ಮುಖ್ಯ ಸುದ್ದಿ
ಮುರುಘಾ ಶರಣರಿಗೆ ಮತ್ತೆ ಸಂಕಷ್ಟ | ಶ್ರೀಗಳ ಜಾಮೀನಿಗೆ ತಡೆಯಾಜ್ಞೆ ನೀಡಿದ ಸುಪ್ರೀಂ ಕೋರ್ಟ್

CHITRADURGA NEWS | 23 APRIL 2024
ಚಿತ್ರದುರ್ಗ: ಪೋಕ್ಸೋ ಪ್ರಕರಣದಡಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿ, ಹೈಕೋರ್ಟ್ನಿಂದ ಜಾಮೀನು ಪಡೆದು ಬಿಡುಗಡೆಯಾಗಿದ್ದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದು, ಶ್ರೀಗಳಿಗೆ ಮಂಜೂರಾಗಿದ್ದ ಜಾಮೀನಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
ಶ್ರೀಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದ ದ್ವಿಸದಸ್ಯ ಪೀಠ, ಒಂದು ವಾರದೊಳಗೆ ಚಿತ್ರದುರ್ಗದ ವಿಚಾರಣಾ ನ್ಯಾಯಾಲಯದ ಎದುರು ಹಾಜರಾಗಲು ಸೂಚಿಸಿದೆ.
ಇದನ್ನೂ ಓದಿ: ಘಟಾನುಘಟಿಗಳ ನಡುವೆ ಜಿದ್ದಾಜಿದ್ದಿಗೆ ಸಾಕ್ಷಿ ಕೋಟೆನಾಡು | ಚಿತ್ರದುರ್ಗ ಲೋಕಸಭೆಯ ಸಮಗ್ರ ಮಾಹಿತಿ
ಶ್ರೀಗಳ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಸಾಕ್ಷಿಗಳ ಹೇಳಿಕೆಗಳನ್ನು ನಾಲ್ಕು ತಿಂಗಳ ಒಳಗಾಗಿ ದಾಖಲಿಸಿಕೊಳ್ಳಬೇಕು. ಇಡೀ ಪ್ರಕರಣದ ವಿಚಾರಣೆಯನ್ನು ಒಂದು ವರ್ಷದ ಒಳಗಾಗಿ ಪೂರ್ಣಗೊಳಿಸಬೇಕು. ವಿಚಾರಣೆಗೆ ಹೆಚ್ಚಿನ ಕಾಲಾವಕಾಶ ಬೇಕಿದ್ದರೆ ಸುಪ್ರೀಂ ಕೋರ್ಟ್ ಗಮನಕ್ಕೆ ತರಬೇಕು ಎಂದು ನಿರ್ದೇಶನ ನೀಡಿದೆ.
ಸದರಿ ಪ್ರಕರಣದಲ್ಲಿ ಸಾಕ್ಷಿಗಳ ವಿಚಾರಣೆ ಮುಗಿಯುವವರೆಗೆ ಶಿವಮೂರ್ತಿ ಮುರುಘಾ ಶರಣರು ನ್ಯಾಯಾಂಗ ಬಂಧನದಲ್ಲಿ ಇರಬೇಕು. ಪ್ರಾಸಿಕ್ಯೂಷನ್ ಮತ್ತು ಆರೋಪಿ ವಿಚಾರಣೆಗೆ ಸಹಕರಿಸಬೇಕು ಎಂದು ತಿಳಿಸಿದೆ.
ಶ್ರೀಗಳ ವಿರುದ್ಧ ಇರುವ ಪ್ರಕರಣ:
ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ಶ್ರೀಗಳ ಮೇಲೆ ಪೋಕ್ಸೂ ಕಾಯ್ದೆ ಅಡಿ ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ 2022 ಆಗಸ್ಟ್ ತಿಂಗಳಲ್ಲಿ ಪ್ರಕರಣ ದಾಖಲಾಗಿತ್ತು.
ಸದರಿ ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ವರ್ಗಾಯಿಸಿ ತನಿಖೆ ಆರಂಭಿಸಲಾಗಿದೆ. ಪೋಕ್ಸೋ ಕಾಯ್ದೆ ಅಡಿ ಶ್ರೀಗಳನ್ನು 2022 ಸೆಪ್ಟಂಬರ್ 1 ರಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.
ಇದನ್ನೂ ಓದಿ: ಯೋಗಿ ಆದಿತ್ಯನಾಥ್ ಕಾರ್ಯಕ್ರಮ ರದ್ದು | ನಾಳಿನ ಕರ್ನಾಟಕ ಪ್ರವಾಸ ರದ್ದು | ಚಿತ್ರದುರ್ಗದಲೂ ನಾಳೆ ನಡೆಯಬೇಕಿದ್ದ ಸಮಾವೇಶ
16 ತಿಂಗಳುಗಳ ಕಾಲ ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿದ್ದ ಶ್ರೀಗಳು, 2023 ನವೆಂಬರ್ 8 ರಂದು ಷರತ್ತುಬದ್ಧ ಜಾಮೀನು ಪಡೆದು ಬಿಡುಗಡೆ ಆಗಿದ್ದರು.
