CHITRADURGA NEWS | 24 june 2025
ಚಿತ್ರದುರ್ಗ: ಜಿಲ್ಲೆಯಲ್ಲಿ ಖಾಲಿ ಇರುವ ಪಶು ವೈದ್ಯರ ನೇಮಕಕ್ಕೆ ಅಗತ್ಯ ಕ್ರಮವಹಿಸಬೇಕು. ಪಶು ವೈದ್ಯಾಧಿಕಾರಿಗಳ ನೇಮಕಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿ ಎಂದು ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎನ್.ಆರ್. ಮಹೇಶ್ವರಪ್ಪ ಪಶು ಇಲಾಖೆ ಉಪನಿರ್ದೇಶಕರಿಗೆ ಸೂಚನೆ ನೀಡಿದರು.
Also Read: ಹೊಸದುರ್ಗ ತಾಲೂಕಿನಲ್ಲಿ ಭೀಕರ ಕೊಲೆ | ಹಾಡಹಗಲೆ ಮನೆಗೆ ನುಗ್ಗಿ ಹತ್ಯೆ

ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ರೈತರು ಜಾನುವಾರುಗಳ ಮೇಲೆ ಸಾಕಷ್ಟು ಅವಲಂಬಿತರಾಗಿದ್ದಾರೆ. ಪಶು ವೈದ್ಯರ ಕೊರತೆಯಿಂದಾಗಿ ಜಾನುವಾರುಗಳು ವಿವಿಧ ರೋಗಗಳಿಗೆ ತುತ್ತಾಗಿ ಸಾವಿಗೀಡಾಗುತ್ತಿವೆ. ಈ ನಿಟ್ಟನಲ್ಲಿ ಜಿಲ್ಲೆಯಲ್ಲಿ ಖಾಲಿ ಇರುವ ಪಶು ವೈದ್ಯರ ನೇಮಕಕ್ಕೆ ಸಂಬಂಧಿಸಿದಂತೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಗೆ ಪ್ರಸ್ತಾವ ಸಲ್ಲಿಸಿ ಎಂದು ಹೇಳಿದರು.
ಕೃಷಿ ಹಾಗೂ ತೋಟಗಾರಿಕೆ ಬೆಳೆಗಳಲ್ಲಿ ಕಾಣಿಸಿಕೊಳ್ಳುವ ಕೀಟಬಾಧೆ, ರೋಗಗಳ ನಿರ್ವಹಣೆಗೆ ಸಂಬಂಧಿಸಿದಂತೆ ಕಾಲಕಾಲಕ್ಕೆ ರೈತರಿಗೆ ತರಬೇತಿ ಶಿಬಿರಗಳನ್ನು ಆಯೋಜಿಸುವ ಮೂಲಕ ರೋಗ ನಿರ್ವಹಣೆ ಕುರಿತು ರೈತರಿಗೆ ಮಾಹಿತಿ ನೀಡಬೇಕು ಎಂದು ಹೇಳಿದರು.
ರೈತರ ಯೋಜನೆಗಳು, ಸಾಲ-ಸೌಲಭ್ಯ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಲೀಡ್ ಬ್ಯಾಂಕ್ ಹಾಗೂ ನಬಾರ್ಡ್ ಜಿಲ್ಲಾ ವ್ಯವಸ್ಥಾಪಕರನ್ನು ಜಿಲ್ಲಾ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ಸಭೆಗೆ ಆಹ್ವಾನಿಸಬೇಕು ಎಂದು ತಿಳಿಸಿದರು.
Also Read: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ಜಿಲ್ಲಾ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿಯ ಜಿಲ್ಲಾ ಪ್ರತಿನಿಧಿ ಕೆ.ಜಗದೀಶ್ ಕಂದಿಕೆರೆ ಮಾತನಾಡಿ, ಹಿರಿಯೂರು ತಾಲ್ಲೂಕು ವ್ಯಾಪ್ತಿಯಲ್ಲಿ ಪಶು ಸಂಗೋಪನೆ ಇಲಾಖೆಯ ಪಶು ವೈದ್ಯರ ಎಷ್ಟು ಹುದ್ದೆಗಳು ಖಾಲಿ ಇವೆ. ನಿಯೋಜನೆ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರು ಎಷ್ಟು? ಎಂಬ ಮಾಹಿತಿ ನೀಡಬೇಕು ಎಂದು ತಿಳಿಸಿದ ಅವರು, ಸರ್ಕಾರದ ಯೋಜನೆಗಳು, ಕಾರ್ಯಕ್ರಮಗಳು, ತರಬೇತಿ, ಕ್ಷೇತ್ರೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಕೃಷಿಕ ಸಮಾಜದ ಪ್ರತಿನಿಧಿಗಳನ್ನು ಆಹ್ವಾನಿಸಬೇಕು ಎಂದು ಹೇಳಿದರು.
ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ. ಎನ್. ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ 34 ಪಶು ವೈದ್ಯರ ಹುದ್ದೆಗಳು, 235 ಪಶು ವೈದ್ಯಕೀಯ ಪರಿವೀಕ್ಷಕರು ಹಾಗೂ 231 ಡಿ-ಗ್ರೂಪ್ ಖಾಲಿ ಹುದ್ದೆಗಳು ಇದ್ದು, ಜಿಲ್ಲೆಯಲ್ಲಿ ಶೇ.50ರಷ್ಟು ಹುದ್ದೆಗಳು ಖಾಲಿ ಇದ್ದು, ಖಾಲಿ ಇರುವ ಹುದ್ದೆಗಳ ಭರ್ತಿಗೆ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ತಿಳಿಸಿದ ಅವರು, ಪಶು ಸಂಗೋಪನಾ ಇಲಾಖೆಯ ಯೋಜನೆಗಳು, ಸೇವೆಗಳನ್ನು ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಜಿಲ್ಲಾ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿಯ ಪದನಿಮಿತ್ತ ಕಾರ್ಯದರ್ಶಿ ಹಾಗೂ ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್ ಮಾತನಾಡಿ, ಜಿಲ್ಲೆಯಲ್ಲಿ ಶೇ.93ರಷ್ಟು ರೈತರು ಬೋರ್ವೆಲ್ ಆಧಾರಿತ ಕೃಷಿಯನ್ನು ಅವಲಂಬಿಸಿದ್ದು, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಕೃಷಿ ವಿಜ್ಞಾನ ಕೇಂದ್ರದ ಅಧಿಕಾರಿಗಳ ಸಲಹೆ-ಸೂಚನೆಗಳು ರೈತರಿಗೆ ಅಗತ್ಯವಾಗಿದೆ ಎಂದು ಹೇಳಿದರು.
ಹೊಸ ತಳಿಗಳ ಪರಿಚಯಿಸಿ:
ರಾಜ್ಯದಲ್ಲಿಯೇ ಅತಿ ಹೆಚ್ಚು ಶೇ.95ರಷ್ಟು ಸಿರಿಧಾನ್ಯಗಳನ್ನು ಹೊಸದುರ್ಗ ತಾಲ್ಲೂಕಿನಲ್ಲಿ ಬೆಳೆಯಲಾಗುತ್ತಿದೆ. ಕಳೆದ ವರ್ಷ ಸಾಮೆಯ ಹೊಸ ತಳಿಯನ್ನು ಪರಿಚಯಿಸಲಾಗಿದ್ದು, ಅದರಂತೆ ನವಣೆ, ಹಾರಕ, ಬರಗು, ಊದಲು ಬೆಳೆಗಳ ಹೊಸ ತಳಿಗಳನ್ನು ರೈತರಿಗೆ ಪರಿಚಯಿಸಬೇಕು. ಆದಷ್ಟು ಮುಂಚಿತವಾಗಿ ರೈತರಿಗೆ ಸಿರಿಧಾನ್ಯಗಳನ್ನು ವಿತರಿಸಲು ಕ್ರಮವಹಿಸಬೇಕು ಎಂದು ಜಿಲ್ಲಾ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಗಿ ಶಿವಮೂರ್ತಪ್ಪ ಅಧಿಕಾರಿಗಳಿಗೆ ಸಲಹೆ ನೀಡಿದರು.
Also Read: ಈ ಸಮಸ್ಯೆ ಇರುವವರು ಲಿಚಿ ತಿನ್ನುವುದನ್ನು ತಪ್ಪಿಸಬೇಕು
ಸಭೆಯಲ್ಲಿ ಜಿಲ್ಲಾ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿಯ ಉಪಾಧ್ಯಕ್ಷ ಧರಣೇಶ್, ರಾಜ್ಯ ಪ್ರತಿನಿಧಿ ವಿ.ಜಿ. ಪರಮೇಶ್ವರಪ್ಪ, ಖಜಾಂಚಿ ಭಕ್ತ ಪ್ರಹ್ಲಾದ್, ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷರಾದ ಎಂ.ಎಸ್.ನವೀನ್, ಸಿ.ಹೆಚ್.ಕಾಂತರಾಜ್, ಬಿ.ಟಿ.ಜಗದೀಶ್, ಜಿಲ್ಲಾ ಪ್ರತಿನಿಧಿಗಳಾದ ಕೇಶವ, ಶಶಿಧರ್, ಕೆ.ಜಗದೀಶ್ ಕಂದಿಕೆರೆ, ಎಸ್.ರಮೇಶಪ್ಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
