
CHITRADURGA NEWS | 04 JANUARY 2026
ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಯಡಿ 90 ಕೆರೆಗಳಿಗೆ ಪ್ರಾಯೋಗಿಕವಾಗಿ ನೀರು ಹರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ತಿಳಿಸಿದ್ದಾರೆ.
ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದ ನಂತರ ನಗರದ ಭದ್ರಾ ಮೇಲ್ದಂಡೆ ಯೋಜನಾ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿ ವಿವರಿಸಿದರು.

ಇದನ್ನೂ ಓದಿ: ವಿವಿ ಸಾಗರಕ್ಕೆ ಬಾಗೀನ ಅರ್ಪಣೆ | ಒಂದು ತಿಂಗಳಲ್ಲಿ ಭದ್ರಾ ಚಾನೆಲ್ನಲ್ಲಿ ಹರಿಯಲಿದೆ ನೀರು | ಸಚಿವ ಡಿ.ಸುಧಾಕರ್
ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ಸಮೀಪದ ವೈ ಜಕ್ಷಂನ್ನಿಂದ ಚಿತ್ರದುರ್ಗ ತಾಲ್ಲೂಕಿನ ಗೋನೂರು ಮೇಲ್ಗಾಲುವೆ (ಅಕ್ವಡೆಕ್ಟ್) ವರೆಗೆ 114 ಕಿ.ಮೀ ಕಾಲುವೆ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಫೆಬ್ರವರಿ-2026ರ ಅಂತ್ಯಕ್ಕೆ ಪೂರ್ಣಗೊಂಡ ಕಾಲುವೆಯಲ್ಲಿ ಪ್ರಾಯೋಗಿಕವಾಗಿ ನೀರು ಹರಿಸುವುದಾಗಿ ಭರವಸೆ ನೀಡಿದರು.
ಭದ್ರಾ ಮೇಲ್ದಂಡೆ ಯೋಜನೆಗೆ ನವೆಂಬರ್-2025ರ ಅಂತ್ಯವರೆಗೆ ಒಟ್ಟಾರೆ ರೂ.11,290 ಕೋಟಿ ಖರ್ಚು ಮಾಡಲಾಗಿದೆ. ಯೋಜನೆ ಪೂರ್ಣಗೊಳ್ಳಲು ಇನ್ನೂ 10 ಸಾವಿರ ಕೋಟಿ ಅಗತ್ಯವಿದೆ. ಮುಂಬರುವ ವರ್ಷಗಳ ಆಯವ್ಯಯದಲ್ಲಿ ಹೆಚ್ಚಿನ ಅನುದಾನ ನೀಡಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು.
| ಡಿ.ಸುಧಾಕರ್, ಜಿಲ್ಲಾ ಉಸ್ತುವಾರಿ ಸಚಿವರು.
ಅಜ್ಜಂಪುರ ತಾಲ್ಲೂಕಿನ ಅಬ್ಬಿನಹೊಳಲು ಗ್ರಾಮದ ಬಳಿಯ ವೈಜಂಕ್ಷನ್ ಕಾಮಗಾರಿ 4 ವರ್ಷಗಳಿಂದ ರೈತರ ಅಡೆತಡೆಯಿಂದಾಗಿ ಬಾಕಿ ಉಳಿದಿತ್ತು. ಕಳೆದ ಮಾರ್ಚ್ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ ಶಾಸಕರು ಅಬ್ಬಿನಹೊಳಲು ರೈತರ ಬಳಿ ತೆರಳಿ ಮನವೊಲಿಸಲಾಯಿತು. ಇದರಿಂದಾಗಿ ಕಾಮಗಾರಿ ಪೂರ್ಣಗೊಂಡಿದೆ. ಇದೇ ರೀತಿ ಹಿರಿಯೂರು ತಾಲ್ಲೂಕಿನಲ್ಲಿದ್ದ ಸಮಸ್ಯೆ ಕೂಡಾ ಪರಿಹಾರವಾಗಿದೆ, ಪ್ರಸಕ್ತ ಸರ್ಕಾರದ ಅವಧಿಯಲ್ಲಿಯೇ ಭದ್ರಾ ಮೇಲ್ದಂಡೆ ಯೋಜನೆಯನ್ನು ಸಂಪೂರ್ಣಗೊಳಿಸಲು ಗುರಿ ಹೊಂದಲಾಗಿದೆ ಎಂದರು.
ಇದನ್ನೂ ಓದಿ: ಅಡಿಕೆ ಧಾರಣೆ | ಭೀಮಸಮುದ್ರ, ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್
ಜಿಲ್ಲೆಯ ಎಲ್ಲಾ ಶಾಸಕರು ಪಕ್ಷಾತೀತವಾಗಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳನ್ನು ಭೇಟಿಯಾಗಿ ವಾಸ್ತವ ಸ್ಥಿತಿ ಮನವರಿಕೆ ಮಾಡಿಕೊಟ್ಟು, ಮುಂಬರುವ ಆಯವ್ಯಯದಲ್ಲಿ ಹೆಚ್ಚಿನ ಅನುದಾನ ನೀಡಲು ಮನವಿ ಮಾಡುತ್ತೇವೆ. ಇದರೊಂದಿಗೆ ಪ್ರಸ್ತುತ ಚಿತ್ರದುರ್ಗ ಶಾಖಾ ಕಾಲುವೆಯ ಕಾಮಗರಿಗೆ ಅಗತ್ಯವಿರುವ ರೂ. 300 ಕೋಟಿ ಹಣವನ್ನು ಮಾರ್ಚ್ ಅಂತ್ಯದ ಒಳಗಾಗಿ ಬಿಡುಗಡೆ ಮಾಡಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.
ಚಿತ್ರದುರ್ಗ ಕಾಲುವೆಯಿಂದ 90 ಕೆರೆಗಳಿಗೆ ನೀರು:
ಚಿತ್ರದುರ್ಗ ಶಾಖಾ ಕಾಲುವೆಯಲ್ಲಿ ಪ್ರಾಯೋಗಿಕವಾಗಿ ನೀರು ಹರಿಸುವ ಸಂದರ್ಭದಲ್ಲಿ ಕಡೂರಿನ 22, ಹೊಸದುರ್ಗದ 32, ಹೊಳಲ್ಕೆರೆಯ 30, ಹಿರಿಯೂರಿನ 03 ಹಾಗೂ ಚಿತ್ರದುರ್ಗದ 03 ಸೇರಿ ಒಟ್ಟು 90 ಕೆರೆಗಳಿಗೆ ಅವುಗಳ ಸಾಮಥ್ರ್ಯದ ಶೇ.50 ರಷ್ಟು ನೀರನ್ನು ತುಂಬಿಸಲಾಗುವುದು. ಇದರಿಂದಾಗಿ ಹಿರಿಯೂರು, ಚಿತ್ರದುರ್ಗ, ಹೊಳಲ್ಕೆರೆ ಮತ್ತು ಚಳ್ಳಕೆರೆ ತಾಲ್ಲೂಕಿನ 73,946 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಸೌಲಭ್ಯ ದೊರಕಲಿದೆ.
ಗೋನೂರು ಬಳಿಯ 1.94 ಕಿ.ಮೀ. ಉದ್ದದ ಅಕ್ವಾಡೆಕ್ಟ್ ಕಾಮಗಾರಿಯನ್ನು ಆಗಸ್ಟ್-2026ರ ಅಂತ್ಯಕ್ಕೆ ಪೂರ್ಣಗೊಳಿಸಿ ಜಗಳೂರು, ಮೊಳಕಾಲ್ಮೂರು, ಚಳ್ಳಕೆರೆ ಮತ್ತು ಪಾವಗಡ ತಾಲ್ಲೂಕಿನ ಕೆರೆಗಳಿಗೆ ನೀರು ಹರಿಸಲಾಗುವುದು. ಸುಮಾರು 120 ಅಡಿ ಎತ್ತರ ಗೋನೂರು ಅಕ್ವಡೆಕ್ಟ್ ರಾಜ್ಯದಲ್ಲಿಯೇ ಅತ್ಯಂತ ಎತ್ತರದ ಅಕ್ವಡೆಕ್ಟ್ ಆಗಿದೆ ಎಂದು ಸಚಿವ ಡಿ.ಸುಧಾಕರ್ ತಿಳಿಸಿದರು.
ರೂ.2,600 ಕೋಟಿಕಾಮಗಾರಿಪ್ರಾರಂಭ
ವಿಶ್ವೇಶ್ವರ ಜಲನಿಗಮ ಮಂಡಳಿಯಲ್ಲಿ ಜಿಲ್ಲೆಯ ಹೊಳಲ್ಕೆರೆ, ಚಿತ್ರದುರ್ಗ, ಹಿರಿಯೂರು ಹಾಗೂ ಚಳ್ಳಕೆರೆ ತಾಲ್ಲೂಕಿನಲ್ಲಿ ಹನಿ ನೀರಾವರಿ ಹಾಗೂ ಕೆರೆ ತುಂಬುವ ಕಾಮಗಾರಿಗಳಿಗೆ ರೂ.2,600 ಕೋಟಿ ವೆಚ್ಚದಲ್ಲಿ ಅನುಮೋದನೆ ನೀಡಲಾಗಿದೆ. ಟೆಂಡರ್ ಕರೆಯಲಾಗಿದ್ದು, ಕಾಮಗಾರಿ ಆರಂಭಿಸಲಾಗುವುದು. ಇದರಿಂದ 73,946 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ದೊರಕಲಿದೆ.

ಇದನ್ನೂ ಓದಿ: ಚಿತ್ರದುರ್ಗ ಮೆಡಿಕಲ್ ಕಾಲೇಜು | ಅಲೈಡ್ ಹೆಲ್ತ್ ಸೈನ್ಸ್, ಫಿಜಿಯೋಥೆರಪಿ ಕೋರ್ಸ್ | ಮೆರಿಟ್ ಅಧಾರದ ಮೇಲೆ ಸೀಟುಗಳ ಭರ್ತಿ
2024-25ನೇರ ಬಜೆಟ್ನಲ್ಲಿ 1,250 ಕೋಟಿ ಅನುದಾನ:
ಭದ್ರಾ ಮೇಲ್ದಂಡೆ ಯೋಜನೆಗಾಗಿ ರಾಜ್ಯ ಸರ್ಕಾರ 2024-25ನೇ ಸಾಲಿನ ಆಯವ್ಯಯದಲ್ಲಿ ರೂ.1,250 ಕೋಟಿ ಅನುದಾನ ಹಂಚಿಕೆ ಮಾಡಿತ್ತು. ಇದರಲ್ಲಿ ಕೇಂದ್ರ ಸರ್ಕಾರದ ಅನುದಾನವನ್ನು ನಿರೀಕ್ಷಿಸಲಾಗಿತ್ತು. ಆದರೆ, ಕೇಂದ್ರದಿಂದ ಯಾವುದೇ ಅನುದಾನ ಬರಲಿಲ್ಲ. ಆದರೆ, ರಾಜ್ಯ ಸರ್ಕಾರವೇ ರೂ.1,443 ಕೋಟಿ ಬಿಡುಗಡೆ ಮಾಡಿತ್ತು. ಇದು ಅಯವ್ಯಯದಲ್ಲಿ ಹಂಚಿಕೆ ಮಾಡಿದ್ದಕ್ಕಿಂತಲೂ ಹೆಚ್ಚಿನ ಅನುದಾನವಾಗಿದೆ. ಇನ್ನು 2025-26ನೇ ಸಾಲಿನಲ್ಲಿ ರೂ.1,440.29 ಕೋಟಿಗಳ ಅನುದಾನ ಹಂಚಿಕೆ ಮಾಡಿದ್ದು, ಇದುವರೆಗೂ ರೂ.520 ಕೋಟಿ ಬಿಡುಗಡೆ ಮಾಡಿದೆ. ಆರ್ಥಿಕ ವರ್ಷ ಪೂರ್ಣಗೊಳ್ಳಲು ಇನ್ನೂ 3 ತಿಂಗಳು ಬಾಕಿ ಇದ್ದು, ಉಳಿದ ಹಣವನ್ನು ಸಹ ಸರ್ಕಾರ ಬಿಡುಗಡೆ ಮಾಡಲಿದೆ.
ಇದನ್ನೂ ಓದಿ: ಶಿಷ್ಯವೇತನ | ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಎನ್.ವೈ.ಗೋಪಾಲಕೃಷ್ಣ, ಡಾ.ಎಂ. ಚಂದ್ರಪ್ಪ, ಟಿ.ರಘುಮೂರ್ತಿ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ವಿಶ್ವೇಶ್ವರಯ್ಯ ಜಲನಿಗಮದ ವ್ಯವಸ್ಥಾಪಕ ನಿರ್ದೇಶಕ ಸಣ್ಣಚಿತ್ತಯ್ಯ, ಮುಖ್ಯ ಇಂಜಿನಿಯರ್ ಎಫ್.ಹೆಚ್. ಲಮಾಣಿ, ಅಧೀಕ್ಷಕ ಇಂಜಿನಿಯರ್ ಹರೀಶ್ ಕೆ.ಟಿ., ಕಾರ್ಯಪಾಲಕ ಇಂಜಿನಿಯರ್ ಚಂದ್ರಪ್ಪ ಬಾರಿಕರ ಇತರರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
