CHITRADURGA NEWS | 30 APRIL 2026
ಚಿತ್ರದುರ್ಗ: ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಿಕೊಳ್ಳಲು ಸುಪ್ರೀಂ ಕೋರ್ಟ್-ಸಮಾಧಾನ್ ಸಮರೋಹ್ ಎನ್ನುವ ‘ವಿಶೇಷ ಲೋಕಾದಾಲತ್’ ಆಯೋಜಿಸಿದ್ದು, ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೋಣ ವಾಸುದೇವ ತಿಳಿಸಿದರು.
ಇದನ್ನೂ ಓದಿ: ಜಿಲ್ಲಾ ಯಾದವ ಗೊಲ್ಲರ ಸಂಘಕ್ಕೆ ಚುನಾವಣೆ | ವೇಳಾಪಟ್ಟಿ ಪ್ರಕಟ
ನಗರದ ಜಿಲ್ಲಾ ನ್ಯಾಯಾಲಯದ ಮಧ್ಯಸ್ಥಿಕೆ ಕೇಂದ್ರದಲ್ಲಿ ಗುರುವಾರ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿಯಲ್ಲಿ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಅನುಶಿವರಾಮನ್ ಹಾಗೂ ಸದಸ್ಯ ಕಾರ್ಯದರ್ಶಿ ಹೆಚ್.ಶಶಿಧರ್ ಶೆಟ್ಟಿ ಅವರು ಆನ್ಲೈನ್ ಮೂಲಕ ನಡೆಸಿದ ರಾಜ್ಯದ ಎಲ್ಲ ಜಿಲ್ಲೆಗಳ ಪತ್ರಕರ್ತರೊಂದಿಗೆ ನಡೆಸಿದ ಸಂವಾದದ ಬಳಿಕ ಅವರು ಮಾಹಿತಿ ನೀಡಿದರು.
ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ 2026ರ ಆಗಸ್ಟ್ 21, 22 ಮತ್ತು 23ರಂದು ಭಾರತ ಸರ್ವೋಚ್ಚ ನ್ಯಾಯಾಲಯದ ವಿಶೇಷ ಲೋಕ್ ಅದಾಲತ್-ಸಮಾಧಾನ್ ಸಮರೋಹ್ ನಡೆಯಲಿದೆ. ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ದೇಶಾದ್ಯಂತ ಈ ಪ್ರಯೋಗ ನಡೆಯುತ್ತಿದ್ದು, ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದಂತೆ ಒಟ್ಟು 4,328 ಪ್ರಕರಣಗಳನ್ನು ವಿಶೇಷ ಲೋಕಾದಾಲತ್ಗಾಗಿ ಗುರುತಿಸಲಾಗಿದೆ. ಇದರಲ್ಲಿ ಚಿತ್ರದುರ್ಗ ಜಿಲ್ಲೆಗೆ ಸಂಬಂಧಿಸಿದ 58 ಪ್ರಕರಣಗಳು ಸೇರಿವೆ.
ಈ ಪ್ರಕರಣಗಳನ್ನು ಇತ್ಯರ್ಥಪಡಿಸಲು ಜಿಲ್ಲಾ ಮತ್ತು ತಾಲೂಕು ಕಾನೂನು ಸೇವಾ ಸಮಿತಿಗಳು ಹಾಗೂ ರಾಜ್ಯ ಮಟ್ಟದ ಕಾನೂನು ಸೇವಾ ಪ್ರಾಧಿಕಾರಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.
ಇದನ್ನೂ ಓದಿ: ಹಿರಿಯೂರು | ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ
ಪ್ರಕರಣದ ಹಿತದೃಷ್ಟಿಯಿಂದ ಪಕ್ಷಗಾರರು ಖುದ್ದಾಗಿ ಹಾಜರಾಗಲು ಸಾಧ್ಯವಾಗದಿದ್ದರೆ, ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಹನ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಮೊಬೈಲ್ ಮತ್ತು ಕಂಪ್ಯೂಟರ್ಗಳ ಮೂಲಕ ತಾವಿದ್ದ ಸ್ಥಳದಿಂದಲೇ ಮಧ್ಯಸ್ಥಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿ ಪ್ರಕರಣವನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಿಕೊಳ್ಳಬಹುದು.
ಹಲವು ವರ್ಷಗಳಿಂದ ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಇರುವ ಪ್ರಕರಣಗಳಿಂದಾಗಿ ಪಕ್ಷಗಾರರ ಮೇಲೆ ಒತ್ತಡವಿರುತ್ತದೆ, ಅಂತಹ ಪ್ರಕರಣಗಳನ್ನು ಪರಸ್ಪರ ಮಾತುಕತೆಯ ಮೂಲಕ ಇತ್ಯರ್ಥಪಡಿಸಿಕೊಂಡರೆ ಶೀಘ್ರವಾಗಿ ನ್ಯಾಯ ಸಿಗಲಿದೆ ಎಂದು ಅಭಿಪ್ರಾಯಪಟ್ಟರು.
ಯಾವುದೇ ವಿವಾದವಿರಲಿ, ಅದನ್ನು ಕಾನೂನು ಚೌಕಟ್ಟಿನಲ್ಲಿ ಮಾತುಕತೆಯ ಮೂಲಕ ಬಗೆಹರಿಸಲು ಸಾಧ್ಯವಿದೆ. ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಮಟ್ಟದಲ್ಲಿ ಬಾಕಿ ಇರುವ ಸಂಕೀರ್ಣ ಪ್ರಕರಣಗಳಿಗೂ ಇಲ್ಲಿ ಪರಿಹಾರ ಕಂಡುಕೊಳ್ಳಬಹುದು. ವೈಯಕ್ತಿಕ ಘನತೆಗೆ ಸಂಬಂಧಿಸಿದ ಅಥವಾ ಮಾನನಷ್ಟ ಮೊಕದ್ದಮೆಗಳಂತಹ ಸೂಕ್ಷ್ಮ ಪ್ರಕರಣಗಳನ್ನು ಕೂಡ ಈ ವಿಶೇಷ ಲೋಕ ಅದಾಲತ್ನಲ್ಲಿ ಚರ್ಚಿಸಿ ಇತ್ಯರ್ಥಪಡಿಸಲು ಅವಕಾಶವಿದೆ ಎಂದು ಹೇಳಿದರು.
ಇದನ್ನೂ ಓದಿ: DIPLOMA ಪ್ರವೇಶಕ್ಕೆ ಅರ್ಜಿ ಅಹ್ವಾನ
ಮಾಧ್ಯಮಗಳು ಈ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು. ಸುಪ್ರೀಂ ಕೋರ್ಟ್ನಲ್ಲಿ ಪ್ರಕರಣವಿದ್ದರೂ ಸಹ ಅದನ್ನು ಮಧ್ಯಸ್ಥಿಕೆ ಮೂಲಕ ಮುಗಿಸಿಕೊಳ್ಳಬಹುದು ಎಂಬ ಮಾಹಿತಿ ಜನರಿಗೆ ತಲುಪಿದರೆ ಹೆಚ್ಚಿನ ಫಲಿತಾಂಶ ನಿರೀಕ್ಷಿಸಲು ಸಾಧ್ಯ ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

