
CHITRADURGA NEWS | 05 SEPTEMBER 2025
ಚಿತ್ರದುರ್ಗ: ಜಿಲ್ಲಾ ಕೇಂದ್ರ ಚಿತ್ರದುರ್ಗ ನಗರದಲ್ಲಿ ಗುರುಭವನ ನಿರ್ಮಾಣಕ್ಕೆ ರೂ.2 ಕೋಟಿ ಅನುದಾನ ನೀಡಲಾಗುವುದು ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸುವಾರಿ ಸಚಿವ ಡಿ.ಸುಧಾಕರ್ ಭರವಸೆ ನೀಡಿದರು.
ಇದನ್ನೂ ಓದಿ: ಸಡಗರದ ಈದ್ಮಿಲಾದ್ ಹಬ್ಬ ಆಚರಣೆ | ಮುಸ್ಲಿಂ ಬಾಂಧವರಿಂದ ಮೆರವಣಿಗೆ

ನಗರದ ಕೆ.ಇ.ಬಿ ಸಮುದಾಯ ಭವನದಲ್ಲಿ ಶುಕ್ರವಾರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾದ ಶಿಕ್ಷಕರ ದಿನಾಚರಣೆ-ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ರವರ ಜನ್ಮದಿನೋತ್ಸವ ಹಾಗೂ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚಿತ್ರದುರ್ಗ ಜಿಲ್ಲಾ ಶಾಖೆಯ ಮನವಿಗೆ ಸ್ಪಂದಿಸಿದ ಸಚಿವ ಡಿ.ಸುಧಾಕರ್, ಜಿಲ್ಲೆಯ ಎಲ್ಲ ಶಾಸಕರ ಸಹಕಾರದೊಂದಿಗೆ ಮುಂದಿನ ವರ್ಷದೊಳಗ ಅತ್ಯುತ್ತಮ ಗುರುಭವನ ನಿರ್ಮಾಣ ಮಾಡಿಕೊಡಲಾಗುವುದು ಎಂದು ತಿಳಿಸಿದರು.
ಒಂದು ದೇಶ ಅಭಿವೃದ್ಧಿಯಾಗಬೇಕಾದರೆ ಆ ದೇಶದ ಮಾನವ ಸಂಪನ್ಮೂಲ ಸಂಪದ್ಭರಿತವಾಗಿರಬೇಕು. ಈ ಸಂಪದ್ಭರಿತ ಮಾನವ ಸಂಪನ್ಮೂಲದ ನಿರ್ಮಾಣ ಶಿಕ್ಷಕರಿಂದ ಮಾತ್ರ ಸಾಧ್ಯ.
ಇದನ್ನೂ ಓದಿ: ಶಿಕ್ಷಕರ ದಿನಾಚರಣೆ ವಿಶೇಷ ಲೇಖನ | ಅರಿವೆಂಬ ರವಿಯು ಮೂಡಲು | ಗೀತಾ ಭರಮಸಾಗರ
ಸಮಾಜದಲ್ಲಿ ಇಂದಿಗೂ ಶಿಕ್ಷಕರಿಗೆ ಒಳ್ಳೆಯ ಗೌರವವಿದೆ. “ಗುರುವೇ ನಮಃ” ಎಂದು ನಮಿಸುವ ಸಮಾಜ ಗುರುಗಳಿಂದ ಶ್ರೇಷ್ಠವಾದದ್ದನ್ನು ಬಯಸುತ್ತದೆ ಎನ್ನುವುದನ್ನು ಅರಿಯಬೇಕಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯ ಜೀವನದಲ್ಲಿಯೂ ಶಿಕ್ಷಕರು ನಿರ್ಣಾಯಕ ಪಾತ್ರ ವಹಿಸುತ್ತಾರೆ ಮತ್ತು ಅವರ ಬದುಕು ಶಿಕ್ಷಕರಿಂದ ಮಾತ್ರ ಬೆಳಗಲು ಸಾಧ್ಯ ಎಂದು ಅರಿತು ಕೆಲಸ ಮಾಡಬೇಕಾಗಿದೆ ಎಂದು ಹೇಳಿದರು.
ಪ್ರಸ್ತುತ ಸಮಾಜದಲ್ಲಿ ಮೌಲ್ಯಗಳು ದಿನೇ ದಿನೇ ಕುಸಿಯುತ್ತಿರುವುದು ಆತಂಕದ ವಿಷಯವಾಗಿದೆ. ಶಿಕ್ಷಕರು ತಮ್ಮ ಪಾಠ ಬೋಧನೆ ಜೊತೆ ಜೊತೆಗೆ ವಿದ್ಯಾರ್ಥಿಗಳಿಗೆ ಮಾನವೀಯ ಹಾಗೂ ನೈತಿಕ ಮೌಲ್ಯಗಳನ್ನು ಮತ್ತು ವೈಚಾರಿಕ ಪ್ರಜ್ಞೆಯನ್ನು ಬೆಳೆಸಬೇಕಾಗಿರುವುದು ಸಮಾಜದ ಅತ್ಯಂತ ತುರ್ತು ಎಂದು ಭಾವಿಸಿ ಶಿಕ್ಷಕರು ಕೆಲಸ ಮಾಡಬೇಕಾಗಿದೆ. ವಿದ್ಯಾರ್ಥಿಯ ಬದುಕು ಶಿಕ್ಷಕರ ಮಾರ್ಗದರ್ಶನ ಆಧರಿಸಿರುತ್ತದೆ ಎನ್ನುವುದನ್ನು ಎಲ್ಲ ಶಿಕ್ಷಕರು ಮನಗಾಣಬೇಕು ಎಂದರು.
ಬದ್ಧತೆಯಿಂದ ಕಾರ್ಯನಿರ್ವಹಿಸಿ, ಉತ್ತಮ ಫಲಿತಾಂಶ ತನ್ನಿ:
ಶಿಕ್ಷಕರ ಮೇಲೆ ಗುರುತರವಾದ ಜವಾಬ್ದಾರಿಯಿದ್ದು, ಬದ್ಧತೆಯಿಂದ ಕಾರ್ಯನಿರ್ವಹಿಸುವ ಮೂಲಕ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶಕ್ಕೆ ಶ್ರಮಿಸಬೇಕು ಎಂದು ಸಚಿವ ಡಿ.ಸುಧಾಕರ್ ಹೇಳಿದರು.
ಈ ವರ್ಷದಲ್ಲಿ ಶೈಕ್ಷಣಿಕ ಚಟುವಟಿಕೆ, ಪೂರ್ವ ಪರೀಕ್ಷೆ, ಸಾಫಲ್ಯ ಪರೀಕ್ಷೆಗಳನ್ನು ಹೆಚ್ಚಾಗಿ ನಡೆಸುವ ಮೂಲಕ ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ ಪರಿಹಾರ ಬೋಧನೆ ನೀಡುವ ವಿಶೇಷ ತರಗತಿಗಳನ್ನು ನಡೆಸಿ, ವಿದ್ಯಾರ್ಥಿಗಳ ಕಲಿಕಾ ಕೌಶಲ್ಯ ಹೆಚ್ಚಿಸುವ ಮೂಲಕ ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಚಿತ್ರದುರ್ಗ ಜಿಲ್ಲೆಯು ರಾಜ್ಯದಲ್ಲಿಯೇ 10ನೇ ಸ್ಥಾನದೊಳಗೆ ಬರಲು ಎಲ್ಲ ಅಧಿಕಾರಿಗಳು ಮತ್ತು ಶಿಕ್ಷಕರು ಸಂಘಟಿತ ಶ್ರಮದ ಮೂಲಕ ಕಾರಣೀಭೂತರಾಗಲು ಪ್ರಯತ್ನ ಮಾಡಬೇಕು ಎಂದರು.
ಇದನ್ನೂ ಓದಿ: ಬೆಸ್ಕಾಂ ಇಂಜಿನಿಯರ್ ತಿಮ್ಮರಾಯಪ್ಪ ಲೋಕಾಯುಕ್ತ ಬಲೆಗೆ
ವಿಧಾನ ಪರಿಷತ್ ಶಾಸಕರಾದ ಕೆ.ಎಸ್.ನವೀನ್ ಮಾತನಾಡಿ, ಡಾ.ಸರ್ಪಪಲ್ಲಿ ರಾಧಾಕೃಷ್ಣನ್ ಅವರು ಭಾರತದ ಒಬ್ಬ ಅಗ್ರಗಣ್ಯ ಶಿಕ್ಷಕ, ತತ್ವಜ್ಞಾನಿ ಮತ್ತು ರಾಜನೀತಿ ತಜ್ಞರಾಗಿದ್ದರು ಹಾಗೂ ಭಾರತ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದವರು. ಶಿಕ್ಷಣದ ಬಗ್ಗೆ ಅವರ ಅಚಲ ಭಕ್ತಿಯಿಂದಾಗಿ, ಅವರ ಜನ್ಮ ದಿನವಾದ ಸೆಪ್ಟೆಂಬರ್ 05ಅನ್ನು ದೇಶಾದ್ಯಂತ ಶಿಕ್ಷಕರ ದಿನವಾಗಿ ಆಚರಿಸಲಾಗುತ್ತದೆ.
ದೇಶ, ಸಮಾಜವನ್ನು ಕಟ್ಟುವ, ಸರಿದಾರಿಗೆ ತರುವ ಅತ್ಯಂತ ಪ್ರಮುಖ ಪಾತ್ರವನ್ನು ಶಿಕ್ಷಕರು ನಿರ್ವಹಿಸುತ್ತಿದ್ದಾರೆ. ನಿಷ್ಠೆ, ಶ್ರದ್ಧೆಯಿಂದ ನಿತ್ಯವೂ ಒತ್ತಡಗಳ ಮಧ್ಯೆ ಶಿಕ್ಷಕರು ತಮ್ಮ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದ ಅವರು, ಮಗುವನ್ನು ಜವಾಬ್ದಾರಿಯುತ ನಾಗರೀಕನನ್ನಾಗಿ ಮಾಡುವಲ್ಲಿ ಶಿಕ್ಷಕರ ಪಾತ್ರ ಬಹಳ ಅಮೂಲ್ಯವಾದುದು ಎಂದು ಹೇಳಿದರು.
ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಇದೇ ಸಂದರ್ಭದಲ್ಲಿ 2025-26ನೇ ಸಾಲಿನ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಮತ್ತು ವಿಶೇಷ ಶಿಕ್ಷಕರ ಪ್ರಶಸ್ತಿ ಪಡೆದ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಇದನ್ನೂ ಓದಿ: ಹೊಳಲ್ಕೆರೆ ಪಟ್ಟಣಕ್ಕೆ ವಾಹನ ಪ್ರವೇಶ ನಿಷೇಧ | ಪರ್ಯಾಯ ಮಾರ್ಗ ಇಲ್ಲಿವೆ ನೋಡಿ..
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ತಾಜ್ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ, ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಸ್.ಆಕಾಶ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಮಹೆಬೂಬ್ ಜಿಲಾನಿ ಖುರೇಷಿ, ಡಯಟ್ ಪ್ರಾಂಶುಪಾಲ ನಾಸಿರುದ್ದೀನ್, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಾಲತೇಶ್ ಮುದ್ದಜ್ಜಿ, ರಾಜ್ಯ ಪರಿಷತ್ ಸದಸ್ಯ ಎಸ್.ರಾಜಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಬಿ.ಮಹಂತೇಶ್ ಸೇರಿದಂತೆ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಕರ ಸಂಘದ ಅಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಿಗಳು ಹಾಗೂ ನಿರ್ದೇಶಕರು ಹಾಗೂ ಶಿಕ್ಷಕರು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
