
CHITRADURGA NEWS | 19 SEPTEMBER 2025
ಚಿತ್ರದುರ್ಗ: ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ನಗರದ ನೂತನ ವಾಲ್ಮೀಕಿ ಭವನದಲ್ಲಿ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.
ಇದನ್ನೂ ಓದಿ: ಕುರುಬರು ನಾಯಕರಿಗೂ ಎತ್ತಿಕಟ್ಟುವ ಕೆಲಸ ನಡೆಯುತ್ತಿದೆ | ಈಶ್ವರಾನಂದಪುರಿ ಸ್ವಾಮೀಜಿ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಅಕ್ಟೋಬರ್ 7 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ನಡೆಸುವ ಸಂಬಂಧ ಪೂರ್ವಸಿದ್ಧತೆ ಚರ್ಚಿಸಲು ಜರುಗಿದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಜಯಂತಿ ದಿನ ಬೆಳಿಗ್ಗೆ 10 ಗಂಟೆಗೆ ನಗರದ ಐತಿಹಾಸಿಕ ಕೋಟೆ ಮುಂಭಾಗದಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರ ಮೆರವಣಿಗೆ ಚಾಲನೆ ನೀಡಲಾಗುವುದು. ಉಚ್ಚಂಗಿ ಯಲ್ಲಮ್ಮ ದೇವಸ್ಥಾನ, ಆನೆಬಾಗಿಲು, ಗಾಂಧಿವೃತ್ತ, ಎಸ್.ಬಿ.ಐ. ವೃತ್ತ, ಅಂಬೇಡ್ಕರ್ ವೃತ್ತದ ಮೂಲಕ ಮದಕರಿ ನಾಯಕ ವೃತ್ತದಲ್ಲಿನ ವಾಲ್ಮೀಕಿ ಭವನದ ಬಳಿ ಮೆರವಣಿಗೆ ಮುಕ್ತಾಯವಾಗಲಿದೆ. ಬಳಿಕ ಮಧ್ಯಾಹ್ನ 12 ಗಂಟೆಗೆ ವೇದಿಕೆ ಕಾರ್ಯಕ್ರಮ ಆರಂಭವಾಗುವುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದರು.
ವಾಲ್ಮೀಕಿ ಭವನ ಸದ್ಭಳಕೆಯಾಗಲಿ:
ಸುಮಾರು ರೂ.10 ಕೋಟಿಗೂ ಹೆಚ್ಚಿನ ಹಣ ವ್ಯಯಿಸಿ ಮದಕರಿ ನಾಯಕ ವೃತ್ತದಲ್ಲಿ ವಾಲ್ಮೀಕಿ ಭವನ ನಿರ್ಮಿಸಿ ಈಗಾಗಲೇ ಉದ್ಘಾಟಿಸಿಲಾಗಿದೆ. ಆದರೆ, ಸಾರ್ವಜನಿಕರ ಬಳಕೆಗೆ ಲಭ್ಯವಾಗಿಲ್ಲ. ಕಳೆದ ಮೂರು ವರ್ಷಗಳಿಂದಲೂ ಅಧಿಕಾರಿಗಳಿಗೆ ಈ ಕುರಿತು ಗಮನ ಸೆಳೆದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಲಿಂಗವ್ವನಾಗ್ತಿಹಳ್ಳಿ ತಿಪ್ಪೇಸ್ವಾಮಿ ಸಭೆಯಲ್ಲಿ ತಿಳಿಸಿದರು.
ಇದನ್ನೂ ಓದಿ: ಸೆ.25 ರಿಂದ ಶರಣ ಸಂಸ್ಕೃತಿ ಉತ್ಸವ | ಆಹ್ವಾನ ಪತ್ರಿಕೆ ಬಿಡುಗಡೆ
ಅಧಿಕಾರಿಗಳು ಸಬೂಬು ಹೇಳದೇ ಈ ಬಾರಿ ವಾಲ್ಮೀಕಿ ಭವನದಲ್ಲಿಯೇ ಜಯಂತಿ ಕಾರ್ಯಕ್ರಮ ಆಯೋಜಿಸಬೇಕು. ಇದಕ್ಕೆ ಅಗತ್ಯ ಇರುವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದರು.
ನೂತನ ವಾಲ್ಮೀಕಿ ಭವನದಲ್ಲಿ ಸಣ್ಣ ಪುಟ್ಟ ರಿಪೇರಿ ಕೆಲಸವಿದೆ. ಇದಕ್ಕೆ ಜಿಲ್ಲಾ ಖನಿಜ ಪ್ರತಿಷ್ಠಾನದ ಅನುದಾನ ನೀಡುವಂತೆ ಪತ್ರಕರ್ತ ಎಂ.ಎನ್.ಅಹೋಬಳಪತಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದರು.
ವಾಲ್ಮೀಕಿ ಭವನವನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿದರೆ ಸಾರ್ವಜನಿಕರಿಗೆ ಸದ್ಭಳಕೆಯಾಗಲಿದೆ. ಈ ಕುರಿತು ಪರಿಶಿಷ್ಟ ಪಂಗಡಗಳ ಕಲ್ಯಾಣಾಧಿಕಾರಿ ಕ್ರಮ ಕೈಗೊಳ್ಳಬೇಕು. ವಾಲ್ಮೀಕಿ ಭವನದ ಮುಂಭಾಗದಲ್ಲಿ ಖಾಸಗಿ ವ್ಯಕ್ತಿಗಳು ಬಂಟಿಂಗ್ ಹಾಗೂ ಬ್ಯಾನರ್ಗಳನ್ನು ಕಟ್ಟದಂತೆ ನಗರಸಭೆಯಿಂದ ನಿರ್ಬಂಧ ವಿಧಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ನೀಡಿದರು.
ಇದನ್ನೂ ಓದಿ: ಈ 5 ಜನರಿಗೆ ಬೆಂಡೆಕಾಯಿ ವಿಷಕಾರಿಯಾಗಿದೆಯಂತೆ
ಜಯಂತಿಗೂ ಮುನ್ನ ವಾಲ್ಮೀಕಿ ಕುರಿತು ಶಾಲಾ ಮಕ್ಕಳಿಗೆ ಪ್ರಬಂದ ಸ್ಪರ್ಧೆಗಳನ್ನು ಆಯೋಜಿಸಬೇಕು. ಶಿಷ್ಟಾಚಾರದ ಅನುಸಾರ ಜಯಂತಿ ಆಚರಣೆಗೆ ಆಹ್ವಾನ ಪತ್ರಿಕೆ ಮುದ್ರಿಸಬೇಕು. ಜನಪತ್ರಿನಿಧಿಗಳಿಗೆ ತಲುಪಿಸಿ ಜಯಂತಿ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು.
ಜಿಲ್ಲಾ ನಾಯಕ ಸಮಾಜ ಮುಖಂಡರೊಂದಿಗೆ ಸಮಾಲೋಚಿಸಿ ಉಪನ್ಯಾಸಕರನ್ನು ಅಂತಿಮಗೊಳಿಸಿ. ಉತ್ತಮ ಕಲಾ ತಂಡ ಆಯ್ಕೆ ಮಾಡಿ ಗೀತಗಾಯನ ಕಾರ್ಯಕ್ರಮ ಆಯೋಜಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾ ನಾಯಕ ಸಮಾಜದದಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಹಾಗೂ ಸೇವೆ ಮಾಡಿದ ಮಹನೀಯರನ್ನು ಗುರುತಿಸಿ ಜಯಂತಿ ದಿನ ವೇದಿಕೆಯ ಮೇಲೆ ಸನ್ಮಾನಿಸಲಾಗುವುದು. ಇದಕ್ಕೆ ಜಿಲ್ಲಾಡಳಿತದಿಂದ ಅನುಮತಿ ನೀಡುವಂತೆ ನಾಯಕ ಸಮಾಜದ ಜಿಲ್ಲಾಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ ಕೋರಿದರು.
ಇದನ್ನೂ ಓದಿ: ದೇಹದಲ್ಲಿ ಯೂರಿಕ್ ಆಮ್ಲ ಹೆಚ್ಚಾದಾಗ ರಾತ್ರಿಯಲ್ಲಿ ಈ 4 ಲಕ್ಷಣಗಳು ಕಾಣಿಸಿಕೊಳ್ಳುತ್ತವೆಯಂತೆ
ಸಭೆಯಲ್ಲಿ ನಗರಸಭೆ ಅಧ್ಯಕ್ಷ ಅನಿತಾ ರಮೇಶ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ.ರಂಗಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಶಿವಕುಮಾರ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಹೆಚ್.ದಿವಾಕರ್, ಕೈಗಾರಿಕಾ ಇಲಾಖೆ ಜಂಟಿ ನಿರ್ದೇಶಕ ಬಿ.ಆನಂದ್, ಜಿಲ್ಲಾ ಮದಕರಿ ನಾಯಕ ವಿದ್ಯಾಸಂಸ್ಥೆ ಅಧ್ಯಕ್ಷ ಎಸ್.ಸಂದೀಪ್, ಸಮಾಜದ ಮುಖಂಡರಾದ ಹೆಚ್.ಎಂ.ಎಸ್.ನಾಯಕ, ಡಾ.ಹೆಚ್.ಗುಡ್ಡದೇಶ್ವರಪ್ಪ, ಸಿ.ಜಿ.ಶ್ರೀನಿವಾಸ, ಬಾಲೇನಹಳ್ಳಿ ತಿಪ್ಪೇಸ್ವಾಮಿ, ಹೆಚ್.ತಿಪ್ಪಯ್ಯ, ಮಂಜುನಾಥ್, ಪ್ರಶಾಂತ್, ಅಶೋಕ ಬೆಳಗಟ್ಟ, ಶರಣಪ್ಪ, ರತ್ನಮ್ಮ, ಮದಕರಿ ನಾಯಕ, ಪಿ.ವಿ.ಅರುಣ್, ಇಂಗಳದಾಳ್ ದರ್ಶನ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
