
CHITRADURGA NEWS | 06 SEPTEMBER 2026
ಚಿತ್ರದುರ್ಗ: ವಿದ್ಯಾದಾನ ಶ್ರೇಷ್ಠ ದಾನವಾಗಿದ್ದು, ಶಿಕ್ಷಕರು ನಿರಂತರವಾಗಿ ಕಲಿಯುತ್ತಾ ತಮ್ಮ ಜ್ಞಾನವನ್ನು ವಿದ್ಯಾರ್ಥಿಗಳಿಗೆ ಹಂಚುವ ಮೂಲಕ ಸಮಾಜದ ಬೆಳವಣಿಗೆಗೆ ಕೊಡುಗೆ ನೀಡಬೇಕು ಎಂದು ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್.ಜೆ.ಎಂ. ವಿದ್ಯಾಪೀಠ ಆಡಳಿತ ಮಂಡಳಿ ಅಧ್ಯಕ್ಷ ಶಿವಯೋಗಿ ಸಿ. ಕಳಸದ ಹೇಳಿದರು.
ಇದನ್ನೂ ಓದಿ: ವೈದ್ಯಕೀಯ ಕಾಲೇಜಿನಲ್ಲಿ PG ಸೀಟುಗಳ ಮಂಜೂರಾತಿಗೆ NMC ತಂಡದಿಂದ ಮೊದಲ ಹಂತದ ಪರಿವೀಕ್ಷಣೆ
ನಗರದ ಎಸ್.ಜೆ.ಎಂ. ಕ್ಯಾಂಪಸ್ನ ಬಿಚ್ಚುಗತ್ತಿ ಭರಮಣ್ಣನಾಯಕ ಸಭಾಂಗಣದಲ್ಲಿ ಶನಿವಾರ ಎಸ್.ಜೆ.ಎಂ. ವಿಶ್ವವಿದ್ಯಾಲಯ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಅನುಭವವು ಸ್ವಕಲಿಕೆಯಿಂದ ಬರಬೇಕು. ಎಸ್.ಜೆ.ಎಂ. ಸಂಸ್ಥೆಯು 70ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ಬೆಳೆಸಿದ್ದು, ಹತ್ತಾರು ಸಾವಿರ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಸಾವಿರಾರು ಶಿಕ್ಷಕರು ಇಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಸಮಾಜಕ್ಕೆ ಕೊಡುಗೆ ನೀಡಿದ ಪೂಜ್ಯರನ್ನು ಈ ಸಂದರ್ಭದಲ್ಲಿ ಸ್ಮರಿಸಬೇಕು ಎಂದರು.
ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಶ್ರೇಷ್ಠ ತತ್ವಜ್ಞಾನಿಯಾಗಿದ್ದು, ಅವರು ಸದಾ ನಮಗೆ ಶಿಕ್ಷಕರಾಗಿದ್ದಾರೆ. ನಳಂದ ವಿಶ್ವವಿದ್ಯಾಲಯಕ್ಕೆ ಹಿಂದೆ ಅನೇಕ ದೇಶಗಳಿಂದ ಶಿಕ್ಷಕರು ಆಗಮಿಸುತ್ತಿದ್ದರು. ಕಾಲಕ್ರಮೇಣ ಅದು ನಾಶವಾದರೂ ಇದೀಗ ಹೊಸ ವಿಶ್ವವಿದ್ಯಾಲಯವಾಗಿ ಬೆಳೆದಿದೆ. ಅದೇ ರೀತಿ ಎಸ್.ಜೆ.ಎಂ. ವಿಶ್ವವಿದ್ಯಾಲಯವೂ ಈ ವರ್ಷದಿಂದ ಆರಂಭವಾಗಿದ್ದು, ಇಲ್ಲಿ ಸ್ಪರ್ಧಾತ್ಮಕ ಚಟುವಟಿಕೆಗಳು ಹಾಗೂ ಸಂಶೋಧನೆಗಳಿಗೆ ಹೆಚ್ಚಿನ ಉತ್ತೇಜನ ನೀಡಬೇಕು ಎಂದು ಹೇಳಿದರು.
ಇದನ್ನೂ ಓದಿ: ಜನರ ಮನೆ ಬಾಗಿಲಿಗೆ ಸರ್ಕಾರ | ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ | ಸಚಿವ ಟಿ.ರಘುಮೂರ್ತಿ
ಆಡಳಿತ ಮಂಡಳಿ ಸದಸ್ಯ ಡಾ.ಪಿ.ಎಸ್. ಶಂಕರ್ ಮಾತನಾಡಿ, ಶಿಕ್ಷಕ ಸದಾ ವಿದ್ಯಾರ್ಥಿಯಾಗಿರಬೇಕು. ಪ್ರತಿದಿನ ಹೊಸ ಜ್ಞಾನವನ್ನು ಬೆಳೆಸಿಕೊಂಡು, ತಾನು ಕಲಿತದ್ದನ್ನು ವಿದ್ಯಾರ್ಥಿಗಳಿಗೆ ಕಲಿಸಬೇಕು. ವೃತ್ತಿಯನ್ನು ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ನಿರ್ವಹಿಸುವುದು ಮುಖ್ಯ ಎಂದರು.
ಆಡಳಿತ ಮಂಡಳಿ ಸದಸ್ಯ ಎಸ್.ಎನ್. ಚಂದ್ರಶೇಖರ್ ಮಾತನಾಡಿ, ವಿದ್ಯೆಯಿಂದ ವಿನಯ, ವಿನಯದಿಂದ ಯೋಗ್ಯತೆ ಹಾಗೂ ಯೋಗ್ಯತೆಯಿಂದ ಸಂಪತ್ತು ಲಭಿಸುತ್ತದೆ. ಡಾ. ರಾಧಾಕೃಷ್ಣನ್ ಅವರ ಶೈಕ್ಷಣಿಕ ವೃತ್ತಿ ಎಲ್ಲರಿಗೂ ಮಾದರಿಯಾಗಿದೆ ಎಂದು ತಿಳಿಸಿದರು.
ಎಸ್.ಜೆ.ಎಂ. ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಬಿ. ಗುಡಸಿ ಮಾತನಾಡಿ, 1966ರಲ್ಲಿ ಎಸ್.ಜೆ.ಎಂ. ವಿದ್ಯಾಪೀಠ ಮಲ್ಲಿಕಾರ್ಜುನ ಜಗದ್ಗುರುಗಳಿಂದ ಆರಂಭಗೊಂಡು ಇಂದು ಎಲ್ಕೆಜಿಯಿಂದ ಪಿಎಚ್ಡಿ ವರೆಗೆ ವಿಸ್ತಾರಗೊಂಡಿದೆ. ಈ ವರ್ಷದಿಂದ ಎಸ್.ಜೆ.ಎಂ. ವಿಶ್ವವಿದ್ಯಾಲಯ ಆರಂಭವಾಗಿದ್ದು, ಸಂಸ್ಥೆಯ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದರು.
ಇದನ್ನೂ ಓದಿ: ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಒಗ್ಗಟ್ಟಿನಿಂದ ಶ್ರಮಿಸಿ | ಕೇಶವ ಪ್ರಸಾದ್
ಸಂಶೋಧನೆಗೆ ಹೆಚ್ಚಿನ ಒತ್ತು ನೀಡುವ ಉದ್ದೇಶದಿಂದ ವಿಶ್ವವಿದ್ಯಾಲಯದಿಂದ ವಿವಿಧ ಪ್ರಶಸ್ತಿ ಹಾಗೂ ಬಹುಮಾನಗಳನ್ನು ನೀಡಲಾಗುವುದು. ಉತ್ತಮ ವಿಜ್ಞಾನಿ ಪ್ರಶಸ್ತಿಗೆ ₹30 ಸಾವಿರ, ಉತ್ತಮ ಯುವ ವಿಜ್ಞಾನಿ ಪ್ರಶಸ್ತಿಗೆ ₹20 ಸಾವಿರ, ವಿಜ್ಞಾನಕ್ಕೆ ಸಂಬಂಧಿಸಿದ ಉತ್ತಮ ಲೇಖನಕ್ಕೆ ₹10 ಸಾವಿರ, ಉತ್ತಮ ಸಂಶೋಧನೆಗೆ ₹1 ಲಕ್ಷ ಹಾಗೂ ಪಿಜಿ ಸಂಶೋಧನೆಗೆ ₹25 ಸಾವಿರ ಬಹುಮಾನ ನೀಡಲಾಗುವುದು. ಮುಂದಿನ ದಿನಗಳಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿಯನ್ನೂ ನೀಡಲಾಗುವುದು ಎಂದು ಘೋಷಿಸಿದರು.
ಡಾ.ಮುಕುಂದ್ ಮಾತನಾಡಿ, ರಾಷ್ಟ್ರದ ಅಭಿವೃದ್ಧಿ ಕೇವಲ ಆರ್ಥಿಕತೆಯಿಂದ ಸಾಧ್ಯವಲ್ಲ; ಉತ್ತಮ ಶಿಕ್ಷಕರಿಂದಲೂ ಸಾಧ್ಯ. ವಿಶ್ವವಿದ್ಯಾಲಯಗಳು ಕೇವಲ ಪದವಿ ನೀಡುವ ಕೇಂದ್ರಗಳಾಗದೆ, ವಿದ್ಯಾರ್ಥಿಗಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸಬೇಕು. ಶಿಕ್ಷಕರು ಸಂಶೋಧನಾ ಜ್ಞಾನ, ಕ್ರಿಯಾಶೀಲತೆ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಅಂತಾರಾಷ್ಟ್ರೀಯ ಮಟ್ಟದ ಸಂಶೋಧನಾ ಲೇಖನಗಳನ್ನು ಪ್ರಕಟಿಸುವತ್ತ ಹೆಚ್ಚಿನ ಗಮನಹರಿಸಬೇಕು ಎಂದು ಸಲಹೆ ನೀಡಿದರು.
ಇದನ್ನೂ ಓದಿ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
ಕಾರ್ಯಕ್ರಮದಲ್ಲಿ ಎಲ್ಲಾ ಶಾಲಾ-ಕಾಲೇಜುಗಳ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರು ಭಾಗವಹಿಸಿದ್ದರು. ವರ್ಷಿಣಿ ಮತ್ತು ಆದಿಕೇಶವ ಪ್ರಾರ್ಥಿಸಿದರು. ಕುಲಸಚಿವ ಡಾ.ಗಣಾಚಾರಿ ಸ್ವಾಗತಿಸಿದರು. ಕುಲಸಚಿವೆ (ಪರೀಕ್ಷಾಂಗ) ಡಾ.ಹರಿಣಿ ವಂದಿಸಿದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

