CHITRADURGA NEWS | 16 AUGUST 2026
ಚಿತ್ರದುರ್ಗ: ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ದಲಿತರ ಉದ್ದಾರಕ್ಕಾಗಿ ವಿಶೇಷ ಅಧಿವೇಶನ ಕರೆದು ಸಂವಿಧಾನಕ್ಕೆ ತಿದ್ದುಪಡಿ ತಂದವರು ಅಟಲ್ ಬಿಹಾರಿ ವಾಜಪೇಯಿ ಎಂದು ಸಂಸದ ಗೋವಿಂದ ಎಂ.ಕಾರಜೋಳ ಸ್ಮರಿಸಿದರು.
ಇದನ್ನೂ ಓದಿ: ಜಿಲ್ಲಾ ಪಂಚಾಯಿತಿಯಲ್ಲಿ ಪ್ರಜಾ ಸೇವಾ ಶಾಖೆಗೆ ಸಚಿವ ಟಿ.ರಘುಮೂರ್ತಿ ಚಾಲನೆ
ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ನಡೆದ ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾ ಘಟಕದ ಪದಗ್ರಹಣ ಹಾಗೂ ಪದಾಧಿಕಾರಿಗಳ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹೋರಾಟದಿಂದ ಮಾತ್ರ ವ್ಯಕ್ತಿತ್ವ ರೂಪುಗೊಂಡು ಸದೃಢರಾಗಲು ಸಾಧ್ಯ. ಈ ನಿಟ್ಟಿನಲ್ಲಿ ಸಂಘಟಿತರಾಗಿ ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿ ಎಸ್ಸಿ ಮೋರ್ಚಾ ಪದಾಧಿಕಾರಿಗಳ ಮೇಲಿದೆ ಎಂದರು.
ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಬದುಕು ಸುಧಾರಿಸಬೇಕು ಎಂಬ ಆಶಯದಿಂದ ಮೀಸಲಾತಿ ಕಲ್ಪಿಸಿದ್ದರು. ಆದರೆ ತಮ್ಮ ಆಶಯ ಈಡೇರದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಬಂದರು. ಆ ಸಂದರ್ಭದಲ್ಲಿ ಡಾ.ಬಾಬು ಜಗಜೀವನರಾಂ ಅವರು ನೆಹರು ಸರ್ಕಾರದಲ್ಲಿದ್ದರು ಎಂದು ಹೇಳಿದರು.
ಇದನ್ನೂ ಓದಿ: ನವೀಕೃತ ತ.ರಾ.ಸು ರಂಗಮಂದಿರವನ್ನು ಸಚಿವ ಟಿ.ರಘುಮೂರ್ತಿ ಉದ್ಘಾಟನೆ
2022ರಲ್ಲಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಮೀಸಲಾತಿ ಹೆಚ್ಚಳ ಮಾಡಲಾಗಿದೆ. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ ಎಂದು ಹೇಳಿದರು.
ಲಂಬಾಣಿ ಹಾಗೂ ಭೋವಿ ಸಮುದಾಯದವರನ್ನು ಪರಿಶಿಷ್ಟರ ಪಟ್ಟಿಯಿಂದ ತೆಗೆಯಲಾಗುತ್ತದೆ ಎಂದು ಕಾಂಗ್ರೆಸ್ ಬಿಜೆಪಿ ವಿರುದ್ಧ ಅಪಪ್ರಚಾರ ನಡೆಸಿತು. ಈ ಕುರಿತು ಎಸ್ಸಿ ಮೋರ್ಚಾ ಪದಾಧಿಕಾರಿಗಳು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಕರೆ ನೀಡಿದರು.
ಕಾಂಗ್ರೆಸ್ ವಿರುದ್ಧ ಜನಜಾಗೃತಿ ಮೂಡಿಸಿ
ಎಸ್ಸಿಪಿ-ಟಿಎಸ್ಪಿ ಯೋಜನೆಯ ₹49 ಸಾವಿರ ಕೋಟಿ ಹಣವನ್ನು ಕಾಂಗ್ರೆಸ್ ಸರ್ಕಾರ ಬೇರೆ ಉದ್ದೇಶಗಳಿಗೆ ಬಳಸಿಕೊಂಡಿದೆ ಎಂದು ಆರೋಪಿಸಿದ ಕಾರಜೋಳ, ಹತ್ತು ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಸರ್ಕಾರ ಸುಳ್ಳು ಪ್ರಚಾರದ ಮೂಲಕ ಪರಿಶಿಷ್ಟ ಜನಾಂಗದವರಲ್ಲಿ ತಪ್ಪು ತಿಳುವಳಿಕೆ ಮೂಡಿಸಿದೆ ಎಂದರು.
ಇದನ್ನೂ ಓದಿ: ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
ಎಸ್ಸಿ ಮೋರ್ಚಾ ಪದಾಧಿಕಾರಿಗಳು ಜಿಲ್ಲೆಯಾದ್ಯಂತ ಸಂಚರಿಸಿ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸಬೇಕು. ಕೇಂದ್ರದ ಬಿಜೆಪಿ ಸರ್ಕಾರ ಯಾವುದೇ ಕಾರಣಕ್ಕೂ ಸಂವಿಧಾನವನ್ನು ಬದಲಾವಣೆ ಮಾಡುವುದಿಲ್ಲ. ಅಸ್ಪೃಶ್ಯತೆ ಮತ್ತು ಅಸಮಾನತೆ ಇರುವವರೆಗೆ ಮೀಸಲಾತಿ ಮುಂದುವರಿಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟಪಡಿಸಿದ್ದಾರೆ ಎಂದರು.
ಗಂಗಾ ಕಲ್ಯಾಣ ಯೋಜನೆಯಡಿ ಪ್ರತಿ ತಾಲ್ಲೂಕಿಗೆ ಕನಿಷ್ಠ 50 ಬೋರ್ವೆಲ್ಗಳನ್ನು ಮಂಜೂರು ಮಾಡಬೇಕು. ಹೋರಾಟದಿಂದ ಮಾತ್ರ ಜಯ ಸಾಧಿಸಲು ಸಾಧ್ಯ ಎಂದು ಹೇಳಿದರು.
ಬಿಜೆಪಿ ಗೆಲುವಿಗೆ ಸಂಘಟನೆ ಅಗತ್ಯ:
ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮಾತನಾಡಿ, ಕಾಂಗ್ರೆಸ್ನ ಅಪಪ್ರಚಾರದಿಂದ 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ತೊಂದರೆಯಾಯಿತು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭಿವೃದ್ಧಿಗೆ ಬಳಸಬೇಕಾದ ಹಣವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.
ಇದನ್ನೂ ಓದಿ: ಎಸ್.ಜೆ.ಎಂ. ಕ್ಯಾಂಪಸ್ನಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ
ಜಿಲ್ಲೆಯಲ್ಲಿ ಬಿಜೆಪಿಗೆ ಮತ ನೀಡುವವರು ಹೆಚ್ಚಿನ ಸಂಖ್ಯೆಯಲ್ಲಿದ್ದು, ನಾಯಕತ್ವದ ಕೊರತೆಯಿದೆ. ಮುಂಬರುವ ಎಲ್ಲ ಚುನಾವಣೆಗಳಲ್ಲಿ ಸ್ಪರ್ಧಿಸಲು ಎಸ್ಸಿ ಮೋರ್ಚಾ ಪದಾಧಿಕಾರಿಗಳು ಸಿದ್ಧರಾಗಬೇಕು ಎಂದು ಕರೆ ನೀಡಿದರು.
ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಯಾವುದೇ ಆಮಿಷಗಳಿಗೆ ಬಲಿಯಾಗದೆ ಮೊದಲ ಪ್ರಾಶಸ್ತ್ಯದ ಮತ ನೀಡಿ ಬಿಜೆಪಿ ಅಭ್ಯರ್ಥಿ ಸುರೇಶ್ ಅವರನ್ನು ಗೆಲ್ಲಿಸುವಂತೆ ಪದವೀಧರರಲ್ಲಿ ಮನವಿ ಮಾಡಿದರು.
ಅಭ್ಯರ್ಥಿ ಸುರೇಶ್ ಮಾತನಾಡಿ, ಸಾಮಾನ್ಯ ಕಾರ್ಯಕರ್ತನಿಗೂ ಬಿಜೆಪಿಯಲ್ಲಿ ವಿವಿಧ ಅವಕಾಶಗಳಿವೆ. ಅಕ್ಟೋಬರ್ನಲ್ಲಿ ನಡೆಯುವ ಚುನಾವಣೆಯಲ್ಲಿ ತಮ್ಮನ್ನು ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದ್ದು, ಗೆಲುವಿಗೆ ಎಲ್ಲರ ಸಹಕಾರ ಅಗತ್ಯ ಎಂದು ಮನವಿ ಮಾಡಿದರು.
ಜಿಲ್ಲಾ ಕಾರ್ಯದರ್ಶಿ ಜಿ.ಹೆಚ್.ಮೋಹನ್ ಪ್ರಾಸ್ತಾವಿಕವಾಗಿ ಮಾತನಾಡಿ, ದೇಶಭಕ್ತಿ, ಸಂಘಟನೆ ಹಾಗೂ ಸಾಮಾಜಿಕ ಭದ್ರತೆಯ ಹಿನ್ನೆಲೆಯಲ್ಲಿ ಎಸ್ಸಿ ಮೋರ್ಚಾ ಪದಾಧಿಕಾರಿಗಳ ಪದಗ್ರಹಣ ಮಹತ್ವದ್ದಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ನ್ಯಾಯ ದೊರಕಿಸಿಕೊಡುವ ನಾಯಕತ್ವವನ್ನು ಬೆಳೆಸಿಕೊಳ್ಳಬೇಕು ಎಂದರು.
ಇದನ್ನೂ ಓದಿ: ತುರವನೂರಿನಲ್ಲಿ ಸ್ವಾತಂತ್ರ್ಯ ಇತಿಹಾಸ ಬಿಂಬಿಸುವ ಉದ್ಯಾನವ ನಿರ್ಮಾಣ | ಟಿ.ರಘುಮೂರ್ತಿ
ಕಾರ್ಯಕ್ರಮದಲ್ಲಿ ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡ ಪರಶುರಾಂ ಅವರಿಗೆ ಪಕ್ಷದ ಧ್ವಜ ಹಸ್ತಾಂತರಿಸಿ, ನೂತನ ಪದಾಧಿಕಾರಿಗಳಿಗೆ ಪದಗ್ರಹಣ ಮಾಡಿಸಲಾಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಉಪಾಧ್ಯಕ್ಷ ಡಾ.ಸಿದ್ದಾರ್ಥ ಗುಂಡಾರ್ಪಿ, ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಭಾರ್ಗವಿ ದ್ರಾವಿಡ್, ಹನುಮಂತೆಗೌಡ, ವಿಧಾನಪರಿಷತ್ ಮಾಜಿ ಸದಸ್ಯ ಡಾ.ಎ.ಎಚ್.ಶಿವಯೋಗಿಸ್ವಾಮಿ, ಪ್ರಧಾನ ಕಾರ್ಯದರ್ಶಿ ಮಾಧುರಿ ಗಿರೀಶ್, ನಾಗರಾಜ್, ಮಲ್ಲೇಶ್, ಬಾಳೆಕಾಯಿ ರಾಂದಾಸ್, ಮಂಜುಳಮ್ಮ, ರಾಜಶೇಖರ್ ಸೇರಿದಂತೆ ಹಲವರು ವೇದಿಕೆಯಲ್ಲಿದ್ದರು. ಎಸ್ಸಿ ಮೋರ್ಚಾ ನಿಕಟಪೂರ್ವ ಅಧ್ಯಕ್ಷ ತಿಪ್ಪೇಸ್ವಾಮಿ ಸ್ವಾಗತಿಸಿದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

