
CHITRADURGA NEWS | 03 JULY 2024
ಚಿತ್ರದುರ್ಗ: ಮಳೆಗಾಲ ಆರಂಭವಾಗಿದ್ದು, ಕಲುಷಿತ ನೀರು ಸೇವನೆಯಿಂದ ಆರೋಗ್ಯದ ಮೇಲೆ ಗಂಭೀರ ಸ್ವರೂಪದ ಪರಿಣಾಮಗಳು ಬೀರುವ ಸಾಧ್ಯತೆಗಳಿವೆ. ಆದ್ದರಿಂದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರ ಸಹಭಾಗಿತ್ವದಲ್ಲಿ ಜಾಗೃತಿ ಮೂಡಿಸುವ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಸ್.ಜೆ.ಸೋಮಶೇಖರ್ ತಿಳಿಸಿದರು.
ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಪಂಚಾಯತ್ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಿಂದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಫೀಲ್ಡ್ ಟೆಸ್ಟ್ ಕಿಟ್ ಮತ್ತು ಎಚ್ಟುಎಸ್ ವಯಲ್ಸ್ ಉಪಯೋಗಿಸಿ ನೀರು ಪರೀಕ್ಷೆ ಕೈಗೊಳ್ಳಲು ಏರ್ಪಡಿಸಿದ ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶದ ಪ್ರತಿ ಗ್ರಾಮದಲ್ಲಿ ಕುಡಿಯುವ ನೀರು ಬಗ್ಗೆ ಜಾಗೃತಿ ಮೂಡಿಸುವ ಭಿತ್ತಿ ಪತ್ರ ಮತ್ತು ಕ್ಷೇತ್ರ ಪರೀಕ್ಷಾ ಕಿಟ್ ಉಪಯೋಗಿಸಿ ನೀರು ಪರೀಕ್ಷೆ ಮಾಡುವ ಕೈಪಿಡಿಯನ್ನು ಬಿಡುಗಡೆಗೊಳಿಸಿದರು.
ಕ್ಲಿಕ್ ಮಾಡಿ ಓದಿ: ಅದಿರು ಲಾರಿಗಳ ನೊಂದಣಿ ರದ್ದುಗೊಳಿಸಿ | ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ
ಜಿ.ಪಂ ಯೋಜನಾ ನಿರ್ದೇಶಕ ಡಾ.ಎಸ್.ರಂಗಸ್ವಾಮಿ ಮಾತನಾಡಿ, ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಯ ಸದಸ್ಯರಿಗೆ ಗ್ರಾಮ ಪಂಚಾಯಿತಿ ಹಂತದಲ್ಲಿ ನೀರು ಪರೀಕ್ಷೆ ಕಿಟ್ಗಳ ಮೂಲಕ ಗ್ರಾಮದಲ್ಲಿ ಇರುವ ಕುಡಿಯುವ ನೀರು ಜಲಮೂಲಗಳ ನೀರು ಸಂಗ್ರಹಿಸಿ, ಪರೀಕ್ಷೆ ಮಾಡಿಸಿ, ನೀರು ಕುಡಿಯಲು ಯೋಗ್ಯವಾಗಿ ಇಲ್ಲದೇ ಇದ್ದರೆ ನಂತರ ತಾಲ್ಲೂಕು ಮಟ್ಟದ ನೀರು ಪರೀಕ್ಷಾ ಪ್ರಯೋಗಾಲಕ್ಕೆ ತಂದು ನೀರು ಪರೀಕ್ಷೆ ಮಾಡಿಸಿ ನಂತರ ಕ್ರಮ ಕೈಗೊಳ್ಳಲು ತಿಳಿಸಿದರು.
ನೀರು ಮತ್ತು ನೈರ್ಮಲ್ಯ ಸಮಿತಿಗಳ ಪುನರ್ ರಚನೆ ಮಾಡಿ ಕಡ್ಡಾಯವಾಗಿ ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ಮಾಡಿ ನಡಾವಳಿ ಮಾಡಬೇಕು. ಗ್ರಾಮದಲ್ಲಿ ನೀರು ಮತ್ತು ನೈರ್ಮಲ್ಯಕ್ಕೆ ಸಂಬಂಧಪಟ್ಟಂತೆ ಸಮಸ್ಯೆಗಳು ಇದ್ದಲ್ಲಿ ಕೂಡಲೇ ಗ್ರಾಮ ಪಂಚಾಯಿತಿ ಅಧ್ಯಕ್ಷರ ಗಮನಕ್ಕೆ ತಂದು ಪರಿಹರಿಸಬೇಕು ಎಂದು ತಿಳಿಸಿದರು.
ಜಿಪಂ ಉಪ ಕಾರ್ಯದರ್ಶಿ ಕೆ.ತಿಮ್ಮಪ್ಪ ಮಾತನಾಡಿ, ಕುಡಿಯುವ ನೀರನ್ನು ಕ್ಷೇತ್ರ ಪರೀಕ್ಷೆಯಡಿ ಕಿಟ್ ಬಳಸಿ, ಪರೀಕ್ಷಿಸಿ, ಕಲುಷಿತ ನೀರು ಕಂಡು ಬಂದರೆ ಕೂಡಲೇ ಅಂತಹ ಜಲ ಮೂಲಗಳಿಂದ ನೀರು ಪೂರೈಕೆ ನಿಲ್ಲಿಸಬೇಕು ಮತ್ತು ಗ್ರಾಮದಲ್ಲಿ ಪೈಪುಗಳು ಒಡೆದು ಹೋಗಿದ್ದರೆ ದುರಸ್ಥಿ ಮಾಡಿಸಿ ನೀರು ಸರಬರಾಜು ಮಾಡಬೇಕು ಎಂದರು.
ಕ್ಲಿಕ್ ಮಾಡಿ ಓದಿ: ಗಂಗಾ ಕಲ್ಯಾಣ ಯೋಜನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಿ | ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಬಸನಗೌಡ ಪಾಟೇಲ್ ಮಾತನಾಡಿ, ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕಡ್ಡಾಯವಾಗಿ ಕ್ಷೇತ್ರ ಪರೀಕ್ಷಾ ಕಿಟ್ ಬಳಸಿಕೊಳ್ಳಲು ತಿಳಿಸಿದರು. ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಗಳ ಪುನರ್ ರಚನೆ ಮಾಡಿ ಪ್ರತಿ ಗ್ರಾಮದಲ್ಲಿ ನೀರು ಮತ್ತು ನೈರ್ಮಲ್ಯ ಸಮಿತಿಗಳು ಸಕ್ರಿಯವಾಗಿರಲು ತಿಳಿಸಿದರು.
ಜಿಲ್ಲಾ ಯೋಜನಾ ವ್ಯವಸ್ಥಾಪಕ ಮಂಜುನಾಥ್ ಎಸ್.ನಾಡರ್, ಜಿಲ್ಲಾ ಎಂಐಎಸ್ ಸಮಾಲೋಚಕ ಸ್ನೇಹನ್, ಜಿಲ್ಲಾ ಐಇಸಿ ಸಮಾಲೋಚಕ ಬಿ.ಸಿ.ನಾಗರಾಜು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
