
CHITRADURGA NEWS | 04 JUNE 2026
ಚಿತ್ರದುರ್ಗ: ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಅತ್ಯಂತ ಜವಾಬ್ದಾರಿಯುತ ಹಾಗೂ ಸಂವೇದನಾಶೀಲ ಕೆಲಸವಾಗಿದ್ದು, ಇದರಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸಿದರೆ ಸಹಿಸುವುದಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಇದನ್ನೂ ಓದಿ: ಡಿಕೆಶಿ ನೂತನ ಸಿಎಂ | ಪಿ.ರಘು ಅಭಿಮಾನಿಗಳಿಂದ ದುರ್ಗದಲ್ಲಿ ಸಂಭ್ರಮಾಚರಣೆ
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಮತದಾರರ ನೊಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೊಂದಣಾಧಿಕಾರಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಎಸ್ಐಆರ್ ಕುರಿತ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಚುನಾವಣಾ ಆಯೋಗವು ಪ್ರತಿಯೊಬ್ಬ ಬಿಎಲ್ಒ ಕಾರ್ಯವೈಖರಿಯನ್ನು ಸಾಫ್ಟ್ವೇರ್ ಮೂಲಕ ಸೂಕ್ಷ್ಮವಾಗಿ ಗಮನಿಸುತ್ತಿರುತ್ತದೆ. ಕೆಲಸದ ತೀವ್ರತೆ ಹಾಗೂ ಗಾಂಭೀರ್ಯತೆ ಪ್ರತಿಯೊಬ್ಬರಿಗೂ ಇರಬೇಕು. ಯಾರಾದರೂ ಕೆಲಸ ಮಾಡಲು ನಿರಾಕರಿಸಿದರೆ, ನಿರ್ಲಕ್ಷ್ಯ ತೋರಿದರೆ ತಕ್ಷಣವೇ ಅವರನ್ನು ಅಮಾನತು ಮಾಡಿ, ಆ ಜಾಗಕ್ಕೆ ಮತ್ತೊಬ್ಬರನ್ನು ನೇಮಕ ಮಾಡಿ ಎಂದು ಮತದಾರರ ನೊಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೊಂದಣಾಧಿಕಾರಿಗಳಿಗೆ ತಾಕೀತು ಮಾಡಿದರು.
ಮತದಾರರ ಪಟ್ಟಿಯಲ್ಲಿ ಸಣ್ಣ ವ್ಯತ್ಯಾಸವಾದರೂ ಒಬ್ಬ ನಾಗರಿಕನ ಹಕ್ಕನ್ನು ಕಸಿದುಕೊಂಡಂತಾಗುತ್ತದೆ. ಇದು ಅತ್ಯಂತ ಗಂಭೀರವಾದ ಅಪರಾಧ. ಕೆಲಸದಲ್ಲಿ ಏನಾದರೂ ಲೋಪದೋಷಗಳಾದರೆ ಬಿಎಲ್ಒ ಮಾತ್ರವಲ್ಲ, ನೇರವಾಗಿ ನೀವೇ ಹೊಣೆಯಾಗಬೇಕಾಗುತ್ತದೆ. ಚುನಾವಣಾ ಪ್ರಕ್ರಿಯೆಯಲ್ಲಿ ಸಣ್ಣ ತಪ್ಪು ದೊಡ್ಡ ಪರಿಣಾಮ ಬೀರುವುದರಿಂದ, ಪ್ರತಿಯೊಬ್ಬ ಅಧಿಕಾರಿಗಳು ತೀವ್ರ ನಿಗಾ ವಹಿಸಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆಯಲ್ಲಿ ಪೆಟ್ರೋಲ್, ಡೀಸೆಲ್ ಕೊರತೆ ಇಲ್ಲ | DC ಟಿ.ವೆಂಕಟೇಶ್
ಸಕ್ರಿಯವಾಗಿ ಕೆಲಸ ಮಾಡುವವರನ್ನು ಬಿಎಲ್ಒಗಳಾಗಿ ನೇಮಕ ಮಾಡಬೇಕು. ಈ ಕುರಿತು ಜೂನ್ 5ರೊಳಗಾಗಿ ಎಲ್ಲಾ ಬಿಎಲ್ಒಗಳ ನೇಮಕಾತಿ ಕುರಿತು ಕಡ್ಡಾಯವಾಗಿ ದೃಢೀಕರಣ ಸಲ್ಲಿಸಬೇಕು. ಆಯಾ ವ್ಯಾಪ್ತಿಯ ಅಧಿಕಾರಿಗಳೇ ಜೂನ್ 6ರ ಒಳಗಾಗಿ ಬಿಎಲ್ಎ, ಬಿಎಲ್ಒ ಮತ್ತು ಸೂಪರ್ವೈಸರ್ಗಳಿಗೆ ಕಡ್ಡಾಯವಾಗಿ ತರಬೇತಿ ನೀಡಬೇಕು ಎಂದರು.
ಜಿಲ್ಲಾ ಮಟ್ಟದಲ್ಲಿ ಈಗಾಗಲೇ ರಾಜಕೀಯ ಪಕ್ಷಗಳ ಸಭೆ ನಡೆಸಿ ಮಾಹಿತಿ ನೀಡಲಾಗಿದೆ. ಅದೇ ಮಾದರಿಯಲ್ಲಿ ತಾಲೂಕು ಮಟ್ಟದಲ್ಲಿಯೂ ಇಆರ್ಒ ಮತ್ತು ಎಇಆರ್ಒಗಳ ಅಧ್ಯಕ್ಷತೆಯಲ್ಲಿ ರಾಜಕೀಯ ಪಕ್ಷಗಳ ಮುಖಂಡರ ಸಭೆ ಕರೆಯಬೇಕು. ಮತದಾರರ ಪಟ್ಟಿ ಪರಿಷ್ಕರಣೆ ಕುರಿತಾದ ಮಾರ್ಗಸೂಚಿಗಳನ್ನು ಅವರಿಗೆ ಮನವರಿಕೆ ಮಾಡಿಕೊಡಬೇಕು ಹಾಗೂ ಅವರಲ್ಲಿ ಯಾವುದೇ ಗೊಂದಲಗಳಿದ್ದರೆ ತಕ್ಷಣವೇ ಬಗೆಹರಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.
ಮಾಸ್ಟರ್ ಟ್ರೈನರ್ ಎಸ್.ನಾಗಭೂಷಣ್ ಅವರು ಎಸ್ಐಆರ್ ಕುರಿತು ಮತದಾರರ ನೊಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೊಂದಣಾಧಿಕಾರಿಗಳಿಗೆ ತರಬೇತಿ ನೀಡಿದರು.
ಇದನ್ನೂ ಓದಿ: ಹೊಸದುರ್ಗ : ವಸತಿ ಯೋಜನೆ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಇಆರ್ಒಗಳಾದ ವೆಂಕಟೇಶ್ ನಾಯ್ಕ್, ಡಾ.ಕಾಂತರಾಜ್, ಚಂದ್ರಕುಮಾರ್, ರೇಷ್ಮ ಹಾನಗಲ್, ಎಇಆರ್ಒಗಳಾದ ಗೋವಿಂದರಾಜ್, ರೇಹಾನ್ ಪಾಷಾ, ಸಿದ್ದೇಶ್, ತಿರುಪತಿ ಪಾಟೀಲ್, ವಿಜಯ್ ಕುಮಾರ್, ಡಾ.ನಾಗವೇಣಿ, ಚುನಾವಣಾ ತಹಶೀಲ್ದಾರ್ ಬೀ ಬೀ ಫಾತಿಮಾ ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
