷಣೆ, ಜಾತಿ ಆಧಾರಿತ ಅಸಮಾನತೆ ಜಾರಿಯಲ್ಲಿ ಇರುವವರೆಗೆ ಇಂಥಾ ಸಮಾವೇಶಗಳು ಅಗತ್ಯ ಮತ್ತು ಅನಿವಾರ್ಯ ಎಂದು ವಿವರಿಸಿದರು.

ಸಂಘಟನೆಗಳ ಮೂಲಕ ಜಗೃತಿ ಪಡೆದುಕೊಂಡರೆ ಮಾತ್ರ ಜಾತಿ ವ್ಯವಸ್ಥೆ ನಾಶವಾಗುತ್ತದೆ ಎನ್ನುವ ಎಚ್ಚರವನ್ನು ಅಂಬೇಡ್ಕರ್ ಮುಂತಾದ ಮಹನೀಯರು ನೀಡಿದ್ದಾರೆ. ಕುಲ ಕುಲ ಎಂದು ಬಡಿದಾಡದಿರಿ ಎಂದು ಕರೆ ನೀಡಿದ ಕನಕದಾಸರನ್ನು ಒಂದು ಜಾತಿಗೆ ಸೀಮಿತಗೊಳಿಸಿ ಅವಮಾನಿಸಬೇಡಿ ಎಂದರು.

ಜಾತಿ ವ್ಯವಸ್ಥೆ ಕಾರಣಕ್ಕೆ ಶತ ಶತಮಾನಗಳಿಂದ ತಳ ಸಮುದಾಯಗಳ ಜನ ಶೋಷಣೆಗೆ ಒಳಗಾಗುತ್ತಲೇ ಇದ್ದಾರೆ. ಅಕ್ಷರ ಸಂಸ್ಕøತಿಯಿಂದ ವಂಚಿತರಾದ ಪರಿಣಾಮ ಸಮಾಜದಲ್ಲಿ ಅಸಮಾನತೆ ಸೃಷ್ಟಿ ಆಯಿತು. ಸಾಮಾಜಿಕ, ಆರ್ಥಿಕ ಅಸಮಾನತೆಗೆ ಜಾತಿ ವ್ಯವಸ್ಥೆಯೇ ಕಾರಣ. ಈ ಜಾತಿ ತಾರತಮ್ಯದಿಂದಲೇ ದೇಶದಲ್ಲು ಶೋಷಣೆ ಮುಂದುವರೆದಿದೆ.

ಶೋಷಿತರ ಜಾಗೃತಿ ಸಮಾವೇಶ

ಈ ಜಾತಿ ಶೋಷಣೆಗೆ ಕೊನೆ ಹಾಡುವ ಉದ್ದೇಶದಿಂದಲೇ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ನೀಡಿದರು. ಸಾಹಿ ಮಹಾರಾಜ್, ಜ್ಯೋತಿಬಾ ಫುಲೆ, ಬುದ್ದ, ಬಸವಣ್ಣ, ನಾರಾಯಣಗುರು, ನಾಲ್ವಡಿ ಅರಸರು, ವಿವೇಕಾನಂದ, ಕನಕದಾಸರೆಲ್ಲರೂ ಈ ಜಾತಿ ವ್ಯವಸ್ಥೆ ತೊಡೆದು ಹಾಕಲು ಶ್ರಮಿಸಿದರು. ನಮ್ಮ ಸಂವಿಧಾನ ಕೂಡ ಈ ಎಲ್ಲಾ ಮಹನೀಯರ ಆಶಯಗಳನ್ನು ಒಳಗೊಂಡಿದೆ ಎಂದರು.

ಇದನ್ನೂ ಓದಿ: ಶಾಸಕರಾದ ಬಿ.ಜಿ.ಗೋವಿಂದಪ್ಪ ಹಾಗೂ ಟಿ.ರಘುಮೂರ್ತಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ

ಈ ಕಾರಣಕ್ಕೇ ಪಟ್ಟ ಭದ್ರ ಹೊತಾಸಕ್ತಿಗಳು, ದುಷ್ಟ ಶಕ್ತಿಗಳು ಸಂವಿಧಾನ ಬದಲಾಯಿಸುವ ಮೂಲಕ ಮತ್ತೆ ಶೋಷಣೆ, ಮೌಡ್ಯದ ದರ್ಬಾರ್ ಮುಂದುವರೆಸಲು ಯತ್ನಿಸುತ್ತಿದ್ದಾರೆ. ಒಂದು ಕಡೆ ಸಂವಿಧಾನ ಬದಲಾಯಿಸಲು ಹುನ್ನಾರ ನಡೆಸುತ್ತಿದ್ದಾರೆ ಮತ್ತೊಂದು ಕಡೆ ನಾಲ್ವಡಿ ಅರಸು ಮತ್ತು ಅಂಬೇಡ್ಕರ್, ಸಾಹು ಮಹಾರಾಜ್ ಪ್ರತಿಪಾದಿಸಿದ ಮೀಸಲಾತಿಯನ್ನೂ ವಿರೋಧಿಸುತ್ತಿದ್ದಾರೆ. ಆದ್ದರಿಂದ ಸಂವಿಧಾನ ವಿರೋಧಿಗಳಿಗೆ ತಕ್ಕ ಪಾಠ ಕಲಿಸಬೇಕು ಎಂದು ಕರೆ ನೀಡಿದರು.

ಒಕ್ಕೂಟದ ಪ್ರಧಾನ ಸಂಚಾಲಕ ಕೆ.ಎಂ.ರಾಮಚಂದ್ರಪ್ಪ, ಸಚಿವರಾದ ಸತೀಶ್ ಜಾರಕಿಹೊಳಿ, ದಿನೇಶ್ ಗುಂಡೂರಾವ್, ಬಿ.ನಾಗೇಂದ್ರ, ಜಮೀರ್ ಅಹಮ್ಮದ್, ಡಾ.ಎಚ್.ಸಿ.ಮಹಾದೇವಪ್ಪ, ಆರ್.ಬಿ.ತಿಮ್ಮಾಪುರ, ಡಿ.ಸುಧಾಕರ್, ಬೋಸರಾಜು, ರಹೀಂಖಾನ್, ಭೈರತಿ ಸುರೇಶ್, ಮಧು ಬಂಗಾರಪ್ಪ, ಶಾಸಕರಾದ ಎನ್.ವೈ.ಗೋಪಾಲಕೃಷ್ಣ, ಬಿ.ಜಿ.ಗೋವಿಂದಪ್ಪ, ಕೆ.ಸಿ.ವೀರೇಂದ್ರ(ಪಪ್ಪಿ), ಟಿ.ರಘುಮೂರ್ತಿ, ಶ್ರೀನಿವಾಸ್, ಅಜಯ್ ಸಿಂಗ್, ಪ್ರದೀಪ್ ಈಶ್ವರ್, ಮಾಜಿ ಸಚಿವರಾದ ಎಚ್.ಆಂಜನೇಯ, ಎಚ್.ಎಂ.ರೇವಣ್ಣ, ಎಂ.ಆರ್.ಸೀತಾರಾಮ್, ರಾಘವೇಂದ್ರ ಹಿಟ್ನಾಳ್, ಪ್ರಕಾಶ್ ರಾಥೋಡ್, ನಾಗರಾಜ್ ಯಾದವ್, ನಸೀರ್ ಅಹಮದ್ ಇತರರಿದ್ದರು.

Click to comment

Leave a Reply

Your email address will not be published. Required fields are marked *

More in ಮುಖ್ಯ ಸುದ್ದಿ

To Top
Exit mobile version