CHITRADURGA NEWS | 01 FEBRUARY 2026
ಚಿತ್ರದುರ್ಗ: ಶಿಖರ ಏರಬೇಕಾದರೆ ಮೊದಲ ಹೆಜ್ಜೆ ಅತ್ಯಗತ್ಯ. ಹಾಗೆಯೇ ಉದ್ಯೋಗದ ವಿಷಯದಲ್ಲೂ ಯುವಕರು ಹಿಂಜರಿಯದೆ ಮೊದಲು ಸಿಕ್ಕ ಅವಕಾಶವನ್ನು ಬಳಸಿಕೊಳ್ಳಬೇಕು. ಉದ್ಯೋಗ ಮೇಳಗಳ ಸದುಪಯೋಗ ಪಡೆದುಕೊಂಡು ಸ್ವಾವಲಂಬಿಗಳಾಗಬೇಕು ಎಂದು ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಕಿವಿಮಾತು ಹೇಳಿದರು.
ಇದನ್ನೂ ಓದಿ: ರೇಷ್ಮೆ ಬೆಳೆಗಾರರಿಗೆ ಕೃಷಿ ಪ್ರಶಸ್ತಿ | ಅರ್ಜಿ ಅಹ್ವಾನ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತಾ ಮತ್ತು ಜೀವನೋಪಾಯ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ-ಸಂಜೀವಿನಿ, ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ ಇವರ ಸಂಯುಕ್ತಾಶ್ರಯದಲ್ಲಿ ಭಾನುವಾರ ನಗರದ ಸರ್ಕಾರಿ ಕಲಾ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿದ ಅವರು ಮಾತನಾಡಿದರು.
ದೇಶ ಮತ್ತು ರಾಜ್ಯದಲ್ಲಿ ವಿದ್ಯಾವಂತ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಸರ್ಕಾರವು ಉದ್ಯೋಗ ಮೇಳಗಳನ್ನು ಹೆಚ್ಚು ಹೆಚ್ಚು ಆಯೋಜಿಸುವ ಮೂಲಕ ಯುವಶಕ್ತಿಗೆ ಆಸರೆಯಾಗುತ್ತಿದೆ.
2023ರ ಚುನಾವಣೆ ಪೂರ್ವದಲ್ಲಿ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳ ಜೊತೆಗೆ ‘ಯುವನಿಧಿ’ ಯೋಜನೆಯನ್ನು ಜಾರಿಗೆ ತರಲಾಗಿದೆ ಪದವೀಧರರಿಗೆ 3,000 ರೂ. ಹಾಗೂ ಡಿಪ್ಲೊಮೊ ಮಾಡಿದವರಿಗೆ 1,500 ರೂ. ಭತ್ಯೆ ನೀಡಲಾಗುತ್ತಿದೆ. ಆದರೆ ಇದು ಕೇವಲ ತಾತ್ಕಾಲಿಕ ವ್ಯವಸ್ಥೆಯಷ್ಟೇ. ಯುವಕರು ಇದರ ಮೇಲೆಯೇ ಅವಲಂಬಿತರಾಗದೆ ಇಂತಹ ಉದ್ಯೋಗ ಮೇಳದ ಅವಕಾಶಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು.
ಇದನ್ನೂ ಓದಿ: ಟ್ರಾನ್ಸ್ಫಾರ್ಮರ್ ರಿಪೇರಿಗೆ ಲಂಚ | ಬೆಸ್ಕಾಂ ಎಸ್ಓ ಲೋಕಾಯುಕ್ತ ಬಲೆಗೆ
ಮೇಳದಲ್ಲಿ ಉದ್ಯೋಗ ಸಿಕ್ಕ ಆರಂಭದಲ್ಲಿ ಸಂಬಳ ಕಡಿಮೆ ಇರಬಹುದು ಅಥವಾ ಸೌಲಭ್ಯಗಳು ನಿರೀಕ್ಷಿತ ಮಟ್ಟದಲ್ಲಿ ಇಲ್ಲದಿರಬಹುದು. ಆದರೆ ಯುವಕರು ಹೊಂದಿಕೊಳ್ಳಬೇಕು. ಖಾಸಗಿ ಕಂಪನಿಗಳಲ್ಲಿ ಶಿಸ್ತು ಮತ್ತು ಪರಿಶ್ರಮ ಬಹಳ ಮುಖ್ಯ. ಅಲ್ಲಿ ಸರ್ಕಾರಿ ಕೆಲಸದಂತೆ ಸೋಮಾರಿತನಕ್ಕೆ ಅವಕಾಶವಿರುವುದಿಲ್ಲ ಎಂದು ಎಚ್ಚರಿಸಿದರು.
ಪೋಷಕರು ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡುವ ಮೂಲಕ ತಮ್ಮ ಜವಾಬ್ದಾರಿ ನಿರ್ವಹಿಸುತ್ತಾರೆ. ಮುಂದಿನ ಹೊಣೆಗಾರಿಕೆ ಯುವಪೀಳಿಗೆಯದ್ದು, ನಿಮ್ಮ ಬದುಕನ್ನು ನೀವೇ ರೂಪಿಸಿಕೊಳ್ಳುವ ಸಮಯ ಬಂದಿದೆ ಎಂದು ಅಭ್ಯರ್ಥಿಗಳನ್ನು ಶಾಸಕ ಟಿ. ರಘುಮೂರ್ತಿ ಹುರಿದುಂಬಿಸಿದರು.
ಶಾಸಕನಾಗಿ 2015-16ರಲ್ಲಿ ಚಳ್ಳಕೆರೆ ನಗರದಲ್ಲಿ ನಾವು ನಡೆಸಿದ ಉದ್ಯೋಗ ಮೇಳದಲ್ಲಿ ಸುಮಾರು 150 ಕಂಪನಿಗಳು ಭಾಗವಹಿಸಿದ್ದವು ಮತ್ತು 13,000 ಅಭ್ಯರ್ಥಿಗಳು ನೊಂದಾಯಿಸಿಕೊಂಡಿದ್ದರು. ಸುಮಾರು 8,000 ದಿಂದ 9,000 ಜನರಿಗೆ ಉದ್ಯೋಗ ಲಭಿಸಿತ್ತು ಎಂದು ಶಾಸಕ ಟಿ. ರಘುಮೂರ್ತಿ ಇದೇ ಸಂದರ್ಭದಲ್ಲಿ ಸ್ಮರಿಸಿದರು.
ಇದನ್ನೂ ಓದಿ: ಕೀಟನಾಶಕ ಬಳಕೆ ಕೊನೆಯ ಅಸ್ತ್ರವಾಗಲಿ | ಸಮಗ್ರ ಕೃಷಿ ಪದ್ಧತಿ ಆದ್ಯತೆಯಾಗಲಿ | ಕೃಷಿ ಇಲಾಖೆ ಜೆಡಿ ಮಂಜುನಾಥ
ಪ್ರಾಸ್ತಾವಿಕವಾಗಿ ಮಾತನಾಡಿದ ಜಿ.ಪಂ. ಸಿಇಓ ಡಾ.ಆಕಾಶ್ ಉದ್ಯೋಗ ಮೇಳದಲ್ಲಿ 6,200ಕ್ಕೂ ಹೆಚ್ಚು ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಬೆಂಗಳೂರು, ತುಮಕೂರು, ಕೋಲಾರ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಹಾಗೂ ಚಿತ್ರದುರ್ಗ ಜಿಲ್ಲೆಯ ಒಟ್ಟು 86ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಿವೆ.
ಮೇಳ ಆರಂಭವಾದ ಕೆಲವೇ ಗಂಟೆಗಳಲ್ಲಿ ಅಂದರೆ ಮಧ್ಯಾಹ್ನದ ವೇಳೆಗೆಯೇ ಸುಮಾರು 575 ಅಭ್ಯರ್ಥಿಗಳ ಸಂದರ್ಶನ ಪೂರ್ಣಗೊಂಡಿದ್ದು, ಈ ಪೈಕಿ 145 ಅಭ್ಯರ್ಥಿಗಳಿಗೆ ಸ್ಥಳದಲ್ಲೇ ನೇಮಕಾತಿ ಪತ್ರ ವಿತರಿಸಲಾಗಿದೆ. ಇದರ ಹೊರತಾಗಿ ಇನ್ನೂ 180 ಅಭ್ಯರ್ಥಿಗಳನ್ನು ಮುಂದಿನ ಹಂತದ ಸಂದರ್ಶನಕ್ಕೆ ಆಯ್ಕೆಯಾಗಿದ್ದಾರೆ. ಮೇಳದಲ್ಲಿ 32 ಅಂಗವಿಕಲ ಅಭ್ಯರ್ಥಿಗಳು ಭಾಗವಹಿಸಿದ್ದು, ಅವರಲ್ಲಿ 6 ಜನರಿಗೆ ಉದ್ಯೋಗ ಖಚಿತವಾಗಿದೆ.
ಮೇಳದಲ್ಲಿ ಎಸ್ಎಸ್ಎಲ್ಸಿಯಿಂದ ಸ್ನಾತಕೋತ್ತರ ಪದವಿಯವರೆಗೆ ಪ್ರತಿಯೊಬ್ಬರಿಗೂ ಅವರ ವಿದ್ಯಾರ್ಹತೆಗೆ ತಕ್ಕಂತೆ ಅವಕಾಶಗಳಿವೆ. ಕನಿಷ್ಠ 10 ಕಂಪನಿಗಳಲ್ಲಾದರೂ ಸಂದರ್ಶನ ಎದುರಿಸಲು ಪ್ರಯತ್ನಿಸಿ ಎಂದು ಅಭ್ಯರ್ಥಿಗಳಿಗೆ ತಿಳಿಸಿದರು.
ಇದನ್ನೂ ಓದಿ: ಅಡಿಕೆ ಧಾರಣೆ | 31 ಜನವರಿ | ರಾಜ್ಯದಲ್ಲಿ ಇಂದಿನ ಅಡಿಕೆ ರೇಟ್
ಜಿಲ್ಲಾ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ ಮಾತನಾಡಿ, ಯಾರ ಮನೆ ಬಾಗಿಲಿಗೂ ಉದ್ಯೋಗ ನೇರವಾಗಿ ಬರುವುದಿಲ್ಲ. ಸರ್ಕಾರವು ಇಂತಹ ಉದ್ಯೋಗ ಮೇಳಗಳನ್ನು ಆಯೋಜಿಸುವ ಮೂಲಕ ಯುವಜನತೆಗೆ ಅವರ ಪ್ರತಿಭೆಗೆ ತಕ್ಕ ಉದ್ಯೋಗವನ್ನು ಹುಡುಕಿಕೊಳ್ಳಲು ವೇದಿಕೆಯನ್ನು ಕಲ್ಪಿಸಿದೆ. ಕೇವಲ ಪದವಿ ಪಡೆದರೆ ಸಾಲದು, ಯುವಕರು ಕೌಶಲ್ಯ ಸಾಮಥ್ರ್ಯವನ್ನು ಹೆಚ್ಚಿಸಿಕೊಳ್ಳಬೇಕು ಎಂದರು.
ಅಭ್ಯರ್ಥಿಗಳಿಂದ ಉತ್ತಮ ಸ್ಪಂದನೆ
ಜಿಲ್ಲಾ ಮಟ್ಟದ ಉದ್ಯೋಗ ಮೇಳ-2026ಕ್ಕೆ ಉತ್ತಮ ಸ್ಪಂದನೆ ದೊರೆಯಿತು. ಉದ್ಯೋಗ ಮೇಳದಲ್ಲಿ ಒಟ್ಟು 6,248 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.
ಈ ಪೈಕಿ ಸ್ನಾತಕೋತ್ತರ ಪದವಿ 580, ಎಂ.ಟೆಕ್. 16, ಇಂಜಿನಿಯರಿಂಗ್ 388, ಪದವಿ 2,939, ಐ.ಟಿ.ಐ 411, ಡಿಪ್ಲೊಮೊ 199, ನಸಿರ್ಂಗ್ 86, ಪಿಯುಸಿ 899 ಎಸ್.ಎಸ್.ಎಲ್.ಸಿ ಪೂರೈಹಿಸಿದ 730 ಅಭ್ಯರ್ಥಿಗಳು ಭಾಗವಹಿಸಿದ್ದಾರೆ. ನೊಂದಣಿಯಾದವರಲ್ಲಿ 3,110 ಪುರುಷ ಹಾಗೂ 3100 ಮಹಿಳಾ ಅಭ್ಯರ್ಥಿಗಳು ಇದ್ದಾರೆ. 1739 ಪರಿಶಿಷ್ಟ ಜಾತಿ, 1042 ಪರಿಶಿಷ್ಟ ಪಂಗಡ, 2326 ಹಿಂದುಳಿದ ವರ್ಗ, 129 ಅಲ್ಪ ಸಂಖ್ಯಾತ, 977 ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಭಾಗವಹಿಸಿದ್ದರು.
ಶಿಸ್ತು ಬದ್ದ ಆಯೋಜನೆ:
ಉದ್ಯೋಗ ಮೇಳ ಆಯೋಜನೆ ಶಿಸ್ತು ಬದ್ದವಾಗಿದ್ದು ಸ್ಥಳದಲ್ಲಿ ಅಭ್ಯರ್ಥಿಗಳು ವಿವರದ ಫಾರಂ ತುಂಬಿಸಿಕೊಳ್ಳಲು ಸುಮಾರು 10ಕ್ಕೂ ಹೆಚ್ಚಿನ ಕೌಂಟರ್ಗಳನ್ನು ತೆರಯಲಾಗಿತ್ತು. 25 ಕ್ಕೂ ಹೆಚ್ಚಿನ ಕೊಠಡಿಗಳಲ್ಲಿ ಉದ್ಯೋಗದಾತರು ಅಭ್ಯರ್ಥಿಗಳ ಸಂದರ್ಶನ ಪಡೆಯಲು ಸ್ಥಳಾವಕಾಶ ಕಲ್ಪಿಸಲಾಗಿತ್ತು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜನವರಿ 31 | ಹತ್ತಿ ರೇಟ್ ಎಷ್ಟಿದೆ?
ಪ್ರತಿ ಕೊಠಡಿಯ ಮುಂಭಾಗದಲ್ಲಿ ಕಂಪನಿಗಳ ಹೆಸರು, ಅಗತ್ಯ ಇರುವ ವಿದ್ಯಾರ್ಹತೆಯನ್ನು ಫಲಕಗಳಲ್ಲಿ ಹಾಕಲಾಗಿತ್ತು. ಅಭ್ಯರ್ಥಿಗಳಿಗೆ ಸಹಾಯಕ್ಕಾಗಿ ಜಿಲ್ಲೆಯ ಡಿಪ್ಲೊಮೊ, ಐಟಿಐ, ಜಿಟಿಟಿಸಿ ಕಾಲೇಜುಗಳ ಉಪನ್ಯಾಸಕರು ಹಾಗೂ ಸಿಬ್ಬಂದಿ ನೇಮಿಸಲಾಗಿತ್ತು. ಇವರು ಅಭ್ಯರ್ಥಿಗಳಿಗೆ ಸೂಕ್ತ ಕಂಪನಿಗಳು ಇರುವ ರೂಮ್ಗಳಿಗೆ ತೆರಳಿ ಸಂದರ್ಶನ ನೀಡಲು ಪ್ರೇರೇಪಿಸಿದರು. ಕಾಲೇಜಿನ ನೆಲಮಹಡಿಯಲ್ಲಿ ವಿಕಲಚೇತನ ಅಭ್ಯರ್ಥಿಗಳಿಗೂ ಉದ್ಯೋಗ ನೀಡಲು ಕೌಂಟರ್ ತೆರೆಯಲಾಗುತ್ತು.
86ಕ್ಕೂ ಅಧಿಕ ಕಂಪನಿಗಳು ಭಾಗಿ:
ಟೆಕ್, ಫಾರ್ಮಾ, ಹಾರ್ಡವೇರ್, ಬ್ಯಾಂಕಿಂಗ್, ಇನ್ಸೂರೆನಸ್, ಮಾರ್ಕೆಟಿಂಗ್ ಸೇರಿದಂತೆ 86 ಕಂಪನಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಂಡಿದ್ದವು. ಸೂಕ್ತ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಂಡವು. ಇದರೊಂದಿಗೆ 35 ವರ್ಷ ಮೇಲ್ಪಟ್ಟವರಿಗೂ ಕಂಪನಿಗಳು ಉದ್ಯೋಗ ಅವಕಾಶದ ಬಾಗಿಲು ತೆರೆದವು.
ಎಸ್ಬಿಐ ಲೈಫ್ ಇನ್ಶುರೆನ್ಸ್ ಕೆಲಸ ಗಿಟ್ಟಿಸಿದ ಅಭ್ಯರ್ಥಿ
ಕಳೆದ ವರ್ಷ ಇಲ್ಲಿಯೇ ಆಯೋಜಿಸಲಾಗಿದ್ದ ಉದ್ಯೋಗ ಮೇಳದಲ್ಲಿ ಉದ್ಯೋಗಾಕಾಂಕ್ಷಿಯಾಗಿ ಪಾಲ್ಗೊಂಡಿದ್ದ ಹೊಳಲ್ಕೆರೆಯ ಶರತ್ ಆಗ ಎಸ್ಬಿಐ ಲೈಫ್ ಇನ್ಶುರೆನ್ಸ್ ಕಂಪನಿಯಲ್ಲಿ ಕೆಲಸ ಗಿಟ್ಟಿಸಿಕೊಂಡಿದ್ದರು, ಶರತ್ ಈ ಬಾರಿಯ ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳ ಆಯ್ಕೆ ಮಾಡಲು ಸಂದರ್ಶಕರಾಗಿ ಪಾಲ್ಗೊಂಡಿದ್ದಾರೆ. ಸದ್ಯ ಅವರು ಮಾಸಿಕ ರೂ.80,000 ವೇತನದ ಪಡೆಯುತ್ತಿದ್ದಾರೆ.
ಇದನ್ನೂ ಓದಿ: ನಿಮ್ಮ ಈ ಕೆಟ್ಟ ಅಭ್ಯಾಸಗಳು ಥೈರಾಯ್ಡ್ ಸಮಸ್ಯೆಗೆ ಕಾರಣವಾಗುತ್ತದೆ?
ಆರೋಗ್ಯ ವಿಮೆ ಮಿತ್ರರಾಗಿ ಕೆಲಸ ಮಾಡುತ್ತಿರುವ ಅವರ ಕುಟುಂಬದ ನಾಲ್ಕು ಸದಸ್ಯರಿಗೆ ತಲಾ ರೂ.5 ಲಕ್ಷದಂತೆ ಕಂಪನಿ ರೂ.20 ಲಕ್ಷ ಆರೋಗ್ಯ ವಿಮಾ ಸೌಲಭ್ಯವನ್ನು ನೀಡಿದೆ.
2015-16ರಲ್ಲಿ ಚಳ್ಳಕೆರೆ ನಗರದಲ್ಲಿ ಶಾಸಕ ಟಿ.ರಘುಮೂರ್ತಿ ಅವರು ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ ಭಾಗವಹಿಸಿ, ಎಸ್ಬಿಐ ಲೈಫ್ ಇನ್ಶುರೆನ್ಸ್ ಕೆಲಸ ಪಡೆದು, ಸದ್ಯ ಹಿರಿಯ ವ್ಯವಹಾರ ವ್ಯವಸ್ಥಾಪಕ ಕೆಲಸ ನಿರ್ವಹಿಸುತ್ತಿರುವ ಯಶವಂತ ಕುಮಾರ್ ವೇದಿಕೆಯಲ್ಲಿ ಶಾಸಕರಿಗೆ ಧನ್ಯವಾದ ಸಲ್ಲಿಸಿದರು.
ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಥಳದಲ್ಲಿ ನೇಮಕಾತಿ ಪತ್ರ ವಿತರಣೆ ಮಾಡಲಾಯಿತು.
ಇದನ್ನೂ ಓದಿ: ಆಟೋ – ಬಸ್ ಡಿಕ್ಕಿ | ವಿದ್ಯಾರ್ಥಿಗಳಿಗೆ ಗಾಯ
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ. ತಾಜ್ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಶಿವಣ್ಣ, ಉಪಾಧ್ಯಕ್ಷ ಡಿ.ಎನ್. ಮೈಲಾರಪ್ಪ, ಜಿ.ಪಂ. ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ಮುಖ್ಯ ಯೋಜನಾಧಿಕಾರಿ ಗಾಯತ್ರಿ, ಯೋಜನಾ ನಿರ್ದೇಶಕಿ ಜಯಲಕ್ಷ್ಮೀ, ಜಿಲ್ಲಾ ಕೈಗಾರಿಕಾ ತರಬೇತಿ ಸಂಸ್ಥೆ ಉಪನಿರ್ದೇಶಕ ಮಂಜುನಾಥ್, ಉದ್ಯೋಗಾಧಿಕಾರಿ ರವೀಂದ್ರ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಸಣ್ಣಕ್ಕಿ ಮಾರುತಿ ಸೇರಿದಂತೆ ಮತ್ತಿತರರು ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
