
CHITRADURGA NEWS |04 SEPTEMBER 2024
ಚಿತ್ರದುರ್ಗ: ಬಯಲುಸೀಮೆಗೆ ನೀರುಣಿಸುವ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗೆ ಪುನಃ ವಿಘ್ನ ಎದುರಾಗಿದ್ದು, ಕಾಲುವೆ ನಿರ್ಮಾಣಕ್ಕೆ ವನ್ಯಜೀವಿ ಮಂಡಳಿ ಒಪ್ಪದಿರುವುದು ಸಮಸ್ಯೆಗೆ ಕಾರಣವಾಗಿದೆ.
ಕಾಮಗಾರಿ ಪ್ರಾರಂಭವಾಗಿ 17 ವರ್ಷಗಳಾಗಿದ್ದು ಇನ್ನೂ ಪೂರ್ಣಗೊಂಡಿಲ್ಲ. ಪ್ರತಿ ಹಂತದಲ್ಲೂ ಒಂದಿಲ್ಲೊಂದು ಸಮಸ್ಯೆ ಎದುರಾಗುತ್ತಿವೆ. ಇದೀಗ ತುಮಕೂರು ಜಿಲ್ಲೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಕಾಲುವೆ ನಿರ್ಮಾಣಕ್ಕಾಗಿ ಬುಕ್ಕಾಪಟ್ಟಣ ಚಿಂಕಾರ ವನ್ಯಜೀವಿ ಧಾಮದ 128 ಎಕರೆ ಅರಣ್ಯ ಬಳಸಿಕೊಳ್ಳುವ ಪ್ರಸ್ತಾವನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಒಪ್ಪಿಗೆ ನೀಡಿಲ್ಲ.
ಚಿಂಕಾರ ವನ್ಯಜೀವಿ ಧಾಮವು 136.11 ಚ.ಕಿ.ಮೀ ವಿಸ್ತೀರ್ಣ ಹೊಂದಿದ್ದು, ಪರಿಸರ ಸೂಕ್ಷ್ಮ ವಲಯವು 157.0962 ಚ.ಕಿ.ಮೀ ವ್ಯಾಪಿಸಿದೆ. ಇದರಲ್ಲಿ 18.5662 ಚ.ಕಿ.ಮೀ ಡೀಮ್ಡ್ ಅರಣ್ಯ ಪ್ರದೇಶವಿದೆ. ಈ ಅರಣ್ಯ ಪ್ರದೇಶವು ವಿನಾಶದ ಅಂಚಿನಲ್ಲಿರುವ ಚಿಂಕಾರ (ಹುಲ್ಲೇಕರ) ಜತೆಗೆ ವಿವಿಧ ವನ್ಯಜೀವಿಗಳು, ವಿಶಿಷ್ಟ ಜಾತಿಯ ಸಸ್ಯ ಸಂಪತ್ತನ್ನು ಒಳಗೊಂಡಿದೆ.

ಕ್ಲಿಕ್ ಮಾಡಿ ಓದಿ: ಡಿಸಿಸಿ ಬ್ಯಾಂಕ್ ಚುನಾವಣೆ | ಕೋರ್ಟ್ ಮೆಟ್ಟಿಲೇರಿದ ಶಾಸಕ ರಘುಮೂರ್ತಿ | 200 ಸೊಸೈಟಿ ಅನರ್ಹ
ತುಮಕೂರು ಜಿಲ್ಲೆಯ ಶಿರಾ, ಚಿಕ್ಕನಾಯಕನಹಳ್ಳಿ, ಗುಬ್ಬಿ ತಾಲ್ಲೂಕುಗಳು ಹಾಗೂ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವ್ಯಾಪ್ತಿಯಲ್ಲಿ ಬುಕ್ಕಾಪಟ್ಟಣ ವನ್ಯಜೀವಿ ಧಾಮ ವಿಸ್ತರಿಸಿಕೊಂಡಿದೆ. ಕಾಲುವೆ ಆಸುಪಾಸಿನಲ್ಲಿ ಪ್ರಾಣಿಗಳ ಸಂಚಾರಕ್ಕೆ ಹಾದಿ ಹಾಗೂ ಉಪಶಮನ ಕ್ರಮಗಳ ಬಗ್ಗೆ ಡೆಹ್ರಾಡೂನ್ನ ವೈಲ್ಡ್ಲೈಫ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ತಜ್ಞರಿಂದ ಪರಿಶೀಲನೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲು ಮಂಡಳಿ ತೀರ್ಮಾನಿಸಿದೆ. ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅಧ್ಯಕ್ಷತೆಯಲ್ಲಿ ನಡೆದ ಮಂಡಳಿಯ ಸ್ಥಾಯಿಸಮಿತಿಯ 79ನೇ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.
ಕ್ಲಿಕ್ ಮಾಡಿ ಓದಿ: ಜಿಲ್ಲಾಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಟ್ಟಿ ಪ್ರಕಟ | 24 ಶಿಕ್ಷಕರಿಗೆ ಸಂದ ಗೌರವ
ರಾಜ್ಯ ಸರ್ಕಾರ ಹಾಗೂ ರಾಜ್ಯ ವನ್ಯಜೀವಿ ಮಂಡಳಿ ಈ ಪ್ರಸ್ತಾವನೆಗೆ ಒಪ್ಪಿಗೆ ಕೊಟ್ಟಿವೆ. ಅಭಯಾರಣ್ಯ ಪ್ರದೇಶದ ಕಾಲುವೆಯ ಉದ್ದಕ್ಕೂ ಪ್ರತಿ 100 ಮೀಟರ್ಗೆ ಪ್ರಾಣಿಗಳಿಗೆ ಸಾಗಲು ಮಾರ್ಗ ನಿರ್ಮಿಸಲಾಗುತ್ತದೆ ಹಾಗೂ ಉಳಿದ ಕಡೆಗಳಲ್ಲಿ ಬೇಲಿ ಹಾಕಲಾಗುತ್ತದೆ ಎಂದು ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರು ಸಭೆಯ ಗಮನಕ್ಕೆ ತಂದರು.
‘ಕಾಡು ಪ್ರಾಣಿಗಳು ದಾಟಲು ಕಾಲುವೆಗೆ ಸಮರ್ಪಕ ಮಾರ್ಗಗಳಿರಬೇಕು. ಕಾಲುವೆ ನೀರನ್ನು ಕಾಡು ಪ್ರಾಣಿಗಳು ಕುಡಿಯಲು ವ್ಯವಸ್ಥೆ ಮಾಡಬೇಕು’ ಎಂದು ಮಂಡಳಿಯ ತಜ್ಞ ಸದಸ್ಯ ಡಾ.ಎಚ್.ಎಸ್.ಸಿಂಗ್ ಸಲಹೆ ನೀಡಿದರು. ಅಭಯಾರಣ್ಯದಲ್ಲಿ ಅನಗತ್ಯ ನಿರ್ಮಾಣ ಕಾಮಗಾರಿಗಳನ್ನು ತಪ್ಪಿಸಬೇಕು ಎಂದು ಸಮಿತಿಯ ಅಧ್ಯಕ್ಷರು ಸಲಹೆ ನೀಡಿದರು.



________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
